Home Blog

Job Scam: ಬೆಂಗಳೂರಿನಲ್ಲಿ ಫೇಕ್ ಕಂಪನಿ ತೆರೆದು ಯುವಕರಿಗೆ ಮೋಸ, ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರು: ಪ್ರತಿಷ್ಠಿತ ಎಂಎನ್‌ಸಿ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿ ಯುವಕ-ಯುವತಿಯರಿಂದ ಹಣ ಪಡೆದು ವಂಚಿಸುತ್ತಿದ್ದ ನಕಲಿ ಉದ್ಯೋಗ ಜಾಲವನ್ನು ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ಭೇದಿಸಿದ್ದಾರೆ.

“ಕೈತುಂಬಾ ಸಂಬಳ, ಪ್ರತಿ ವರ್ಷ ಭರ್ಜರಿ ಹೈಕ್” ಎಂಬ ಆಕರ್ಷಕ ಜಾಹೀರಾತುಗಳ ಮೂಲಕ ಉದ್ಯೋಗ ಆಕಾಂಕ್ಷಿಗಳನ್ನು ಸೆಳೆಯುತ್ತಿದ್ದ ವಂಚಕರು, ವೈಟ್‌ಫೀಲ್ಡ್‌ನಲ್ಲಿ ನಕಲಿ ಕಂಪನಿ ಕಚೇರಿ ತೆರೆದು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಪ್ರಚಾರ ನಡೆಸುತ್ತಿದ್ದರು.

ದೇಶದ ವಿವಿಧ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದ್ದರು. ಬಳಿಕ ಪ್ರವೇಶ ಶುಲ್ಕದ ಹೆಸರಿನಲ್ಲಿ ಪ್ರತಿ ಅಭ್ಯರ್ಥಿಯಿಂದ 2 ಸಾವಿರದಿಂದ 3 ಸಾವಿರ ರೂ.ವರೆಗೆ ಹಣ ವಸೂಲಿ ಮಾಡುತ್ತಿದ್ದರು. ಒಂದೇ ಹಾಲ್‌ನಲ್ಲಿ 30ರಿಂದ 40 ಜನರಿಗೆ ಪರೀಕ್ಷೆ ಬರೆಸುತ್ತಿದ್ದ ವಂಚಕರು, ಫಲಿತಾಂಶದ ಬಳಿಕ ಕರೆ ಮಾಡುವುದಾಗಿ ಹೇಳಿ ಕಳುಹಿಸುತ್ತಿದ್ದರು.

ಆದರೆ ವಾರಗಳು ಕಳೆದರೂ ಯಾವುದೇ ಮಾಹಿತಿ ನೀಡದೇ, ಅಭ್ಯರ್ಥಿಗಳು ಕರೆ ಮಾಡಿದಾಗ “ಪರೀಕ್ಷೆಯಲ್ಲಿ ಆಯ್ಕೆಯಾಗಿಲ್ಲ” ಎಂದು ಸುಳ್ಳು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು. ಕೆಲವರು ಕಡಿಮೆ ಮೊತ್ತದ ಹಣ ಎಂದು ಭಾವಿಸಿ ದೂರು ನೀಡದೇ ಸುಮ್ಮನಾಗಿದ್ದರು. ಇದೇ ರೀತಿಯಲ್ಲಿ ಹಲವು ವರ್ಷಗಳಿಂದ ಲಕ್ಷಾಂತರ ರೂ. ವಂಚನೆ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪರೀಕ್ಷಾ ಪತ್ರಿಕೆ ಕೇಳಿದಾಗ ಬಯಲಾದ ವಂಚನೆ

ಇತ್ತೀಚೆಗೆ ಕೆಲ ಅಭ್ಯರ್ಥಿಗಳು ತಾವು ಬರೆದ ಪರೀಕ್ಷಾ ಪತ್ರಿಕೆಗಳನ್ನು ತೋರಿಸುವಂತೆ ಒತ್ತಾಯಿಸಿದ್ದು, ಕಚೇರಿ ಸಿಬ್ಬಂದಿ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಅನುಮಾನಗೊಂಡು ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತನಿಖೆ ನಡೆಸಿದ ಪೊಲೀಸರು ಇದು ಸಂಪೂರ್ಣ ನಕಲಿ ಕಂಪನಿ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವನ್ ಗೋಪಾಲ್ ಎಂಬಾತನನ್ನು ಬಂಧಿಸಲಾಗಿದೆ. ಈ ವಂಚನೆ ಜಾಲದ ಹಿಂದೆ ದೊಡ್ಡ ಗ್ಯಾಂಗ್ ಕಾರ್ಯನಿರ್ವಹಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲ್ಲು ಅಡಾವತ್ ಅವರ ಮಾರ್ಗದರ್ಶನದಲ್ಲಿ ತನಿಖೆ ಮುಂದುವರಿದಿದೆ.

 

60 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಕಾರ್ಮಿಕನನ್ನು ಜೀವಂತವಾಗಿ ರಕ್ಷಿಸಿದ ಸಿಬ್ಬಂದಿ!

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಕವಡೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ದುರಂತ ಘಟನೆ ನಡೆದಿದೆ.

ಶಾಲಾ ಆವರಣದಲ್ಲಿದ್ದ ಕೊಳವೆ ಬಾವಿಯ ಮೇಲ್ಭಾಗವನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ವಿಶ್ವನಾಥ್ ಎಂಬ ಕಾರ್ಮಿಕ ಆಕಸ್ಮಿಕವಾಗಿ ಸುಮಾರು 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ತಕ್ಷಣ ಕಾರ್ಯಾಚರಣೆ ನಡೆಸಿ ಕಾರ್ಮಿಕನನ್ನು ಸುರಕ್ಷಿತವಾಗಿ ಮೇಲಕ್ಕೆ ಕರೆತಂದಿದ್ದಾರೆ. ಬಾವಿಗೆ ಬಿದ್ದ ಪರಿಣಾಮ ವಿಶ್ವನಾಥ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಕೊಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಕಾರ್ಮಿಕನ ಜೀವ ಉಳಿದಿದೆ.

ಎಲ್ಲಾ ಅಡೆತಡೆಗಳಿಗೆ ಅಂತ್ಯ! ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆ ಘೋಷಣೆ; ಜುಲೈ 23ಕ್ಕೆ ವಿಶ್ವಾದ್ಯಂತ ಅಬ್ಬರ

ಚೆನ್ನೈ: ತಿಂಗಳುಗಳ ನಿರೀಕ್ಷೆಗೆ ಕೊನೆಗೂ ತೆರೆ ಬಿದ್ದಿದೆ. ಸೆನ್ಸಾರ್ ವಿವಾದ, ನ್ಯಾಯಾಲಯದ ಹೋರಾಟ ಹಾಗೂ ಆನ್‌ಲೈನ್ ಲೀಕ್‌ಗಳಿಂದ ತೀವ್ರ ಹಿನ್ನಡೆ ಅನುಭವಿಸಿದ್ದ ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾ ಇದೀಗ ಜುಲೈ 23ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಕಾಲಿವುಡ್ ಸೂಪರ್‌ಸ್ಟಾರ್ ವಿಜಯ್ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡಿ ರಿಲೀಸ್ ಡೇಟ್ ಖಚಿತಪಡಿಸಿದ್ದಾರೆ. ಇತ್ತೀಚೆಗಷ್ಟೇ ಸೆನ್ಸಾರ್ ಮಂಡಳಿಯಿಂದ ‘A’ ಸರ್ಟಿಫಿಕೇಟ್ ಪಡೆದಿರುವ ಸಿನಿಮಾ ಇದೀಗ ಪ್ರದರ್ಶನಕ್ಕೆ ಸಜ್ಜಾಗಿದೆ.

ಈ ಚಿತ್ರವನ್ನು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದ್ದು, ಬಿಡುಗಡೆ ಘೋಷಣೆಯೊಂದಿಗೆ ಭಾವನಾತ್ಮಕ ಸಂದೇಶವನ್ನೂ ಹಂಚಿಕೊಂಡಿದೆ. “ಬೆಂಕಿಯಲ್ಲಿ ತಯಾರಾಗಿ, ಸಮಯದಲ್ಲಿ ರೂಪುಗೊಂಡ ಈ ಸಿನಿಮಾ ಇತಿಹಾಸ ಬರೆಯಲು ಸಜ್ಜಾಗಿದೆ” ಎಂಬ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜನವರಿ 9ರಂದು ಬಿಡುಗಡೆಯಾಗಬೇಕಿದ್ದ ಚಿತ್ರವು ಕಾನೂನು ವಿವಾದಗಳು, ಸೆನ್ಸಾರ್ ಪ್ರಕ್ರಿಯೆ ಮತ್ತು ದೃಶ್ಯ ಸೋರಿಕೆ ಪ್ರಕರಣಗಳಿಂದ ಏಳು ತಿಂಗಳು ವಿಳಂಬವಾಗಿತ್ತು. ಇದೀಗ ಎಲ್ಲಾ ಅಡೆತಡೆಗಳನ್ನು ದಾಟಿ ಸಿನಿಮಾ ಬಿಡುಗಡೆಗೆ ಸಜ್ಜಾಗಿರುವುದು ಅಭಿಮಾನಿಗಳಲ್ಲಿ ಭಾರಿ ಸಂಭ್ರಮ ಮೂಡಿಸಿದೆ.

ಇದು ವಿಜಯ್ ಅವರ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಚಿತ್ರದ ಮೇಲಿನ ನಿರೀಕ್ಷೆ ಗರಿಗೆದರಿದೆ. ಎಚ್. ವಿನೋದ್ ನಿರ್ದೇಶಿಸಿರುವ ಈ ರಾಜಕೀಯ ಆ್ಯಕ್ಷನ್ ಎಂಟರ್‌ಟೈನರ್‌ನಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದು, ಬಾಬಿ ಡಿಯೋಲ್, ಪ್ರಕಾಶ್ ರಾಜ್, ಗೌತಮ್ ವಾಸುದೇವ್ ಮೆನನ್, ಪ್ರಿಯಾಮಣಿ, ಮಮಿತಾ ಬೈಜು ಹಾಗೂ ನರೇನ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ.

CWRCಯಿಂದ ಕುಡಿಯುವ ನೀರಿಗೆ ಮಾತ್ರ ಆದೇಶ, ತಮಿಳುನಾಡಿಗೆ ನೀರು ಬಿಡುವ ಸೂಚನೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮಾತ್ರ ನಿರ್ದೇಶನ ನೀಡಿದ್ದು, ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುವಂತೆ ಯಾವುದೇ ಆದೇಶ ನೀಡಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೆಹಲಿಯಲ್ಲಿ ನಡೆದ CWRC ಸಭೆಯಲ್ಲಿ ಕರ್ನಾಟಕದ ಜಲ ಪರಿಸ್ಥಿತಿಯನ್ನು ರಾಜ್ಯದ ಅಧಿಕಾರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಿತಿಯ ಗಮನಕ್ಕೆ ತಂದಿದ್ದಾರೆ ಎಂದು ಹೇಳಿದರು.

ತಮಿಳುನಾಡು ಕಾವೇರಿ ನೀರು ಬಿಡುಗಡೆ ಮಾಡುವಂತೆ ಸಭೆಯಲ್ಲಿ ಒತ್ತಾಯ ಮಾಡಿತ್ತು. ಆದರೆ, ಸಮಿತಿಯು ಕುಡಿಯುವ ನೀರಿನ ಅಗತ್ಯಕ್ಕೆ ಆದ್ಯತೆ ನೀಡುವಂತೆ ಮಾತ್ರ ಸೂಚನೆ ನೀಡಿದೆ. ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

“ತಮಿಳುನಾಡಿಗೆ ತಕ್ಷಣ ನೀರು ಬಿಡುವುದಿಲ್ಲ. ನೀರು ಬಿಡುವಂತೆ ಆದೇಶವೇ ಬಂದಿಲ್ಲ. ಯಾರು ಬೇಕಾದರೂ ಆರೋಪ ಮಾಡಬಹುದು. ಆದರೆ, ಎಷ್ಟು ನೀರು ಬಿಡುಗಡೆ ಮಾಡಲಾಗಿದೆ ಎಂಬುದು ಬಿಳಿಗುಂಡ್ಲು ಮಾಪನ ಕೇಂದ್ರದಲ್ಲೇ ಸ್ಪಷ್ಟವಾಗುತ್ತದೆ. ಸದ್ಯಕ್ಕೆ ತಮಿಳುನಾಡಿಗೆ 3 ಟಿಎಂಸಿ ನೀರು ಮಾತ್ರ ಹರಿದಿದ್ದು, ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲು ನಮ್ಮ ಬಳಿ ಲಭ್ಯತೆ ಇಲ್ಲ” ಎಂದು ಸಚಿವರು ಹೇಳಿದರು.

ಮಂಡ್ಯ ಜಿಲ್ಲೆಯ ರೈತರಿಗೆ ನೀರು ಪೂರೈಕೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, CWRC ಕುಡಿಯುವ ನೀರಿನ ವಿಚಾರವನ್ನು ಮಾತ್ರ ಪ್ರಸ್ತಾಪಿಸಿದೆ. ರೈತರಿಗೆ ನೀರು ಪೂರೈಕೆ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ ಬಳಿಕ ಸರ್ಕಾರದ ಮುಂದಿನ ನಿರ್ಧಾರವನ್ನು ತಿಳಿಸಲಾಗುವುದು ಎಂದು ಹೇಳಿದರು.

ಗ್ರಾಮದ ಮಧ್ಯೆ ತಲೆಬುರುಡೆ, ಮೂಳೆ, ಕುಂಕುಮ-ನಿಂಬೆ! ಅಮಾವಾಸ್ಯೆ ರಾತ್ರಿ ವಾಮಾಚಾರ ಶಂಕೆ; ಗೋಳೂರಿನಲ್ಲಿ ಭೀತಿ

0

ಮೈಸೂರು: ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ಅಮಾವಾಸ್ಯೆ ರಾತ್ರಿ ನಡೆದಿರುವ ಶಂಕಿತ ವಾಮಾಚಾರ ಪ್ರಕರಣ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಗ್ರಾಮದ ಮುಖ್ಯ ರಸ್ತೆಯಲ್ಲೇ ರಂಗೋಲೆ ಹಾಕಿ ಅದರ ಮಧ್ಯದಲ್ಲಿ ಮಾನವನ ತಲೆಬುರುಡೆ, ಹಸ್ತದ ಮೂಳೆ, ಕುಂಕುಮ ಹಾಗೂ ನಿಂಬೆಹಣ್ಣು ಇಡಲಾಗಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ಸ್ಥಳೀಯರು ರಸ್ತೆ ಮಧ್ಯೆ ಈ ದೃಶ್ಯ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ ಅಮಾವಾಸ್ಯೆ ಇದ್ದ ಹಿನ್ನೆಲೆ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಇಂತಹ ಕೃತ್ಯಗಳಿಂದ ಮಹಿಳೆಯರು ಹಾಗೂ ಮಕ್ಕಳು ಭಯಭೀತರಾಗಿದ್ದು, ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಗ್ರಾಮಸ್ಥ ಮುದ್ದುಮಾದಶೆಟ್ಟಿ, “ಇದು ನಮ್ಮ ಗ್ರಾಮದ ಮಧ್ಯಭಾಗದಲ್ಲೇ ನಡೆದಿರುವ ಗಂಭೀರ ಘಟನೆ. ಯಾರು ಈ ಕೃತ್ಯ ಎಸಗಿದ್ದಾರೆ ಎಂಬುದನ್ನು ಪೊಲೀಸರು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಆಡಳಿತ ಎಚ್ಚರಿಕೆ ವಹಿಸಬೇಕು” ಎಂದು ಒತ್ತಾಯಿಸಿದರು.

ಮಾಹಿತಿ ಪಡೆದ ನಂಜನಗೂಡು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಹಿಂದಿನ ಉದ್ದೇಶ ಹಾಗೂ ಕೃತ್ಯ ಎಸಗಿದವರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಗಮನಾರ್ಹವಾಗಿ, ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಸಿವಿಲ್ ಪ್ರಕರಣ ತನ್ನ ಪರವಾಗಿ ತೀರ್ಪು ಬರಬೇಕೆಂಬ ಉದ್ದೇಶದಿಂದ ನ್ಯಾಯಾಧೀಶರ ಆಸನದ ಮೇಲೆ ಸಾಸಿವೆ ಚೆಲ್ಲಿ ಮಾಟಮಂತ್ರದ ಪ್ರಯತ್ನ ನಡೆಸಿದ ಆರೋಪದಲ್ಲಿ 65 ವರ್ಷದ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದ ಘಟನೆ ಕೂಡ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಸುಪ್ರೀಂಕೋರ್ಟ್ʼನಲ್ಲಿ ಗದ್ದಲ, ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ

0

ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿ, ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಉತ್ತರ ಪ್ರದೇಶದ ಇಟಾವಾ ಮೂಲದ ಲಕ್ನೋ ವಿಶ್ವವಿದ್ಯಾಲಯದ ಮೂರನೇ ವರ್ಷದ ಕಾನೂನು ವಿದ್ಯಾರ್ಥಿ ಪ್ರಬಲ್ ಪ್ರತಾಪ್ ಸಿಂಗ್ (24) ಹಾಗೂ ರಾಯ್‌ಬರೇಲಿ ಜಿಲ್ಲೆಯ ಎರಡನೇ ವರ್ಷದ ಕಾನೂನು ವಿದ್ಯಾರ್ಥಿ ಚಂದರ್ ಭನ್ (23) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಜುಲೈ 10ರಂದು ಸುಪ್ರೀಂಕೋರ್ಟ್‌ನ ಕೋರ್ಟ್ ಹಾಲ್ ಸಂಖ್ಯೆ–13ರಲ್ಲಿ ವಿಶೇಷ ರಜಾ ಅರ್ಜಿ (ಸಿವಿಲ್) ವಿಚಾರಣೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅರ್ಜಿದಾರರಾಗಿ ಸ್ವತಃ ಹಾಜರಾಗಿದ್ದ ಪ್ರಬಲ್ ಪ್ರತಾಪ್ ಸಿಂಗ್ ನ್ಯಾಯಾಲಯದ ಒಳಗೆ ಕಾಗದಗಳನ್ನು ಎಸೆದು ಗದ್ದಲ ಸೃಷ್ಟಿಸಿದ್ದಲ್ಲದೆ, ಅಸಭ್ಯ ಹಾಗೂ ಅಸಂಸದೀಯ ಭಾಷೆ ಬಳಸಿ ವಿಚಾರಣೆಗೆ ಅಡ್ಡಿಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿದಾಗ, ಆರೋಪಿಗಳು ಅವರ ಮೇಲೆ ಬಲಪ್ರಯೋಗ ನಡೆಸಿ ಅಧಿಕೃತ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಳಿಕ ಸುಪ್ರೀಂಕೋರ್ಟ್ ಸೂಚನೆಯಂತೆ ಇಬ್ಬರನ್ನೂ ವೈದ್ಯಕೀಯ ಪರೀಕ್ಷೆಗಾಗಿ ಇನ್‌ಸ್ಟಿಟ್ಯೂಟ್ ಆಫ್ ಹ್ಯೂಮನ್ ಬಿಹೇವಿಯರ್ ಅಂಡ್ ಅಲೈಡ್ ಸೈನ್ಸಸ್ (IHBAS) ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಇಬ್ಬರಿಗೂ ತಕ್ಷಣದ ಮನೋವೈದ್ಯಕೀಯ ಚಿಕಿತ್ಸೆಯ ಅಗತ್ಯವಿಲ್ಲ ಎಂದು ವರದಿ ನೀಡಿದ್ದಾರೆ.

ತನಿಖೆ ವೇಳೆ ಆರೋಪಿಗಳ ಬಳಿಯಿಂದ ಆಕ್ಷೇಪಾರ್ಹ ಪದಗಳನ್ನು ಒಳಗೊಂಡ ಕರಪತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸುಪ್ರೀಂಕೋರ್ಟ್ ಭದ್ರತಾ ಸಿಬ್ಬಂದಿಯೊಬ್ಬರು ನೀಡಿದ ದೂರಿನ ಮೇರೆಗೆ ದೆಹಲಿಯ ತಿಲಕ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 132, 221, 224 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಈ ವರ್ಷದ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಸ್ಪರ್ಧೆ ಆಯೋಜಿಸುವ ಕುರಿತು ಸರ್ಕಾರ ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಎಲ್ಲಾ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಸಿದ್ಧತೆಗಳ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭಕ್ತರ ಅನುಕೂಲಕ್ಕಾಗಿ ಈ ಬಾರಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.

ಆಷಾಢ ಶುಕ್ರವಾರದಂದು ವಿಐಪಿ ದರ್ಶನಕ್ಕೆ ವಿಶೇಷ ವೇಳಾಪಟ್ಟಿ ನಿಗದಿಪಡಿಸಲಾಗಿದ್ದು, ಬೆಳಗ್ಗೆ 9.30 ಗಂಟೆಯೊಳಗೆ ಮಾತ್ರ ವಿಐಪಿಗಳು ದರ್ಶನ ಪಡೆಯಬೇಕು. ನಿಗದಿತ ಸಮಯದ ನಂತರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದು ಹೇಳಿದರು. ಜೊತೆಗೆ, ವಿಐಪಿಗಳ ವಾಹನಗಳನ್ನು ಮಹಿಷಾಸುರ ಪ್ರತಿಮೆ ಸಮೀಪ ನಿಲ್ಲಿಸಿ, ಅಲ್ಲಿಂದ ದೇವಸ್ಥಾನದ ವಿಶೇಷ ವಾಹನಗಳ ಮೂಲಕ ದೇವಾಲಯಕ್ಕೆ ಕರೆತರಲಾಗುತ್ತದೆ ಎಂದು ವಿವರಿಸಿದರು.

ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ 300 ರೂಪಾಯಿ ವಿಶೇಷ ದರ್ಶನ ಟಿಕೆಟ್ ಅನ್ನು ರದ್ದುಪಡಿಸಲಾಗಿದ್ದು, 2,000 ರೂಪಾಯಿ ವಿಐಪಿ ಟಿಕೆಟ್ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು. ಭಕ್ತರಿಗಾಗಿ ಉಚಿತ ಸಾರಿಗೆ, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವುದನ್ನು ಉಲ್ಲೇಖಿಸಿದ ಸಚಿವರು, ಪರಿಸರದ ಮೇಲೆ ಪರಿಣಾಮ ಸೇರಿದಂತೆ ವಿವಿಧ ಅಂಶಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದರು. ಸದ್ಯಕ್ಕೆ ಕಂಬಳ ನಡೆಸುವ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಕಂಬಳವೂ ರಾಜ್ಯದ ಸಾಂಪ್ರದಾಯಿಕ ಕ್ರೀಡೆ ಮತ್ತು ಸಂಸ್ಕೃತಿಯ ಭಾಗವಾಗಿದೆ. ಮೈಸೂರು ಭಾಗದಲ್ಲಿಯೂ ಈ ಸಂಪ್ರದಾಯವನ್ನು ಪರಿಚಯಿಸುವ ಉದ್ದೇಶದಿಂದ ಮಾತ್ರ ಈ ಬಗ್ಗೆ ಚಿಂತನೆ ನಡೆದಿದೆ. ಆದರೆ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈಗೊಳ್ಳಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

4% ಬಡ್ಡಿ ಆಮಿಷ, ₹165 ಕೋಟಿ ವಂಚಿಸಿ ವಿದೇಶಕ್ಕೆ ಪರಾರಿ: ಖಾಸಗಿ ಫೈನಾನ್ಸ್ ವಿರುದ್ಧ ಸಾವಿರಾರು ಹೂಡಿಕೆದಾರರ ಆಕ್ರೋಶ

0

ಬೆಳಗಾವಿ: ಹೆಚ್ಚಿನ ಬಡ್ಡಿ ನೀಡುವ ಭರವಸೆ ನೀಡಿ ಸಾವಿರಾರು ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿದ್ದ ಖಾಸಗಿ ಫೈನಾನ್ಸ್ ಸಂಸ್ಥೆಯ ವಿರುದ್ಧ ಭಾರೀ ವಂಚನೆ ಆರೋಪ ಕೇಳಿಬಂದಿದೆ. ಟಿಳಕವಾಡಿಯ ‘ಅಪೇಕ್ಸ್ ಬಿಜ್ ಕಾರ್ಫ್ ಎಲ್‌ಎಲ್‌ಪಿ’ ಸಂಸ್ಥೆ ಸುಮಾರು ₹165 ಕೋಟಿ ವಂಚನೆ ನಡೆಸಿದೆ ಎಂದು ಆರೋಪಿಸಿ ಹೂಡಿಕೆದಾರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರ ಆರೋಪದಂತೆ, ಸುಮಾರು 3,500ಕ್ಕೂ ಹೆಚ್ಚು ಜನರಿಂದ ತಿಂಗಳಿಗೆ 4 ಶೇಕಡಾ ಬಡ್ಡಿ ನೀಡುವುದಾಗಿ ಹೇಳಿ ಹಣ ಹೂಡಿಕೆ ಮಾಡಿಸಿಕೊಂಡ ಕಂಪನಿ, ಬಳಿಕ ಹಣ ಮರುಪಾವತಿಸದೇ ವಂಚಿಸಿದೆ.

ಕಂಪನಿಯ ಮಾಲೀಕರಾದ ಕಾಶೀನಾಥ ವಾಗ್ಮೂರೆ ಮತ್ತು ಗಣೇಶ್ ಭಂಡಾರಿ ದುಬೈಗೆ ತೆರಳಿದ್ದು, ಹೂಡಿಕೆದಾರರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ದೂರಲಾಗಿದೆ. ವಿಡಿಯೋ ಸಂದೇಶಗಳ ಮೂಲಕ ಮಾತ್ರ ಪ್ರತಿಕ್ರಿಯಿಸುತ್ತಿರುವ ಅವರು ಹೂಡಿಕೆದಾರರ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಹೂಡಿಕೆದಾರರು, ಆರೋಪಿಗಳನ್ನು ಬಂಧಿಸಿ ತಮ್ಮ ಹಣ ವಾಪಸ್ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಪ್ರಕರಣವು ಬೆಳಗಾವಿಯಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳ ಕಾರ್ಯವೈಖರಿಯ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎಬ್ಬಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳ ತನಿಖೆ ನಿರೀಕ್ಷೆಯಲ್ಲಿದೆ.

ರೈತರ ಪ್ರತಿಭಟನೆ ಬೆನ್ನಲ್ಲೇ ಬಿಡದಿ ಟೌನ್ ಶಿಪ್ʼಗೆ ತಾತ್ಕಾಲಿಕ ಬ್ರೇಕ್: ‘ಬಲವಂತದ ಭೂಸ್ವಾಧೀನ ಇಲ್ಲ’ ಎಂದ ಸಿಎಂ ಡಿಕೆಶಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗಳು ಮತ್ತು ರೈತರ ಪ್ರತಿಭಟನೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಯೋಜನೆಯ ಅನುಷ್ಠಾನವನ್ನು ಎರಡು ತಿಂಗಳ ಕಾಲ ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಈ ಅವಧಿಯಲ್ಲಿ ವಿಶೇಷ ಸಮಿತಿ ರಚಿಸಿ ವರದಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಸಣ್ಣ ಸಮಿತಿಯೊಂದನ್ನು ರಚಿಸಲಾಗುವುದು. ಸಮಿತಿ ಎರಡು ತಿಂಗಳೊಳಗೆ ವರದಿ ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಭೂಮಿ ನೀಡಲು ಇಚ್ಛೆ ಇರುವವರು ಸ್ವಯಂಪ್ರೇರಿತವಾಗಿ ನೀಡಬಹುದು. ನೀಡಲು ಇಚ್ಛಿಸದವರ ಮೇಲೆ ಯಾವುದೇ ಒತ್ತಡ ಇರುವುದಿಲ್ಲ. ಇದು ನಿರಂತರ ಪ್ರಕ್ರಿಯೆಯಾಗಿದ್ದು, ಸಮಿತಿಯ ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಬಿಡದಿಯಲ್ಲಿ ನಡೆದ ಪ್ರತಿಭಟನೆ ಹಾಗೂ ಬೆಳವಣಿಗೆಗಳು ತಮ್ಮ ಮನಸ್ಸಿಗೆ ನೋವುಂಟು ಮಾಡಿವೆ ಎಂದು ಹೇಳಿದ ಮುಖ್ಯಮಂತ್ರಿ, “ಬಿಡದಿ ಟೌನ್‌ಶಿಪ್ ನನ್ನ ವೈಯಕ್ತಿಕ ಕನಸಿನ ಯೋಜನೆಯಲ್ಲ. ಈ ಯೋಜನೆಗೆ ನಾನು ಅಡಿಪಾಯ ಹಾಕಿಲ್ಲ. ನಾನು ಮುಖ್ಯಮಂತ್ರಿ ಆಗಿರುವುದನ್ನು ಕೆಲವರು ಸಹಿಸಿಕೊಳ್ಳಲಾಗದೆ ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ನಾನು ರೈತನ ಮಗ. ರೈತರ ಶ್ರಮ, ಅವರ ಭೂಮಿಯ ಮಹತ್ವ ಮತ್ತು ನೋವು ನನಗೆ ಚೆನ್ನಾಗಿ ಗೊತ್ತಿದೆ. ರೈತರ ಹಿತಾಸಕ್ತಿಗೆ ಧಕ್ಕೆ ಉಂಟಾಗದಂತೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ‌” ಎಂದು ಸಿಎಂ‌ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನೆಹರು ತಾರಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

“ಆಗಸ್ಟ್ 6 ರವರೆಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು, ಸಲಹೆಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ನನಗೆ ಬರೆಯಬಹುದು. ಇದನ್ನು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಆಸ್ತಿ ಕೊಂಡವರಿಗೆ ಅನುಕೂಲವಾಗುವಂತೆ ಈ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ. ಎಲ್ಲಾ ಪಕ್ಷದ ನಾಯಕರಿಗೂ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಅವಕಾಶ ನೀಡಲಾಗಿದೆ. ಶಾಸಕರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದು. ಏಕಪಕ್ಷೀಯವಾಗಿ ನಾನು ನಿರ್ಧಾರ ಮಾಡಲು ಸಾಧ್ಯವಿಲ್ಲ” ಎಂದರು.

“ನಿಮ್ಮ ಯಾವುದೇ ಸಲಹೆ ಸೂಚನೆಗಳಿದ್ದರೂ ನನಗೆ ಹಾಗೂ ಕೃಷ್ಣ ಬೈರೇಗೌಡರಿಗೆ ನೀಡಿ. ನನ್ನ ಮೊಬೈಲ್ ಸಂಖ್ಯೆ ನೀಡಲು ತಿಳಿಸುತ್ತೇನೆ. ಅದಕ್ಕೆ ನಿಮ್ಮ ಸಲಹೆಗಳನ್ನು ಕಳುಹಿಸಬಹುದು. ಜೊತೆಗೆ ಡೆವಲಪರ್ ಗಳನ್ನು ಕರೆಸಿ ಅವರ ಜೊತೆಯೂ ಮಾತನಾಡಿ ಕಾನೂನು ಏನಿದೆ ಎಂದು ಮನವರಿಕೆ ಮಾಡಲಾಗುವುದು” ಎಂದರು.

“ಬೆಂಗಳೂರಿನಲ್ಲಿ 40 ಲಕ್ಷ ಆಸ್ತಿಗಳಿದ್ದು ಈಗಾಗಲೇ 26 ಲಕ್ಷ ಆಸ್ತಿಗಳಿಗೆ ಖಾತೆ ನೀಡಲಾಗಿದೆ. ಒಂದಷ್ಟು ಜನ ಕಾನೂನುಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಮೂರು ಮಹಡಿಗಳಿಗೆ ಅನುಮತಿ ಪಡೆದು ಐದು ಮಹಡಿಗಳನ್ನು ನಿರ್ಮಾಣ‌ ಮಾಡಿದ್ದಾರೆ. ಹೆಚ್ಚಿನವರು ಪ್ರಾಮಾಣಿಕರಿದ್ದು ಅವರು ಕಾನೂನಿನ ಅಡಿ ಕೆಲಸ ಮಾಡಿದ್ದಾರೆ” ಎಂದರು.

“ದೊಡ್ಡ, ದೊಡ್ದ ಬಿಲ್ಡರ್ ಗಳ ವಿಚಾರಕ್ಕಿಂತ ಸಣ್ಣ ಪುಟ್ಟ ಬಿಲ್ಡರ್ ಗಳು 60/80 ಅಥವಾ ಕಂದಾಯ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡಿ ಕಾನೂನು ಮುರಿಯುತ್ತಾರೆ. ಅದರ ಗುಣಮಟ್ಟ ಕೂಡ ಸರಿಯಾಗಿರುವುದಿಲ್ಲ” ಎಂದರು.

ನನ್ನ ಹೆಸರನ್ನೇ ನೋಟಿಸ್ ಬೋರ್ಡ್ ನಲ್ಲಿ ಹಾಕಿದ್ದರು

“ಒಮ್ಮೆ ಅಪಾರ್ಟ್ ಮೆಂಟ್ ನಿವಾಸಿಗಳಾದ ಮೇಲೆ ಒಪ್ಪಂದ ಮಾಡಿಕೊಳ್ಳುವಾಗಲೇ ಒಂದು ರೀತಿ, ನೋಂದಣಿ ಮಾಡಿಕೊಳ್ಳುವಾಗಲೇ ಇನ್ನೊಂದು ರೀತಿ, ಮನೆ ಸಿಕ್ಕ ಮೇಲೆಯೇ ಮತ್ತೊಂದು ರೀತಿಯಾಗಿ ಬದಲಾವಣೆ ಆಗುವುದು ನೋಡಿ ನನಗೆ ಬೇಸರವಾಗಿದೆ. ಅಪಾರ್‌ಮೆಂಟ್ ಅಸೋಸಿಯೇಷನ್ ಅಲ್ಲಿ ಒಂದಿಬ್ಬರು ತಕರಾರು ಗಿರಾಕಿಗಳು ಸೇರಿಕೊಂಡು ತೊಂದರೆ ತೊಡಕುಗಳನ್ನು ನೀಡುವುದೇ ಅವರ ಕೆಲಸವಾಗುತ್ತದೆ.

ಉದಾಹರಣೆಗೆ ನನ್ನ ಅಪಾರ್ಟ್ ಮೆಂಟ್ ಅಲ್ಲಿ ನನ್ನ ಹೆಸರಿಗೆ ನೋಂದಣಿ ಮಾಡಿಕೊಳ್ಳುವ ಮೊದಲೇ ನನ್ನ ಹೆಸರನ್ನೇ ನೋಟಿಸ್ ಬೋರ್ಡ್ ಅಲ್ಲಿ ಹಾಕಿದ್ದರು. ಬೆನ್ನಿಗಾನಹಳ್ಳಿಯಲ್ಲೂ ಇದೇ ರೀತಿ ನನಗೆ ಮಾಡಿದ್ದರು. ಒಳಗೆ ನನ್ನನ್ನ ಬಿಡುವುದಿಲ್ಲ ಎಂದು ಹೇಳಿದ್ದರು. ಇಂತಹ ಅಪಾರ್ಟ್ ಮೆಂಟ್ ಅಸೋಸಿಯೇಷನ್ ಗಳು ಇಲ್ಲಿವೆ” ಎಂದರು.

“ಪ್ರೀತಿ, ವಿಶ್ವಾಸ, ನಂಬಿಕೆಯಿಂದ ನಮ್ಮ ಮೇಲಿನ ಅಭಿಮಾನದಿಂದ ಜನರು ಸೇರಿದ್ದಾರೆ. ಕಳೆದ ಬಾರಿ ಒಬ್ಬರು ನನಗೆ ಹೇಳಿದ್ದರು. ನೀವು ಒಂದಷ್ಟು ನಿಯಮಗಳನ್ನು ನೀವು ಮಾಡದೇ ಇದ್ದರೇ ಮುಂದಿನ ಚುನಾವಣೆಯಲ್ಲಿ ನಿಮಗೆ ಬುದ್ದಿ ಕಲಿಸುತ್ತೇವೆ ಎಂದಿದ್ದರು. ಬುದ್ದಿ ಕಲಿಸೋದು ಎಂದರೆ ಏನು? ಜನರಿಗೆ ಸಹಾಯ ಮಾಡಬೇಕು ಎಂದು ಭಗವಂತ ನಮಗೆ ಈ ಅವಕಾಶ ನೀಡಿದ್ದಾನೆ. ನಮ್ಮ ಪಕ್ಷ ಅವಕಾಶ ನೀಡಿದೆ.‌ ಅದಕ್ಕೆ ನಾನು ಎಂದಿಗೂ ನಕಾರಾತ್ಮಕ ಅಂಶಗಳ ಬಗ್ಗೆ ಗಮನವನ್ನೇ ನೀಡುವುದಿಲ್ಲ. ಧನಾತ್ಮಕ ಚಿಂತನೆಗಳೇ ನನ್ನ ಶಕ್ತಿ” ಎಂದರು.

“ಜನರು ಕಷ್ಟಪಟ್ಟು ತಮ್ಮ ಉಳಿತಾಯ ಸೇರಿಸಿ ತಲೆ ಮೇಲೆ ಸೂರು ಮಾಡಿಕೊಂಡಿರುತ್ತಾರೆ. ಜೀವನದಲ್ಲಿ ಎಷ್ಟೋ ಜನಕ್ಕೆ ಈ ಅವಕಾಶ ಸಿಗುವುದಿಲ್ಲ. ಬೇರೆ, ಬೇರೆ ನಗರಗಳಲ್ಲಿ ಇರುವ ಜನ ತಮ್ಮ ಆಸ್ತಿಗಳನ್ನು ಮಾರಿಕೊಂಡು ಬೆಂಗಳೂರಿಗೆ ಬರುತ್ತಿದ್ದಾರೆ. ಅಪಾರ್ಟ್ ಮೆಂಟ್ ನಿವಾಸಿಗಳು ರಾಜಕೀಯವಾಗಿ ಒಂದಷ್ಟು ವಿರೋಧಾಭಾಸ ಉಂಟಾಗಿ ಆಗಾಗ್ಗೆ ಹೆಚ್ಚು‌ ಕಡಿಮೆ ಮಾಡುತ್ತೀರಿ. ಆದರೂ ನಿಮ್ಮ ಬಗ್ಗೆ ನನಗೆ ನಂಬಿಕೆಯಿದೆ. ಜನರ ತೊಂದರೆಗಳನ್ನು ನಿವಾರಿಸಲು ನಾವು ಅಧಿಕಾರಕ್ಕೆ ಬಂದಿದ್ದೇವೆ ಹೊರತು ವೈಯಕ್ತಿಕ ಅಭಿಲಾಷೆಗಳಿಗಾಗಿ ಅಲ್ಲ” ಎಂದು ಹೇಳಿದರು.

“ಕಷ್ಟಪಟ್ಟು ನೀವು ಗಳಿಸಿದ ಆಸ್ತಿ ನಿಮಗೇ ಸೇರಬೇಕು ಎಂದು ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡಿದ್ದೇವೆ. ಒಂದೇ ಒಂದು ರೂಪಾಯಿ ಲಂಚ ಪಡೆಯದೇ ನಿಮ್ಮ ಹಾಗೂ ಆಸ್ತಿಯ ಪೋಟೋ ಸಮೇತ ಇ ಖಾತೆ ನೀಡುವ ಅತ್ಯುತ್ತಮ ಯೋಜನೆಯನ್ನು ನಾವು ನೀಡಿದ್ದೇವೆ. ಇಡೀ ದೇಶದಲ್ಲಿಯೇ ಅತ್ಯುತ್ತಮ ಯೋಜನೆ ಇದಾಗಿದೆ. ದೇಶದ ಯಾವುದೇ ನಗರದಲ್ಲಿ ಇಂತಹ ಯೋಜನೆ ಇದೆಯೇ ಎಂದು ನಿಮ್ಮ ಸ್ನೇಹಿತರನ್ನು ಕೇಳಿನೋಡಿ” ಎಂದರು.

ಎಸ್ ಟಿಪಿ, ಕುಡಿಯುವ ನೀರಿನ ಬಗ್ಗೆ ಗಮನ ಹರಿಸಿ

“ಎಲ್ಲಾ ಅಸೋಸಿಯೇಷನ್ ಗಳು ಎಸ್ ಟಿಪಿ ಬಗ್ಗೆ ಗಮನ ಹರಿಸಬೇಕು. ಅಪಾರ್ಟ್ ಮೆಂಟ್ ಗಲ್ಲಿ STP, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲು ಸರ್ಕಾರ ಸುಧಾರಣೆಗಳನ್ನು ತಂದಿದೆ. ಅಂತರ್ಜಲ ವೃದ್ಧಿ, ಕಾವೇರಿ 5 ನೇ ಹಂತಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ತರಲು ಸಾಕಷ್ಟು ಶ್ರಮವಹಿಸಿದೆ.

ಅನೇಕರಿಗೆ ಕಂತುಗಳ ಮೂಲಕ ಹಣ ನೀಡಿ ನೀರಿನ ಸಂಪರ್ಕ ಪಡೆಯಲು ಅವಕಾಶ ನೀಡಲಾಗಿದೆ. ಕೆಲವು ಡೆವಲಪರ್ ಗಳು ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಅವರೊಂದಿಗೂ ಮಾತನಾಡಿ ದಾಖಲಾತಿಗಳ ವರ್ಗಾವಣೆ ಸರಾಗವಾಗಿ ಆಗಬೇಕೆಂದು ಸೂಚಿಸಲಾಗುವುದು. ಸಮಸ್ಯೆಗಳನ್ನು ಆದಷ್ಟು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ” ಎಂದರು.

“ಒಂದಷ್ಟು ಡೆವಲಪರ್ ಗಳು ದಾರಿ ತಪ್ಪಿಸುತ್ತಾರೆ, ಸರಿಯಾದ ದಾಖಲೆ ನೀಡುವುದಿಲ್ಲ. ಇಡೀ ಆಸ್ತಿಯನ್ನು ಅಡವಿಟ್ಟು ಸಾಲ ಮಾಡಿರುತ್ತಾರೆ. ಆಗ ಬ್ಯಾಂಕ್ ನವರು ನಿಮ್ಮ ಸುಪರ್ದಿಗೆ ಮನೆ ಫ್ಲಾಟ್ ನೀಡುವುದಿಲ್ಲ‌” ಎಂದರು.

ಅಧಿಕಾರ ವಿಕೇಂದ್ರೀಕರಣ ನಮ್ಮ ಸರ್ಕಾರದ ಉದ್ದೇಶ

“ಈಸ್ ಆಫ್ ಬಿಸಿನೆಸ್ ಗಾಗಿ ನಗರದಲ್ಲಿ ಐದು ಕಾರ್ಪೊರೇಷನ್ ಗಳನ್ನು ರಚಿಸಲಾಗಿದ್ದು, ವಿಮಾನ ನಿಲ್ದಾಣ, ಎಲೆಕ್ಟ್ರಾನಿಕ್ ಸಿಟಿ ಬಳಿ, ಅಕ್ಕಪಕ್ಕದ ಅಪಾರ್ಟ್ ಮೆಂಟ್ ಗಳ ಸಮಸ್ಯೆಗಳನ್ನೂ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ. ಅಧಿಕಾರ ವಿಕೇಂದ್ರೀಕರಣ ನಮ್ಮ ಸರ್ಕಾರದ ಉದ್ದೇಶ. ವ್ಯಾಜ್ಯಗಳಿಗೆ ಹೋಗದೆ ಬಗೆಹರಿಸಿಕೊಳ್ಳಲು ಒತ್ತು ನೀಡಲಾಗುತ್ತಿದೆ ಎಂದರು. ಜನರ ಧ್ವನಿಯೇ ಸರ್ಕಾರದ ಧ್ವನಿಯಾಗಬೇಕು. ಟೀಂ ಕರ್ನಾಟಕವಾಗಿ ನಾವೆಲ್ಲ ಕೆಲಸ ಮಾಡಬೇಕೆಂದು” ಕರೆ ನೀಡಿದರು.

ಬಡವರೂ ಕೂಡ ಮನೆ ಕಟ್ಟಲು ಅಗತ್ಯ ನೆರವಿಗೆ ಸರ್ಕಾರ ಬದ್ಧ

“ಬಡವರೂ ಕೂಡ ಮನೆ ಕಟ್ಟಲು ಅಗತ್ಯ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳು ಮನೆ ಬಾಗಿಲಿಗೆ ಬಂದು ದಾಖಲಾತಿಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ. ನಿಮ್ಮ ದನಿಯೇ ಸರ್ಕಾರದ ದನಿ” ಎಂದು ಹೇಳಿದರು.

ಹೈ ರೈಸ್ ಕಟ್ಟಡಗಳ ನಿರ್ಮಾಣಕ್ಕೆ ಒತ್ತು

“ನಗರದಲ್ಲಿ ಹೈ ರೈಸ್ ಕಟ್ಟಡಗಳ ಬಗ್ಗೆ ಗಮನಹರಿಸಿ, ರಸ್ತೆಗಳನ್ನು ವಿಸ್ತರಿಸುವ ಬಗ್ಗೆ ಒತ್ತು ನೀಡಲಾಗುತ್ತಿದೆ . ನಗರದಲ್ಲಿ 132 ಕಿಮೀ ಪೆರಿಫೆರಲ್ ವರ್ತುಲ ರಸ್ತೆ,(ಬೆಂಗಳೂರು ಬ್ಯುಸಿನೆಸ್ ಕಾರಿಡಾರ್) ನಿರ್ಮಾಣವಾಗುತ್ತಿದೆ ಎಂದರು. ದೇಶದ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಭೂ ಸ್ವಾಧೀನಕ್ಕೆ ರಾಜ್ಯದಲ್ಲಿ ರೈತರಿಗೆ ಗರಿಷ್ಠ ಮೊತ್ತದ ಪರಿಹಾರವನ್ನು ನೀಡಲಾಗುತ್ತಿದೆ” ಎಂದು ಹೇಳಿದರು.

“ಕಾನೂನಾತ್ಮಕ ಸಲಹೆಗಳನ್ನು ನೀಡಿ ಅದರಂತೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಪ್ಲೋರ್ ವೈಜ್ ಪ್ರಿಮಿಯಂ ಎಫ್ ಎಆರ್ ನೀಡುವುದನ್ನು ಪ್ರಾರಂಭ ಮಾಡಿದೆ. ಟಿಡಿಆರ್ ಸಹ ನೀಡಲಾಯಿತು. ಯಾರೋ ಒಂದಿಬ್ಬರು ಬೋಗಸ್ ಪ್ರೀಮಿಯಂ ಎಫ್ ಎಆರ್ ಇಟ್ಟುಕೊಂಡು ಇದರ ವಿರುದ್ಧ ನ್ಯಾಯಾಲಯಕ್ಕೆ ತೆರಳಿ ಒಂದು ವರ್ಷ ನಿಲ್ಲಿಸಿಬಿಟ್ಟರು.

ಕೆಲವರೆಲ್ಲಾ ಕಟ್ಟಡ ಕಟ್ಟಲು ಅಡಚಣೆ ಉಂಟಾಯಿತು. ಆನಂತರ ನ್ಯಾಯಾಲಯ‌ ಸರ್ಕಾರ ಉತ್ತಮ ಕೆಲಸ ಮಾಡಿದೆ ಎಂದು ನಮ್ಮ ಪರವಾಗಿ ತೀರ್ಪು ನೀಡಿತು‌. ಜೊತೆಗೆ ಅನುಮತಿ ನೀಡಿತು. ದೊಡ್ಡ ರಸ್ತೆ ಇರುವ ಕಡೆ ಎತ್ತರದ ಕಟ್ಟಡ ಕಟ್ಟಬಹುದು. ಸಣ್ಣ ರಸ್ತೆ ಇರುವ ಕಡೆ ಕಟ್ಟಲು ಆಗುವುದಿಲ್ಲ. ಭೂಮಿ ಬೆಲೆ ಕಡಿಮೆ ಆಗಬೇಕು ಎಂಬುದು ನನ್ನ ಆಸೆ” ಎಂದರು.

ಬೆಂಗಳೂರು ಭಾರತದ ಹೃದಯ

“ದಾವೋಸ್ ಗೆ ತೆರಳಿದಾಗ ಎಲ್ಲಾ ಉದ್ಯಮಿಗಳು ನನ್ನನ್ನೇ ಹುಡುಕಿಕೊಂಡು ಬಂದು ಮಾತನಾಡಿಸುತ್ತಿದ್ದರು. ಆಗ ಮಹಾರಾಷ್ಟ್ರದವರು ಏಕೆ ನಿಮ್ಮನ್ನೇ ಹುಡುಕಿಕೊಂಡು ಬರುತ್ತಿದ್ದಾರೆ ಎಂದು ಕೇಳಿದರು. ಆಗ ನಾನು ಬೇರೆ ದೇಶದವರನ್ನು ಏಕೆ ನಮ್ಮ ಬಗ್ಗೆ ನಿಮಗೆ ಆಸಕ್ತಿ ಎಂದು ಕೇಳಿದಾಗ, “ಬೆಂಗಳೂರಲ್ಲಿ 1 ಡಾಲರ್ ವೆಚ್ಚಕ್ಕೆ ಮುಂಬೈನಲ್ಲಿ ಮೂರುವರೆ ಡಾಲರ್ ಗೆ ಸಮ.

ಅಷ್ಟು ವೆಚ್ಚ ಹೆಚ್ಚಳವಾಗಿದೆ ಅಲ್ಲಿ. ಬೆಂಗಳೂರಿನಲ್ಲಿ 2 ಕೋಟಿಗೆ ಒಂದು ಮನೆ ದೊರೆಯಲಿದೆ. ಆದೇ ಮುಂಬೈನಲ್ಲಿ 20 ಕೋಟಿ ವೆಚ್ಚ ಮಾಡಬೇಕಿದೆ. ಅದಕ್ಕೆ ಎಲ್ಲರೂ ಬೆಂಗಳೂರನ್ನು ಮೊದಲ ಆಯ್ಕೆಯನ್ನಾಗಿ ನೋಡುತ್ತಿದ್ದಾರೆ. ಅಂತರರಾಷ್ಟ್ರೀಯ ನಾಯಕರೂ ಬೆಂಗಳೂರನ್ನು ಮೆಚ್ಚುತ್ತಿದ್ದಾರೆ. ಇಲ್ಲಿನ ಶಿಕ್ಷಣ ಗುಣಮಟ್ಟವೂ ಚೆನ್ನಾಗಿದೆ” ಎಂದರು.

“ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಮ್ಮ‌‌ ಸರ್ಕಾರ ಮುಂದಾಗಿದೆ. ಅದಕ್ಕೆ ಸೂಕ್ತ ಸ್ಥಳ ಹುಡುಕಲಾಗುತ್ತಿದೆ. ಬೆಂಗಳೂರು ನಿಮ್ಮೆಲ್ಲರ ಹೃದಯದಂತಿದೆ. ಜೊತೆಗೆ ಭಾರತದ ಹೃದಯದಂತೆ ಕೆಲಸ ಮಾಡುತ್ತಿದೆ” ಎಂದು ತಿಳಿಸಿದರು.