Home Blog

ಹಾಸನದಲ್ಲಿ ದಾರುಣ ಘಟನೆ! ಆಡಿಯೋ ರೆಕಾರ್ಡ್ ಮಾಡಿ ರೈಲಿಗೆ ತಲೆಕೊಟ್ಟ ಯುವಕ

ಹಾಸನ: ಯುವತಿ ವಿಚಾರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ.

ತಾಲೂಕಿನ ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ ಎಂದು ಗುರುತಿಸಲಾಗಿದೆ. ಯುವತಿಯೊಬ್ಬಳ ವಿಚಾರದಲ್ಲಿ ಗ್ರಾಮದ ಶಂಕರ, ದರ್ಶನ್, ಚೇತನ್ ಹಾಗೂ ದಿನೇಶ್ ಎಂಬವರು ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಅಭಿಷೇಕ್ ಆತ್ಮಹತ್ಯೆಗೆ ಮುನ್ನ ಆಡಿಯೋ ರೆಕಾರ್ಡ್ ಮಾಡಿಟ್ಟಿದ್ದಾನೆ ಎನ್ನಲಾಗಿದೆ.

ಆಡಿಯೋದಲ್ಲಿ ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುವ ಅಭಿಷೇಕ್, ಬಳಿಕ ಭಾನುವಾರ ಸಂಜೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮೃತ ಯುವಕನ ಆಡಿಯೋ ದಾಖಲೆಯನ್ನು ಆಧರಿಸಿ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ರೈತನ ಮಗನ ಮಹಾಸಾಧನೆ..! ಐಎಫ್‌ಎಸ್ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದ ರೈತನ ಮಗ ಬಸವರಾಜ್ ಧರೇಪ್ಪ ಕೆಂಪವಾಡ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಯುಪಿಎಸ್‌ಸಿ ನಡೆಸಿದ ಐಎಫ್‌ಎಸ್ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಬಸವರಾಜ್ ದೇಶಕ್ಕೇ ಮೊದಲ ರ‍್ಯಾಂಕ್ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಗ್ರಾಮೀಣ ಹಿನ್ನೆಲೆಯಿಂದ ಬಂದಿರುವ ಬಸವರಾಜ್ ಅವರ ಈ ಸಾಧನೆ ಇದೀಗ ಸಾವಿರಾರು ಯುವಕರಿಗೆ ಸ್ಪೂರ್ತಿಯಾಗಿದೆ.

ಸಾಧನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸವದಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮಸ್ಥರು ಹಾಗೂ ಸಂಬಂಧಿಕರು ಬಸವರಾಜ್ ಮನೆಗೆ ಆಗಮಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಬಸವರಾಜ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸವದಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪೂರ್ಣಗೊಳಿಸಿದ್ದರು. ಬಳಿಕ ಅಥಣಿಯಲ್ಲಿ ಮುಂದಿನ ವಿದ್ಯಾಭ್ಯಾಸ ಮಾಡಿ, ಶಿರಸಿಯಲ್ಲಿ ಪದವಿ ಶಿಕ್ಷಣ ಮುಗಿಸಿದ್ದರು. ನಂತರ ಯುಪಿಎಸ್‌ಸಿ ಕನಸನ್ನು ಹೊತ್ತು ಬೆಂಗಳೂರಿಗೆ ತೆರಳಿ ತಯಾರಿ ಆರಂಭಿಸಿದ್ದರು.

ಯಾವುದೇ ಪ್ರತಿಷ್ಠಿತ ಕೋಚಿಂಗ್ ಸೆಂಟರ್‌ಗಳ ನೆರವಿಲ್ಲದೆ ಸ್ವಂತ ಪರಿಶ್ರಮದ ಮೂಲಕ ಎರಡನೇ ಪ್ರಯತ್ನದಲ್ಲೇ ಅಖಿಲ ಭಾರತ ಮಟ್ಟದ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಬಸವರಾಜ್, “ನಾನು ಗ್ರಾಮೀಣ ಭಾಗದವನು. ಮೊರಾರ್ಜಿ ಶಾಲೆಯಲ್ಲಿ ಓದಿದವನು. ಗುರಿ ತಲುಪುವ ಛಲವಿದ್ದರೆ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ. ನನ್ನ ಸಾಧನೆ ಅದಕ್ಕೆ ಸಾಕ್ಷಿ” ಎಂದು ಸಂತಸ ವ್ಯಕ್ತಪಡಿಸಿದರು.

ತಂದೆ ಧರೇಪ್ಪ ಕೆಂಪವಾಡ ಮಾತನಾಡಿ, “ನಾವು ಸಣ್ಣ ರೈತ ಕುಟುಂಬದವರು. ಆರ್ಥಿಕ ಸಂಕಷ್ಟ ಇದ್ದರೂ ಮಕ್ಕಳ ಶಿಕ್ಷಣಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಂಡಿದ್ದೇವೆ. ಗುತ್ತಿಗೆ ಜಮೀನು ಪಡೆದು ದುಡಿದು ಮಗನನ್ನು ಓದಿಸಿದ್ದೇವೆ. ಇಂದು ಅವನ ಸಾಧನೆಯಿಂದ ನಮ್ಮ ಜೀವನ ಸಾರ್ಥಕವಾಗಿದೆ” ಎಂದು ಭಾವುಕರಾಗಿ ಹೇಳಿದರು.

ರೈತ ಕುಟುಂಬದ ಯುವಕನೊಬ್ಬ ದೇಶದ ಅಗ್ರಸ್ಥಾನಕ್ಕೇರಿರುವುದು ಬೆಳಗಾವಿ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.

ಭುವನೇಶ್ವರ್ ಸಿಕ್ಸರ್‌ನಿಂದ ತಿರುಗಿದ ಪಂದ್ಯ..! ಮುಂಬೈ ವಿರುದ್ಧ ರೋಚಕ ಗೆಲುವು ಸಾಧಿಸಿದ ಆರ್‌ಸಿಬಿ

ಕೊನೆಯ ಎಸೆತದವರೆಗೂ ಅಭಿಮಾನಿಗಳ ಹೃದಯ ಬಡಿತ ಹೆಚ್ಚಿಸಿದ್ದ ಐಪಿಎಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

ಕೊನೆಯ ಓವರ್‌ನಲ್ಲಿ ಭುವನೇಶ್ವರ್ ಕುಮಾರ್ ಸಿಡಿಸಿದ ಸಿಕ್ಸರ್ ಪಂದ್ಯಕ್ಕೆ ತಿರುವು ನೀಡಿದ್ದು, ಆರ್‌ಸಿಬಿ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಯಿತು. 166 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ಆರಂಭದಲ್ಲೇ ಆಘಾತ ಅನುಭವಿಸಿತು. ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದರೆ, ದೇವದತ್ ಪಡಿಕ್ಕಲ್ 12 ಮತ್ತು ನಾಯಕ ರಜತ್ ಪಾಟೀದಾರ್ 8 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಬಳಿಕ ಜಾಕೋಬ್ ಬೆಥೆಲ್ 27 ರನ್‌ಗಳ ಕೊಡುಗೆ ನೀಡಿದರು.

ಸಂಕಷ್ಟದ ವೇಳೆಯಲ್ಲಿ ಕೃನಾಲ್ ಪಾಂಡ್ಯ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. 46 ಎಸೆತಗಳಲ್ಲಿ 73 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿದ ಕೃನಾಲ್, ತಂಡವನ್ನು ಗೆಲುವಿನ ಹಾದಿಯಲ್ಲಿಟ್ಟರು. ಜಿತೇಶ್ ಶರ್ಮಾ 18 ರನ್‌ಗಳ ನೆರವು ನೀಡಿದರೆ, ಟಿಮ್ ಡೇವಿಡ್ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು.

ಕೊನೆಯ ಓವರ್‌ನಲ್ಲಿ ಆರ್‌ಸಿಬಿಗೆ 15 ರನ್‌ಗಳ ಅವಶ್ಯಕತೆ ಇತ್ತು. ಪಂದ್ಯ ತೀವ್ರ ರೋಚಕ ಹಂತ ತಲುಪಿದ್ದ ವೇಳೆ ಶೆಫರ್ಡ್ ಔಟಾದ ಬಳಿಕ ಕ್ರೀಸ್‌ಗೆ ಬಂದ ಭುವನೇಶ್ವರ್ ಕುಮಾರ್ ಸಿಕ್ಸರ್ ಸಿಡಿಸಿ ಪಂದ್ಯದ ಚಿತ್ರಣ ಬದಲಿಸಿದರು. ಬಳಿಕ ಒಂದು ಸಿಂಗಲ್ ಪಡೆದು ಸಮೀಕರಣವನ್ನು ಕೊನೆಯ ಎಸೆತಕ್ಕೆ 2 ರನ್‌ಗೆ ತಂದು ನಿಲ್ಲಿಸಿದರು. ಅಂತಿಮ ಎಸೆತದಲ್ಲಿ ರಸಿಕ್ ಸಲಾಂ ಎರಡು ರನ್ ಪೂರೈಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ಕೇವಲ 28 ರನ್‌ಗೆ ಮೂರು ಪ್ರಮುಖ ವಿಕೆಟ್ ಕಳೆದುಕೊಂಡ ಮುಂಬೈಗೆ ನಮನ್ ಧೀರ್ ಹಾಗೂ ತಿಲಕ್ ವರ್ಮಾ ಆಸರೆಯಾದರು. ಇಬ್ಬರೂ ಜವಾಬ್ದಾರಿಯುತ ಆಟವಾಡಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಅಂತಿಮವಾಗಿ ಮುಂಬೈ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು.

ಆರ್‌ಸಿಬಿ ಪರ ಬೌಲಿಂಗ್‌ನಲ್ಲಿ ಭುವನೇಶ್ವರ್ ಕುಮಾರ್ ನಾಲ್ಕು ವಿಕೆಟ್ ಪಡೆದು ಮಿಂಚಿದರು. ಜೋಶ್ ಹ್ಯಾಜಲ್‌ವುಡ್, ರಸಿಕ್ ಸಲಾಂ ಹಾಗೂ ರೊಮಾರಿಯೋ ಶೆಫರ್ಡ್ ತಲಾ ಒಂದು ವಿಕೆಟ್ ಪಡೆದರು.

ಕೊನೆಯ ಕ್ಷಣದವರೆಗೂ ಕುತೂಹಲ ಕಾಪಾಡಿಕೊಂಡಿದ್ದ ಈ ಪಂದ್ಯದಲ್ಲಿ ಆರ್‌ಸಿಬಿ ರೋಚಕ ಗೆಲುವು ಸಾಧಿಸಿ ಅಭಿಮಾನಿಗಳ ಹರ್ಷಕ್ಕೆ ಕಾರಣವಾಯಿತು.

ಬೆಂಗಳೂರಿನಲ್ಲಿ ಎರಡು ದಿನ ಮಳೆ ಅಲರ್ಟ್..! ಹವಾಮಾನ ಇಲಾಖೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚಿಸಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮೀನುಗಾರರು ಮತ್ತು ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪ್ರೀತಿ ಮಾಡಿದ್ದು ತಮ್ಮ, ಶಿಕ್ಷೆ ಅಣ್ಣನಿಗೆ! ಕಿಡ್ನ್ಯಾಪ್ ಮಾಡಿ ಕೈ ಕಾಲು ಕಟ್ಟಿ ಹಲ್ಲೆ ಮಾಡಿದ ಹುಡುಗಿ ಕಡೆಯವರು

ಬೆಂಗಳೂರು: ಪ್ರೇಮ ಪ್ರಕರಣದ ಹಿನ್ನೆಲೆ ಯುವಕನ ಅಣ್ಣನನ್ನು ಅಪಹರಿಸಿ ಕೈಕಾಲು ಕಟ್ಟಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬ್ಯಾಡರಹಳ್ಳಿಯ ಶಿವಕುಮಾರ್ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಇವರ ಪ್ರೀತಿಗೆ ಯುವತಿಯ ಮನೆಯವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಇಬ್ಬರೂ ಮನೆ ಬಿಟ್ಟು ಓಡಿ ಹೋಗಿದ್ದರು ಎನ್ನಲಾಗಿದೆ.

ಇದರಿಂದ ಆಕ್ರೋಶಗೊಂಡ ಯುವತಿಯ ತಂದೆ ಬಸವರಾಜ್ ಹಾಗೂ ಅವರ ಸಂಬಂಧಿಕರು, ಶಿವಕುಮಾರ್ ಸಿಗದಿದ್ದ ಹಿನ್ನೆಲೆ ಆತನ ಅಣ್ಣ ಕೊಟ್ರೇಶ್ ಮೇಲೆ ಸೇಡು ತೀರಿಸಿಕೊಳ್ಳಲು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.

ಕೊಟ್ರೇಶ್ ಬ್ಯಾಡರಹಳ್ಳಿಯ ದೇವಸ್ಥಾನವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. “ಪೊಲೀಸ್ ಠಾಣೆಗೆ ಹೋಗೋಣ” ಎಂದು ನಂಬಿಸಿ ಆರೋಪಿಗಳು ಕೊಟ್ರೇಶ್ ಅವರನ್ನು ಕಾರಿನಲ್ಲಿ ಕೂರಿಸಿಕೊಂಡು ಅಪಹರಿಸಿದ್ದಾರೆ. ಬಳಿಕ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಕೈಕಾಲು ಕಟ್ಟಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆ ನಡೆಸುವ ದೃಶ್ಯವನ್ನು ಆರೋಪಿಗಳು ವೀಡಿಯೋ ಮಾಡಿ, “ಶಿವು ಎಲ್ಲೇ ಇದ್ದರೂ ಹುಡುಗಿಯನ್ನು ಕರೆದುಕೊಂಡು ಬಂದು ಒಪ್ಪಿಸು” ಎಂದು ಕೊಟ್ರೇಶ್ ಮೂಲಕ ಹೇಳಿಸಿ ಸಂಬಂಧಿಕರಿಗೆ ಕಳುಹಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ವೀಡಿಯೋದಲ್ಲಿ ಕೊಟ್ರೇಶ್ ಜೀವ ಉಳಿಸುವಂತೆ ಬೇಡಿಕೊಳ್ಳುತ್ತಿರುವುದು ಕಂಡುಬಂದಿದೆ.

ಈ ಕುರಿತು ಕೊಟ್ರೇಶ್ ಸಂಬಂಧಿಕರು ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿರುವ ವಿಚಾರ ತಿಳಿಯುತ್ತಿದ್ದಂತೆ ಆರೋಪಿಗಳು ಕೊಟ್ರೇಶ್ ಅವರನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

ಮದ್ಯಪಾನ ಮಾಡಿ ವಾಹನ ಚಾಲನೆ: ಒಂದು ವಾರದಲ್ಲಿ 45 ಸಾವಿರಕ್ಕೂ ಹೆಚ್ಚು ವಾಹನಗಳ ಪರಿಶೀಲನೆ!

ಬೆಂಗಳೂರು: ನಗರದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು ಡ್ರಂಕ್ ಅಂಡ್ ಡ್ರೈವ್ ವಿರುದ್ಧ ಕಠಿಣ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕಳೆದ ಒಂದು ವಾರದಿಂದ ನಗರದ ವಿವಿಧ ಭಾಗಗಳಲ್ಲಿ ವಿಶೇಷ ತಪಾಸಣೆ ನಡೆಸಿದ ಪೊಲೀಸರು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.

ಮೇ 04ರಿಂದ ಮೇ 10ರವರೆಗೆ ನಡೆದ ವಿಶೇಷ ತಪಾಸಣೆಯಲ್ಲಿ ಒಟ್ಟು 45 ಸಾವಿರದ 272 ವಾಹನಗಳನ್ನು ಪರಿಶೀಲಿಸಲಾಗಿದೆ. ಬೈಕ್, ಕಾರು ಸೇರಿದಂತೆ ವಿವಿಧ ಮಾದರಿಯ ವಾಹನಗಳನ್ನು ತಪಾಸಣೆಗೊಳಪಡಿಸಿದ ಸಂಚಾರ ಪೊಲೀಸರು, ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ 575 ಮಂದಿಯನ್ನು ಪತ್ತೆ ಹಚ್ಚಿ ಅವರ ವಿರುದ್ಧ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ ಅತೀ ವೇಗ ಹಾಗೂ ಅಜಾಗರೂಕ ಚಾಲನೆ ನಡೆಸಿದ ವಾಹನ ಸವಾರರ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ.

ಅತೀ ವೇಗ ಮತ್ತು ನಿರ್ಲಕ್ಷ್ಯ ಚಾಲನೆಗೆ ಸಂಬಂಧಿಸಿದಂತೆ ಕಳೆದ ಒಂದು ವಾರದಲ್ಲಿ 179 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಸುಮಾರು 1 ಲಕ್ಷ 80 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿಯೂ ವಿಶೇಷ ತಪಾಸಣೆ ಮತ್ತು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಂತೆ ಹಾಗೂ ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

IPL 2026: ಮತ್ತೆ ಸೋಲು..ಐಪಿಎಲ್‌ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ರಾಜಸ್ಥಾನ್ ರಾಯಲ್ಸ್!

ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಭಾರೀ ಅಂತರದ ಸೋಲು ಅನುಭವಿಸಿದ್ದು, ಈ ಸೀಸನ್‌ನಲ್ಲಿ ಒಂದು ಕೆಟ್ಟ ದಾಖಲೆಗೆ ಪಾತ್ರವಾಗಿದೆ.

ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಉತ್ತಮ ಪ್ರದರ್ಶನ ನೀಡಿತು. ಆರಂಭಿಕರಾದ ಸಾಯಿ ಸುದರ್ಶನ್ 55 ರನ್ ಹಾಗೂ ನಾಯಕ ಶುಭ್ಮನ್ ಗಿಲ್ 84 ರನ್ ಗಳಿಸಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಅಂತಿಮವಾಗಿ ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತು.

ಬೃಹತ್ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ಲೈನ್ ಅಪ್ ಸಂಪೂರ್ಣವಾಗಿ ವಿಫಲವಾಯಿತು. ತಂಡ ಕೇವಲ 152 ರನ್‌ಗಳಿಗೆ ಆಲೌಟ್ ಆಗಿ 77 ರನ್ ಅಂತರದಲ್ಲಿ ಸೋಲು ಕಂಡಿತು.

ಈ ಸೋಲಿನೊಂದಿಗೆ ರಾಜಸ್ಥಾನ್ ರಾಯಲ್ಸ್ ಈ ಸೀಸನ್‌ನಲ್ಲಿ ಏಳು ಬಾರಿ 200ಕ್ಕೂ ಹೆಚ್ಚು ರನ್‌ಗಳನ್ನು ಬಿಟ್ಟುಕೊಟ್ಟ ಏಕೈಕ ತಂಡ ಎಂಬ ಬೇಡದ ದಾಖಲೆಗೆ ಪಾತ್ರವಾಗಿದೆ. ಒಟ್ಟು 11 ಪಂದ್ಯಗಳಲ್ಲಿ 7 ಬಾರಿ 200+ ಸ್ಕೋರ್ ಎದುರಿಸಿರುವುದು ತಂಡದ ಬೌಲಿಂಗ್ ದೌರ್ಬಲ್ಯವನ್ನು ಬಹಿರಂಗಪಡಿಸಿದೆ.

ರಿಯಾನ್ ಪರಾಗ್ ಲಭ್ಯವಿಲ್ಲದ ಕಾರಣ ಯಶಸ್ವಿ ಜೈಸ್ವಾಲ್ ಈ ಪಂದ್ಯದಲ್ಲಿ ರಾಜಸ್ಥಾನ ತಂಡವನ್ನು ಮುನ್ನಡೆಸಿದ್ದರು.  ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ನಾಯಕ ಯಶಸ್ವಿ ಜೈಸ್ವಾಲ್ ಅವರ ನಿರ್ಧಾರವೂ ತಂಡಕ್ಕೆ ಫಲ ನೀಡಲಿಲ್ಲ. ಬೌಲಿಂಗ್ ವಿಭಾಗದಲ್ಲಿ ಬ್ರಿಜೇಶ್ ಶರ್ಮಾ 2 ವಿಕೆಟ್ ಪಡೆದರೂ ದುಬಾರಿ ರನ್‌ಗಳನ್ನು ನೀಡಿದರು.

ಈ ಸೋಲಿನೊಂದಿಗೆ ರಾಜಸ್ಥಾನ್ ರಾಯಲ್ಸ್ ಪಾಯಿಂಟ್ಸ್ ಟೇಬಲ್‌ನಲ್ಲಿ ಹಿನ್ನಡೆ ಅನುಭವಿಸಿದ್ದು, ಪ್ಲೇಆಫ್ ಹಾದಿ ಕಠಿಣವಾಗಿದೆ. ತಂಡದ ಬೌಲಿಂಗ್ ವೈಫಲ್ಯ ಇದೀಗ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ ವಸ್ತು ಪತ್ತೆ! ಬೆಂಗಳೂರು ಪೊಲೀಸರಿಂದ ಚುರುಕುಗೊಂಡ ತನಿಖೆ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಸಂಚರಿಸಬೇಕಿದ್ದ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಘಟನೆ ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ.

ಕಗ್ಗಲಿಪುರ ಬಳಿಯ ತಾತಗುಣಿ ಸಮೀಪದ ಬ್ರಿಡ್ಜ್ ಪಕ್ಕದ ಕಾಂಪೌಂಡ್ ಪ್ರದೇಶದಲ್ಲಿ ಕಲ್ಲು ಕ್ವಾರಿಗಳಿಗೆ ಬಳಸುವ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶವು ಆರ್ಟ್ ಆಫ್ ಲಿವಿಂಗ್ ಆಶ್ರಮದಿಂದ ಸುಮಾರು 3 ಕಿ.ಮೀ ದೂರದಲ್ಲಿದೆ.

ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾದ ಜಿಲೆಟಿನ್ ಕಡ್ಡಿಗಳು ಸಕ್ರಿಯ ಸ್ಥಿತಿಯಲ್ಲಿ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಇದರಿಂದ ತಾತ್ಕಾಲಿಕ ನಿರಾಳತೆ ಕಂಡುಬಂದಿದೆ. ಆದರೂ ಘಟನೆಯನ್ನು ಭದ್ರತಾ ಲೋಪವಾಗಿ ಪರಿಗಣಿಸಿ ಪೊಲೀಸರು ಗಂಭೀರ ತನಿಖೆ ಆರಂಭಿಸಿದ್ದಾರೆ.

ಘಟನೆಯ ಮಾಹಿತಿ ದೊರೆತ ತಕ್ಷಣ ಕೇಂದ್ರ ವಿಭಾಗದ ಡಿಐಜಿ ಗಿರೀಶ್ ಅವರು ಕಗ್ಗಲಿಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಶ್ರೀನಿವಾಸ್ ಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಈ ಸ್ಫೋಟಕ ವಸ್ತುಗಳನ್ನು ಯಾರಾದರೂ ಉದ್ದೇಶಪೂರ್ವಕವಾಗಿ ಬಿಟ್ಟುಹೋಗಿದ್ದಾರೆಯೇ ಅಥವಾ ಹಿಂದಿನ ದಿನಗಳಲ್ಲಿ ಎಸೆದಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶಂಕಿತರ ಪತ್ತೆಗೆ ಹುಡುಕಾಟ ಮುಂದುವರಿದಿದೆ.

ಪ್ರಧಾನಿ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಈ ಘಟನೆ ಹೆಚ್ಚಿನ ಭದ್ರತಾ ಮಹತ್ವ ಪಡೆದಿದ್ದು, ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ.

ರೈಲಿನಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಪರಾರಿಯಾಗಿದ್ದ ಆರೋಪಿ ಅರೆಸ್ಟ್!

ಕೇರಳ: ಕೇರಳದಿಂದ ತಮಿಳುನಾಡಿಗೆ ತೆರಳುತ್ತಿದ್ದ ಪಲರುವಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಕೊಲ್ಲಂ ಮೂಲದ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ತನ್ನ ಅಜ್ಜನೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ನಿದ್ದೆಯಲ್ಲಿದ್ದ ಬಾಲಕಿ ಮೇಲೆ ಆರೋಪಿಯು ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯನ್ನು ರೈಲಿನಲ್ಲಿ ಇದ್ದ ಮಹಿಳೆಯೊಬ್ಬರು ಗಮನಿಸಿ ವಿಡಿಯೋ ಮಾಡಿ ತಕ್ಷಣ ಎಚ್ಚರಿಕೆ ನೀಡಿದ್ದಾರೆ.

ರೈಲು ತಮಿಳುನಾಡು ಗಡಿ ಪ್ರವೇಶಿಸುವ ವೇಳೆಗೆ ಆರೋಪಿ ಸೆಂಗೊಟ್ಟೈ ನಿಲ್ದಾಣದಲ್ಲಿ ಇಳಿದು ಪರಾರಿಯಾಗಿದ್ದ. ಬಳಿಕ ಪುನಲೂರು ರೈಲ್ವೆ ಪೊಲೀಸರು ವಿಡಿಯೋ ಸಾಕ್ಷ್ಯ ಹಾಗೂ ದೂರು ಆಧರಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

IPL 2026: ಗಿಲ್ ಹೊಸ ಮೈಲುಗಲ್ಲು: ರೈನಾ–ಧವನ್ ಬಳಿಕ ಐತಿಹಾಸಿಕ ಸಾಧನೆ!

ಐಪಿಎಲ್ 2026ರ 52ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭ್‌ಮನ್ ಗಿಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದಾರೆ.

ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಗಿಲ್ ಕೇವಲ 44 ಎಸೆತಗಳಲ್ಲಿ 84 ರನ್ ಸಿಡಿಸಿ ಗಮನ ಸೆಳೆದಿದ್ದಾರೆ. ಗಿಲ್ ಅವರ ಸ್ಫೋಟಕ ಇನ್ನಿಂಗ್ಸ್ ನೆರವಿನಿಂದ ಗುಜರಾತ್ ಟೈಟಾನ್ಸ್ 77 ರನ್‌ಗಳ ಭರ್ಜರಿ ಅಂತರದಲ್ಲಿ ಗೆಲುವು ಸಾಧಿಸಿತು. ಈ ಸೀಸನ್‌ನಲ್ಲಿ ಗಿಲ್ ಅವರ ಫಾರ್ಮ್ ನಿರಂತರವಾಗಿ ಮುಂದುವರಿದಿದ್ದು, 10 ಪಂದ್ಯಗಳಲ್ಲಿ ಒಟ್ಟು 462 ರನ್ ಗಳಿಸಿದ್ದಾರೆ.

ಈ ಸಾಧನೆಯೊಂದಿಗೆ ಶುಭ್‌ಮನ್ ಗಿಲ್ ಐಪಿಎಲ್ ಇತಿಹಾಸದಲ್ಲಿ ವಿಶೇಷ ಕ್ಲಬ್‌ಗೆ ಸೇರ್ಪಡೆಯಾಗಿದ್ದಾರೆ. ಸತತ 7 ಸೀಸನ್‌ಗಳಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರರಾಗಿ ಅವರು ಹೊರಹೊಮ್ಮಿದ್ದಾರೆ. ಈ ಸಾಧನೆ ಈವರೆಗೆ ಸುರೇಶ್ ರೈನಾ ಮತ್ತು ಶಿಖರ್ ಧವನ್ ಮಾತ್ರ ಮಾಡಿದ್ದಾರೆ.

ಸುರೇಶ್ ರೈನಾ 2008ರಿಂದ 2014ರವರೆಗೆ ಸತತ 7 ಸೀಸನ್‌ಗಳಲ್ಲಿ 400+ ರನ್ ಗಳಿಸಿದ್ದರೆ, ಶಿಖರ್ ಧವನ್ 2016ರಿಂದ 2022ರವರೆಗೆ ಈ ಸಾಧನೆ ಮಾಡಿದ್ದಾರೆ. ಇದೀಗ ಗಿಲ್ ಕೂಡ ಈ ಎಲೈಟ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಗಿಲ್ 2022ರಿಂದ ಗುಜರಾತ್ ಟೈಟಾನ್ಸ್ ತಂಡದ ಭಾಗವಾಗಿದ್ದು, ಅದಕ್ಕೂ ಮೊದಲು ಕೋಲ್ಕತ್ತಾ ನೈಟ್ ರೈಡರ್ಸ್ ಪರವೂ ಉತ್ತಮ ಪ್ರದರ್ಶನ ನೀಡಿದ್ದರು.

ಒಂದೇ ಐಪಿಎಲ್ ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಇನ್ನೂ ವಿರಾಟ್ ಕೊಹ್ಲಿ ಹೆಸರಲ್ಲೇ ಉಳಿದಿದೆ. 2016ರಲ್ಲಿ ಅವರು 973 ರನ್ ಗಳಿಸಿದ್ದರು. ಜೊತೆಗೆ ಕೊಹ್ಲಿ 11 ಬಾರಿ 400+ ರನ್ ಗಳಿಸಿರುವುದು ಇನ್ನೂ ಅಪ್ರತಿಮ ದಾಖಲೆಯಾಗಿದೆ.

ಈ ನಡುವೆ, ಸತತ ಸೀಸನ್‌ಗಳಲ್ಲಿ 400+ ರನ್ ಗಳಿಸುವ ಸಾಧನೆಯಲ್ಲಿ ಗಿಲ್ ಇದೀಗ ಎಬಿ ಡಿವಿಲಿಯರ್ಸ್ ಅವರ ಸಾಧನೆಯನ್ನು ಹಿಂದಿಕ್ಕಿರುವುದು ಕ್ರಿಕೆಟ್ ವಲಯದಲ್ಲಿ ಗಮನ ಸೆಳೆದಿದೆ.

error: Content is protected !!