Home Blog

ಒಣಗಿದ ನಿಂಬೆಹಣ್ಣು ಕಸದ ಬುಟ್ಟಿಗೆ ಹಾಕ್ತೀರಾ? ಮೊದಲು ಇದನ್ನು ಓದಿ!

0

ಮನೆಗಳಲ್ಲಿ ಸಾಮಾನ್ಯವಾಗಿ ನಿಂಬೆಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಲಾಗುತ್ತದೆ.

ಆದರೆ ಕೆಲವು ದಿನಗಳಲ್ಲೇ ಅವು ಒಣಗಿ ಹೋಗುತ್ತವೆ. ಹೀಗಾಗಿ ಅನೇಕರು ಅವುಗಳನ್ನು ಉಪಯೋಗವಿಲ್ಲವೆಂದು ಭಾವಿಸಿ ಕಸದ ಬುಟ್ಟಿಗೆ ಎಸೆಯುತ್ತಾರೆ. ಆದರೆ ಒಣಗಿದ ನಿಂಬೆಹಣ್ಣುಗಳಲ್ಲೂ ಹಲವು ಉಪಯೋಗಗಳಿದ್ದು, ಮನೆ ಸ್ವಚ್ಛತೆ ಹಾಗೂ ದೈನಂದಿನ ಬಳಕೆಯಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು.

ಸಿಂಕ್ ಸ್ವಚ್ಛಗೊಳಿಸಲು ಸಹಕಾರಿ:
ಒಣಗಿದ ನಿಂಬೆಹಣ್ಣನ್ನು ಎರಡು ಭಾಗಗಳಾಗಿ ಕತ್ತರಿಸಿ ಸಿಂಕ್ ಮೇಲೆ ಉಜ್ಜಿದರೆ ನೈಸರ್ಗಿಕ ಕ್ಲೀನರ್‌ನಂತೆ ಕಾರ್ಯನಿರ್ವಹಿಸುತ್ತದೆ. ಇದರಿಂದ ಕಲೆಗಳು, ದುರ್ವಾಸನೆ ಹಾಗೂ ಬ್ಯಾಕ್ಟೀರಿಯಾಗಳನ್ನು ಕಡಿಮೆ ಮಾಡಬಹುದು.

ದುರ್ವಾಸನೆ ನಿವಾರಣೆ:
ಒಣಗಿದ ನಿಂಬೆಹಣ್ಣಿನ ತುಂಡುಗಳಿಗೆ ಅಡುಗೆ ಸೋಡಾ ಸೇರಿಸಿ ಫ್ರಿಡ್ಜ್, ಶೂ ರ್ಯಾಕ್ ಅಥವಾ ಕಪಾಟುಗಳಲ್ಲಿ ಇಟ್ಟರೆ ಅಹಿತಕರ ವಾಸನೆ ಕಡಿಮೆಯಾಗಲು ಸಹಕಾರಿಯಾಗುತ್ತದೆ.

ಪಾತ್ರೆಗಳಿಗೆ ಹೊಳಪು ತರಬಹುದು:
ತಾಮ್ರ, ಹಿತ್ತಾಳೆ ಅಥವಾ ಉಕ್ಕಿನ ಪಾತ್ರೆಗಳ ಮೇಲೆ ಸ್ವಲ್ಪ ಉಪ್ಪು ಸಿಂಪಡಿಸಿ ಒಣಗಿದ ನಿಂಬೆಹಣ್ಣಿನಿಂದ ಉಜ್ಜಿದರೆ ಮೊಂಡುತನದ ಕಲೆಗಳು ದೂರವಾಗಿ ಪಾತ್ರೆಗಳು ಹೊಳೆಯುತ್ತವೆ.

ಕೀಟಗಳನ್ನು ದೂರವಿಡಲು ನೆರವು:
ಇರುವೆಗಳು ಹಾಗೂ ಕೆಲವು ಕೀಟಗಳು ನಿಂಬೆಯ ವಾಸನೆಯನ್ನು ಇಷ್ಟಪಡುವುದಿಲ್ಲ. ಅಡುಗೆಮನೆಯ ಮೂಲೆಗಳಲ್ಲಿ ಒಣಗಿದ ನಿಂಬೆ ತುಂಡುಗಳನ್ನು ಇಟ್ಟರೆ ಕೀಟಗಳ ಕಾಟವನ್ನು ಕಡಿಮೆ ಮಾಡಬಹುದು.

ಗಿಡಮೂಲಿಕೆ ಚಹಾ ತಯಾರಿಸಬಹುದು:
ಒಣಗಿದ ನಿಂಬೆಹಣ್ಣನ್ನು ನೀರಿನಲ್ಲಿ ನೆನೆಸಿ ನಂತರ ಕುದಿಸಿ, ಅದಕ್ಕೆ ಜೇನುತುಪ್ಪ ಸೇರಿಸಿ ಕುಡಿಯಬಹುದು. ಇದು ತಾಜಾತನ ನೀಡುವ ಪಾನೀಯವಾಗಿದ್ದು, ಆರೋಗ್ಯಕರ ಜೀವನಶೈಲಿಯ ಭಾಗವಾಗಿ ಬಳಸಬಹುದು.

 

ಮೋದಿ 12 ವರ್ಷಗಳ ಆಡಳಿತಕ್ಕೆ ಬಿಜೆಪಿ ಸಂಭ್ರಮ

0

ಲಕ್ಷ್ಮೇಶ್ವರ: ದೇಶದ ಪ್ರಧಾನಿಯಾಗಿ ಸತತ 12 ವರ್ಷಗಳ ಕಾಲ ಸೇವೆ ಸಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು ಹಿಂದಿಕ್ಕಿ ಸ್ವಾತಂತ್ರ್ಯೋತ್ತರ ಭಾರತದ ಸುದೀರ್ಘ ಸೇವೆ ಸಲ್ಲಿಸಿದ ಪ್ರಧಾನಿಯಾಗಿ ಇತಿಹಾಸ ನಿರ್ಮಿಸಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಪಟ್ಟಣದ ಐತಿಹಾಸಿಕ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಅವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶಿರಹಟ್ಟಿ ಬಿಜೆಪಿ ಮಂಡಲ ಹಾಗೂ ನಗರ ಘಟಕದಿಂದ ಆಯೋಜಿಸಿದ್ದ ವಿಶೇಷ ಪೂಜೆ ಹಾಗೂ ಸಿಹಿ ಹಂಚುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಯುಪಿಎ ಸರ್ಕಾರದ ವಿರುದ್ಧ ದೇಶಾದ್ಯಂತ ಬಿಜೆಪಿ ಅಲೆ ಸೃಷ್ಟಿಸಿ, ಸತತ ಮೂರು ಲೋಕಸಭಾ ಚುನಾವಣೆಯಲ್ಲಿ ಜಯ ಸಾಧಿಸಿದ ಮೋದಿ ಅವರು ಹಿಂದುತ್ವ, ಸಾಂಸ್ಕೃತಿಕ ರಾಷ್ಟ್ರೀಯತೆ ಹಾಗೂ ಅಭಿವೃದ್ಧಿಯ ಮಂತ್ರದೊಂದಿಗೆ ದೇಶವನ್ನು ಅಭಿವೃದ್ಧಿಯ ಗಿರಿಶಿಖರದತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರ ಪರಿಶ್ರಮವೇ ಈ ಯಶಸ್ಸಿನ ಹಿಂದೆ ದೊಡ್ಡ ಶಕ್ತಿ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರಾಗಿ ಆಯ್ಕೆಯಾಗಿರುವ ಪ್ರಕಾಶ ಕುಂಬಾರ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಚಂಬಣ್ಣ ಬಾಳಿಕಾಯಿ, ಗಂಗಾಧರ ಮೆಣಸಿನಕಾಯಿ, ಪ್ರವೀಣ ಬೋಮಲೆ, ಬಸವರಾಜ ಚಕ್ರಸಾಲಿ, ನಿಂಗಪ್ಪ ಬನ್ನಿ, ನೀಲಪ್ಪ ಹತ್ತಿ, ದುಂಡೇಶ ಕೋಟಗಿ, ಅನೀಲ ಮುಳಗುಂದ, ವೀರಣ್ಣ ಅಕ್ಕೂರ, ಈರಣ್ಣ ಪೂಜಾರ, ಸಂತೋಷ ಜಾವೂರ, ಮಂಜುನಾಥ ಗಜಾಕೋಶ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

“ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್, ಸಬ್‌ಕಾ ವಿಶ್ವಾಸ್ ಧ್ಯೇಯದೊಂದಿಗೆ ಮೋದಿ ನಾಯಕತ್ವದಲ್ಲಿ ಭಾರತ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ”

ಡಾ. ಚಂದ್ರು ಲಮಾಣಿ, ಶಾಸಕ

ಸೀಜ್ ಮಾಡಿದ ಅಂಗಡಿಗಳನ್ನೇ ಮತ್ತೆ ತೆರೆದ ಪುರಸಭೆ!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಬಸ್ ನಿಲ್ದಾಣದ ಸಮೀಪ ಇರುವ ಪುರಸಭೆಯ ವಾಣಿಜ್ಯ ಮಳಿಗೆಗಳನ್ನು ಸೀಜ್ ಮಾಡಿದ್ದ ಪುರಸಭೆ ಅಧಿಕಾರಿಗಳು, ಕೋರ್ಟ್ ತಡೆಯಾಜ್ಞೆ ಹಿನ್ನೆಲೆ ಮತ್ತೆ ಸೀಲ್ ತೆರವುಗೊಳಿಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದ ಘಟನೆ ಬುಧವಾರ ನಡೆದಿದೆ.

ವಾಣಿಜ್ಯ ಮಳಿಗೆಗಳ ಗುತ್ತಿಗೆ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಹೊಸದಾಗಿ ಟೆಂಡರ್ ಕರೆದು ಹರಾಜು ಪ್ರಕ್ರಿಯೆ ನಡೆಸಬೇಕು. ಅಲ್ಲದೆ, ಎಗ್ ರೈಸ್ ಹಾಗೂ ಚಿಕನ್ ಮಾರಾಟ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ವಿವಿಧ ಕನ್ನಡಪರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆಯ ಒತ್ತಡಕ್ಕೆ ಮಣಿದ ಪುರಸಭೆ ಅಧಿಕಾರಿಗಳು ಸಂಬಂಧಿಸಿದ ಅಂಗಡಿಗಳನ್ನು ಸೀಜ್ ಮಾಡಿದ್ದರು.

ಈ ನಡುವೆ ಅಂಗಡಿ ಮಾಲೀಕರು ಹಾಗೂ ಕೆಲವು ಸಂಘಟನೆಗಳ ಮುಖಂಡರು, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ (ಸ್ಟೇ) ಪಡೆದಿದ್ದರೂ ಪುರಸಭೆ ಅಧಿಕಾರಿಗಳು ಕಾನೂನುಬಾಹಿರವಾಗಿ ಅಂಗಡಿಗಳನ್ನು ಸೀಜ್ ಮಾಡಿದ್ದಾರೆ ಎಂದು ಆರೋಪಿಸಿದರು.

ಕರವೇ ಪ್ರವೀಣ ಶೆಟ್ಟಿ ಬಣದ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಕಲಘಟಗಿ ಹಾಗೂ ಡಿಎಸ್‌ಎಸ್ ಮುಖಂಡ ಸುರೇಶ ನಂದೆಣ್ಣವರ ಮಾತನಾಡಿ, “ಉಚ್ಚ ನ್ಯಾಯಾಲಯದ ಆದೇಶ ಜಾರಿಯಲ್ಲಿದ್ದರೂ ಅಂಗಡಿಗಳನ್ನು ಯಾವ ಆಧಾರದ ಮೇಲೆ ಸೀಜ್ ಮಾಡಲಾಗಿದೆ?” ಎಂದು ಪ್ರಶ್ನಿಸಿದರು.

ಚಿಕನ್ ಹಾಗೂ ಮಟನ್ ಮಾರಾಟದ ಬಗ್ಗೆ ನಮಗೂ ಆಕ್ಷೇಪವಿದೆ. ಆದರೆ ಕಾನೂನು ಪ್ರಕ್ರಿಯೆ ಅನುಸರಿಸದೆ ಏಕಾಏಕಿ ವ್ಯಾಪಾರಸ್ಥರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದ ಎಚ್ಚೆತ್ತ ಪುರಸಭೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್‌ನೊಂದಿಗೆ ವಾಣಿಜ್ಯ ಸಂಕೀರ್ಣಕ್ಕೆ ಆಗಮಿಸಿ, ಕಂದಾಯ ಅಧಿಕಾರಿ ಸುರೇಶ ಪೂಜಾರ ಹಾಗೂ ವ್ಯವಸ್ಥಾಪಕಿ ಮಂಜುಳಾ ಹೂಗಾರ ನೇತೃತ್ವದಲ್ಲಿ ಅಂಗಡಿಗಳ ಸೀಲ್ ತೆರವುಗೊಳಿಸಿದರು.

ಅಂಗಡಿಗಳು ಪುನರಾರಂಭಗೊಂಡ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹರ್ಷ ವ್ಯಕ್ತಪಡಿಸಿದರು.

ಕ್ರೈಂ ವಿಭಾಗದ ಪಿಎಸ್‌ಐ ಟಿ.ಕೆ. ರಾಠೋಡ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಬಿಗಿ ಬಂದೋಬಸ್ತ್ ಒದಗಿಸಿದ್ದರು. ಬಸವರಾಜ ಹೊಗೆಸೊಪ್ಪಿನ, ಅನೀಲ ಮುಳಗುಂದ, ಬಸವಣ್ಣೆಪ್ಪ ನಂದೆಣ್ಣವರ, ಶಿವು ಕರಡಿ ಸೇರಿದಂತೆ ಹಲವಾರು ವ್ಯಾಪಾರಸ್ಥರು ಈ ವೇಳೆ ಉಪಸ್ಥಿತರಿದ್ದರು.

“ಮೊದಲು ನ್ಯಾಯಾಲಯದ ತಡೆಯಾಜ್ಞೆ ರದ್ದುಪಡಿಸಿಕೊಂಡು ಬಳಿಕ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ”

ಮಹೇಶ ಕಲಘಟಗಿ

ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ಕೊಡದಿದ್ದರೆ ಉಪವಾಸ ಸತ್ಯಾಗ್ರಹ!

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿರುವ ಹಿರಿಯ ನಾಯಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಸ್ಮಿಲ್ಲಾ ಜಮಾತ್ ಮುಖಂಡ ಅಬೂಬುಕರ್ ಅಣ್ಣಿಗೇರಿ ಎಚ್ಚರಿಕೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗಕ್ಕೆ ಸಮರ್ಪಕ ಪ್ರಾತಿನಿಧ್ಯ ಸಿಗಬೇಕಾದರೆ ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವುದು ಅನಿವಾರ್ಯ ಎಂದು ಹೇಳಿದರು.

ರಫೀಕ್ ಅಬ್ಬಿಗೇರಿ ಮಾತನಾಡಿ, ಎಚ್.ಕೆ. ಪಾಟೀಲ ಅವರು ಗದಗ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಜನಪರವಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಭಾಷಾ ಮಲ್ಲಸಮುದ್ರ ಮಾತನಾಡಿ, ಎಚ್.ಕೆ. ಪಾಟೀಲ ಅವರು ಈ ಹಿಂದೆ ಹಲವು ಸಚಿವ ಸ್ಥಾನಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಅನುಭವಿ ನಾಯಕರು. ಉತ್ತರ ಕರ್ನಾಟಕದ ಪ್ರಭಾವಿ ನಾಯಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜಾಖಾನ್ ಪಠಾಣ್, ಸಮೀರ್, ರಾಜಸಾಬ್, ದಾವಲಸಾಬ್ ಮುರಡಿ, ಶರೀಫಸಾಬ್ ನದಾಫ್ ಸೇರಿದಂತೆ ಜಮಾತ್ ಮುಖಂಡರು ಉಪಸ್ಥಿತರಿದ್ದರು.

“ಉತ್ತರ ಕರ್ನಾಟಕದ ಅನುಭವಿಗಳಾದ ನಾಯಕರನ್ನು ಸಚಿವ ಸಂಪುಟದಲ್ಲಿ ಕಡೆಗಣಿಸುವುದು ಸರಿಯಲ್ಲ”

ಅಬೂಬುಕರ್ ಅಣ್ಣಿಗೇರಿ

ಸಚಿವ ಸ್ಥಾನಕ್ಕೆ ಎಚ್.ಕೆ. ಪರ ಕಾರ್ಮಿಕರ ಧ್ವನಿ

0

ವಿಜಯಸಾಕ್ಷಿ ಸುದ್ದಿ, ಗದಗ: ಹಿಂದುಳಿದ ಗದಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿಯ ನಾಯಕತ್ವ ಅಗತ್ಯವಿದ್ದು, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿರುವ ಹಿರಿಯ ನಾಯಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಜಿಲ್ಲಾ ಪೈಂಟರ್ಸ್ ಸಂಘದ ಅಧ್ಯಕ್ಷ ರಿಯಾಜ್ ಹೆಸರೂರು ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದ ಕಾರ್ಮಿಕ ವರ್ಗದ ನೆರವಿಗೆ ನಿಂತು ಮಾನವೀಯ ನಾಯಕತ್ವ ತೋರಿದ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತ ಎಂದು ಹೇಳಿದರು.

ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಎಚ್.ಕೆ. ಪಾಟೀಲ ಅವರು ಜಿಲ್ಲೆಯ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅಂತಹ ಅನುಭವಿ ನಾಯಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಸಂಘದ ಮುಖಂಡರು ಆಗ್ರಹಿಸಿದರು.

ದಾವಲಸಾಬ್ ಮಕರಬ್ಬಿ ಮಾತನಾಡಿ, ಜಿಲ್ಲೆಯ ಸಮಸ್ಯೆಗಳ ಅರಿವು ಇರುವ ನಾಯಕರು ಸರ್ಕಾರದಲ್ಲಿ ಇದ್ದರೆ ಮಾತ್ರ ಅಭಿವೃದ್ಧಿಗೆ ವೇಗ ಸಿಗುತ್ತದೆ. ಆದ್ದರಿಂದ ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವಿರೇಶ ಜುಂಜಾಲ, ಗೋಪಾಲ ಸಿಂಗ್ ರಜಪೂತ್, ಮಾರುತಿ ಕಾತರಕಿ, ದಾದಾಪೀರ ಕಟ್ಟಿಮನಿ, ಅಕ್ರಮ್ ಕುಂದಗೋಳ, ಸಲ್ಮಾನ್ ಬಬರ್ಚಿ, ಮಹಮ್ಮದ್ ರಫಿ, ಶರಣಪ್ಪ ಸೊರಟೂರು, ಇಬ್ರಾಹಿಂ ಇಲಕಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಗದಗ ಜಿಲ್ಲೆಯ ಅಭಿವೃದ್ಧಿಗೆ ಅನುಭವ ಹಾಗೂ ದೂರದೃಷ್ಟಿ ಹೊಂದಿರುವ ಎಚ್.ಕೆ. ಪಾಟೀಲರಂತಹ ನಾಯಕರು ಸರ್ಕಾರದಲ್ಲಿ ಇರಬೇಕು”

ರಿಯಾಜ್ ಹೆಸರೂರು

ಪಾಕ್ ಸೇನೆಗೆ ಆಘಾತ; ಸೇನಾ ಹೆಲಿಕಾಪ್ಟರ್ ಪತನ, 21 ಸೈನಿಕರ ಸಾವು!

0

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ಸಮೀಪ ಪಾಕಿಸ್ತಾನ ಸೇನೆಗೆ ಸೇರಿದ ಸೇನಾ ಹೆಲಿಕಾಪ್ಟರ್ ಪತನಗೊಂಡು ೨೧ ಮಂದಿ ಸೈನಿಕರು ಮೃತಪಟ್ಟಿರುವುದಾಗಿ ಪಾಕಿಸ್ತಾನ ಸೇನೆ ತಿಳಿಸಿದೆ.

ಸೇನೆಯ ಪ್ರಕಟಣೆಯ ಪ್ರಕಾರ, ಮುಜಾಫರಾಬಾದ್‌ನ ಹೆಲಿಪ್ಯಾಡ್‌ನಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್ ತಾಂತ್ರಿಕ ದೋಷಕ್ಕೆ ಒಳಗಾಗಿ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ. ಅಪಘಾತದ ವೇಳೆ ಭಾರೀ ಸದ್ದು ಕೇಳಿಬಂದಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡಗಳು ಹಾಗೂ ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿವೆ. ಗಾಯಾಳುಗಳು ಮತ್ತು ಮೃತದೇಹಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲ ೨೧ ಮಂದಿ ಸೈನಿಕರು ಮೃತಪಟ್ಟಿರುವುದಾಗಿ ಸೇನೆ ದೃಢಪಡಿಸಿದೆ.

ಪ್ರಾಥಮಿಕ ತನಿಖೆಯಲ್ಲಿ ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ನಿಖರ ಕಾರಣ ಪತ್ತೆಹಚ್ಚಲು ತನಿಖೆಗೆ ಆದೇಶಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

ದುರಂತಕ್ಕೆ ಪಾಕಿಸ್ತಾನದ ರಾಷ್ಟ್ರಪತಿ ಆಸಿಫ್ ಅಲಿ ಜರ್ದಾರಿ ಹಾಗೂ ಪ್ರಧಾನಿ ಶೆಹಬಾಜ್ ಶರೀಫ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಸೈನಿಕರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ದೇಶ ಸೇವೆಯಲ್ಲಿ ಪ್ರಾಣ ತ್ಯಾಗ ಮಾಡಿದ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಇದೇ ವೇಳೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಂ ಮುನೀರ್ ಕೂಡ ಘಟನೆಯಿಂದ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತ ಯೋಧರ ಕುಟುಂಬಗಳೊಂದಿಗೆ ತಮ್ಮ ಸಂತಾಪವನ್ನು ಹಂಚಿಕೊಂಡಿದ್ದಾರೆ ಎಂದು ಸೇನೆಯ ಪ್ರಕಟಣೆ ತಿಳಿಸಿದೆ.

ಸೇತುವೆ ಕಾಮಗಾರಿ ತ್ವರಿತಗೊಳಿಸಲು ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಗೊಜನೂರ ಗ್ರಾಮದ ಸಮೀಪ ಗದಗ-ಲಕ್ಷ್ಮೇಶ್ವರ ಸಂಪರ್ಕ ಕಲ್ಪಿಸುವ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿಯಲ್ಲಿ 41 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಗ್ರಾಪಂ ಮಾಜಿ ಸದಸ್ಯ ಶಿವರಾಜಗೌಡ ಪಾಟೀಲ ಆಗ್ರಹಿಸಿದ್ದಾರೆ.

ಮಳೆಗಾಲದಲ್ಲಿ ಹಳ್ಳದ ನೀರು ಸೇತುವೆ ಮೇಲೆ ಹರಿದು ವಾಹನ ಸವಾರರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಿರು ಸೇತುವೆ ನಿರ್ಮಾಣ ಕಾರ್ಯ ಆರಂಭಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಆದರೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಸೇತುವೆ ಪಕ್ಕದ ಕಚ್ಚಾ ರಸ್ತೆಯಲ್ಲಿ ವಾಹನ ಸಂಚಾರ ಕಷ್ಟಕರವಾಗಿದೆ. ಮಳೆ ಬಂದರೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ದೂರಿದ್ದಾರೆ.

ರಾಜ್ಯ ಹೆದ್ದಾರಿಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿರುವುದರಿಂದ ಗುತ್ತಿಗೆದಾರರು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಈ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ಗಮನ ಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸಚಿವಗಿರಿಯ ಕನಸಿಗೆ ಅಭಿಮಾನಿಯ ಹರಕೆ

0

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ದೊರೆಯಬೇಕೆಂದು ಸಮೀಪದ ಜಕ್ಕಲಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಶಿವರಾಜ ಮುಗಳಿ ವಿಶೇಷ ಹರಕೆ ಹೊತ್ತಿದ್ದಾರೆ.

ಜಿ.ಎಸ್. ಪಾಟೀಲರು ಸಚಿವರಾಗುವವರೆಗೆ ಗಡ್ಡ, ಮೀಸೆ ಹಾಗೂ ತಲೆಯ ಕೂದಲನ್ನು ಕತ್ತರಿಸಿಕೊಳ್ಳುವುದಿಲ್ಲ ಎಂದು ಸಂಕಲ್ಪ ಮಾಡಿರುವ ಶಿವರಾಜ ಮುಗಳಿ, ಬಳಿಕ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಹರಕೆ ತೀರಿಸುವುದಾಗಿ ತಿಳಿಸಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲರು ಕ್ಷೇತ್ರದ ಅಭಿವೃದ್ಧಿ, ರೈತರ ಸಮಸ್ಯೆಗಳ ಪರಿಹಾರ ಹಾಗೂ ಜನಸಂಪರ್ಕದ ಮೂಲಕ ಜನರ ವಿಶ್ವಾಸ ಗಳಿಸಿದ್ದು, ಸಚಿವ ಸ್ಥಾನಕ್ಕೆ ಅರ್ಹರು ಎಂಬ ಅಭಿಪ್ರಾಯ ಕಾರ್ಯಕರ್ತರಲ್ಲಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ರೋಣ ಕ್ಷೇತ್ರದಲ್ಲಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದ್ದು, ವಿವಿಧ ರೀತಿಯಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ.

ಪರಿಸರದ ಮೇಲಿನ ಅತಿಕ್ರಮಣ ನಿಲ್ಲಲಿ: ಡಾ. ಎಸ್.ಸಿ. ಚವಡಿ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪರಿಸರದ ಮೇಲೆ ಮಾನವನು ಮಾಡುತ್ತಿರುವ ಅತಿಕ್ರಮಣದಿಂದ ಪ್ರಕೃತಿ ಹಾನಿಗೊಳಗಾಗಿ ಮಾನವ ಬದುಕಿನ ಮೇಲೆಯೇ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಡಾ. ಎಸ್.ಸಿ. ಚವಡಿ ಹೇಳಿದರು.

ಪಟ್ಟಣದ ಎಸ್‌ಜೆಜೆಎಂ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.

ಕೈಗಾರಿಕರಣ, ಯಾಂತ್ರೀಕರಣ, ಪ್ಲಾಸ್ಟಿಕ್ ಬಳಕೆ ಹಾಗೂ ಪರಿಸರ ಮಾಲಿನ್ಯದಿಂದ ಪ್ರಕೃತಿಗೆ ಹಾನಿಯಾಗುತ್ತಿದ್ದು, ವಿದ್ಯಾರ್ಥಿಗಳು ಈಗಿನಿಂದಲೇ ಪರಿಸರ ಕಾಳಜಿ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪುನಿತ ಓಲೇಕಾರ ಮಾತನಾಡಿ, ಪರಿಸರ ಸಂರಕ್ಷಣೆ ಸಂಸ್ಥೆಯ ಪ್ರಮುಖ ಉದ್ದೇಶವಾಗಿದ್ದು, ಪರಿಸರ ಉಳಿವಿಗೆ ಅಗತ್ಯ ಸಹಕಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಂತಾ ಬೆನಕನಹಳ್ಳಿ, ಪ್ರಕಾಶ ಮದ್ದಿನ, ಎ.ಎಂ. ಅಂಗಡಿ, ಇ.ಎಂ. ಗುಳೆದಗುಡ್ಡ, ವೀರುಪಾಕ್ಷಪ್ಪ ಕಣವಿ, ಶೈಲಾ ಬಳ್ಳಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಗಿಡಮರಗಳೇ ಜೀವ ಸಂಕುಲದ ಉಸಿರು: ಶಿವನಗೌಡ ಗೌಡರ

0

ವಿಜಯಸಾಕ್ಷಿ ಸುದ್ದಿ, ಗದಗ: “ಗಿಡಮರಗಳು ವಿಶ್ವದ ಸಕಲ ಜೀವರಾಶಿಗಳ ಜೀವಾಳವಾಗಿದ್ದು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ನಿವೃತ್ತ ಪ್ರಾಧ್ಯಾಪಕ ಶಿವನಗೌಡ ಗೌಡರ ಹೇಳಿದರು.

ನಗರದ ಬಸವ ಯೋಗ ಮಹಾವಿದ್ಯಾಲಯ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಲಿಂಬೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪರಿಸರ ನಾಶದಿಂದ ಭವಿಷ್ಯದಲ್ಲಿ ಮಾನವ ಸಂಕುಲ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದ್ದು, “ಹಸಿರೇ ಉಸಿರು” ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿದ್ಯಾ ಬಿ. ಸ್ವಾಮಿ ಪರಿಸರ ಸಂರಕ್ಷಣೆಯಲ್ಲಿ ರೈತರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಎಂ. ವ್ಹಿ. ಐಹೊಳಿ, ಸಸಿ ನೆಡುವುದರ ಜೊತೆಗೆ ಅವುಗಳನ್ನು ಪೋಷಿಸಿ ಬೆಳೆಸುವ ಕಾರ್ಯವೂ ಅಗತ್ಯ ಎಂದು ಹೇಳಿದರು.

ವೇದಿಕೆಯಲ್ಲಿ ಕೆ.ಎಸ್. ಪಲ್ಲೇದ, ಬಿ.ಬಿ. ಇಬ್ರಾಹಿಂಪೂರ, ವಿಜಯಲಕ್ಷ್ಮೀ ಆನೆಹೊಸೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!