Home Blog

ಚರ್ಚೆಗೆ ಬಿಡದಿಗೆ ಯಾಕೆ ಹೋಗಬೇಕು? ವಿಧಾನಸೌಧಕ್ಕೆ ಬರಲಿ: HDKಗೆ ಶಾಸಕ ಹೆಚ್.ಸಿ. ಬಾಲಕೃಷ್ಣ ತಿರುಗೇಟು

ಬೆಂಗಳೂರು: ಬಿಡದಿ ಟೌನ್‌ಶಿಪ್ ಎಐ ಸಿಟಿ ಯೋಜನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಪತ್ರ ಸಮರದ ನಡುವೆ, ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಜನೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಿಡದಿಗೆ ಹೋಗುವ ಅಗತ್ಯವೇ ಇಲ್ಲ. ಮುಖ್ಯಮಂತ್ರಿ ವಿಧಾನಸೌಧಕ್ಕೆ ಆಹ್ವಾನ ನೀಡಿದ್ದಾರೆ. ಕುಮಾರಸ್ವಾಮಿ ಅಲ್ಲಿಗೆ ಬಂದು ಚರ್ಚೆ ನಡೆಸಲಿ. ಇಂತಹ ನಾಟಕಗಳನ್ನು ಅವರು ಬಿಡಬೇಕು ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆಯ ಮೂಲ ಕಲ್ಪನೆಯೇ ಹೆಚ್.ಡಿ. ಕುಮಾರಸ್ವಾಮಿ ಅವರದ್ದಾಗಿದೆ. ಅವರು ಮತ್ತು ಅವರ ತಂದೆ ಅಧಿಕಾರದಲ್ಲಿದ್ದಾಗ ಯೋಜನೆಯನ್ನು ರದ್ದುಪಡಿಸಲಿಲ್ಲ. ಈಗ ವಿರೋಧ ವ್ಯಕ್ತಪಡಿಸುವುದು ಕೇವಲ ರಾಜಕೀಯ ನಾಟಕ ಎಂದು ಬಾಲಕೃಷ್ಣ ಆರೋಪಿಸಿದರು.

ಮುಖ್ಯಮಂತ್ರಿ ಈಗಾಗಲೇ ಯೋಜನೆ ಕುರಿತು ನಿರ್ಧಾರ ಕೈಗೊಂಡಿದ್ದು, ಅದನ್ನು ಜಾರಿಗೊಳಿಸುವುದು ಖಚಿತ. ಯಾರೇ ಎಷ್ಟೇ ಹೋರಾಟ ಮಾಡಿದರೂ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸವಾಲು ಹಾಕಿದರು.

ರೈತರ ಸಮ್ಮುಖದಲ್ಲೇ ಚರ್ಚೆ ನಡೆಯಲಿ ಎಂಬ ಕುಮಾರಸ್ವಾಮಿ ಪತ್ರದ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಚರ್ಚೆಗೆ ಕರೆದಿದ್ದಾರೆ. ಅವರು ವಿಧಾನಸೌಧಕ್ಕೆ ಬರಲಿ. ಬರಲು ಇಷ್ಟವಿದ್ದರೆ ಬರಲಿ, ಇಲ್ಲದಿದ್ದರೆ ಬಿಡಲಿ ಎಂದು ತಿರುಗೇಟು ನೀಡಿದರು.

ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು ನಿಜವಾದ ರೈತರಲ್ಲ, ಹೊರಗಿನಿಂದ ಬಂದವರೇ ಹೆಚ್ಚಾಗಿದ್ದರು ಎಂದು ಆರೋಪಿಸಿದರು. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಎಐ ಸಿಟಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಕುಮಾರಸ್ವಾಮಿ ನೀಡಿದ್ದಕ್ಕಿಂತ ಹೆಚ್ಚಿನ ಪರಿಹಾರವನ್ನು ಸರ್ಕಾರ ರೈತರಿಗೆ ನೀಡುತ್ತಿದೆ ಎಂದು ಬಾಲಕೃಷ್ಣ ಹೇಳಿದರು.

ಕೆರೆಗಳ ಶುದ್ಧೀಕರಣಕ್ಕಾಗಿ ಸರ್ಕಾರ ಹಣ ಮೀಸಲಿಟ್ಟಿದ್ದು, ರೈತರಿಗೆ ಪ್ರತಿದಿನ ಆರ್‌ಟಿಜಿಎಸ್ ಮೂಲಕ ಪರಿಹಾರ ಧನ ಪಾವತಿಸಲಾಗುತ್ತಿದೆ. ಸಾಲ ಪಡೆದ ರೈತರಿಗೆ ಒನ್‌ಟೈಮ್ ಸೆಟಲ್‌ಮೆಂಟ್ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ ಎಂದು ವಿವರಿಸಿದರು.

‘ರೀಲ್ ಅಲ್ಲ, ರಿಯಲ್ ಪಕ್ಷ’: ವಿಪಕ್ಷಗಳಿಗೆ ವಿಜಯ್ ತಿರುಗೇಟು, ವೈರಲ್ ಸಂಜ್ಞೆಯ ಮೂಲಕ ರಾಜಕೀಯ ಸಂದೇಶ

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ದಳಪತಿ ವಿಜಯ್ ನೀಡಿದ ಭಾಷಣ ಹಾಗೂ ಅದರ ಕೊನೆಯಲ್ಲಿ ಪ್ರದರ್ಶಿಸಿದ ಸ್ಟೈಲ್ ಇದೀಗ ರಾಜಕೀಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ವಿಪಕ್ಷಗಳ ಟೀಕೆಗಳಿಗೆ ತಕ್ಕ ಉತ್ತರ ನೀಡಿದ ವಿಜಯ್, ತಮ್ಮ ಪಕ್ಷದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡು ಭ್ರಷ್ಟಾಚಾರದ ವಿರುದ್ಧ ಕಠಿಣ ಸಂದೇಶ ರವಾನಿಸಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷಗಳು ಸರ್ಕಾರ ಹಾಗೂ ವಿಜಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಸಭಾತ್ಯಾಗ ಮಾಡಿದ್ದವು. ಬಳಿಕ ಉತ್ತರ ಭಾಷಣ ಮಾಡಿದ ವಿಜಯ್, ತಮ್ಮ ಪಕ್ಷವನ್ನು ಕೇವಲ ಸಿನಿಮಾ ಹಿನ್ನೆಲೆಯ ಪಕ್ಷ ಎಂದು ಟೀಕಿಸುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಗೂ ಮುನ್ನ ಜನಪರ ಹೋರಾಟಗಳು, ಸಾಮಾಜಿಕ ಸೇವಾ ಕಾರ್ಯಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಪರ ನಡೆಸಿದ ಹೋರಾಟಗಳ ವಿವರ ನೀಡಿದ ಅವರು, “ನಮ್ಮದು ಜನರ ಮಧ್ಯೆ ಬೆಳೆದ ರಿಯಲ್ ಪಕ್ಷ” ಎಂದು ಸ್ಪಷ್ಟಪಡಿಸಿದರು.

ಭಾಷಣದ ಕೊನೆಯಲ್ಲಿ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಈ ಹಿಂದೆ ಬಳಸಿದ್ದ ವೈರಲ್ ಸಂಜ್ಞೆಯನ್ನು ಮರುಕಳಿಸಿದ ವಿಜಯ್, ಪರೋಕ್ಷವಾಗಿ ರಾಜಕೀಯ ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು. ವಿಶೇಷವಾಗಿ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮದ ಸಂದೇಶ ನೀಡಿದ ತಕ್ಷಣ ಆ ಸಂಜ್ಞೆ ಪ್ರದರ್ಶಿಸಿದ್ದರಿಂದ, ಇದು ಹಿಂದಿನ ಆಡಳಿತದ ವಿರುದ್ಧದ ರಾಜಕೀಯ ಸೂಚನೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.

ವಿಧಾನಸಭೆಯಲ್ಲಿನ ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಂಬಲಿಗರು ವಿಜಯ್ ಅವರ ರಾಜಕೀಯ ಆತ್ಮವಿಶ್ವಾಸವನ್ನು ಪ್ರಶಂಸಿಸುತ್ತಿದ್ದರೆ, ವಿರೋಧಿಗಳು ಅದರ ಬಗ್ಗೆ ವಿಭಿನ್ನ ವ್ಯಾಖ್ಯಾನಗಳನ್ನು ಮಾಡುತ್ತಿದ್ದಾರೆ.

ಕೆ.ಆರ್.ಪುರ ತ್ರಿವಳಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ₹30 ಲಕ್ಷ ಸಾಲವೇ ಕೊಲೆಗೆ ಕಾರಣವಾಯ್ತಾ..?

0

ಬೆಂಗಳೂರು: ನಗರದ ಕೆ.ಆರ್.ಪುರದಲ್ಲಿ ತಂದೆ, ತಾಯಿ ಹಾಗೂ ತಂಗಿಯನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಮುಖ ಆರೋಪಿ ಶ್ವೇತಾ ಸುಮಾರು 30 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದಳು ಎಂಬ ಮಾಹಿತಿ ಬೆಳಕಿಗೆ ಬಂದಿದ್ದು, ಇದೇ ಸಾಲದ ವಿಚಾರ ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಈ ಪ್ರಕರಣದಲ್ಲಿ ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಮತ್ತು ಸುಪ್ರಿಯಾ (20) ಹತ್ಯೆಯಾಗಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಸದ್ಯ ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶ್ವೇತಾ ಮತ್ತು ಕೆನತ್ ಲಿವ್-ಇನ್ ಸಂಬಂಧದಲ್ಲಿದ್ದ ಸಂದರ್ಭದಲ್ಲಿ ಸುಮಾರು 30 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸಲು ಹಣದ ಅಗತ್ಯವಿದ್ದ ಕಾರಣ, ಶ್ವೇತಾ ತನ್ನ ತಂದೆ-ತಾಯಿಯ ಬಳಿ ಆರ್ಥಿಕ ಸಹಾಯ ಕೇಳಿದ್ದಳು. ಆದರೆ ಪೋಷಕರು ಹಣ ನೀಡಲು ನಿರಾಕರಿಸಿದ್ದರು ಎಂದು ತಿಳಿದುಬಂದಿದೆ.

ಇದಾದ ಬಳಿಕ ಕುಟುಂಬದ ಆಸ್ತಿಯಲ್ಲಿ ತನ್ನ ಪಾಲು ನೀಡುವಂತೆ ಶ್ವೇತಾ ಒತ್ತಾಯ ಮಾಡಿದ್ದಳು. ಈ ವಿಚಾರವಾಗಿ ಕುಟುಂಬದ ಸದಸ್ಯರ ನಡುವೆ ಹಲವು ಬಾರಿ ವಾಗ್ವಾದ ಮತ್ತು ಗಲಾಟೆಗಳು ನಡೆದಿದ್ದವು ಎನ್ನಲಾಗಿದೆ.

ಘಟನೆ ನಡೆದ ದಿನವೂ ಇದೇ ವಿಚಾರವಾಗಿ ತೀವ್ರ ವಾಗ್ವಾದ ನಡೆದಿದ್ದು, ಬಳಿಕ ಶ್ವೇತಾ ಮತ್ತು ಕೆನತ್ ಸೇರಿ ತಂದೆ, ತಾಯಿ ಹಾಗೂ ತಂಗಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಈ ಹಿಂದೆ ಲಭ್ಯವಾದ ಮಾಹಿತಿಯಂತೆ, ಶ್ವೇತಾ ಮತ್ತು ಕೆನತ್ ನಡುವಿನ ಲಿವ್-ಇನ್ ಸಂಬಂಧಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಮಗಳಿಗೆ ಬುದ್ಧಿವಾದ ಹೇಳಲು ಮುಂದಾದ ಸಂದರ್ಭದಲ್ಲಿ ಘಟನೆ ನಡೆದಿರಬಹುದು ಎಂದು ತನಿಖೆ ಸೂಚಿಸುತ್ತಿದೆ.

ಗಂಭೀರವಾಗಿ ಗಾಯಗೊಂಡಿದ್ದ ಸೋಮಸುಂದರ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ಸಾವಿಗೂ ಮುನ್ನ, ತಮ್ಮ ಮೇಲೆ ಮಗಳು ಶ್ವೇತಾ ಮತ್ತು ಆಕೆಯ ಪ್ರಿಯಕರ ಕೆನತ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರಿಗೆ ಹೇಳಿಕೆ ನೀಡಿರುವುದಾಗಿ ತಿಳಿದುಬಂದಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದು, ವಿವಿಧ ಕಡೆಗಳಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ತನಿಖೆ ಮುಂದುವರಿದಿದ್ದು, ಹತ್ಯೆಯ ಹಿಂದಿನ ನಿಖರ ಕಾರಣಗಳ ಬಗ್ಗೆ ಇನ್ನಷ್ಟು ಮಾಹಿತಿ ಸಂಗ್ರಹಿಸಲಾಗುತ್ತಿದೆ.

 

ರೀಲ್ಸ್‌ಗಾಗಿ ಧರಿಸಿದ ಉಡುಪೇ ಸಂಕಷ್ಟ ತಂದಿತೇ?: ಕಿಶನ್ ಬಿಳಗಲಿ-ನಿವೇದಿತಾ ಗೌಡ ವಿರುದ್ಧ ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪ

ಬೆಂಗಳೂರು: ಹುಲಿ ಉಗುರು ಪ್ರಕರಣದ ಬಳಿಕ ಇದೀಗ ನವಿಲು ಗರಿ ವಿವಾದ ಕನ್ನಡ ಕಿರುತೆರೆ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಜನಪ್ರಿಯ ನಟ ಕಿಶನ್ ಬಿಳಗಲಿ ಹಾಗೂ ನಟಿ ನಿವೇದಿತಾ ಗೌಡ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ಅರಣ್ಯ ಇಲಾಖೆಗೆ ಅಧಿಕೃತ ದೂರು ಸಲ್ಲಿಕೆಯಾಗಿದೆ.

ನಟ-ನಟಿ ಜೋಡಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ರೀಲ್ಸ್‌ನಲ್ಲಿ ನವಿಲು ಗರಿಗಳಿಂದ ಅಲಂಕರಿಸಲಾದ ಉಡುಪು ಧರಿಸಿ ಕಾಣಿಸಿಕೊಂಡಿದ್ದರು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ನೈಜ ನವಿಲು ಗರಿಗಳನ್ನು ಬಳಸಿಕೊಂಡು ಉಡುಪು ತಯಾರಿಸಿ ಸಾರ್ವಜನಿಕವಾಗಿ ಪ್ರದರ್ಶಿಸಿರುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವುದು ವನ್ಯಜೀವಿ (ಸಂರಕ್ಷಣಾ) ಕಾಯ್ದೆಯ ಗಂಭೀರ ಉಲ್ಲಂಘನೆಯಾಗಬಹುದು ಎಂದು ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ವೈರಲ್ ವಿಡಿಯೋ ಮತ್ತು ಫೋಟೋಗಳ ವೈಜ್ಞಾನಿಕ ಪರಿಶೀಲನೆ ನಡೆಸಿ, ಬಳಸಿರುವ ಗರಿಗಳು ನೈಜವೋ ಅಥವಾ ಕೃತಕವೋ ಎಂಬುದನ್ನು ಪತ್ತೆಹಚ್ಚಬೇಕು ಎಂದು ಆಗ್ರಹಿಸಲಾಗಿದೆ. ನೈಜ ನವಿಲು ಗರಿಗಳಾಗಿರುವುದು ದೃಢಪಟ್ಟಲ್ಲಿ ಸಂಬಂಧಿತ ಉಡುಪುಗಳನ್ನು ವಶಕ್ಕೆ ಪಡೆದು ತನಿಖೆ ವಿಸ್ತರಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದರ ಜೊತೆಗೆ ಗರಿಗಳ ಮೂಲ, ಖರೀದಿ, ಸಂಗ್ರಹಣೆ ಹಾಗೂ ಪೂರೈಕೆ ಸರಪಳಿಯ ಸಂಪೂರ್ಣ ತನಿಖೆ ನಡೆಸಬೇಕು. ನವಿಲು ಗರಿಗಳಿಗಾಗಿ ಅಕ್ರಮ ಬೇಟೆ, ಕಳ್ಳಸಾಗಣೆ ಅಥವಾ ಇತರೆ ವನ್ಯಜೀವಿ ಅಪರಾಧ ನಡೆದಿರುವ ಶಂಕೆ ಇದ್ದರೆ ವಿಶೇಷ ತನಿಖಾ ತಂಡ ರಚಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಸದ್ಯ ದೂರು ಅರಣ್ಯ ಇಲಾಖೆಯ ಗಮನಕ್ಕೆ ಬಂದಿದ್ದು, ಪ್ರಾಥಮಿಕ ಹಂತದ ಪರಿಶೀಲನೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

RSS ಟೀಕೆ ಬಿಟ್ಟು ರಾಜ್ಯದ ಗಂಭೀರ ಸಮಸ್ಯೆಗಳತ್ತ ಗಮನ ಕೊಡಿ: ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ಕಿಡಿ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ಅನ್ನು ಪದೇ ಪದೇ ಟೀಕಿಸುತ್ತಿರುವ ವಿಚಾರಕ್ಕೆ ಬಿಜೆಪಿ ಮುಖಂಡ ಸಿ.ಟಿ. ರವಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಮಾಡಲು ಸಾಕಷ್ಟು ಕೆಲಸಗಳಿದ್ದು, ಆರ್‌ಎಸ್‌ಎಸ್‌ ಕುರಿತು ಹೇಳಿಕೆ ನೀಡುವುದಕ್ಕಿಂತ ರಾಜ್ಯದ ಗಂಭೀರ ಸಮಸ್ಯೆಗಳ ಕಡೆ ಗಮನಹರಿಸಬೇಕು ಎಂದು ಹೇಳಿದರು.

ಕರ್ನಾಟಕ ಡ್ರಗ್ಸ್ ಹಾವಳಿಯಿಂದ ತತ್ತರಿಸುತ್ತಿದ್ದು, ರಾಜ್ಯ ಡ್ರಗ್ಸ್ ಕ್ಯಾಪಿಟಲ್ ಆಗುವ ಆತಂಕ ಎದುರಾಗಿದೆ. ಇದರತ್ತ ಸರ್ಕಾರ ಗಮನಹರಿಸಬೇಕು. ಅಲ್ಲದೆ, ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರು ದೊಡ್ಡ ಪ್ರಮಾಣದಲ್ಲಿ ಕರ್ನಾಟಕಕ್ಕೆ ಬರುತ್ತಿರುವ ಮಾಹಿತಿ ಇದೆ. ಇದು ದೇಶದ ಭದ್ರತೆಯ ದೃಷ್ಟಿಯಿಂದ ಗಂಭೀರ ವಿಷಯವಾಗಿದ್ದು, ಸರ್ಕಾರ ಇದನ್ನು ನಿರ್ಲಕ್ಷಿಸಬಾರದು ಎಂದು ಹೇಳಿದರು.

ಭಯೋತ್ಪಾದಕರ ಸ್ಲೀಪರ್ ಸೆಲ್‌ಗಳ ಚಟುವಟಿಕೆಗಳಿಗೆ ಕರ್ನಾಟಕವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಇರುವುದಾಗಿ ಹೇಳಿದ ಅವರು, ಈ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಾಹಿತಿ ಸಂಗ್ರಹಿಸಿದ್ದು, ಉಗ್ರರ ಸಂಪರ್ಕ ಹೊಂದಿರುವ ಆರೋಪಿಗಳನ್ನು ಬಂಧಿಸಲಾಗಿದೆ. ಇಂತಹ ಗಂಭೀರ ವಿಷಯಗಳ ಬಗ್ಗೆ ಸರ್ಕಾರ ಹೆಚ್ಚಿನ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ನೀಟ್ ಪರೀಕ್ಷೆಗೆ ಸಂಬಂಧಿಸಿದ ಗೊಂದಲದ ಬಗ್ಗೆಯೂ ಮಾತನಾಡಿದ ಸಿ.ಟಿ. ರವಿ, ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ವೇಳಾಪಟ್ಟಿಯನ್ನು ಒಂದು ದಿನ ಮುಂದೂಡಿದ್ದರೆ ಅಥವಾ ಹಿಂದೂಡಿದ್ದರೆ, ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುತ್ತಿರಲಿಲ್ಲ ಎಂದು ಹೇಳಿದರು.

ಪರೀಕ್ಷೆಯಿಂದ ವಂಚಿತರಾಗಿ ಕಣ್ಣೀರು ಹಾಕಿದ ವಿದ್ಯಾರ್ಥಿಗಳ ನೋವಿನ ಬಗ್ಗೆ ಸರ್ಕಾರ ಯೋಚಿಸಬೇಕು. ಇದು ಅಧಿಕಾರದ ಅಹಂಕಾರದ ಪರಿಣಾಮ. ಅಧಿಕಾರದ ಮದವನ್ನು ಬಿಟ್ಟು ಜನರ ಹಿತದೃಷ್ಟಿಯಿಂದ ಆದ್ಯತೆಗಳನ್ನು ನಿರ್ಧರಿಸಬೇಕು ಎಂದು ಟೀಕಿಸಿದರು.

ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ. ಅಧಿಕಾರದ ಅಹಂಕಾರದಲ್ಲಿ ಬದುಕಿದವರು ಕೊನೆಯಲ್ಲಿ ಇತಿಹಾಸದಲ್ಲಿ ಉಳಿದಿಲ್ಲ. ಉತ್ತಮ ಕೆಲಸ ಮಾಡುವ ಅವಕಾಶ ಇದ್ದಾಗ ಅದನ್ನು ಬಿಟ್ಟು, ಉತ್ತಮ ಕೆಲಸ ಮಾಡುವವರ ವಿರುದ್ಧ ಅಪಪ್ರಚಾರ ನಡೆಸುವುದು ಸರಿಯಲ್ಲ. ಅಪಪ್ರಚಾರದಿಂದ ಪ್ರಚಾರ ಸಿಗಬಹುದು, ಆದರೆ ಅದು ಯಾವುದೇ ಘನ ಕಾರ್ಯವಲ್ಲ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಸಿ.ಟಿ. ರವಿ ವಾಗ್ದಾಳಿ ನಡೆಸಿದರು.

ಗದಗ ಎಸ್ಪಿ ರೋಹನ್ ಜಗದೀಶ್ ಸೇರಿ ನಾಲ್ವರಿಗೆ ಪ್ರತಿಷ್ಠಿತ DG-IGP ಪ್ರಶಂಸನಾ ಪದಕ; ಗದಗ ಜಿಲ್ಲೆಯ ಪೊಲೀಸ್ ಇಲಾಖೆಗೆ ಹೆಮ್ಮೆಯ ಗರಿ!

0

ಗದಗ: ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ದಕ್ಷತೆ, ಅಪರಾಧ ನಿಯಂತ್ರಣದಲ್ಲಿ ಪರಿಣಾಮಕಾರಿ ಕಾರ್ಯಾಚರಣೆ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಹಾಗೂ ಕರ್ತವ್ಯನಿಷ್ಠ ಸೇವೆಯ ಮೂಲಕ ಗುರುತಿಸಿಕೊಂಡಿರುವ ಗದಗ ಜಿಲ್ಲಾ ಪೊಲೀಸ್ ಇಲಾಖೆಗೆ ರಾಜ್ಯ ಮಟ್ಟದ ಪ್ರತಿಷ್ಠಿತ ಗೌರವ ಲಭಿಸಿದೆ.

ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನೀಡಲಾಗುವ “ಡಿಜಿ ಮತ್ತು ಐಜಿಪಿ ಪ್ರಶಂಸನಾ ಪದಕ-2025-26”ಕ್ಕೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಜಿಲ್ಲೆಯ ಮೂವರು ಅಧಿಕಾರಿಗಳು ಮತ್ತು ಸಿಬ್ಬಂದಿ ಆಯ್ಕೆಯಾಗಿದ್ದು, ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.

ರಾಜ್ಯಾದ್ಯಂತ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 200 ಅಧಿಕಾರಿ ಮತ್ತು ಸಿಬ್ಬಂದಿಯನ್ನು ಈ ಸಾಲಿನ ಪ್ರಶಂಸನಾ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರಾದ ಡಾ. ಎಂ.ಎ. ಸಲೀಂ ಅವರ ಕಚೇರಿಯಿಂದ ಅಧಿಕೃತ ಆದೇಶ ಹೊರಬಿದ್ದಿದ್ದು, ಗದಗ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿಯ ಹೆಸರುಗಳು ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ವಿಶೇಷವಾಗಿದೆ.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಖಡಕ್ ನಿರ್ಧಾರ ತೆಗೆದುಕೊಳ್ಳುವ ಎಸ್ಪಿ ರೋಹನ್ ಜಗದೀಶ್ ಅವರಿಗೆ ಈ ಗೌರವ ಲಭಿಸಿರುವುದು ಗದಗ ಪೊಲೀಸ್ ಇಲಾಖೆಯ ಸಾಧನೆಗೆ ದೊರೆತ ಮಹತ್ವದ ಮನ್ನಣೆಯಾಗಿದೆ. ಅಪರಾಧ ತಡೆ, ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹಾಗೂ ಶಿಸ್ತಿನ ಆಡಳಿತದ ಮೂಲಕ ಅವರು ಜಿಲ್ಲೆಯಲ್ಲಿ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆ ರೂಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅದೇ ರೀತಿ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಪಿಎಸ್‌ಐ ಮಾರುತಿ ಜೋಗದಂಡಕರ್, ಗದಗ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ ಬಡಿಗೇರ್ ಹಾಗೂ ಡಿಎಆರ್ ಗದಗದ ಎಪಿಸಿ-57 ಮಂಜುನಾಥ್ ಬಂಡಿಹಾಳ್ ಅವರುಗಳು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ತೋರಿದ ನಿಷ್ಠೆ, ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವಕ್ಕಾಗಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯ ಅತ್ಯುನ್ನತ ಗೌರವಗಳಲ್ಲಿ ಒಂದೆನಿಸಿರುವ ಡಿಜಿ-ಐಜಿಪಿ ಪ್ರಶಂಸನಾ ಪದಕ ಗದಗ ಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಭಿಸಿರುವುದು ಜಿಲ್ಲೆಯ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಗೆ ಸಂದ ರಾಜ್ಯ ಮಟ್ಟದ ಮನ್ನಣೆಯಾಗಿದೆ. ಪದಕ ವಿಜೇತರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ.

ಬಿಡದಿ ಭೂ ವ್ಯವಹಾರ ಕುರಿತು ಕುಮಾರಸ್ವಾಮಿ ಪ್ರಸ್ತಾಪ: ವರದಿ ಪರಿಶೀಲಿಸಿ ಬಳಿಕ ಅಭಿಪ್ರಾಯ ತಿಳಿಸುತ್ತೇನೆ ಎಂದ ಎಚ್.ಕೆ. ಪಾಟೀಲ್

ಬೆಂಗಳೂರು: ಬಿಡದಿ ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿರುವ ಸತ್ಯಶೋಧನಾ ಸಮಿತಿ ವರದಿ ಕುರಿತು ಸಚಿವ ಎಚ್.ಕೆ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ವರದಿಯನ್ನು ಮತ್ತೊಮ್ಮೆ ಪರಿಶೀಲಿಸಿದ ಬಳಿಕವೇ ತಮ್ಮ ಅಭಿಪ್ರಾಯವನ್ನು ತಿಳಿಸುವುದಾಗಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಯಾವ ಸತ್ಯಶೋಧನಾ ಸಮಿತಿಯ ವರದಿಯನ್ನು ಉಲ್ಲೇಖಿಸಿದ್ದಾರೆ ಎಂಬುದು ನನಗೆ ಈಗ ಸ್ಪಷ್ಟವಾಗಿಲ್ಲ. ನನ್ನ ನೆನಪನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳಬೇಕು.

ನಾನು ಸಾರ್ವಜನಿಕ ಲೆಕ್ಕಪತ್ರ ಸಮಿತಿ (PAC) ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಎಲ್ಲ ಸದಸ್ಯರನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿದ್ದೆ. ಈಗಲ್ಟನ್, ಖೋಡೆ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿತ್ತು. ಅವರು ಇದೇ ವರದಿಯ ಬಗ್ಗೆ ಹೇಳಿದ್ದಾರೆಯೇ ಎಂಬುದನ್ನು ಪರಿಶೀಲಿಸಿ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಎಚ್.ಕೆ. ಪಾಟೀಲ್ ಸ್ಪಷ್ಟನೆ ನೀಡಿದರು. ಪರಮೇಶ್ವರ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಬಳಿಕ ನಾನು ಅವರನ್ನು ಭೇಟಿ ಮಾಡಲು ಬರುತ್ತೇನೆ ಎಂದು ದೂರವಾಣಿ ಮೂಲಕ ತಿಳಿಸಿದ್ದೆ. ಆದರೆ ಅವರೇ ‘ನಾನೇ ಬರುತ್ತೇನೆ’ ಎಂದು ಹೇಳಿ ನನ್ನನ್ನು ಭೇಟಿ ಮಾಡಿದರು.

ನಾವು ಸ್ನೇಹಿತರೆಲ್ಲ ಸೇರಿ ಆತ್ಮೀಯವಾಗಿ ಮಾತುಕತೆ ನಡೆಸಿದೆವು. ನಮ್ಮ ಉತ್ತರ ಕರ್ನಾಟಕ ಭಾಗದ ಕೆಲ ನಾಯಕರು ಅವರಿಗೆ ಸನ್ಮಾನ ಮಾಡಿದರು. ಬಳಿಕ ಚಹಾ ಕುಡಿಯುತ್ತಾ, ಉಪ್ಪಿಟ್ಟು ಸೇವಿಸುತ್ತಾ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ನಮ್ಮ ಸ್ನೇಹಿತರೊಬ್ಬರು ಉಪ ಮುಖ್ಯಮಂತ್ರಿಯಾಗಿರುವುದು ಸಂತಸದ ವಿಚಾರ ಎಂದು ಹೇಳಿದರು.

ಸಚಿವ ಸ್ಥಾನ ಸಿಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳುವುದು ಸಹಜ. ಆದರೆ ಅದಕ್ಕಾಗಿ ಕಾಂಗ್ರೆಸ್ ನಾಯಕರ ಬಗ್ಗೆ ಅಸಮಾಧಾನ ಹೊಂದುವ ಪ್ರಶ್ನೆಯೇ ಇಲ್ಲ. ಸಚಿವ ಸ್ಥಾನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಮುಖ್ಯಮಂತ್ರಿ ಅಥವಾ ಎಐಸಿಸಿ ಅಧ್ಯಕ್ಷರನ್ನು ಕೇಳಬೇಕು ಎಂದರು.

ಎಐಸಿಸಿ ಅಧ್ಯಕ್ಷರೊಂದಿಗೆ ತಮ್ಮ ಸಂಬಂಧ ಹಲವು ದಶಕಗಳ ಹಿಂದಿನಿಂದಲೂ ಇದೆ ಎಂದು ತಿಳಿಸಿದ ಎಚ್.ಕೆ. ಪಾಟೀಲ್, ನಮ್ಮ ತಂದೆಯವರ ಕಾಲದಿಂದಲೂ ಉತ್ತಮ ಸಂಬಂಧವಿದೆ. ಅವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾಗ ನಾನು ವಿಧಾನ ಪರಿಷತ್‌ನಲ್ಲಿ ವಿರೋಧ ಪಕ್ಷದ ನಾಯಕನಾಗಿದ್ದೆ.

ಎಸ್ಎಂ ಕೃಷ್ಣ ಅವರ ಸಚಿವ ಸಂಪುಟದಲ್ಲಿ ಅವರು ಗೃಹ ಸಚಿವರಾಗಿದ್ದರೆ, ನಾನು ಜಲಸಂಪನ್ಮೂಲ ಸಚಿವನಾಗಿದ್ದೆ. ಬಳಿಕ ಆರ್‌ಡಿಪಿಆರ್ ಸಚಿವನಾಗಿಯೂ ಕಾರ್ಯನಿರ್ವಹಿಸಿದ್ದೇನೆ. ಸರ್ಕಾರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ನಮ್ಮ ನಡುವೆ ಸಾಮಾಜಿಕ ಮತ್ತು ವೈಯಕ್ತಿಕ ಸಂಬಂಧವೂ ಗಟ್ಟಿಯಾಗಿದೆ ಎಂದು ಹೇಳಿದರು.

ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳಿಗೆ ಕಣ್ಣೀರಿನ ವಿದಾಯ; ಅಂತಿಮ ದರ್ಶನ ಪಡೆದ ಸಿಎಂ, ಕೇಂದ್ರ ಸಚಿವರು

ರಾಮನಗರ: ಕನಕಪುರದ ಐತಿಹಾಸಿಕ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ಸಾವಿರಾರು ಭಕ್ತರು, ವಿವಿಧ ಮಠಾಧೀಶರು, ಗಣ್ಯರು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆದು ಭಾವಪೂರ್ಣ ನಮನ ಸಲ್ಲಿಸಿದರು.

ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಗಳಿಗೆ ನಮಸ್ಕರಿಸಿ ಅಂತಿಮ ವಿದಾಯ ಹೇಳಿದರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೇಗುಲ ಮಠಕ್ಕೆ ಭೇಟಿ ನೀಡಿ ಶ್ರೀಗಳ ಅಂತಿಮ ದರ್ಶನ ಪಡೆದರು.

ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಠಕ್ಕೆ ಆಗಮಿಸಿ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಈಶ್ವರ್ ಖಂಡ್ರೆ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ರವಿ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಅಂತಿಮ ದರ್ಶನದ ವೇಳೆ ಶ್ರೀಗಳೊಂದಿಗಿನ ಆತ್ಮೀಯ ಒಡನಾಟವನ್ನು ಸ್ಮರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾವುಕರಾಗಿ ಕಣ್ಣೀರು ಹಾಕಿದರು. ಬಳಿಕ ಶ್ರೀಗಳ ಪಾರ್ಥಿವ ಶರೀರದ ಮೇಲೆ ತ್ರಿವರ್ಣ ಧ್ವಜ ಹೊದಿಸಿ, ಮೂರು ಸುತ್ತು ಗುಂಡು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.

ಸರ್ಕಾರಿ ಗೌರವದ ಅಂಗವಾಗಿ ತ್ರಿವರ್ಣ ಧ್ವಜವನ್ನು ಕಿರಿಯ ಶ್ರೀಗಳಿಗೆ ಹಸ್ತಾಂತರಿಸುವ ವೇಳೆ ಮುಖ್ಯಮಂತ್ರಿ ಗದ್ಗದಿತರಾದರು. ಶ್ರೀಗಳಿಗೆ ಕಣ್ಣೀರಿನ ವಿದಾಯ ಹೇಳಿದ ಬಳಿಕ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಈಶ್ವರ್ ಖಂಡ್ರೆ ಮಠದ ಆವರಣದಲ್ಲೇ ಕೆಲಕಾಲ ಕುಳಿತು ಶ್ರೀಗಳ ಸೇವೆ ಮತ್ತು ಕೊಡುಗೆಗಳನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.

ನೀಟ್ ಅಭ್ಯರ್ಥಿ ತಡವಾಗಿ ಬಂದಿದ್ದು ಟ್ರಾಫಿಕ್ ನಿಂದಲ್ಲ; ವದಂತಿಗಳಿಗೆ ಬೆಂಗಳೂರು ಪೊಲೀಸರು ಸ್ಪಷ್ಟನೆ

ಬೆಂಗಳೂರು: ನೀಟ್ (NEET) ಪರೀಕ್ಷೆಯ ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ ಹಾಗೂ ಬೆಂಗಳೂರು ಸಂಚಾರ ಪೊಲೀಸ್ ಜಂಟಿಯಾಗಿ ಸ್ಪಷ್ಟನೆ ನೀಡಿವೆ.

ಸಾರ್ವಜನಿಕ ಕಾರ್ಯಕ್ರಮದಿಂದ ಉಂಟಾದ ಟ್ರಾಫಿಕ್ ದಟ್ಟಣೆಯ ಕಾರಣ ಅಭ್ಯರ್ಥಿ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ್ದಾರೆ ಎಂಬ ಆರೋಪವನ್ನು ಪೊಲೀಸರು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಸಿಸಿಟಿವಿ ದೃಶ್ಯಾವಳಿ, ಅಭ್ಯರ್ಥಿ ಹಾಗೂ ಪೋಷಕರೊಂದಿಗೆ ನಡೆಸಿದ ಸಂಭಾಷಣೆ ಮತ್ತು ಮಾರ್ಗ ವಿಶ್ಲೇಷಣೆಯ ಆಧಾರದ ಮೇಲೆ ಅಧಿಕೃತ ಫ್ಯಾಕ್ಟ್ ಚೆಕ್ ವರದಿಯನ್ನು ಬಿಡುಗಡೆ ಮಾಡಿದ್ದಾರೆ.

ಘಟನೆಯ ಸಮಯಾವಳಿ

  • ಮಧ್ಯಾಹ್ನ 12:57: ಅಭ್ಯರ್ಥಿ ಆರ್.ಟಿ. ನಗರದಲ್ಲಿರುವ ನಿವಾಸದಿಂದ ಹೊರಟರು.
  • ಮಧ್ಯಾಹ್ನ 1:30: ಪರೀಕ್ಷಾ ಕೇಂದ್ರ ಪ್ರವೇಶಿಸಲು ನಿಗದಿಪಡಿಸಿದ್ದ ಕೊನೆಯ ಸಮಯ.
  • ಮಧ್ಯಾಹ್ನ 1:33: ನಿಗದಿತ ಸಮಯ ಮುಗಿದ ಮೂರು ನಿಮಿಷಗಳ ಬಳಿಕ ಅಭ್ಯರ್ಥಿ ಪರೀಕ್ಷಾ ಕೇಂದ್ರದ ಆವರಣ ತಲುಪಿದರು.

ಪೊಲೀಸರ ಪ್ರಕಾರ, ಪರೀಕ್ಷಾ ಕೇಂದ್ರದ ಪ್ರವೇಶ ಮುಕ್ತಾಯಕ್ಕೆ ಕೇವಲ 33 ನಿಮಿಷ ಬಾಕಿ ಇರುವಾಗ ಅಭ್ಯರ್ಥಿ ಮನೆಯಿಂದ ಹೊರಟಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ದೃಢಪಟ್ಟಿದೆ.

ತಪ್ಪು ಮಾರ್ಗವೇ ತಡಕ್ಕೆ ಕಾರಣ

ಪರಿಶೀಲನೆಯಲ್ಲಿ, ಕಡಿಮೆ ಸಮಯದಲ್ಲಿ ತಲುಪಬಹುದಾದ ಸುಲಭ ಹಾಗೂ ಹತ್ತಿರದ ಮಾರ್ಗಗಳಿದ್ದರೂ ಅಭ್ಯರ್ಥಿ ಹೆಚ್ಚು ಸಮಯ ತೆಗೆದುಕೊಳ್ಳುವ ಸುದೀರ್ಘ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಅಲ್ಲದೆ, ಘಟನೆ ನಡೆದ ದಿನ ನಗರದಲ್ಲಿ ಸಂಚಾರ ಪರಿಸ್ಥಿತಿ ಸಾಮಾನ್ಯವಾಗಿದ್ದು, ಸಾರ್ವಜನಿಕ ಕಾರ್ಯಕ್ರಮದಿಂದ ಯಾವುದೇ ಅಸಹಜ ಟ್ರಾಫಿಕ್ ದಟ್ಟಣೆ ಉಂಟಾಗಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅಭ್ಯರ್ಥಿ ಸಂಚರಿಸಿದ್ದ ಮಾರ್ಗದಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್ ಸಿಬ್ಬಂದಿ ವಾಹನ ಸುಗಮವಾಗಿ ಸಾಗಲು ಅಗತ್ಯ ನೆರವು ನೀಡಿರುವುದೂ ಪರಿಶೀಲನೆಯಲ್ಲಿ ಕಂಡುಬಂದಿದೆ.

ವದಂತಿಗಳಿಗೆ ಪೊಲೀಸ್ ತೆರೆ

ಲಭ್ಯವಿರುವ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ, ಸಾರ್ವಜನಿಕ ಕಾರ್ಯಕ್ರಮದ ಟ್ರಾಫಿಕ್‌ನಿಂದ ಅಭ್ಯರ್ಥಿ ತಡವಾಗಿ ತಲುಪಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ತಡವಾಗಿ ಮನೆಯಿಂದ ಹೊರಡುವುದು ಹಾಗೂ ಸೂಕ್ತ ಮಾರ್ಗವನ್ನು ಆಯ್ಕೆ ಮಾಡದಿರುವುದೇ ಪರೀಕ್ಷೆಗೆ ತಡವಾಗಲು ಪ್ರಮುಖ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಗಮನಾರ್ಹವಾಗಿ, ಜೂನ್ 21ರಂದು ಅರಮನೆ ಮೈದಾನದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮ ನಡೆದಿದ್ದು, ಇದೇ ಕಾರ್ಯಕ್ರಮದಿಂದ ನೀಟ್ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದೀಗ ಪೊಲೀಸ್ ವರದಿ ಆ ಆರೋಪವನ್ನು ನಿರಾಕರಿಸಿದೆ.

IPL: ಡೆಲ್ಲಿಗೆ ಮರಳಿದ ರಿಷಭ್ ಪಂತ್, ಲಕ್ನೋ ತಂಡ ಸೇರಿದ ಕುಲದೀಪ್ ಯಾದವ್!

0

ಮುಂಬೈ: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಗೆ ಮುನ್ನ ಎರಡು ಫ್ರಾಂಚೈಸಿಗಳ ನಡುವೆ ನಡೆದ ಹೈ-ಪ್ರೊಫೈಲ್ ಆಟಗಾರರ ವಿನಿಮಯದಲ್ಲಿ ಭಾರತದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳಿದ್ದು, ಸ್ಪಿನ್ ತಾರೆ ಕುಲದೀಪ್ ಯಾದವ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿದ್ದಾರೆ. ಈ ವಿನಿಮಯವನ್ನು ಐಪಿಎಲ್ ಅಧಿಕೃತವಾಗಿ ದೃಢಪಡಿಸಿದೆ.

2025ರ ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ರಿಷಭ್ ಪಂತ್ ಅವರನ್ನು ದಾಖಲೆಯ 27 ಕೋಟಿ ರೂಪಾಯಿಗೆ ಖರೀದಿಸಿತ್ತು. ಆದರೆ ಇದೀಗ ಅವರು 15 ಕೋಟಿ ರೂಪಾಯಿ ವೇತನಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳುತ್ತಿದ್ದು, 12 ಕೋಟಿ ರೂಪಾಯಿ ವೇತನ ಕಡಿತವನ್ನು ಒಪ್ಪಿಕೊಂಡಿದ್ದಾರೆ.

ಇನ್ನೊಂದೆಡೆ, ಭಾರತದ ಪ್ರಮುಖ ಸ್ಪಿನ್ನರ್ ಕುಲದೀಪ್ ಯಾದವ್ ಡೆಲ್ಲಿ ಕ್ಯಾಪಿಟಲ್ಸ್ ತೊರೆದು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿದ್ದಾರೆ. 13.5 ಕೋಟಿ ರೂಪಾಯಿ ವೇತನದಲ್ಲಿ ಅವರನ್ನು ಲಕ್ನೋ ತನ್ನ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ತಂಡದ ಸ್ಪಿನ್ ವಿಭಾಗಕ್ಕೆ ಮತ್ತಷ್ಟು ಬಲ ದೊರೆತಿದೆ.

ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳಿದರೂ ರಿಷಭ್ ಪಂತ್ ತಂಡದ ನಾಯಕತ್ವ ವಹಿಸಿಕೊಳ್ಳುವುದಿಲ್ಲ. ಅವರು ವಿಕೆಟ್‌ಕೀಪರ್-ಬ್ಯಾಟರ್ ಆಗಿಯೇ ತಂಡದಲ್ಲಿ ಆಡಲಿದ್ದು, ನಾಯಕತ್ವದ ಬಗ್ಗೆ ಫ್ರಾಂಚೈಸಿ ಪ್ರತ್ಯೇಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಡೆಲ್ಲಿ ಕ್ಯಾಪಿಟಲ್ಸ್ ಕೋಚಿಂಗ್ ವಿಭಾಗದಲ್ಲೂ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಇದೆ. ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ತಂಡದ ಕೋಚಿಂಗ್ ಸಿಬ್ಬಂದಿಗೆ ಸೇರುವ ಸಾಧ್ಯತೆ ಇದೆ. ಆದರೆ ಅವರು ಮುಖ್ಯ ಕೋಚ್ ಅಲ್ಲ, ಬ್ಯಾಟಿಂಗ್ ಕೋಚ್ ಆಗಿ ಅಥವಾ ಕೋಚಿಂಗ್ ಸ್ಟಾಫ್‌ನ ಪ್ರಮುಖ ಸದಸ್ಯರಾಗಿ ಸೇರುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ.

error: Content is protected !!