Home Blog

ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ ಕೆ ಶಿವಕುಮಾರ್

0

ಬೆಂಗಳೂರು: “ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಬರಗಾಲ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇತರೆ ನಾಯಕರು ತಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರ ಸರ್ಕಾರದಿಂದ ಅನುದಾನ ಹಾಗೂ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಬೇಕು. ಬರಗಾಲಕ್ಕೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ಬರಗಾಲ; ವಿಪಕ್ಷಗಳಿಂದ ರಾಜಕಾರಣ

“ಬರ ಪರಿಸ್ಥಿತಿ ಕುರಿತಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ವಿಪಕ್ಷಗಳಿಗೆ ರೈತರು ಹಾಗೂ ಬರ ಪರಿಸ್ಥಿತಿಯ ಬಗ್ಗೆ ಅಧ್ಯಯನ ಮಾಡಲು, ಚರ್ಚಿಸಲು ಕಿಂಚಿತ್ತೂ ಆಸಕ್ತಿ ಇಲ್ಲ. ಬರ ಪರಿಸ್ಥಿತಿ ಚರ್ಚೆ ಬಗ್ಗೆ ಜನತಾ ದಳ ಮತ್ತು ಬಿಜೆಪಿ ಶಾಸಕರೇ ನನ್ನ ಬಳಿ ಬಂದು ಬೇಸರ ತೋಡಿಕೊಂಡಿದ್ದಾರೆ. ಅದಕ್ಕಾಗಿಯೇ ಪ್ರತ್ಯೇಕವಾಗಿ ವಿಶೇಷ ಅಧಿವೇಶನ ನಡೆಸಲಿದ್ದೇವೆ. ಆಯಾ ಕ್ಷೇತ್ರಗಳ ಭಾವನೆ, ಪರಿಸ್ಥಿತಿ ಅರ್ಥಮಾಡಿಕೊಂಡು ನಾನು ಅವರಿಗೆ ಸಹಾಯ ಮಾಡಬೇಕು. ನೈಜ ಪರಿಸ್ಥಿತಿಯನ್ನು ಅಧ್ಯಯನ ಮಾಡುವ ಬದಲು ವಿಪಕ್ಷಗಳು ರಾಜಕಾರಣ ಮಾಡುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

3 ದಿನಗಳ ವಿಶೇಷ ಅಧಿವೇಶನ

“ರೈತರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲು ರಾಜ್ಯ ಸರ್ಕಾರವು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನದಲ್ಲಿ ಸಂಪೂರ್ಣವಾಗಿ ರಾಜ್ಯದ ಬರ ಪರಿಸ್ಥಿತಿ, ರೈತರ ತೊಂದರೆಗಳು ಮತ್ತು ಪಶ್ಚಿಮ ಘಟ್ಟಗಳ ಕುರಿತಾದ ಕಸ್ತೂರಿರಂಗನ್ ವರದಿಗೆ ರಾಜ್ಯ ಸಲ್ಲಿಸಬೇಕಾದ ಆಕ್ಷೇಪಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

ಅಧಿವೇಶನವನ್ನು 7 ದಿನಗಳಿಗೆ ವಿಸ್ತರಿಸಬೇಕೆಂಬ ವಿಪಕ್ಷಗಳ ಬೇಡಿಕೆಯ ಬಗ್ಗೆ ಕೇಳಿದಾಗ, “ಎಲ್ಲರ ಅಭಿಪ್ರಾಯವನ್ನು ನಾವು ಕೇಳುತ್ತೇವೆ. ಕೆಲವು ನಾಯಕರು ಮಾತ್ರ ತಕರಾರು ಮಾಡುತ್ತಾರೆ ಎಂದರೆ ಉಳಿದ ಶಾಸಕರು ಏನು ಮಾಡಬೇಕು. ಎಲ್ಲರೂ ಜನ ಪ್ರತಿನಿಧಿಗಳೇ, ಚರ್ಚೆಗಳಾಗಲಿ” ಎಂದರು.

ಬೆಂಗಳೂರು ದಟ್ಟಣೆ ತಪ್ಪಿಸಬೇಕು:

ನೀತಿ ಆಯೋಗದ ಜತೆಗಿನ ಸಭೆಯಲ್ಲಿ ರಾಜ್ಯಕ್ಕೆ ಅನುದಾನ ಹಂಚಿಕೆ ಸರಿಯಾಗಿ ಆಗಬೇಕು ಎಂದು ಆಗ್ರಹಿಸಿದ್ದೀರಿ ಎಂದು ಕೇಳಿದಾಗ, “ಹೊಸ ಬೆಂಗಳೂರು ನಿರ್ಮಾಣ ಮಾಡಬೇಕೆಂದು ನೀತಿ ಆಯೋಗದ ಉಪಾಧ್ಯಕ್ಷರ ಬಳಿ ಚರ್ಚಿಸಲಾಗಿದೆ. ಅದಕ್ಕೆ ಅಗತ್ಯವಿರುವ ನೆರವನ್ನು ಸರ್ಕಾರ ನೀಡಲಿದೆ ಎಂದರು. ಕರ್ನಾಟಕ , ಬೆಂಗಳೂರು ಬಹಳ ಮುಖ್ಯ ಎಂದೂ ಅವರು ಹೇಳಿದ್ದಾರೆ” ಎಂದು ತಿಳಿಸಿದರು.

ಬಿಜೆಪಿಯವರು ಅಭಿವೃದ್ದಿಯ ವಿರೋಧಿಗಳು

ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆದಿರುವ ಕುರಿತು ಸಿಎಂ ‘ಯು-ಟರ್ನ್’ ಮಾಡಿದ್ದಾರೆ ಎಂಬ ಆರೋಪಗಳ ಬಗ್ಗೆ ಕೇಳಿದಾಗ, “ನಾನು ಯೂಟರ್ನ್ ಏಕೆ ಮಾಡಬೇಕು. ಜನರ ಭಾವನೆಗಳಿಗೆ ಬೆಲೆ ನೀಡಲಾಗಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿ ಏನಾಗಿದೆ ಎಂಬ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈ ಬಗ್ಗೆ ಚರ್ಚೆಯಾಗಬೇಕು. ಲಾಲ್ ಬಾಗ್ ನಲ್ಲಿಯೇ ಟನಲ್ ಮಾಡಬೇಕೆಂಬ ಉದ್ದೇಶವಿಲ್ಲ. ಇದಕ್ಕೆ ಪರ್ಯಾಯ ಮಾರ್ಗವನ್ನು ಪರಿಶೀಲಿಸಲಾಗುವುದು.

ಹಿಂದೆ ಸಿದ್ದರಾಮಯ್ಯನವರು ಸ್ಟೀಲ್ ಬ್ರಿಡ್ಜ್ ಮಾಡಲು ಹೊರಟಾಗಲು ಬಿಜೆಪಿ ವಿರೋಧಿಸಿತ್ತು. ಬಿಜೆಪಿಯವರು ಅಭಿವೃದ್ದಿಯ ವಿರೋಧಿಗಳು. ಬೆಂಗಳೂರಿಗೆ ಏನಾದರೂ ಶಾಪವಿದ್ದರೆ ಅದು ಬಿಜೆಪಿಯವರದ್ದು. ಅವರ ಕಾಲದಲ್ಲಿ ಒಂದು ಯಾವುದಾದರೂ ಈ ರೀತಿಯ ಗುರುತರ ಯೋಜನೆ ಪಾರಂಭಿಸಿದ್ದರೆ ತಿಳಿಸಲಿ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಟನಲ್ ರಸ್ತೆ, ಡಬಲ್ ಡೆಕ್ಕರ್ ಮಾರ್ಗಗಳು, ಯೋಜನೆಗಳು ಅತ್ಯಗತ್ಯ. ಟನಲ್ ರಸ್ತೆ ಬೇಡ ಎನ್ನುವವರು ಅದಕ್ಕೆ ಪರ್ಯಾಯ ಏನು ಎಂಬುದನ್ನು ಹೇಳಬೇಕಲ್ಲವೇ” ಎಂದು ಸವಾಲು ಹಾಕಿದರು.

ನಾಲಿಗೆಯ ಮೇಲೆ ಹತೋಟಿ ಇರಲಿ

“ನಾನು ಸಿಎಂ ಸ್ಥಾನದಲ್ಲಿ ಕೂತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಬಳಸುವ ಪದಗಳನ್ನು ಬಳಸಲಾಗುವುದಿಲ್ಲ. ನನಗೆ ಗೌರವ ಕೊಡದಿದ್ರೂ ನಾಡಿನ ಜನತೆ ಹಾಗೂ ಪಕ್ಷ ಕೊಟ್ಟಿರುವ ಸ್ಥಾನಕ್ಕಾದರೂ ಬೆಲೆ ಕೊಡಲಿ. ನಿಮ್ಮ ನಾಲಿಗೆಯ ಮೇಲೆ ಹತೋಟಿ ಇರಲಿ ಎಂದು ನಮ್ರತೆಯಿಂದ ಹೇಳುತ್ತಿದ್ದೇನೆ. ನಿಮ್ಮ ತಂದೆಯವರೂ ಕೂಡ ಇದೇ ಸ್ಥಾನವನ್ನು ಅಲಂಕರಿಸಿದ್ದರು ಎನ್ನುವ ಪರಿವೆ ಇರಲಿ. ಅವರ ಬೇಡಿಕೆಗಳನ್ನು ಕೇಳಲಿ, ಅದರಲ್ಲಿ ತಪ್ಪಿಲ್ಲ. ಈ ಬಗ್ಗೆ ಸದನದಲ್ಲಿ ವಿಸ್ತೃತ ಚರ್ಚೆಗೆ ಅವಕಾಶ ಮಾಡಿಕೊಡಲು ಮಾತ್ರ ವಿಧೇಯಕ ಹಿಂಪಡೆಯಲಾಗಿದೆ” ಎಂದರು.

ಉದ್ಯಾನವನವನ್ನು ಮಾರುತ್ತಿಲ್ಲ

“ಚರ್ಚೆ ಮಾಡಬೇಕೆನ್ನುವ ಕಾರಣದಿಂದ ವಿಧೇಯಕವನ್ನು ಹಿಂಪಡೆಯಲಾಗಿದೆ. 16.5 ಕಿ.ಮೀ ಟನಲ್ ರಸ್ತೆ ಯೋಜನೆಗಾಗಿ ಲಾಲ್‌ಬಾಗ್ ಜಾಗವನ್ನು ಕಬಳಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ನಾವು ಉದ್ಯಾನವನಗಳನ್ನು ಮಾರಾಟ ಮಾಡುತ್ತಿಲ್ಲ. ಮೆಟ್ರೋಗೆ ಜಾಗ ಕೊಡಲು ಭೂಮಿಯನ್ನು ವರ್ಗಾಯಿಸಬೇಕು” ಎಂದು ಸ್ಪಷ್ಟಪಡಿಸಿದರು.

“ನಾವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ, ಅದರಿಂದ ಅವರ ವೈಫಲಯಗಳು ಬಯಲಾಗುತ್ತವೆ ಎಂದು ತಿಳಿದೇ ಅಧಿವೇಶನವನ್ನು ನಡೆಸಲು ವಿರೋಧ ಪಕ್ಷದವರು ಬಿಡಲಿಲ್ಲ” ಎಂದು ತಿಳಿಸಿದರು.

“ನಾನು ಅವರಷ್ಟು ವಿದ್ಯಾವಂತರಲ್ಲದಿದ್ದರೂ ನನಗೂ ದೇವರು ಅಷ್ಟೋ ಇಷ್ಟೋ ಸಾಮಾನ್ಯ ಜ್ಞಾನ ಕೊಟ್ಟಿದ್ದಾರೆ. ಜೆಪಿ ಪಾರ್ಕ್ ಸೇರಿದಂತೆ ಎಲ್ಲಾ ಸ್ಥಳಗಳ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಅನಾವಶ್ಯಕವಾಗಿ ನನ್ನನ್ನು ಕೆಣಕುವುದು ಬೇಡ” ಎಂದು ತಿರುಗೇಟು ನೀಡಿದರು.

ನಮ್ಮ ಯಾತ್ರೆಯನ್ನೂ ನೋಡಿ

“ಮೆಟ್ರೋ, ಶಾಸಕರ ಭವನ,ಪ್ರೆಸ್ ಕ್ಲಬ್, ಬಸವ ಭವನ, ಹೈಕೋರ್ಟ್ ಪಾರ್ಕಿಂಗ್ ಹಾಗೂ ಇಂದಿರಾ ಗಾಂಧಿ ಫೌಂಟೇನ್‌ಗೆ ಹಿಂದೆ ಸಾರ್ವಜನಿಕ ಭೂಮಿಯನ್ನೇ ನೀಡಲಾಗಿತ್ತು. ಕಾಲಕಾಲಕ್ಕೆ ಕೆಲವು ನಿರ್ಣಯಗಳಾಗಿವೆ. ಎಲ್ಲಾ ಸೇರಿ ಕೆಲಸ ಮಾಡೋಣ ಎಂದು ಈಗಾಗಲೇ ಹೇಳಿದ್ದೇನೆ. ಸಲಹೆ ಸ್ವೀಕಾರ ಮಾಡಿದರೆ ಯೂ ಟರ್ನ್ ಮಾಡಿದ್ದೇನೆ ಎಂದಾಗುತ್ತದೆಯೇ” ಎಂದು ಪ್ರಶ್ನಿಸಿದರು.

“ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದರು. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ. ನನ್ನ ಯಾತ್ರೆಯನ್ನೂ ನೀವು ನೋಡಿ” ಎಂದರು. ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ನನ್ನನ್ನೇ ಪತನ ಮಾಡುವುದಾಗಿ ಕೆಲವರು ಹೇಳಿದ್ದಾರೆ. ಅದರಲ್ಲಿ ಅವರು ಯಶಸ್ವಿಯಾಗಲಿ ಸಂತೋಷ. ತಪ್ಪು ಮಾಡಿದ್ದರೆ ಎಲ್ಲರೂ ಶಿಕ್ಷೆಗೆ ಒಳಗಾಗಬೇಕು, ಅದಕ್ಕೆ ನಾನೂ ಹೊರತಾಗಿಲ್ಲ” ಎಂದರು.

ಪ್ರಾಸಿಕ್ಯೂಷನ್ ಅನುಮತಿ; ಪರಿಶೀಲನೆ ಬಾಕಿ ಇದೆ

“ಈಗ ನಾನು ಪ್ರಾಸಿಕ್ಯೂಷನ್ ಅನುಮತಿ, ಬಗ್ಗೆ ಯೋಚನೆ ಮಾಡಿಲ್ಲ. ಬಿ. ನಾಗೇಂದ್ರ, ಜಿ. ಜನಾರ್ದನ ರೆಡ್ಡಿ ಹಾಗೂ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವು ನಾಯಕರ ಪ್ರಾಸಿಕ್ಯೂಷನ್‌ಗೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಕಡತಗಳು ಬಂದಿವೆ. ಅದನ್ನು ಇನ್ನೂ ಕಾನೂನಾತ್ಮಕವಾಗಿ ಪರಿಶೀಲಿಸಿಲ್ಲ. ಸಾರಾಂಶ ಸರಿಯಿದೆಯೇ ಎಂದು ಪರಿಶೀಲಿಸಬೇಕಿದೆ. ಒಬ್ಬರಿಗೆ ಒಂದು ಆಗಿದೆಯೇ ಎಂದು ಪರಿಶೀಲಿಸಬೇಕು. ಈ ಬಗ್ಗೆ ಯಾವುದೇ ಆತುರದ ನಿರ್ಧಾರ ಕೈಗೊಳ್ಳಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ದೆಹಲಿ, ಮಹಾರಾಷ್ಟ್ರಗಳಲ್ಲಿ ಟನಲ್ ನಿಲ್ಲಿಸಲಿ

“ಲಾಲ್ ಬಾಗ್ ವಿಚಾರದಲ್ಲಿ ತೋಟಗಾರಿಕಾ ಇಲಾಖೆಯ ಸ್ಥಳವನ್ನು ವರ್ಗಾಯಿಸುವ ಜಾಗವಾಗಿದ್ದು, ಹಿಂದೆಲ್ಲಾ ವಿಶೇಷ ಆದೇಶಗಳನ್ನು ಸಣ್ಣ ಸಣ್ಣ ಜಾಗಗಳಿಗೆ ಮಾಡಲಾಗಿದೆ. ಅಧಿಕಾರಿಗಳು ಇದನ್ನು ಪ್ರಸ್ತಾಪಿಸಿದಾಗ ಒಪ್ಪಿಗೆ ನೀಡಲಾಗಿದೆಯೇ ಹೋರತು, ಟನಲ್ಗಾಗಿಯೇ ಮಾಡುತ್ತಿದ್ದೆವೆ ಎಂದಲ್ಲ. ಹಾಗಾದರೆ ವಿಪಕ್ಷಗಳು ದೆಹಲಿ, ಮಹಾರಾಷ್ಟ್ರಗಳಲ್ಲಿ ಟನಲ್ ನಿಲ್ಲಸಲಿ.

ಜಾರ್ಜ್ ಅವರ ಕಾಲದಲ್ಲಿ ಸ್ಟೀಲ್ ಸೇತುವೆಯನ್ನು ನಿಲ್ಲಿಸಿದರು. ವಾಹನಗಳನ್ನು ನಿಲ್ಲಿಸಿ ಎಂದು ಹೇಳಲಾಗುತ್ತದೆಯೇ? ಮೆಟ್ರೋಗೆ ಏನು ಬೇಕೋ ಅದನ್ನು ಮಾಡುತ್ತಿದ್ದೇವೆ. 40 ಕಿ.ಮೀ ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ ಕೇಳಿದರೆ, 13 ಕಿ.ಮೀ ಮಾತ್ರ ಮಾಡಿ ಎಂದಿದ್ದಾರೆ. ಡಬಲ್ ಡೆಕ್ಕರ್ ನಿಂದ ಮೇಲ್ಸೇತುವೆಯಲ್ಲಿ ಕಾರು ಹಾಗೂ ಇತರೆ ವಾಹನ ಸಾಗುತ್ತದೆ. ಅದರ ಮೇಲೆ ಮೆಟ್ರೋ ಹೋಗುತ್ತಿತ್ತು. ಆದರೂ ಆದರೂ ಅನುಮತಿ ನೀಡಲು ಹಿಂದೇಟು ಹಾಕುತ್ತಾರೆ. ಇದು ಬಿಜೆಪಿಯ ನಿಲುವು. ಚೆನ್ನೈನಲ್ಲಿ 20 ಕಿ.ಮೀ ಡಬ್ಬಲ್ ಡೆಕ್ಕರ್ ಇದೆ” ಎಂದು ತಿಳಿಸಿದರು.

ಕಸ್ತೂರಿ ರಂಗನ್ ವರದಿ: ರಾಜ್ಯದ ಹಿತಾಸಕ್ತಿಯ ವಿಚಾರ

“ಕಸ್ತೂರಿ ರಂಗನ್ ವರದಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿರಸ್ಕರಿಸಿದರು. ಸುಮಾರು ಜಿಲ್ಲೆ ಗ್ರಾಮಗಳಿಗೆ ಇದರಿಂದ ಪರಿಣಾಮ ಬೀರಲಿದೆ ಎಂದು ವಿಚಾರ ಮಾಡಬೇಕಿದೆ. ಇದು ರಾಜ್ಯದ ಹಿತಾಸಕ್ತಿಯ ವಿಚಾರ. ಹೀಗಾಗಿ ಈ ಬಗ್ಗೆ ಚರ್ಚೆಗೆ ಅಧಿವೇಶನ ಕರೆಯಲಾಗಿದೆ” ಎಂದರು.

ಮೈಸೂರು ದಸರಾ ಸಂಭ್ರಮಕ್ಕೆ ಹೊಸ ಮೆರುಗು

“ಮೈಸೂರು ದಸರಾ ಸಿದ್ದತೆಗಳ ಬಗ್ಗೆ ಕೇಳಿದಾಗ, “ದಸರಾ ಸಿದ್ಧತೆಗಳ ಕುರಿತು ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಹೊಸ ಚಿಂತನೆ, ಆಲೋಚನೆಗಳು, ಹೊಸ ಆವಿಷ್ಕಾರಗಳನ್ನು ದಸರಾದಲ್ಲಿ ತರಲಾಗುವುದು. ಭಾರತೀಯ ವಾಯುಪಡೆ ಹಾಗೂ ರಕ್ಷಣಾ ಸಚಿವಾಲಯದೊಂದಿಗೆ ಮಾತುಕತೆ ನಡೆಸಲಾಗಿದ್ದು, ವಾಯುಪಡೆಯ ತುಕಡಿಯನ್ನು ಒಳಗೊಳ್ಳಲು ಹಾಗೂ ಬೀದರ್, ಗುಲ್ಬರ್ಗ ಸೇರಿದಂತೆ ದಕ್ಷಿಣ ಭಾರತದ ವಿವಿಧ ಸಾಂಸ್ಕೃತಿಕ ಕಲೆಗಳನ್ನು ಪ್ರದರ್ಶಿಸಲು ನಿರ್ಧರಿಸಲಾಗಿದೆ. ದಸರಾ ಆಚರಣೆ ಕುರಿತು ಅನೇಕ ಸಲಹೆಗಳನ್ನು ಸ್ವೀಕರಿಸಲಾಗಿದೆ” ಎಂದು ತಿಳಿಸಿದರು.

9 ತಿಂಗಳ ಗರ್ಭಿಣಿ ಪತ್ನಿಯನ್ನೇ ಕೊಂದ ಪತಿ! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

0

ಚಿಕ್ಕಮಗಳೂರು: ಒಂಬತ್ತು ತಿಂಗಳ ಗರ್ಭಿಣಿ ಪತ್ನಿಯನ್ನೇ ನಿರ್ದಯವಾಗಿ ಹತ್ಯೆ ಮಾಡಿದ್ದ 38 ವರ್ಷದ ವ್ಯಕ್ತಿಗೆ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ಆದೇಶ ನೀಡಿದೆ.

ಚಿಕ್ಕಮಗಳೂರು ನಗರದ ಶಂಕರಪುರ ನಿವಾಸಿ ಲಕ್ಷ್ಮಣಗೌಡ ಅವರ ಪುತ್ರ ಮಂಜುನಾಥ್ ಅಲಿಯಾಸ್ ಮಂಜು ಶಿಕ್ಷೆಗೆ ಗುರಿಯಾಗಿದ್ದು, 2025ರ ಜನವರಿ 14ರಂದು ಈತ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಪರಿಣಾಮ ಮಗುವಿಗೆ ಜನ್ಮ ನೀಡಿದ ಬಳಿಕ ಆಕೆ ಪ್ರಾಣಬಿಟ್ಟಿದ್ದಳು.

ಪ್ರಕರಣ ಏನು?

ಜನವರಿ 14ರಂದು ಸಂಜೆ 6ರ ಸುಮಾರಿಗೆ ಕೆಲಸ ಮುಗಿಸಿ ಮದ್ಯ ಸೇವಿಸಿ ಮನೆಗೆ ಬಂದಿದ್ದ ಮಂಜುನಾಥ್, ಪತ್ನಿ ಶಾರದಾ ಬಳಿ ಊಟ ಕೇಳಿದ್ದ. ಬಳಿಕ ಜಗಳ ಆರಂಭಿಸಿದ ಈತ ಆಕೆಯ ಕೂದಲು ಹಿಡಿದು ಎಳೆದಾಡಿ ನೆಲಕ್ಕೆ ತಳ್ಳಿ, ತಲೆಗೆ ಗುದ್ದಿ, ಹೊಟ್ಟೆಗೆ ಕಾಲಿನಿಂದ ಒದ್ದು ಬೆದರಿಕೆ ಹಾಕಿದ್ದ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶಾರದಾ ಅವರನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಹಿಮ್ಸ್) ದಾಖಲಿಸಲಾಗಿತ್ತು. ಅಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಗಾಯಗಳಿಂದ ಅವರು ಮೃತಪಟ್ಟಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರದಾ ಕುಟುಂಬದ ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ಎಚ್.ಎಸ್. ಲೋಹಿತಾಶಾಚಾರ್ ಪ್ರಕರಣದ ವಾದ ಮಂಡಿಸಿದ್ದರು.

ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 103ರ ಅಡಿ ಮಂಜುನಾಥ್ ತಪ್ಪಿತಸ್ಥನೆಂದು ತೀರ್ಪು ನೀಡಿದ ನ್ಯಾಯಾಧೀಶ ಕಿರಣ್ ಕಿಣಿ, ಜೀವಾವಧಿ ಶಿಕ್ಷೆ ಹಾಗೂ 75,000 ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 10 ತಿಂಗಳ ಸರಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ. ಅಲ್ಲದೆ, ಶಾರದಾ ಅವರ ತಾಯಿ ಶಂಕರಪುರದ ಸಿದ್ದಮ್ಮ ಅವರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಡಿಎಲ್‌ಎಸ್‌ಎ) ನ್ಯಾಯಾಲಯ ಶಿಫಾರಸು ಮಾಡಿದೆ.

ಮಗನೇ ಆದರೂ ತಪ್ಪು ಮಾಡಿದರೆ ತಪ್ಪೇ, ಕಾನೂನು ನೋಡಿಕೊಳ್ಳುತ್ತದೆ: ದುನಿಯಾ ವಿಜಯ್

0

ಸಿಟಿ ಲೈಟ್ಸ್ ಸಾಂಗ್ ಲಾಂಚ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟ ದುನಿಯಾ ವಿಜಯ್, ತಮ್ಮ ಸಾಂಸಾರಿಕ ವಿಚಾರಗಳ ಕುರಿತು ಇನ್ನು ಮುಂದೆ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ಕುಟುಂಬ ಜೀವನಕ್ಕೆ ಸಂಬಂಧಿಸಿದ ವಿಚಾರಗಳನ್ನು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವುದಾಗಿಯೂ, ಮಕ್ಕಳ ವಿಚಾರ ಸೇರಿದಂತೆ ಎಲ್ಲವನ್ನೂ ತಿಳಿಸಿರುವುದಾಗಿಯೂ ಅವರು ಹೇಳಿದ್ದಾರೆ. ಈ ಬಗ್ಗೆ ಇನ್ನು ಮುಂದೆ ಯಾವುದೇ ಮಾತುಕತೆ ಇಲ್ಲ ಎಂದು ಅವರು ಫುಲ್ ಸ್ಟಾಪ್ ಇಟ್ಟಿದ್ದಾರೆ.

ಇದೇ ವೇಳೆ ಮಗನ ಪ್ರಕರಣದ ಕುರಿತೂ ಸ್ಪಷ್ಟನೆ ನೀಡಿದ ದುನಿಯಾ ವಿಜಯ್, ಮಗನಾದರೂ ತಪ್ಪು ಮಾಡಿದರೆ ಅದು ತಪ್ಪೇ ಆಗಿದ್ದು, ಕಾನೂನು ಅದನ್ನು ನೋಡಿಕೊಳ್ಳುತ್ತದೆ ಎಂದು ಹೇಳಿದರು. “ನಾನು ವಿಷಕಂಠ, ಎಲ್ಲವನ್ನೂ ನುಂಗಿ ಸಹಿಸಿಕೊಳ್ಳುತ್ತೇನೆ” ಎಂದು ಪ್ರತಿಕ್ರಿಯಿಸಿದ ಅವರು,

ಮಗನ ಜೊತೆ ಮಾತನಾಡಿ ಬುದ್ಧಿ ಹೇಳಿರುವುದಾಗಿ ತಿಳಿಸಿದರು. ಮಕ್ಕಳಿದ್ದಾಗ ಜಗಳ ಇದ್ದೇ ಇರುತ್ತದೆ, ಇದು ಎಲ್ಲರ ಜೀವನದಲ್ಲೂ ಸಾಮಾನ್ಯ ಎಂದು ಅಭಿಪ್ರಾಯಪಟ್ಟ ವಿಜಿ, ತಾವೂ ಸಹ ಮಗನಿಗೆ ಬುದ್ಧಿ ಹೇಳಿರುವುದಾಗಿ ತಿಳಿಸಿ, ಫ್ಯಾಮಿಲಿ ವಿಚಾರಗಳ ಬಗ್ಗೆ ಮತ್ತೆ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹೆಚ್ಚು ವೀವ್ಸ್ ಪಡೆದ ರೀಲ್ಸ್‌ಗೆ ನಗದು ಬಹುಮಾನ”: ‘ರುದ್ರಾಭಿಷೇಕಂ’ ಚಿತ್ರತಂಡದ ಹೊಸ ಘೋಷಣೆ

ಬೆಂಗಳೂರು: ಕನ್ನಡದ ‘ರುದ್ರಾಭಿಷೇಕಂ’ ಸಿನಿಮಾ ಸೆಪ್ಟೆಂಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರಚಾರಕ್ಕೆ ಸಿನಿಮಾ ತಂಡ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ವಿಜಯ್ ರಾಘವೇಂದ್ರ ಮತ್ತು ಪ್ರಿಯಾಂಕಾ ತಿಮ್ಮೇಶ್ ಅಭಿನಯದ ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡುವವರಿಗೆ ವೀವ್ಸ್ ಆಧಾರದ ಮೇಲೆ ನಗದು ಬಹುಮಾನ ನೀಡುವುದಾಗಿ ನಿರ್ಮಾಣ ಸಂಸ್ಥೆ ಘೋಷಿಸಿದೆ.

ಪ್ಯಾನ್ ಇಂಡಿಯಾ ಕ್ರಿಯೇಷನ್ಸ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳುವಂತೆ ತಿಳಿಸಿದೆ. ಸಿನಿಮಾ ಬಿಡುಗಡೆಯಾಗಿ ಮೂರು ದಿನಗಳ ಬಳಿಕ ಹೆಚ್ಚು ವೀವ್ಸ್ ಪಡೆದ ರೀಲ್ಸ್‌ಗಳನ್ನು ಪರಿಗಣಿಸಿ ಬಹುಮಾನ ನೀಡಲಾಗುತ್ತದೆ.

ಹೆಚ್ಚು ವೀವ್ಸ್ ಪಡೆದವರಿಗೆ ₹10 ಸಾವಿರ ಮೊದಲ ಬಹುಮಾನ, ₹7,500 ಎರಡನೇ ಬಹುಮಾನ ಹಾಗೂ ₹5 ಸಾವಿರ ಮೂರನೇ ಬಹುಮಾನ ನೀಡಲಾಗುತ್ತದೆ. ಇದರ ಜತೆಗೆ ₹1 ಸಾವಿರ ಸಮಾಧಾನಕರ ಬಹುಮಾನವನ್ನೂ ಘೋಷಿಸಲಾಗಿದೆ. ರೀಲ್ಸ್ ಹಾಗೂ ವೀವ್ಸ್ ವಿವರಗಳನ್ನು 8553674555 ಮತ್ತು 9845642338 ಸಂಖ್ಯೆಗೆ ಕಳುಹಿಸಬೇಕಾಗಿದೆ.

ಇಷ್ಟೇ ಅಲ್ಲದೆ, ಹೆಚ್ಚು ವೀವ್ಸ್ ಗಳಿಸಿದ ಸ್ಪರ್ಧಿಗಳಿಗೆ ನಗದು ಬಹುಮಾನದ ಜತೆಗೆ ಪ್ಯಾನ್ ಇಂಡಿಯಾ ಕ್ರಿಯೇಷನ್ಸ್ ನಿರ್ಮಾಣದ ಮುಂದಿನ ಸಿನಿಮಾದಲ್ಲಿ ನಟಿಸುವ ಅವಕಾಶ ನೀಡಲಾಗುವುದು ಎಂದು ಚಿತ್ರತಂಡ ತಿಳಿಸಿದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಯುವಕ-ಯುವತಿಯರಿಗೆ ಈ ಆಫರ್ ವಿಶೇಷ ಅವಕಾಶವಾಗಿದೆ.

‘ರುದ್ರಾಭಿಷೇಕಂ’ ಗ್ರಾಮೀಣ ಹಿನ್ನೆಲೆಯ ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ವಿಜಯ್ ರಾಘವೇಂದ್ರ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ವೀರಗಾಸೆ ಕಲಾವಿದ, ರುದ್ರನ ಅವತಾರ, ಹಳ್ಳಿಯ ಅಮಾಯಕ ಯುವಕ ಹಾಗೂ ಗಿರಿಜಾ ಮೀಸೆಯ ಖಡಕ್ ವ್ಯಕ್ತಿಯಂತಹ ಹಲವು ವಿಭಿನ್ನ ಗೆಟಪ್‌ಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ವಸಂತ್ ಕುಮಾರ್ ನಿರ್ದೇಶನದ ಚಿತ್ರದಲ್ಲಿ ಪ್ರಿಯಾಂಕಾ ತಿಮ್ಮೇಶ್ ನಾಯಕಿಯಾಗಿ ನಟಿಸಿದ್ದು, ಬಾಲ ರಾಜವಾಡಿ, ಮನು, ಸನತ್, ಬುಲೆಟ್ ವಿನು, ಮಮತಾ ತುರುವೇಕೆರೆ, ನವನಿತಾ ಶೆಟ್ಟಿ, ಮಂಜುಳಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಪ್ಯಾನ್ ಇಂಡಿಯಾ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಸಿನಿಮಾ ಸೆಪ್ಟೆಂಬರ್ 25ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

0

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.

ಮೃತಳಾಗಿರುವ ವರ್ಷಾ (22) ಮೈಸೂರಿನಲ್ಲಿ ಬಿ.ಇ. ವ್ಯಾಸಂಗ ಮಾಡುತ್ತಿದ್ದರು. ಕೆಲ ದಿನಗಳಿಂದ ಯುವಕನೊಬ್ಬ ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದನೆಂದೂ, ಈ ಕಿರುಕುಳಕ್ಕೆ ಬೇಸತ್ತು ವರ್ಷಾ ಆತ್ಮಹತ್ಯೆಗೆ ಶರಣಾಗಿದ್ದಾರೆಂದೂ ಹೇಳಲಾಗಿದೆ.

ಘಟನೆಯ ಬಳಿಕ ವರ್ಷಾ ಅವರ ತಾಯಿ ನಾಗರತ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಯಳಂದೂರು ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿಗೆ ಬೆದರಿಕೆ ಆರೋಪಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ, ಉಡುಪಿ ಮೂಲದ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಬಂಧನ ಭೀತಿಯ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ 59ನೇ ಸಿಸಿಎಚ್ ಕೋರ್ಟ್, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸಾಕ್ಷಿದಾರ ಸಂದೀಪ್‌ಗೆ ವಾಟ್ಸಪ್ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್, ವೇಣು ಹಾಗೂ ಪುನೀತ್‌ರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ಗೌರವ್ ಶೆಟ್ಟಿ ಈವರೆಗೆ ತಲೆಮರೆಸಿಕೊಂಡಿದ್ದರು.

ಬಂಧಿತ ಆರೋಪಿಗಳ ವಿಚಾರಣೆ ಹಾಗೂ ಮೊಬೈಲ್ ಪರಿಶೀಲನೆ ವೇಳೆ, ಗೌರವ್ ಶೆಟ್ಟಿ ಕಿರಣ್ ರೆಡ್ಡಿ ಜೊತೆ ಕಾನ್ಫರೆನ್ಸ್ ಕರೆ ಮಾಡಿ ಸಾಕ್ಷಿಗೆ ಬೆದರಿಕೆ ಹಾಕಿದ್ದು ಬೆಳಕಿಗೆ ಬಂದಿತ್ತು. ಇದಾದ ಬಳಿಕ ಗೌರವ್ ಶೆಟ್ಟಿ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದರು.

ಇದೀಗ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿರುವ ಗೌರವ್ ಶೆಟ್ಟಿ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಚಾಲನೆ: ₹27 ಕೋಟಿ ವೆಚ್ಚದಲ್ಲಿ 60 ದಿನ ಕಾರ್ಯಾಚರಣೆ

0

ಬೆಂಗಳೂರು: ರಾಜ್ಯದ ಮಳೆ ಕೊರತೆ ನೀಗಿಸುವ ಪ್ರಯತ್ನವಾಗಿ ಜಲಸಂಪನ್ಮೂಲ ಇಲಾಖೆ ವತಿಯಿಂದ ಮೋಡ ಬಿತ್ತನೆ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10 ಗಂಟೆಗೆ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಾಚರಣೆಗೆ ಚಾಲನೆ ನೀಡಿದ್ದು, ಶಾಸಕ ಹೆಚ್‌.ಕೆ. ಪಾಟೀಲ್‌ ಉಪಸ್ಥಿತರಿದ್ದರು.

ಮೋಡ ಬಿತ್ತನೆ ಕಾರ್ಯಾಚರಣೆಯ ಮೇಲ್ವಿಚಾರಣೆ ಮತ್ತು ಪರಿಣಾಮದ ಮೌಲ್ಯಮಾಪನಕ್ಕಾಗಿ ನಾಲ್ಕು ಸಮಿತಿಗಳನ್ನು ರಚಿಸಲಾಗಿದೆ. ಮೇಲ್ವಿಚಾರಣಾ ಸಮಿತಿ, ತಾಂತ್ರಿಕ ಸಮಿತಿ, ಕ್ಷೇತ್ರ ಕಾರ್ಯಾಚರಣೆ ಸಮಿತಿ ಹಾಗೂ ಮೌಲ್ಯಮಾಪನ ಸಮಿತಿಗಳು ಕಾರ್ಯನಿರ್ವಹಿಸಲಿವೆ.

ತಾಂತ್ರಿಕ ಸಮಿತಿಯಲ್ಲಿ ಐಐಟಿ, ಐಐಎಸ್‌ಸಿ ಮತ್ತು ಹವಾಮಾನ ಇಲಾಖೆಯ ತಜ್ಞರು ಇರಲಿದ್ದಾರೆ. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡಗಳ ಲಭ್ಯತೆ ಆಧರಿಸಿ ಅಗತ್ಯವಿರುವ ಪ್ರದೇಶಗಳಲ್ಲಿ ಮೋಡ ಬಿತ್ತನೆ ನಡೆಸಲಾಗುತ್ತದೆ. ಕಾರ್ಯಾಚರಣೆ ನಡೆಯುವ ಪ್ರದೇಶದ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

₹27 ಕೋಟಿ ವೆಚ್ಚದ ಈ ಯೋಜನೆಯನ್ನು 60 ದಿನಗಳ ಕಾಲ ಅನುಷ್ಠಾನಗೊಳಿಸಲಾಗುತ್ತದೆ. ಒಟ್ಟು ಸುಮಾರು 200 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸುವ ಉದ್ದೇಶ ಹೊಂದಲಾಗಿದ್ದು, ಪ್ರತಿದಿನ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಕಾರ್ಯಾಚರಣೆ ನಡೆಯಲಿದೆ.

ಈ ಹಿಂದೆ ರಾಜ್ಯದಲ್ಲಿ ಮೂರು ಬಾರಿ ಮೋಡ ಬಿತ್ತನೆ ಪ್ರಯೋಗ ನಡೆಸಲಾಗಿದ್ದು, ಶೇ.18ರಿಂದ 20ರಷ್ಟು ಯಶಸ್ಸು ದೊರೆತಿತ್ತು. ಹಿಂದಿನ ಅನುಭವದ ಆಧಾರದ ಮೇಲೆ ಈ ಬಾರಿ ಶೇ.30ರಷ್ಟು ಯಶಸ್ಸು ಸಾಧಿಸುವ ನಿರೀಕ್ಷೆಯನ್ನು ಸರ್ಕಾರ ವ್ಯಕ್ತಪಡಿಸಿದೆ.

ಅಂಡರ್‌ಪಾಸ್‌ಗಾಗಿ ಪುರಾತನ ಮರ ತೆರವಿಗೆ NHAI ಸೂಚನೆ: ಉಗ್ರರೂಪಿ ರಾಹುಗುಳಿಗನಿಂದ ಎಚ್ಚರಿಕೆ

0

ಮಂಗಳೂರು: ನಂತೂರು ಪದವು ಬಳಿಯ ಭಗವಾನ್ ಬಬ್ಬುಸ್ವಾಮಿ ದೈವಸ್ಥಾನದ ಆವರಣದಲ್ಲಿರುವ ಪುರಾತನ ಸಂಪಿಗೆ ಮರ ತೆರವು ವಿಚಾರ ಇದೀಗ ದೈವದ ಎಚ್ಚರಿಕೆಯಿಂದ ಚರ್ಚೆಗೆ ಬಂದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಂತೂರು ಸರ್ಕಲ್ ಬಳಿ ಅಂಡರ್‌ಪಾಸ್ ನಿರ್ಮಾಣಕ್ಕೆ ಯೋಜನೆ ರೂಪಿಸಿರುವ NHAI, ರಸ್ತೆ ಡಿವೈಡರ್‌ನಲ್ಲಿರುವ ಮರವನ್ನು ತೆರವುಗೊಳಿಸುವಂತೆ ಸೂಚಿಸಿದ್ದು, ಇದಕ್ಕೆ ರಾಹುಗುಳಿಗ ದೈವ ವಿರೋಧ ವ್ಯಕ್ತಪಡಿಸಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ನಂತೂರು ಸರ್ಕಲ್‌ನ ಸಾರಿಗೆ ದಟ್ಟಣೆ ನಿಯಂತ್ರಿಸಲು NHAI ಅಂಡರ್‌ಪಾಸ್ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಈ ಯೋಜನೆಗೆ ಸಂಬಂಧಿಸಿದಂತೆ ರಸ್ತೆ ಡಿವೈಡರ್‌ನಲ್ಲಿರುವ ಸಂಪಿಗೆ ಮರ ತೆರವು ಅಗತ್ಯವಿದೆ ಎಂದು ಅಧಿಕಾರಿಗಳು ದೈವಸ್ಥಾನದ ಆಡಳಿತ ಮಂಡಳಿಗೆ ಸೂಚಿಸಿದ್ದರು.

ಇತ್ತೀಚೆಗೆ ನಡೆದ ನೇಮೋತ್ಸವದ ಸಂದರ್ಭದಲ್ಲಿ ಆಡಳಿತ ಮಂಡಳಿ ಈ ವಿಚಾರವನ್ನು ರಾಹುಗುಳಿಗ ದೈವದ ಮುಂದಿಟ್ಟಿತ್ತು. ಮರ ತೆರವು ವಿಷಯ ತಿಳಿದ ಬಳಿಕ ದೈವ ಉಗ್ರ ಸ್ವರೂಪ ತಾಳಿ, “ಇದು ನನ್ನ ಮರ, ನನ್ನ ದೃಷ್ಟಿ ಅದರ ಮೇಲಿದೆ. ಅದನ್ನು ತೆರವುಗೊಳಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ” ಎಂದು ಎಚ್ಚರಿಕೆ ನೀಡಿದೆ ಎಂದು ಹೇಳಲಾಗಿದೆ. ಅಲ್ಲದೆ, ದೈವ ನೇರವಾಗಿ ಸಂಪಿಗೆ ಮರವನ್ನು ಹತ್ತಿ ಆದೇಶ ನೀಡಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಪುರಾತನ ಸಂಪಿಗೆ ಮರವು ದೈವಸ್ಥಾನಕ್ಕೆ ಸೇರಿದದ್ದಾಗಿದ್ದು, ಹಿಂದಿನ ದಿನಗಳಲ್ಲಿ ಮರದ ಕಟ್ಟೆಯಲ್ಲೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿತ್ತು. ಮರಕ್ಕೆ ಪೂಜೆ ಸಲ್ಲಿಸುವ ಸಂಪ್ರದಾಯವೂ ಇತ್ತು. ಹಿಂದೆಯೂ ರಸ್ತೆ ಅಗಲೀಕರಣದ ವೇಳೆ ಮರವನ್ನು ಉಳಿಸಿಕೊಂಡೇ ರಸ್ತೆ ನಿರ್ಮಿಸಲಾಗಿತ್ತು.

ಆದರೆ ಬಳಿಕ ಈ ಪ್ರದೇಶದಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಮರದಲ್ಲಿದ್ದ ರಾಹುಗುಳಿಗ ದೈವಕ್ಕೆ ದೈವಸ್ಥಾನದ ಆವರಣದಲ್ಲಿ ಪ್ರತ್ಯೇಕ ಗುಡಿ ನಿರ್ಮಿಸಿ ಪೂಜೆ ಸಲ್ಲಿಸಲಾಗಿತ್ತು. ಅದರ ಬಳಿಕ ಅಪಘಾತಗಳು ನಿಂತುಹೋದವು ಎಂಬುದು ಆಡಳಿತ ಮಂಡಳಿಯ ಹೇಳಿಕೆ.

ಈ ಹಿಂದೆ ಸ್ಥಳೀಯ ಕಾರ್ಪೊರೇಟರ್‌ವೊಬ್ಬರು ಮರ ತೆರವುಗೊಳಿಸಲು ಬಂದಾಗ ಬೃಹತ್ ನಾಗರಹಾವು ಕಾಣಿಸಿಕೊಂಡು ಅವರು ಹಿಂದೆ ಸರಿದಿದ್ದರು ಎನ್ನಲಾಗಿದೆ. ಇದೀಗ NHAI ಮತ್ತೆ ಮರ ತೆರವಿಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಮರ ತೆರವು ಮಾಡದಂತೆ ಸೂಕ್ತ ಮನವರಿಕೆ ಮಾಡಿಕೊಡಬೇಕು ಎಂದು ಆಡಳಿತ ಮಂಡಳಿ ಮನವಿ ಮಾಡಿದೆ.

‘ಅನೈತಿಕ ಸಂಬಂಧ, ನಾರ್ಸಿಸಿಸ್ಟಿಕ್ ಅಬ್ಯೂಸ್’ ಆರೋಪ: ವಿಚ್ಛೇದನದ ಬಳಿಕ ದುನಿಯಾ ವಿಜಯ್ ಪತ್ನಿ ನಾಗರತ್ನ ಹೇಳಿದ್ದೇನು?

ಬೆಂಗಳೂರು: ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ವಿಚ್ಛೇದನದ ಮೂಲಕ ತೆರೆಬಿದ್ದ ಬೆನ್ನಲ್ಲೇ ನಾಗರತ್ನ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಮಕ್ಕಳ ಭವಿಷ್ಯಕ್ಕಾಗಿ ಇಷ್ಟು ವರ್ಷಗಳ ಕಾಲ ಎಲ್ಲವನ್ನೂ ಸಹಿಸಿಕೊಂಡು, ಮದುವೆಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ವಿಚ್ಛೇದನವನ್ನು ವಿರೋಧಿಸುತ್ತಾ ಬಂದಿದ್ದೆ ಎಂದು ಅವರು ಹೇಳಿದ್ದಾರೆ.

ನ್ಯಾಯಾಲಯ ಇದೀಗ ಅಂತಿಮವಾಗಿ ವಿಚ್ಛೇದನ ಮಂಜೂರು ಮಾಡಿದೆ. ದೀರ್ಘಕಾಲದ ಕಾನೂನು ಹೋರಾಟದ ಉದ್ದೇಶ ಮದುವೆಯ ಹೊರಗೆ ಆಯ್ಕೆ ಮಾಡಿಕೊಂಡಿರುವ ಅನೈತಿಕ ಸಂಬಂಧವನ್ನು ಅಧಿಕೃತಗೊಳಿಸುವುದಾಗಿದ್ದರೆ, ಆ ಉದ್ದೇಶ ಕೊನೆಗೂ ಈಡೇರಿದೆ ಎಂದು ನಾಗರತ್ನ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾರ್ಸಿಸಿಸ್ಟಿಕ್ ಅಬ್ಯೂಸ್‌ನಿಂದಾಗಿ ಅನುಭವಿಸಿದ ನೋವು ಹಾಗೂ ಅದರ ಪರಿಣಾಮಗಳನ್ನು ಸಹಿಸಿಕೊಂಡಿರುವುದಾಗಿ ಅವರು ಹೇಳಿದ್ದಾರೆ. ಯಾರಿಗೂ ಹೊರಗಿನಿಂದ ಕಾಣದ ಆಳವಾದ ಮಾನಸಿಕ ಮತ್ತು ಭಾವನಾತ್ಮಕ ನೋವಿನೊಂದಿಗೆ ಬದುಕುವುದು ಹೇಗಿರುತ್ತದೆ ಎಂಬುದು ತಮ್ಮ ಅನುಭವದಿಂದ ತಿಳಿದಿದೆ ಎಂದಿದ್ದಾರೆ.

ಒಂದು ದಿನ ತಮ್ಮ ಅನುಭವವನ್ನು ಬಹಿರಂಗವಾಗಿ ಹಂಚಿಕೊಳ್ಳಲು ಬಯಸುವುದಾಗಿ ತಿಳಿಸಿರುವ ನಾಗರತ್ನ, ಯಾರನ್ನೂ ಆರೋಪಿಸುವುದು ತಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂತಹ ಪರಿಸ್ಥಿತಿಯನ್ನು ಎದುರಿಸುತ್ತಿರುವ ಮಹಿಳೆಯರಿಗೆ ತಾವು ಒಂಟಿಯಲ್ಲ ಎಂಬ ಭಾವನೆ ಮೂಡಿಸುವುದೇ ತಮ್ಮ ಆಶಯ ಎಂದಿದ್ದಾರೆ.

ಮಕ್ಕಳ ಭವಿಷ್ಯವೇ ತಮ್ಮ ಜೀವನದ ಮೊದಲ ಆದ್ಯತೆಯಾಗಿದ್ದು, ಈಗಲೂ ಅದೇ ಮುಂದುವರಿದಿದೆ. ಮಕ್ಕಳ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿರುವ ಸಂದರ್ಭದಲ್ಲಿ ತಮ್ಮ ವೈಯಕ್ತಿಕ ನೋವುಗಳು ಅದಕ್ಕೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಸದ್ಯ ಮೌನವಾಗಿರಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ.

ಒಂದು ದಿನ ಸರಿಯಾದ ಸಮಯ ಬಂದಾಗ ತಮ್ಮ ಅನುಭವವನ್ನು ತಮ್ಮದೇ ಮಾತುಗಳಲ್ಲಿ ಹಂಚಿಕೊಳ್ಳುವುದಾಗಿ ನಾಗರತ್ನ ತಿಳಿಸಿದ್ದಾರೆ. ತಮ್ಮ ಮೂವರು ಮಕ್ಕಳು ಸದಾ ತಮ್ಮ ಶಕ್ತಿಯಾಗಿ ನಿಂತಿದ್ದಾರೆ ಎಂದು ಹೇಳಿರುವ ಅವರು, ಮಕ್ಕಳ ಮೇಲೆ ಎಲ್ಲರ ಆಶೀರ್ವಾದ ಇರಲಿ ಎಂದು ಮನವಿ ಮಾಡಿದ್ದಾರೆ. ವಿಜಯ್ ಕುಮಾರ್ ತಮ್ಮ ಜೀವನದಲ್ಲಿ ಸಂತೋಷವಾಗಿರಲಿ ಎಂದು ಹಾರೈಸಿ, ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಟ್ಟಿದ್ದೇನೆ ಎಂದು ಹೇಳಿದ್ದಾರೆ.

ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯುಗೆ ವಿಶೇಷ ಗೌರವ: ಈ ಬಾರಿ ‘ನಿಶಾನೆ ಆನೆ’ಯಾಗಿ ಕಾಣಿಸಿಕೊಳ್ಳಲಿರುವ ಗಜರಾಜ

0

ಮೈಸೂರು: ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಸಾರ್ವಜನಿಕರ ತೀವ್ರ ಆಗ್ರಹದ ಬೆನ್ನಲ್ಲೇ, ಗಜಪಡೆ ಮಾಜಿ ಕ್ಯಾಪ್ಟನ್ ಅಭಿಮನ್ಯುಗೆ ಈ ಬಾರಿಯ ದಸರಾ ಮಹೋತ್ಸವದಲ್ಲಿ ನಿಶಾನೆ ಆನೆಯಾಗಿ ಭಾಗವಹಿಸಲು ಅರಣ್ಯ ಇಲಾಖೆ ಅವಕಾಶ ನೀಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಮೈಸೂರು ದಸರಾ 2026ರಲ್ಲಿ ಅಭಿಮನ್ಯುವಿನ ಅಮೂಲ್ಯ ಸೇವೆಗೆ ಸರ್ಕಾರ ವಿಶೇಷ ಗೌರವ ನೀಡುತ್ತಿದೆ ಎಂದು ತಿಳಿಸಿದ್ದಾರೆ. ಹಲವು ವರ್ಷಗಳ ಕಾಲ ಚಿನ್ನದ ಅಂಬಾರಿಯನ್ನು ಗಾಂಭೀರ್ಯದಿಂದ ಹೊತ್ತು ಕರುನಾಡಿನ ಜನರ ಮನಗೆದ್ದ ಅಭಿಮನ್ಯುವಿನ ಸುದೀರ್ಘ ಸೇವೆಯನ್ನು ಗೌರವಿಸಿ, ಈ ಬಾರಿಯ ಮೈಸೂರು ದಸರಾ-2026ರ ಜಂಬೂಸವಾರಿಯಲ್ಲಿ ಅಭಿಮನ್ಯುವಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ‘ನಿಶಾನೆ ಆನೆ’ಯಾಗಿ ಮುಂಚೂಣಿಯಲ್ಲಿ ಮುನ್ನಡೆಸುವಂತೆ ಅರಣ್ಯ ಇಲಾಖೆಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.

ಅಲ್ಲದೆ ಪ್ರಕಟಣೆ ಹೊರಡಿಸಿರುವ ಅರಣ್ಯ ಸಚಿವರು, ಮೈಸೂರು ದಸರಾ ಕರ್ನಾಟಕದ ನಾಡಹಬ್ಬವಾಗಿದ್ದು, ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈಭವವನ್ನು ವಿಶ್ವದಾದ್ಯಂತ ಸಾರುವ ಐತಿಹಾಸಿಕ ಉತ್ಸವವಾಗಿದೆ ಎಂದು ಹೇಳಿದ್ದಾರೆ. ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಉತ್ಸವದಲ್ಲಿ ದಸರಾ ಗಜಪಡೆಯ ಆನೆಗಳು ವರ್ಷಗಳಿಂದಲೂ ಪ್ರಮುಖ ಪಾತ್ರ ವಹಿಸುತ್ತಾ ಬಂದಿವೆ ಎಂದು ಸಚಿವರು ತಿಳಿಸಿದ್ದಾರೆ.