Home Blog

ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ: ಒಂದೇ ಕುಟುಂಬದ ಐವರು ಜಲಸಮಾಧಿ!

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿ ಸಮೀಪದ ಕಾವೇರಿ ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರುಪಾಲಾಗಿದ್ದಾರೆ.

ಈ ಘಟನೆ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಿಸಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತರನ್ನು ಚೈತ್ರಾ (20), ಶ್ವೇತಾ (38), ವಿಜಯಮ್ಮ (50), ಪ್ರಿಯಾಂಕಾ (28) ಮತ್ತು ಮಹೇಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿಯ ಪ್ರಕಾರ, ಬುಧವಾರ ಸಂಜೆ ಸುಮಾರು 4.45ರ ವೇಳೆಗೆ ಕುಟುಂಬದ ಸದಸ್ಯರು ಮುತ್ತತ್ತಿಯ ಮುತ್ತೆತ್ತರಾಯ ದೇಗುಲಕ್ಕೆ ಭೇಟಿ ನೀಡಿದ್ದರು. ಬಳಿಕ ಕಾವೇರಿ ನದಿಯ ತೀರಕ್ಕೆ ತೆರಳಿದ ಅವರು ಫೋಟೋ ತೆಗೆಯುವ ಉದ್ದೇಶದಿಂದ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಒಬ್ಬರ ಹಿಂದೆ ಒಬ್ಬರು ಮುಳುಗಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ.

ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಲೋಕಲ್ ರೈಲಿನಲ್ಲಿ ಚಾಕು ಇರಿದು ಯುವಕನ ಹತ್ಯೆ; ಬಾಗಿಲು ಮುಚ್ಚುವ ವಿಚಾರಕ್ಕೆ ರಕ್ತಪಾತ!

0

ಮುಂಬೈ: ಮುಂಬೈನ ಉಪನಗರ ರೈಲು ಸೇವೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ರೈಲಿನ ಬಾಗಿಲು ಮುಚ್ಚುವ ವಿಚಾರಕ್ಕೆ ಆರಂಭವಾದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದೆ.

ಚಲಿಸುತ್ತಿದ್ದ ಲೋಕಲ್ ರೈಲಿನಲ್ಲೇ 21 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಘಟನೆ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

ಮೃತ ಯುವಕನನ್ನು ಮಯಾಂಕ್ ಲೋಹರ್ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಚರ್ಚ್‌ಗೇಟ್–ನಲಾಸೋಪಾರಾ ಫಾಸ್ಟ್ ಲೋಕಲ್ ರೈಲಿನ ಪ್ರಥಮ ದರ್ಜೆ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗೋರೆಗಾಂವ್ ಮತ್ತು ಕಂಡಿವಲಿ ರೈಲು ನಿಲ್ದಾಣಗಳ ನಡುವಿನ ಮಾರ್ಗದಲ್ಲಿ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ರೈಲಿನ ಬಾಗಿಲು ಮುಚ್ಚುವ ವಿಚಾರಕ್ಕೆ ಕೆಲ ಪ್ರಯಾಣಿಕರ ನಡುವೆ ವಾಗ್ವಾದ ಆರಂಭವಾಗಿತ್ತು. ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದುಕೊಂಡು ಗಲಾಟೆಗೆ ತಿರುಗಿದೆ. ಈ ವೇಳೆ ಕೆಲ ಪ್ರಯಾಣಿಕರು ಆರೋಪಿ ರೋಷನ್ ಸುವರ್ಣ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಆರೋಪಿ ತನ್ನ ಬ್ಯಾಗ್‌ನಲ್ಲಿದ್ದ ಚಾಕುವನ್ನು ತೆಗೆದು ಮಯಾಂಕ್ ಲೋಹರ್ ಮೇಲೆ ಹಲ್ಲೆ ನಡೆಸಿದ್ದಾನೆ.

ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ಮಯಾಂಕ್ ರೈಲಿನಲ್ಲೇ ಕುಸಿದು ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಬಳಿಕ ಆರೋಪಿ ರೈಲಿನಿಂದ ಪರಾರಿಯಾಗಿದ್ದಾನೆ.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಾಕು ಹಿಡಿದುಕೊಂಡು ಆರೋಪಿ ರೈಲಿನೊಳಗೆ ಓಡಾಡುತ್ತಿರುವ ದೃಶ್ಯಗಳು ಅದರಲ್ಲಿ ಸೆರೆಯಾಗಿವೆ. ಘಟನೆಯಿಂದ ಭಯಭೀತರಾದ ಪ್ರಯಾಣಿಕರು ಆತನಿಂದ ದೂರ ಸರಿಯುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ.

ಮಾಹಿತಿ ತಿಳಿದ ತಕ್ಷಣ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಳಿಕ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಕುರ್ಲಾ ಪ್ರದೇಶದಲ್ಲಿ ಆರೋಪಿ ರೋಷನ್ ಸುವರ್ಣನನ್ನು ಬಂಧಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು ಕೊಲೆಯ ನಿಖರ ಕಾರಣ ಹಾಗೂ ಘಟನೆಯ ಹಿನ್ನೆಲೆ ಕುರಿತು ತನಿಖೆ ಮುಂದುವರಿಸಿದ್ದಾರೆ.

ಮಗನ ಸಾವಿನಿಂದ ಕುಟುಂಬಸ್ಥರು ಕಣ್ಣೀರಿನಲ್ಲಿ ಮುಳುಗಿದ್ದಾರೆ. “ನನ್ನ ಮಗ ಯಾರೊಂದಿಗೂ ಜಗಳ ಮಾಡುತ್ತಿರಲಿಲ್ಲ. ಅವನಿಗೆ ನ್ಯಾಯ ದೊರಕಬೇಕು” ಎಂದು ಮೃತನ ತಾಯಿ ಕಣ್ಣೀರಿಟ್ಟಿದ್ದಾರೆ. “ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಇಂದು ಶಿಕ್ಷೆಯಾಗದಿದ್ದರೆ ನಾಳೆ ಮತ್ತೊಬ್ಬರ ಜೀವ ಹೋಗಬಹುದು” ಎಂದು ಮೃತನ ಸಹೋದರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮು ಕುಸಿತ: ಮೂವರು ಸಾವು, 21 ಮಂದಿ ರಕ್ಷಣೆ!

0

ಕೊಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದ ತಾರಾತಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಗೋದಾಮಿನ ಕಟ್ಟಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದು, 21 ಮಂದಿಯನ್ನು ರಕ್ಷಿಸಲಾಗಿದೆ.

ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.

ಬುಧವಾರ ಮಧ್ಯಾಹ್ನ ಸಂಭವಿಸಿದ ಈ ದುರ್ಘಟನೆಯಲ್ಲಿ ಗೋದಾಮಿನ ಮೇಲ್ಛಾವಣಿ ಮತ್ತು ಕಟ್ಟಡದ ಪ್ರಮುಖ ಭಾಗ ಏಕಾಏಕಿ ಕುಸಿದ ಪರಿಣಾಮ, ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಕಬ್ಬಿಣ ಹಾಗೂ ಸಿಮೆಂಟ್ ಅವಶೇಷಗಳಡಿ ಸಿಲುಕಿಕೊಂಡರು. ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದು, ಬಳಿಕ ಪೊಲೀಸರು, ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡ ಹಾಗೂ ಸೇನಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆದಲು ಕ್ರೇನ್‌ಗಳು, ಗ್ಯಾಸ್ ಕಟರ್‌ಗಳು ಹಾಗೂ ವಿಶೇಷ ರಕ್ಷಣಾ ಉಪಕರಣಗಳನ್ನು ಬಳಸಲಾಗುತ್ತಿದೆ. ರಕ್ಷಣಾ ತಂಡಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಹಲವಾರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಧಿಕಾರಿಗಳ ಪ್ರಕಾರ, ಇದುವರೆಗೆ 21 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಇನ್ನೂ 12ರಿಂದ 18 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಘಟನೆಯ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಕಟ್ಟಡ ಕುಸಿತಕ್ಕೆ ಕಾರಣವೇನು ಎಂಬ ಕುರಿತು ತನಿಖೆ ಆರಂಭಿಸಲಾಗಿದ್ದು, ನಿರ್ಮಾಣ ಕಾಮಗಾರಿಯಲ್ಲಿ ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ಬಡ್ಡಿ ದಂಧೆ ಮೇಲೆ ಪೊಲೀಸರ ಭರ್ಜರಿ ದಾಳಿ: ₹60 ಲಕ್ಷ ಮೌಲ್ಯದ ಚಿನ್ನ, ₹5.5 ಲಕ್ಷ ನಗದು ಸೇರಿದಂತೆ ಮಹತ್ವದ ದಾಖಲೆಗಳ ಜಪ್ತಿ

0

ಗದಗ: ಅಕ್ರಮ ಹಣಕಾಸು ವ್ಯವಹಾರ, ದುಬಾರಿ ಬಡ್ಡಿ ವಸೂಲಿ ಹಾಗೂ ಸಾಲಗಾರರಿಗೆ ಬೆದರಿಕೆ ಹಾಕುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಗದಗ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ದಾಖಲೆಗಳು, ಚಿನ್ನ ಹಾಗೂ ನಗದು ಜಪ್ತಿಯಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರ ಮಾರ್ಗದರ್ಶನದಲ್ಲಿ ಆರು ವಿಶೇಷ ತಂಡಗಳನ್ನು ರಚಿಸಿ, ಆರೋಪಿ ಮನೋಹರ ಕಟ್ಟಿಮನಿಗೆ ಸೇರಿದ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಯಿತು.

ದಾಳಿಯ ವೇಳೆ 150ಕ್ಕೂ ಹೆಚ್ಚು ಚೆಕ್‌ಗಳು, 65ಕ್ಕೂ ಹೆಚ್ಚು ಖಾಲಿ ಬಾಂಡ್‌ಗಳು, ವಿವಿಧ ಒಪ್ಪಂದ ಪತ್ರಗಳು ಹಾಗೂ ದಾಖಲೆಗಳು, 9 ಬ್ಯಾಂಕ್ ಪಾಸ್‌ಬುಕ್‌ಗಳು, 11 ಚೆಕ್‌ಬುಕ್‌ಗಳು, 5ಕ್ಕೂ ಹೆಚ್ಚು ಎಟಿಎಂ ಕಾರ್ಡ್‌ಗಳು ಮತ್ತು 3 ಪ್ಯಾನ್ ಕಾರ್ಡ್‌ಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದರ ಜೊತೆಗೆ ಯಾವುದೇ ಲೆಕ್ಕಪತ್ರಗಳಲ್ಲಿ ನಮೂದಿಸದ 422.4 ಗ್ರಾಂ ಚಿನ್ನವನ್ನು ಜಪ್ತಿ ಮಾಡಲಾಗಿದ್ದು, ಅದರ ಅಂದಾಜು ಮೌಲ್ಯ ಸುಮಾರು ₹60 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಸುಮಾರು ₹5.5 ಲಕ್ಷ ನಗದು ಹಣವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಶೋಧ ಕಾರ್ಯಾಚರಣೆಯಲ್ಲಿ 10 ಗೋವಾ ಮದ್ಯದ ಬಾಟಲಿಗಳೂ ಪತ್ತೆಯಾಗಿದ್ದು, ಅವುಗಳನ್ನು ಸಹ ಜಪ್ತಿ ಮಾಡಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ದುಬಾರಿ ಬಡ್ಡಿ ವಸೂಲಿ, ಸಾಲಗಾರರಿಗೆ ಬೆದರಿಕೆ ಹಾಗೂ ಅಕ್ರಮ ಹಣಕಾಸು ವ್ಯವಹಾರ ನಡೆಸುತ್ತಿರುವ ಕುರಿತು ಸಾಕ್ಷ್ಯಾಧಾರಗಳು ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸುಲಿಗೆ, ಬೆದರಿಕೆ, ಕ್ರಿಮಿನಲ್ ಇಂಟಿಮಿಡೇಷನ್ ಸೇರಿದಂತೆ ವಿವಿಧ ಕಲಂಗಳಡಿ ಹಾಗೂ ಮೈಕ್ರೋಫೈನಾನ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ದಾಖಲೆಗಳ ಪರಿಶೀಲನೆ ಹಾಗೂ ಹಣಕಾಸು ವ್ಯವಹಾರಗಳ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಮುರ್ತುಜಾ ಖಾದ್ರಿ, ಬೆಟಗೇರಿ ಸಿಪಿಐ ದೀರಜ್ ಸಿಂಧೆ, ಬೆಟಗೇರಿ ಬಡಾವಣೆ ಪಿಎಸ್‌ಐ ಮಾರುತಿ ಜೋಗದಂಡಕರ್, ಎಎಸ್‌ಐ ಗುಡ್ಲಾನೂರು ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

“ಅಕ್ರಮ ಬಡ್ಡಿ ದಂಧೆ ನಡೆಸಿ ಜನರನ್ನು ಶೋಷಿಸುವವರ ವಿರುದ್ಧ ನಿರಂತರ ಕಾರ್ಯಾಚರಣೆ ಮುಂದುವರಿಯಲಿದೆ. ಸಮಾಜಕ್ಕೆ ಹಾನಿಕಾರಕವಾಗಿರುವ ಇಂತಹ ಜಾಲಗಳನ್ನು ಬೇರು ಸಮೇತ ಕಿತ್ತೊಗೆಯುವುದು ಪೊಲೀಸ್ ಇಲಾಖೆಯ ಆದ್ಯತೆಯಾಗಿದೆ.”

– ರೋಹನ್ ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಕರಾವಳಿ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೋಷಣೆ; ನಾಳೆ ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆ ಸಾಧ್ಯತೆ?

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದ್ದ ನೈಋತ್ಯ ಮುಂಗಾರು ಇದೀಗ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿಶೇಷ ಮುನ್ನೆಚ್ಚರಿಕಾ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಶುಕ್ರವಾರ ಈ ಮೂರು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆ ಇದ್ದು, ಜೂನ್ 27 ಮತ್ತು 28ರವರೆಗೂ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯ ಜೊತೆಗೆ ಬಿರುಗಾಳಿ ಸಹ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ, ಜೂನ್ 25ರಿಂದ ಮಲೆನಾಡು ಭಾಗದಲ್ಲಿಯೂ ಮುಂಗಾರು ಚಟುವಟಿಕೆ ಮತ್ತಷ್ಟು ಬಲಗೊಳ್ಳಲಿದ್ದು, ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಇದರಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚುವ ಸಾಧ್ಯತೆ ಇದ್ದು, ಕೃಷಿ ಚಟುವಟಿಕೆಗಳಿಗೂ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ.

ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಒಳನಾಡು ಭಾಗಗಳಲ್ಲಿಯೂ ಮಳೆಯ ಪ್ರಭಾವ ಕಂಡುಬರುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ನಗರದ ಕೆಲವು ಪ್ರದೇಶಗಳಲ್ಲಿ ಮಾತ್ರ ಗಾಳಿ ಸಹಿತ ತುಂತುರು ಅಥವಾ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಕಂಡುಬರುವ ಸಾಧ್ಯತೆ ಇಲ್ಲವಾದರೂ, ನಗರದಲ್ಲಿ ತಂಪಾದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂಗಾರು ಚಟುವಟಿಕೆಗಳು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಸಕ್ರಿಯವಾಗಿರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕೊಲೆ, ದರೋಡೆ ಸೇರಿದಂತೆ 67ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ರೌಡಿಶೀಟರ್ ಅರೆಸ್ಟ್!

0

ಬೆಂಗಳೂರು: ಕೊಲೆ, ಕೊಲೆ ಯತ್ನ, ದರೋಡೆ ಹಾಗೂ ಕಳ್ಳತನ ಸೇರಿದಂತೆ 67 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು 30ಕ್ಕೂ ಹೆಚ್ಚು ಜಾಮೀನು ರಹಿತ ವಾರೆಂಟ್‌ಗಳು ಬಾಕಿ ಇದ್ದರೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಬಾಣಸವಾಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಸೈಯದ್ ಅಬ್ರಾರ್ (32) ಎಂದು ಗುರುತಿಸಲಾಗಿದೆ. ಈತ ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ಹೆಚ್‌ಆರ್‌ಬಿಆರ್ ಬಡಾವಣೆ ಸಮೀಪ ಬೀಗ ಹಾಕಿದ್ದ ಮನೆಯ ಬಾಗಿಲು ಮುರಿದು ಸುಮಾರು 10 ಸಾವಿರ ರೂಪಾಯಿ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಾಣಸವಾಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಹೆಚ್.ಸಿ. ಸುದರ್ಶನ್ ಹಾಗೂ ಪಿಎಸ್ಐ ಬಿ.ಟಿ. ವೆಂಕಟರಮಣಪ್ಪ ನೇತೃತ್ವದ ತಂಡ ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿತ್ತು. ತನಿಖೆ ವೇಳೆ ಕಳ್ಳತನದ ಬಳಿಕ ಬೈಕ್‌ನಲ್ಲಿ ಪರಾರಿಯಾಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದನ್ನೇ ಪ್ರಮುಖ ಸುಳಿವಾಗಿ ಬಳಸಿಕೊಂಡು ಪೊಲೀಸರು ಆರೋಪಿಯ ಗುರುತು ಪತ್ತೆಹಚ್ಚಿದ್ದರು.

ಆರೋಪಿ ಮೊಬೈಲ್ ಫೋನ್ ಬಳಕೆಯನ್ನು ಅತ್ಯಂತ ಕಡಿಮೆ ಮಾಡಿದ್ದಲ್ಲದೆ, ಒಂದೇ ಸ್ಥಳದಲ್ಲಿ ನೆಲೆಸದೇ ಆಗಾಗ್ಗೆ ಸ್ಥಳ ಬದಲಾಯಿಸುತ್ತಿದ್ದ ಕಾರಣ ಬಂಧನ ಕಾರ್ಯಾಚರಣೆ ಸವಾಲಿನದ್ದಾಗಿತ್ತು. ಆದರೂ ನಾಲ್ಕು ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಬಾಗಲೂರು ಸಮೀಪ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಬಾಣಸವಾಡಿ ಪೊಲೀಸರು ಮುಂದುವರಿಸಿದ್ದಾರೆ.

Rishabh Pant: ಲಕ್ನೋ ತೊರೆದು ಮತ್ತೆ ಡೆಲ್ಲಿ ಕ್ಯಾಪಿಟಲ್ಸ್ʼಗೆ ಮರಳಿದ ರಿಷಭ್ ಪಂತ್!

0

2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಕ್ತಾಯವಾದ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದ ರಿಷಭ್ ಪಂತ್ ಇದೀಗ ಅಧಿಕೃತವಾಗಿ ತಂಡಕ್ಕೂ ವಿದಾಯ ಹೇಳಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಮಹತ್ವದ ಟ್ರೇಡ್ ಒಪ್ಪಂದದ ಮೂಲಕ ಪಂತ್ ಮತ್ತೆ ತಮ್ಮ ಹಳೆಯ ತಂಡ ಡೆಲ್ಲಿ ಕ್ಯಾಪಿಟಲ್ಸ್‌ಗೆ ಸೇರ್ಪಡೆಯಾಗಿದ್ದಾರೆ.

ಈ ಟ್ರೇಡ್ ಒಪ್ಪಂದದ ಭಾಗವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಿಷಭ್ ಪಂತ್ ಅವರನ್ನು ತನ್ನ ಬಳಗಕ್ಕೆ ಸೇರಿಸಿಕೊಂಡಿದ್ದು, ಪ್ರತಿಯಾಗಿ ಭಾರತ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ವರ್ಗಾಯಿಸಿದೆ.

ಲಕ್ನೋ ತಂಡದಲ್ಲಿ ದಾಖಲೆ ಮೊತ್ತವಾದ ₹27 ಕೋಟಿ ಸಂಬಳ ಪಡೆಯುತ್ತಿದ್ದ ರಿಷಭ್ ಪಂತ್, ಇದೀಗ ಸುಮಾರು ₹12 ಕೋಟಿ ಕಡಿತದೊಂದಿಗೆ ₹15 ಕೋಟಿ ವೇತನಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಮತ್ತೊಂದೆಡೆ, ಕುಲ್ದೀಪ್ ಯಾದವ್ ಅವರು ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿ ಪಡೆಯುತ್ತಿದ್ದ ₹13.50 ಕೋಟಿ ಸಂಬಳದೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ವರ್ಗಾವಣೆಗೊಂಡಿದ್ದಾರೆ.

ರಿಷಭ್ ಪಂತ್ ನಾಯಕತ್ವ ತೊರೆದ ಸಂದರ್ಭದಲ್ಲಿ ಅದು ಅವರ ವೈಯಕ್ತಿಕ ನಿರ್ಧಾರ ಎಂದು ಲಕ್ನೋ ಫ್ರಾಂಚೈಸಿ ಸ್ಪಷ್ಟಪಡಿಸಿತ್ತು. ಆದರೆ ಇದೀಗ ಹೊರಬಿದ್ದಿರುವ ವರದಿಗಳ ಪ್ರಕಾರ, ಫ್ರಾಂಚೈಸಿಯ ಒತ್ತಡದ ಕಾರಣದಿಂದಲೇ ಪಂತ್ ನಾಯಕತ್ವಕ್ಕೆ ರಾಜೀನಾಮೆ ನೀಡಬೇಕಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಆದಾಗ್ಯೂ, ಈ ಕುರಿತು ಅಧಿಕೃತವಾಗಿ ಯಾವುದೇ ದೃಢೀಕರಣ ಲಭ್ಯವಾಗಿಲ್ಲ.

ಕಳೆದ ಎರಡು ಆವೃತ್ತಿಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದ ಪಂತ್, ತಂಡ ತೊರೆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪಂತ್ ಅವರನ್ನು ಬೀಳ್ಕೊಟ್ಟ ಲಕ್ನೋ ಫ್ರಾಂಚೈಸಿಯ ಪೋಸ್ಟ್ ಅನ್ನು ಮರುಹಂಚಿಕೊಂಡಿರುವ ಅವರು, ಕೇವಲ “Thank You Team” ಎಂಬ ಮೂರು ಪದಗಳ ಸಂದೇಶದ ಮೂಲಕ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

ಅಂಕಿಅಂಶಗಳತ್ತ ಗಮನ ಹರಿಸಿದರೆ, ಕಳೆದ ಎರಡು ಐಪಿಎಲ್ ಆವೃತ್ತಿಗಳಲ್ಲಿ ಲಕ್ನೋ ಪರ 28 ಪಂದ್ಯಗಳನ್ನು ಆಡಿರುವ ರಿಷಭ್ ಪಂತ್, ಒಂದು ಶತಕ ಹಾಗೂ ಒಂದು ಅರ್ಧಶತಕದ ನೆರವಿನಿಂದ ಒಟ್ಟು 581 ರನ್ ಗಳಿಸಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಪರ 2016ರಿಂದ 2024ರವರೆಗೆ ಒಂಬತ್ತು ಆವೃತ್ತಿಗಳಲ್ಲಿ ಕಣಕ್ಕಿಳಿದಿದ್ದ ಅವರು, 111 ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದರು. ಅಲ್ಲದೆ, 43 ಪಂದ್ಯಗಳಲ್ಲಿ ನಾಯಕತ್ವದ ಜವಾಬ್ದಾರಿಯನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದರು.

ಬ್ರ್ಯಾಂಡೆಡ್ ಔಷಧಿ ಮಾರಾಟ ಆರೋಪ: ರಾಜ್ಯದ 133 ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಜಾರಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಲ್ಲಿ ಬ್ರ್ಯಾಂಡೆಡ್ ಔಷಧಿಗಳ ಮಾರಾಟ ನಡೆಯುತ್ತಿರುವ ಆರೋಪದ ಹಿನ್ನೆಲೆ ರಾಜ್ಯ ಔಷಧ ನಿಯಂತ್ರಣ ಇಲಾಖೆ ವ್ಯಾಪಕ ಪರಿಶೀಲನೆ ಕೈಗೊಂಡಿದ್ದು, ನಿಯಮ ಉಲ್ಲಂಘನೆ ಕಂಡುಬಂದ 133 ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ಕಳೆದ ಎರಡು ದಿನಗಳ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿರುವ 172 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮೇಲೆ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 133 ಕೇಂದ್ರಗಳಲ್ಲಿ ಬ್ರ್ಯಾಂಡೆಡ್ ಔಷಧಿಗಳ ಮಾರಾಟ ನಡೆದಿರುವುದು ಬೆಳಕಿಗೆ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 1,200ಕ್ಕೂ ಹೆಚ್ಚು ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಈಗಾಗಲೇ 172 ಕೇಂದ್ರಗಳ ಪರಿಶೀಲನೆ ಪೂರ್ಣಗೊಂಡಿದ್ದು, ಉಳಿದ ಕೇಂದ್ರಗಳಲ್ಲಿಯೂ ಹಂತ ಹಂತವಾಗಿ ತಪಾಸಣೆ ನಡೆಸಲು ಇಲಾಖೆ ಸಿದ್ಧತೆ ನಡೆಸಿದೆ.

ನಿಯಮ ಉಲ್ಲಂಘನೆ ಆರೋಪ ಎದುರಿಸುತ್ತಿರುವ 133 ಜನೌಷಧಿ ಕೇಂದ್ರಗಳ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಜನೌಷಧಿ ಕೇಂದ್ರಗಳಲ್ಲಿ ಬ್ರ್ಯಾಂಡೆಡ್ ಔಷಧಿಗಳನ್ನು ಏಕೆ ಮಾರಾಟ ಮಾಡಲಾಗಿದೆ ಎಂಬುದರ ಕುರಿತು ಸಮರ್ಪಕ ವಿವರಣೆ ನೀಡುವಂತೆ ಸೂಚಿಸಲಾಗಿದೆ.

ನೋಟಿಸ್‌ಗೆ ಸಮಂಜಸ ಉತ್ತರ ನೀಡದಿದ್ದಲ್ಲಿ ಅಥವಾ ನಿಯಮ ಉಲ್ಲಂಘನೆ ದೃಢಪಟ್ಟಲ್ಲಿ ಸಂಬಂಧಿತ ಕೇಂದ್ರಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಔಷಧ ನಿಯಂತ್ರಣ ಇಲಾಖೆ ಎಚ್ಚರಿಕೆ ನೀಡಿದೆ.

ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಜೆನೆರಿಕ್ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಜನೌಷಧಿ ಕೇಂದ್ರಗಳಲ್ಲಿ ಬ್ರ್ಯಾಂಡೆಡ್ ಔಷಧಿಗಳ ಮಾರಾಟ ಪತ್ತೆಯಾಗಿರುವುದು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಇಲಾಖೆ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜನೌಷಧಿ ಕೇಂದ್ರಗಳ ಮೇಲೂ ಕಟ್ಟುನಿಟ್ಟಿನ ನಿಗಾ ವಹಿಸಲು ನಿರ್ಧರಿಸಿದೆ.

ಅಳಿಯನ ಮನೆ, ಕಚೇರಿಗಳ ಮೇಲೆ ED ದಾಳಿ: ಸಂಪೂರ್ಣ ಮಾಹಿತಿ ಸಿಕ್ಕ ಬಳಿಕವೇ ಪ್ರತಿಕ್ರಿಯೆ ನೀಡುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ: ತಮ್ಮ ಅಳಿಯ ವೈ. ಮಂಜುನಾಥ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ನಡೆಸಿರುವ ದಾಳಿಗೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ದಾಳಿಯ ಹಿಂದಿನ ನಿಖರ ಕಾರಣಗಳ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಹಾರೂಗೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣದ ಸಂಪೂರ್ಣ ಮಾಹಿತಿ ಲಭ್ಯವಾದ ಬಳಿಕವೇ ಈ ಕುರಿತು ಅಧಿಕೃತವಾಗಿ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ್ದಾರೆ.

ಇ.ಡಿ ದಾಳಿ ಸಾಮಾನ್ಯ ತನಿಖಾ ಪ್ರಕ್ರಿಯೆಯ ಭಾಗವಾಗಿ ನಡೆದಿರಬಹುದು. ಆದರೆ, ಅಧಿಕಾರಿಗಳು ಯಾವ ಕಾರಣಕ್ಕಾಗಿ ದಾಳಿ ನಡೆಸಿದ್ದಾರೆ ಹಾಗೂ ತನಿಖೆಯ ವ್ಯಾಪ್ತಿ ಏನು ಎಂಬುದು ಈ ಹಂತದಲ್ಲಿ ತಿಳಿದಿಲ್ಲ ಎಂದು ಅವರು ಹೇಳಿದರು.

ಅಧಿಕಾರಿಗಳು ಯಾವ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ, ಯಾವ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಎಂಬುದರ ಬಗ್ಗೆಯೂ ಸ್ಪಷ್ಟ ಮಾಹಿತಿ ಇಲ್ಲ. ಎಷ್ಟು ಸ್ಥಳಗಳಲ್ಲಿ ದಾಳಿ ನಡೆದಿದೆ ಎಂಬುದೂ ಇನ್ನೂ ಖಚಿತವಾಗಿಲ್ಲ ಎಂದು ಜಾರಕಿಹೊಳಿ ತಿಳಿಸಿದರು.

ಏಳು ಕಡೆ ದಾಳಿ ನಡೆದಿದೆಯೋ, ಹತ್ತು ಕಡೆ ನಡೆದಿದೆಯೋ ಎಂಬ ಮಾಹಿತಿಯೂ ನನಗೆ ಬಂದಿಲ್ಲ. ಸಂಬಂಧಪಟ್ಟವರಿಂದ ಸಂಪೂರ್ಣ ಮಾಹಿತಿ ಸಿಕ್ಕ ಬಳಿಕವೇ ಈ ಬಗ್ಗೆ ಮಾತನಾಡುತ್ತೇನೆ. ಸದ್ಯಕ್ಕೆ ಯಾವುದೇ ಊಹಾಪೋಹಗಳಿಗೆ ಅವಕಾಶ ನೀಡಲು ಇಷ್ಟಪಡುವುದಿಲ್ಲ. ನಾಳೆಯವರೆಗೆ ಕಾಯೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಚಿವ ಎಂ.ಬಿ. ಪಾಟೀಲ್ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ: ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ

ಬೆಂಗಳೂರು: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ” ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಾಯಿ ಇದೆ ಎಂದು ಏನು ಬೇಕಾದರೂ ಮಾತನಾಡುವುದಲ್ಲ. ಎಂ.ಬಿ. ಪಾಟೀಲ್ ಅವರನ್ನು ವಿದ್ಯಾವಂತರು ಅಂದುಕೊಂಡಿದ್ದೆ. ಯಾವ ಆಧಾರದ ಮೇಲೆ ಮಾತನಾಡಿದ್ದರೋ ಗೊತ್ತಿಲ್ಲ” ಎಂದು ಕುಟುಕಿದರು.

“ಎಂ.ಬಿ. ಪಾಟೀಲ್ ಅವರು ನಮ್ಮ ಕುಟುಂಬದ 100 ಎಕರೆ ಭೂಮಿ ಇದೆ ಎಂದು ಸಾಬೀತು ಮಾಡಿದರೆ ಅವರಿಗೆ ನಾನು ತಲೆಬಾಗುತ್ತೇನೆ. ಇಲ್ಲದಿದ್ದರೆ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ನಿಖಿಲ್ ಒತ್ತಾಯಿಸಿದರು.

ಪೋಸ್ಟರ್ ಅಭಿಯಾನದ ಕುರಿತು ಮಾತನಾಡಿ, “ಕೆಲವು ಪುಂಡಪೋಕರಿ ಚೇಲಾಗಳು ಈ ಕೆಲಸ ಮಾಡಿದ್ದಾರೆ. ಅವರಿಗೆಲ್ಲ ಉತ್ತರಿಸಲು ಆಗಲ್ಲ” ಎಂದು ನಿಖಿಲ್ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

“ಈಗಿನ ‘ಸ್ಟೇಟಸ್ ಮುಖ್ಯಮಂತ್ರಿ’ಗಳು ಕೆಲವು ಚೇಲಾಗಳನ್ನು ನಿಖಿಲ್ ಕುಮಾರಸ್ವಾಮಿ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಬೈಯಲು ಬಿಟ್ಟಿದ್ದಾರೆ. ಅತೀ ಹೆಚ್ಚು ಬೈದವರಿಗೆ ಮಂತ್ರಿಸ್ಥಾನ ನೀಡಲಾಗುವುದು ಎಂದು ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಆದ್ರೆ ಇವರೆಲ್ಲ ಮನೆ ಸೇರಿಕೊಳ್ಳುತ್ತಾರೆ” ಎಂದು ಲೇವಡಿ ಮಾಡಿದರು.

ನಿಖಿಲ್ ಲೇಔಟ್ ಮಾಡ್ತೀನಿ” ಎಂಬ ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ನಿಖಿಲ್, ರೈತರಿಗೆ ಬೇಕಿರುವುದು ನೆಮ್ಮದಿಯ ಜೀವನ, ಸ್ವಾಭಿಮಾನದ ಬದುಕು. ಶಾಸಕರಿಗೆ ಲೇಔಟ್ ಬೇಕಾಗಿದೆ ಎಂದು ತಿರುಗೇಟು ನೀಡಿದರು.

ವಿಧಾನಸೌಧದಲ್ಲಿ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿ, ಮೊನ್ನೆ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ, ‘ನಾನೂ ಟೌನ್‌ಶಿಪ್ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾಗಿ ಸುಳ್ಳು ವದಂತಿ ಹರಡಿಸಿದ್ದಾರೆ.

ಒಂದು ವೇಳೆ ‘ಅಲ್ಲಿ ಫಲವತ್ತಾದ ಭೂಮಿ ಇದೆ, ರೈತರಿಗೆ ಅನ್ಯಾಯ ಮಾಡಿ, 10 ಲಕ್ಷಕ್ಕೂ ಅಧಿಕ ಗಿಡಮರಗಳನ್ನು ಕಡಿದು ಟೌನ್‌ಶಿಪ್ ಮಾಡುತ್ತಿದ್ದೇವೆ’ ಎಂದು ಹೇಳಿದ್ದರೆ ಪ್ರಧಾನಮಂತ್ರಿಗಳು ಒಪ್ಪುತ್ತಿದ್ದರೇ?ಎಂದು ಪ್ರಶ್ನಿಸಿದರು.

ವಿಧಾನಸೌಧದ ಎಸಿ ರೂಮ್‌ನಲ್ಲಿ ಚರ್ಚೆ ಬೇಡ. ರೈತರಿಗೆ ಅನ್ಯಾಯವಾಗುತ್ತಿರುವ ಪ್ರದೇಶದಲ್ಲೇ, ರೈತರ ಮಧ್ಯೆ ಪರ-ವಿರೋಧ ಚರ್ಚೆಯಾಗಲಿ ಎಂದು ಆಗ್ರಹಿಸಿದರು. ಕುಮಾರಸ್ವಾಮಿ ಅವರಿಗೆ ಯಾವುದೇ ತಂಡ ಇಲ್ಲ. ತಂಡ ಇರುವುದು ಮುಖ್ಯಮಂತ್ರಿಗಳಿಗೆ.

ನಮ್ಮ ಕಾರ್ಯಕರ್ತರು ಯಾರೂ ಬರುವುದಿಲ್ಲ. ನೀವೇ ನಿಮ್ಮ ಕಾರ್ಯಕರ್ತರು, ನಿಮ್ಮ ಚೇಲಾಗಳನ್ನು ಕರೆದುಕೊಂಡು ಬಂದು ರೈತರ ಮಧ್ಯೆ ಚರ್ಚೆ ಮಾಡಿ. ಸತ್ಯಾಸತ್ಯತೆ ಹೊರಬರಲಿ” ಎಂದು ಸವಾಲು ಹಾಕಿದರು.

error: Content is protected !!