ಬೆಂಗಳೂರು: ಸಿಗ್ನಲ್ನಲ್ಲಿ ನಿಂತಿದ್ದ ಆಟೋ ರಿಕ್ಷಾಗೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಂಗಳೂರಿನ ಕೆ.ಆರ್. ಸರ್ಕಲ್ನಲ್ಲಿ ನಡೆದಿದೆ.
ಸಿಂಗಯ್ಯನಪಾಳ್ಯ ನಿವಾಸಿ ಕೃಷ್ಣಮೂರ್ತಿ (60) ಮೃತಪಟ್ಟ ಆಟೋ ಚಾಲಕರಾಗಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಮಧ್ಯಾಹ್ನ ಸುಮಾರು 3.15 ಗಂಟೆಗೆ ಮೆಜೆಸ್ಟಿಕ್ನಿಂದ ಚಂದಾಪುರದತ್ತ ತೆರಳುತ್ತಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್, ಕೆ.ಆರ್. ಸರ್ಕಲ್ ಇಳಿಜಾರು ರಸ್ತೆಯಲ್ಲಿ ಸಿಗ್ನಲ್ನಲ್ಲಿ ನಿಂತಿದ್ದ ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ಪಕ್ಕದಲ್ಲೇ ಸಂಚರಿಸುತ್ತಿದ್ದ ಕಾರಿಗೆ ಅಪ್ಪಳಿಸಿದೆ. ಬಳಿಕ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ.
ಅಪಘಾತದ ಬಳಿಕ ಬಸ್ ಚಾಲಕ ಬ್ರೇಕ್ ಫೇಲ್ ಆಗಿದೆ ಎಂದು ಹೇಳಿದ್ದಾನೆ ಎನ್ನಲಾಗಿದೆ. ಆದರೆ ಬಸ್ ಅನ್ನು ಟೋಯಿಂಗ್ ವಾಹನದ ಮೂಲಕ ಸಾಗಿಸದೆ ಚಾಲನೆ ಮಾಡಿಕೊಂಡೇ ಬಿಎಂಟಿಸಿ ಸಿಬ್ಬಂದಿ ಸ್ಥಳದಿಂದ ಕೊಂಡೊಯ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಘಟನೆ ಸಂಬಂಧ ಪೊಲೀಸರು ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತ ಕೃಷ್ಣಮೂರ್ತಿ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಸ್ಥಳೀಯರ ಪ್ರಕಾರ, ಫ್ರೀಡಂ ಪಾರ್ಕ್ನಿಂದ ಕೆ.ಆರ್. ಸರ್ಕಲ್ವರೆಗೆ ಇರುವ ಇಳಿಜಾರು ರಸ್ತೆ ಹಾಗೂ ಹಲವು ರಸ್ತೆಗಳು ಒಂದೇ ಜಂಕ್ಷನ್ನಲ್ಲಿ ಸೇರುವುದರಿಂದ ಈ ಪ್ರದೇಶದಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಟ್ರಾಫಿಕ್ ಸಿಗ್ನಲ್ ತಪ್ಪಿಸಲು ಕೆಲ ವಾಹನ ಚಾಲಕರು ಅತಿವೇಗದಲ್ಲಿ ಸಂಚರಿಸುವುದು ಅಪಘಾತಗಳಿಗೆ ಪ್ರಮುಖ ಕಾರಣವಾಗುತ್ತಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

