ಬೆಂಗಳೂರು: ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಮಹಾರಾಷ್ಟ್ರದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಸಾದ್ ಶಿವದಾಸ್ ನಾಲ್ವಡೆ ನೀಡಿದ ದೂರಿನ ಮೇರೆಗೆ ಅಪರಿಚಿತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇದಕ್ಕೂ ಮುನ್ನ ಮಹಾರಾಷ್ಟ್ರದ ಕಾಶಿಗಾಂವ್ ಪೊಲೀಸ್ ಠಾಣೆಯಲ್ಲಿ ಶೂನ್ಯ ಎಫ್ಐಆರ್ ದಾಖಲಾಗಿದ್ದು, ನಂತರ ಘಟನೆ ನಡೆದ ಸ್ಥಳದ ಆಧಾರದಲ್ಲಿ ಪ್ರಕರಣವನ್ನು ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕಳೆದ 10 ವರ್ಷಗಳಿಂದ ನಕಲಿ ಪರವಾನಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಶಿವದಾಸ್ ಕಾನೂನು ಹೋರಾಟ ಆರಂಭಿಸಿದ್ದರು.
ಏಪ್ರಿಲ್ 12ರಂದು ಆಲ್ ಇಂಡಿಯಾ ಫೆಡರೇಷನ್ ಆಫ್ ಮೋಟಾರ್ ವೆಹಿಕಲ್ ಡಿಪಾರ್ಟ್ಮೆಂಟ್ ಟೆಕ್ನಿಕಲ್ ಎಕ್ಸಿಕ್ಯೂಟಿವ್ ಆಫೀಸರ್ ಅಸೋಸಿಯೇಷನ್ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ವೀಕ್ಷಿಸಲು ಬೆಂಗಳೂರಿಗೆ ಬಂದಿದ್ದರು.
ಈ ವೇಳೆ ಕರೆ ಮಾಡಿದ ಅಪರಿಚಿತನು “ನಾನು ಬಿಷ್ಣೋಯ್ ಗ್ಯಾಂಗ್ನಿಂದ ಮಾತನಾಡುತ್ತಿದ್ದೇನೆ. ನೀವು ಪರವಾನಗಿ ತಪಾಸಣೆ ನಡೆಸಿ ಬಡ ರಿಕ್ಷಾ ಚಾಲಕರಿಗೆ ತೊಂದರೆ ಕೊಡುತ್ತಿದ್ದೀರಿ. ನಿಮ್ಮ ಬಳಿ ಇಬ್ಬರು ಏಜೆಂಟ್ಗಳಿದ್ದು, ಅವರು ತಪ್ಪು ಮಾಡಿದ ಫೈಲ್ಗಳನ್ನು ಮುಚ್ಚಿಡುತ್ತಿದ್ದೀರಿ” ಎಂದು ಆರೋಪಿಸಿದ್ದಾನೆ.
ಇದಕ್ಕೆ ಪ್ರತಿಕ್ರಿಯಿಸಿದ ಶಿವದಾಸ್, “ಕಚೇರಿಗೆ ಬಂದು ಯಾವ ಫೈಲ್ ಎಂದು ತೋರಿಸಿದರೆ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ. ಇದಕ್ಕೆ ಪ್ರತಿಯಾಗಿ ಆರೋಪಿ, “ನಾನು ಯಾಕೆ ಬರಲಿ? ನಿಮ್ಮ ಭದ್ರತೆ ಹೆಚ್ಚಿಸಿಕೊಳ್ಳಿ. ನಿಮ್ಮ ವಿಷಯ ದೆಹಲಿವರೆಗೂ ತಲುಪಿದೆ. ನಿಮ್ಮ ನಿರ್ಧಾರ ಬದಲಾಯಿಸಲೇಬೇಕು” ಎಂದು ಸುಮಾರು ಮೂರು ನಿಮಿಷಗಳ ಕಾಲ ಫೋನ್ನಲ್ಲಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

