ಕೊಪ್ಪಳ: ದಕ್ಷಿಣ ಭಾರತದ ಪ್ರಮುಖ ನದಿಗಳಾದ ಗೋದಾವರಿ ಮತ್ತು ಕಾವೇರಿ ನದಿಗಳ ಜೋಡಣೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಬೇಕು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಮುನಿರಾಬಾದ್ನಲ್ಲಿ ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಸಹಯೋಗದಲ್ಲಿ ಆಯೋಜಿಸಿದ್ದ ತುಂಗಭದ್ರಾ ಜಲಾಶಯದ ನೂತನ 33 ಸ್ಪಿಲ್ವೇ ಗೇಟ್ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವಿನ ಕೆನ್-ಬೆತ್ವಾ ಯೋಜನೆ ಹಾಗೂ ರಾಜಸ್ಥಾನ ಮತ್ತು ಮಧ್ಯಪ್ರದೇಶದ ನಡುವಿನ ಪಾರ್ವತಿ-ಕಾಳಿಸಿಂಧು-ಚಂಬಲ್ ನದಿ ಜೋಡಣೆ ಯೋಜನೆಗಳನ್ನು ಕೇಂದ್ರ ಸರ್ಕಾರ ಈಗಾಗಲೇ ಕೈಗೆತ್ತಿಕೊಂಡಿರುವುದನ್ನು ಉಲ್ಲೇಖಿಸಿದ ನಾಯ್ಡು, ಇದೇ ಮಾದರಿಯಲ್ಲಿ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೂ ರಾಷ್ಟ್ರೀಯ ಯೋಜನೆಯ ಮಾನ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ದೇಶದ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಹಾಗೂ ಶಾಶ್ವತ ಪರಿಹಾರ ಕಂಡುಕೊಳ್ಳಲು ನದಿಗಳ ಜೋಡಣೆ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು. ಆದರೆ ಈ ಪ್ರಕ್ರಿಯೆಯಲ್ಲಿ ಯಾವುದೇ ರಾಜ್ಯದ ಹಕ್ಕುಗಳಿಗೆ ಧಕ್ಕೆಯಾಗಬಾರದು ಎಂದು ಸ್ಪಷ್ಟಪಡಿಸಿದ ಅವರು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನೀರಿನ ಹಕ್ಕುಗಳನ್ನು ಸಂಪೂರ್ಣವಾಗಿ ರಕ್ಷಿಸುವ ರೀತಿಯಲ್ಲಿ ಯೋಜನೆ ಜಾರಿಯಾಗಬೇಕು ಎಂದು ಒತ್ತಿ ಹೇಳಿದರು.
ಮೂರು ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡುವ ಸಮಗ್ರ ಕ್ರಿಯಾ ಯೋಜನೆ ರೂಪಿಸುವುದರ ಜೊತೆಗೆ, ಅಗತ್ಯವಿದ್ದಲ್ಲಿ ತಮಿಳುನಾಡಿಗೂ ನೀರು ಪೂರೈಸುವ ವ್ಯವಸ್ಥೆಯನ್ನು ಪರಿಗಣಿಸಬೇಕು ಎಂದು ನಾಯ್ಡು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ 1983ರಲ್ಲಿ ಎನ್.ಟಿ. ರಾಮರಾವ್ ಅವರ ನೇತೃತ್ವದಲ್ಲಿ ಅವಿಭಜಿತ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಒಟ್ಟಾಗಿ ಸೇರಿ ಚೆನ್ನೈ ನಗರದ ಕುಡಿಯುವ ನೀರಿನ ಅಗತ್ಯಕ್ಕಾಗಿ 15 ಟಿಎಂಸಿ ನೀರನ್ನು ಒದಗಿಸಿದ್ದ ಐತಿಹಾಸಿಕ ಉದಾಹರಣೆಯನ್ನು ಅವರು ಸ್ಮರಿಸಿದರು.
“ಪ್ರಸ್ತುತ ದೇಶದಲ್ಲಿ ಒಂದೆಡೆ ಭಾರೀ ಪ್ರವಾಹ ಉಂಟಾಗುತ್ತಿದ್ದರೆ, ಮತ್ತೊಂದೆಡೆ ತೀವ್ರ ಬರಗಾಲ ಎದುರಾಗುತ್ತಿದೆ. ಈ ವರ್ಷ ಎಲ್ ನಿನೋ ಪರಿಣಾಮದಿಂದ ತುಂಗಭದ್ರಾ ಮತ್ತು ಆಲಮಟ್ಟಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರಿನ ಹರಿವು ಬಂದಿಲ್ಲ. ಇಂತಹ ಸವಾಲುಗಳನ್ನು ಎದುರಿಸಲು ದೇಶದ ನದಿಗಳನ್ನು ಪರಸ್ಪರ ಜೋಡಿಸುವುದು ಅತ್ಯಂತ ಅಗತ್ಯವಾಗಿದೆ” ಎಂದು ಹೇಳಿದರು.
ಹೆಚ್ಚುವರಿ ನೀರು ಲಭ್ಯವಿರುವ ನದಿಗಳಿಂದ ನೀರಿನ ಕೊರತೆಯಿರುವ ಪ್ರದೇಶಗಳಿಗೆ ನೀರು ಹರಿಸುವ ಮೂಲಕ ಬರಗಾಲದ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಬಹುದು. ಜೊತೆಗೆ ರಾಜ್ಯಗಳು, ಜಿಲ್ಲೆಗಳು ಹಾಗೂ ರೈತರ ನಡುವೆ ಉಂಟಾಗುವ ನೀರಿನ ವಿವಾದಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಅಭಿಪ್ರಾಯಪಟ್ಟರು.

