Home Blog

ಬಿಸಿಲು ತಣಿಸಿಕೊಳ್ಳಲು ಕೆರೆಗೆ ಇಳಿದ ಯುವಕರು ಸಾವು: ಕೋಲಾರದಲ್ಲಿ ಅಣ್ಣ-ತಮ್ಮ ದುರಂತ ಅಂತ್ಯ!

0

ಕೋಲಾರ: ಈಜಲು ಹೋಗಿದ್ದ ಅಣ್ಣ-ತಮ್ಮ ಇಬ್ಬರೂ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ನಡೆದಿದೆ.

ಚಾಂಪಲ್ಲಿ ಗ್ರಾಮದ ನರೇಂದ್ರ (25) ಮತ್ತು ಚಂದನ್ (23) ಮೃತ ದುರ್ದೈವಿಗಳು. ಇಬ್ಬರೂ ಗಾರೆ ಕೆಲಸಕ್ಕಾಗಿ ಆ ಭಾಗಕ್ಕೆ ತೆರಳಿದ್ದು, ಮಧ್ಯಾಹ್ನದ ಬಿಸಿಲಿನ ನಡುವೆ ಕೆರೆಯಲ್ಲಿ ಈಜಲು ಇಳಿದಿದ್ದರು.

ಈ ವೇಳೆ ನೀರಿನ ಆಳ ಅರಿಯದೆ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದು, ಗ್ರಾಮದಲ್ಲಿ ಮೌನ ಆವರಿಸಿದೆ.

ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದರೂ, ಕುಟುಂಬದವರು ಯಾವುದೇ ದೂರು ನೀಡದ ಕಾರಣ ಮರಣೋತ್ತರ ಪರೀಕ್ಷೆ ನಡೆಸಲಾಗಿಲ್ಲ. ಬಳಿಕ ಹಿರಿಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಆಟವಾಡುತ್ತಿದ್ದ ಮಕ್ಕಳ ಮೇಲೆ ಕಾಂಪೌಂಡ್ ಗೇಟ್ ಬಿದ್ದು ದುರಂತ: 5 ವರ್ಷದ ಮಗು ಸ್ಥಳದಲ್ಲೇ ಸಾವು!

ಬೆಂಗಳೂರು: ಆಟವಾಡುತ್ತಿದ್ದ ಮಕ್ಕಳ ಮೇಲೆ ಏಕಾಏಕಿ ಕಾಂಪೌಂಡ್ ಗೇಟ್ ಕುಸಿದು ಬಿದ್ದ ಪರಿಣಾಮ 5 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದ ದ್ವಾರಕಾನಗರದಲ್ಲಿ ನಡೆದಿದೆ.

ಅವಘಡದಲ್ಲಿ ಗೌಸಿಯಾ ಎಂಬ ಮಗು ಮೃತಪಟ್ಟಿದ್ದು, ಅಣ್ಣ ಇಮಾಮ್ ಹಾಗೂ ತಂಗಿ ಶಕಿಲಾ ಗಾಯಗೊಂಡಿದ್ದಾರೆ. ಮತ್ತೊಬ್ಬ 3 ವರ್ಷದ ಮಗು ಸುಮಯ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.

ಮೃತ ಗೌಸಿಯಾ, ಇಮಾಮ್ ರಮೀಜಾ ದಂಪತಿಯ ಪುತ್ರಿಯಾಗಿದ್ದು, ಕುಟುಂಬವು ಕಳೆದ ಐದು ತಿಂಗಳ ಹಿಂದಷ್ಟೇ ಈ ಬಾಡಿಗೆ ಮನೆಗೆ ವಾಸಕ್ಕೆ ಬಂದಿತ್ತು. ಬಸ್ ನಿಲ್ದಾಣದ ಬಳಿ ಹಣ್ಣಿನ ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದ ದಂಪತಿ, ರವಿಶಂಕರ್ ಎಂಬುವವರಿಗೆ ಸೇರಿದ ಮನೆಯಲ್ಲಿ ನೆಲೆಸಿದ್ದರು.

ಘಟನೆಯ ಬಳಿಕ ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸಿ ಸರ್ವಿಸ್ ಸೆಂಟರ್‌ನಲ್ಲಿ ಭೀಕರ ಅಗ್ನಿ ಅವಘಡ: ಸಿಲಿಂಡರ್ ಸ್ಫೋಟಕ್ಕೆ ನಡುಗಿದ ಗಾಜಿಯಾಬಾದ್, ವೃದ್ಧ ಸಾವು!

ನವದೆಹಲಿ: ದೆಹಲಿಯ ಸಮೀಪದ ಗಾಜಿಯಾಬಾದ್‌ನಲ್ಲಿ ಎಸಿ ಸರ್ವಿಸ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 80 ವರ್ಷದ ವೃದ್ಧ ದಾರುಣವಾಗಿ ಸಾವನ್ನಪ್ಪಿದ್ದಾರೆ. ಪಟೇಲ್ ನಗರ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಈ ಘಟನೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು.

ಮುಂಜಾನೆ ಸುಮಾರು 3:05ರ ವೇಳೆಗೆ ಮೂರು ಅಂತಸ್ತಿನ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಬೆಂಕಿ ಇಡೀ ಕಟ್ಟಡವನ್ನು ಆವರಿಸಿತ್ತು. ಘಟನೆಯಲ್ಲಿ ತ್ರಿಲೋಕಿ ಎಂಬ 80 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.

ಕಟ್ಟಡದಲ್ಲಿದ್ದ ಗ್ಯಾಸ್ ಸಿಲಿಂಡರ್‌ಗಳು ಮತ್ತು ಎಸಿ ಕಂಪ್ರೆಸರ್‌ಗಳು ಸತತ ಸ್ಫೋಟಗೊಂಡ ಪರಿಣಾಮ ಬೆಂಕಿ ಇನ್ನಷ್ಟು ವ್ಯಾಪಕವಾಗಿ ಹರಡಿತ್ತು. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸಾಕಷ್ಟು ಹರಸಾಹಸ ಪಟ್ಟಿದ್ದಾರೆ. ಹಲವು ನೀರಿನ ಮಾರ್ಗಗಳನ್ನು ಬಳಸಿದ ಬಳಿಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಅವಘಡದಲ್ಲಿ 10 ಕಾರುಗಳು ಹಾಗೂ 10 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಸದ್ಯ ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಿ.ಎಸ್.ವೈ 50 ವರ್ಷದ ರಾಜಕೀಯ ಪಯಣಕ್ಕೆ ಮೆಗಾ ಸಂಭ್ರಮ: ಚಿತ್ರದುರ್ಗದಲ್ಲಿ ಕೋಟೆ ಮಾದರಿಯ ಅಭಿಮಾನೋತ್ಸವ ವೇದಿಕೆ!

ಚಿತ್ರದುರ್ಗ: ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನವನ್ನು ಆಚರಿಸಲು ಚಿತ್ರದುರ್ಗದಲ್ಲಿ ಭಾರೀ ಅಭಿಮಾನೋತ್ಸವ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕಾಗಿ ಮಾದಾರ ಚೆನ್ನಯ್ಯ ಮಠದ ಸಮೀಪ ನಿರ್ಮಿಸಿರುವ ಬೃಹತ್ ವೇದಿಕೆ ಮತ್ತು ಕೋಟೆ ಮಾದರಿಯ ಪ್ರವೇಶ ದ್ವಾರಗಳು ಗಮನ ಸೆಳೆಯುತ್ತಿವೆ.

ವೇದಿಕೆ ಸುತ್ತಮುತ್ತ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಯಡಿಯೂರಪ್ಪ ಅವರ ಭಾರೀ ಕಟೌಟ್‌ಗಳನ್ನು ಅಳವಡಿಸಲಾಗಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮನೆ ಮಾಡಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಜನರು ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆ ಇದೆ.

ಜನಸಾಗರವನ್ನು ಗಮನದಲ್ಲಿಟ್ಟುಕೊಂಡು ಭೋಜನ ವ್ಯವಸ್ಥೆಯನ್ನೂ ಅದ್ದೂರಿಯಾಗಿ ಮಾಡಲಾಗಿದೆ. 1,250ಕ್ಕೂ ಹೆಚ್ಚು ಬಾಣಸಿಗರು ಅಡುಗೆ ಕಾರ್ಯದಲ್ಲಿ ನಿರತರಾಗಿದ್ದು, ಮೈಸೂರ್ ಪಾಕ್, ಪಲಾವ್, ಮೆಂತ್ಯ ಪಲಾವ್, ಟೊಮೆಟೊ ಬಾತ್, ಮೊಸರನ್ನ ಸೇರಿದಂತೆ ಹಲವು ಬಗೆಯ ಊಟ ಸಿದ್ಧಪಡಿಸಲಾಗುತ್ತಿದೆ. ಕಾರ್ಯಕ್ರಮ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ.

ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ಮೂವರು ಗಂಭೀರ, ಹಲವರಿಗೆ ಗಾಯ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಕೊರಕೋಡು ಕ್ರಾಸ್ ಸಮೀಪ ಕೆರೆಯ ಏರಿಯ ಮೇಲೆ ಮದುವೆ ದಿಬ್ಬಣದ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಸಿದ್ದಾಪುರದಿಂದ ಹಾನಗಲ್‌ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಅಪಘಾತಕ್ಕೀಡಾಗಿದೆ.

ಆನವಟ್ಟಿ–ಸೊರಬ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ಕೆರೆ ಏರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಮೋರಿಗೆ ಮಗುಚಿ ಬಿದ್ದಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಸುಮಾರು 50 ಮಂದಿ ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ.

ಗಾಯಾಳುಗಳನ್ನು ತಕ್ಷಣ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನ್ಯಾಯಾಲಯದ ಆದೇಶ ಇದ್ದರೆ ಇ-ಖಾತಾ ಇಲ್ಲವೆಂದು ಕ್ರಯಪತ್ರ ನೋಂದಣಿ ತಿರಸ್ಕರಿಸಲಾಗದು: ಹೈಕೋರ್ಟ್

ಬೆಂಗಳೂರು: ನ್ಯಾಯಾಲಯ ನೀಡುವ ಡಿಕ್ರಿ ಆದೇಶವು ಕೇವಲ ಹಕ್ಕಿನ ಘೋಷಣೆ ಮಾತ್ರವಲ್ಲ, ಅದನ್ನು ಕಾನೂನುಬದ್ಧವಾಗಿ ಕಾರ್ಯಗತಗೊಳಿಸಬೇಕಾದ ಬಾಧ್ಯತೆಯೂ ಆಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಸ್ಪಷ್ಟನೆ ನೀಡಿದೆ.

ನ್ಯಾಯಾಲಯದ ಡಿಕ್ರಿ ಇದ್ದರೂ ಆಸ್ತಿಗೆ ಇ-ಖಾತೆ ಇಲ್ಲ ಎಂಬ ಕಾರಣ ನೀಡಿ ಕ್ರಯಪತ್ರ (ಮಾರಾಟ ಪತ್ರ) ನೋಂದಣಿ ನಿರಾಕರಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಜೊತೆಗೆ, ಈ ಸಂಬಂಧ ನೋಂದಣಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನೂ ರೂಪಿಸಿದೆ.

ತುಮಕೂರು ಜಿಲ್ಲೆಯ ಪಿ.ಎಸ್. ಅಶೋಕ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ವಿಚಾರಣಾ ನ್ಯಾಯಾಲಯದ ಡಿಕ್ರಿ ಆದೇಶದ ಹೊರತಾಗಿಯೂ ಇ-ಖಾತೆ ಇಲ್ಲವೆಂಬ ನೆಪ ನೀಡಿ ನೋಂದಣಿ ಮಾಡಲು ನಿರಾಕರಿಸಿದ್ದ ತುಮಕೂರು ಜಿಲ್ಲಾ ನೋಂದಣಾಧಿಕಾರಿಗಳು 2025ರ ಆಗಸ್ಟ್ 28ರಂದು ಹೊರಡಿಸಿದ್ದ ಹಿಂಬರಹವನ್ನು ನ್ಯಾಯಾಲಯ ರದ್ದುಪಡಿಸಿದೆ.

ತೀರ್ಪಿನಲ್ಲಿ ಹೈಕೋರ್ಟ್, ಇ-ಖಾತೆ ಇಲ್ಲ ಎಂಬ ಕಾರಣ ನೀಡಿ ಕ್ರಯಪತ್ರ ನೋಂದಣಿಯನ್ನು ತಿರಸ್ಕರಿಸುವುದು ಕಾನೂನಿನ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಇಂತಹ ಪ್ರಕರಣಗಳು ಪದೇ ಪದೇ ನ್ಯಾಯಾಲಯದ ಮುಂದೆ ಬರುತ್ತಿರುವುದು ಆಡಳಿತಾತ್ಮಕ ವೈಫಲ್ಯವನ್ನು ತೋರಿಸುತ್ತದೆ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ನ್ಯಾಯಾಲಯ ಒಂದು ಬಾರಿ ಡಿಕ್ರಿ ನೀಡಿದ ಬಳಿಕ, ಅದನ್ನು ಕಾನೂನುಬದ್ಧವಾಗಿ ಜಾರಿಗೆ ತರಬೇಕಾಗುತ್ತದೆ. ಕೋರ್ಟ್ ಕಮಿಷನರ್ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ಆ ಆದೇಶವನ್ನು ಅನುಷ್ಠಾನಗೊಳಿಸುವ ಅಧಿಕಾರ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ನಗರ ಪಾಲಿಕೆಗಳು ಹಾಗೂ ನೋಂದಣಿ ಪ್ರಾಧಿಕಾರಗಳು ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ನ್ಯಾಯಾಲಯದ ಆದೇಶವನ್ನು ನಿಷ್ಪ್ರಯೋಜಕಗೊಳಿಸಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಸರ್ಕಾರದ ಪ್ರಾಧಿಕಾರಗಳ ಜವಾಬ್ದಾರಿ ಕೇವಲ ನಿಯಂತ್ರಣಕ್ಕೆ ಸೀಮಿತವಾಗಿಲ್ಲ. ನ್ಯಾಯಾಂಗದ ಆದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹೊಣೆಗಾರಿಕೆಯೂ ಅವರ ಮೇಲಿದೆ. ಆದರೆ ಸ್ಪಷ್ಟ ಆಡಳಿತಾತ್ಮಕ ಮಾರ್ಗಸೂಚಿಗಳ ಕೊರತೆಯಿಂದ ಅಸಂಗತ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆ, ನ್ಯಾಯಾಲಯದ ಡಿಕ್ರಿ ಜಾರಿಗೆ ಸಂಬಂಧಿಸಿದಂತೆ ವಿಚಾರಣಾಧೀನ ನ್ಯಾಯಾಲಯಗಳು, ಸ್ಥಳೀಯ ಸಂಸ್ಥೆಗಳು ಹಾಗೂ ನೋಂದಣಿ ಪ್ರಾಧಿಕಾರಗಳು ಅನುಸರಿಸಬೇಕಾದ ಹಲವು ಮಾರ್ಗಸೂಚಿಗಳನ್ನು ಹೈಕೋರ್ಟ್ ರೂಪಿಸಿದೆ. ಈ ತೀರ್ಪು ಆಸ್ತಿ ನೋಂದಣಿ ಹಾಗೂ ನ್ಯಾಯಾಲಯದ ಆದೇಶ ಜಾರಿಗೆ ಸಂಬಂಧಿಸಿದಂತೆ ಮಹತ್ವದ ಮಾದರಿಯಾಗಲಿದೆ.

“ಪ್ರತಿಯೊಬ್ಬರ ಜೀವನದಲ್ಲೂ ಒಬ್ಬ ವಿಜಯ್ ಇರಲಿ”: ರಶ್ಮಿಕಾ ಮಂದಣ್ಣ

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ನಡುವಿನ ಸಂಬಂಧದ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಇದೀಗ ಮತ್ತಷ್ಟು ಬಲ ಸಿಕ್ಕಿದೆ. ಇಂದು ವಿಜಯ್ ದೇವರಕೊಂಡ ತಮ್ಮ 37ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಬೆನ್ನಲ್ಲೇ, ರಶ್ಮಿಕಾ ಮಂದಣ್ಣ ಅವರ ಹಳೆಯ ಭಾವನಾತ್ಮಕ ಹೇಳಿಕೆಗಳು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿವೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ರಶ್ಮಿಕಾ, ತಮ್ಮ ಜೀವನದ ಕಷ್ಟದ ಹಂತದಲ್ಲಿ ತಮಗೆ ನಿಜವಾದ ಬೆಂಬಲ ನೀಡಿದ್ದು ವಿಜಯ್ ದೇವರಕೊಂಡ ಎಂದು ಹೇಳಿಕೊಂಡಿದ್ದರು. “ಜೀವನದಲ್ಲಿ ಶಾಂತಿ ಮತ್ತು ಸಂತೋಷ ನೀಡುವ ವ್ಯಕ್ತಿಯೊಂದಿಗೆ ಇರೋದು ಎಷ್ಟು ಮುಖ್ಯ ಅನ್ನೋದು ಈಗ ಅರ್ಥವಾಗಿದೆ” ಎಂದು ಅವರು ಹೇಳಿದ್ದರು.

ಇದೇ ವೇಳೆ ‘ಗರ್ಲ್‌ಫ್ರೆಂಡ್’ ಸಿನಿಮಾದ ಕಾರ್ಯಕ್ರಮದಲ್ಲಿ ವಿಜಯ್ ಅವರನ್ನು ಉದ್ದೇಶಿಸಿ ಮಾತನಾಡಿದ್ದ ರಶ್ಮಿಕಾ, “ಈ ಸಿನಿಮಾದ ಆರಂಭದಿಂದಲೂ ನೀನು ನನ್ನ ಜೊತೆಗಿದ್ದೆ. ಪ್ರತಿಯೊಬ್ಬರ ಜೀವನದಲ್ಲೂ ಒಬ್ಬ ವಿಜಯ್ ದೇವರಕೊಂಡ ಇರಲಿ ಎಂದು ನಾನು ಬಯಸುತ್ತೇನೆ. ಅಂಥ ವ್ಯಕ್ತಿ ಸಿಗೋದು ನಿಜಕ್ಕೂ ಆಶೀರ್ವಾದ” ಎಂದು ಭಾವುಕರಾಗಿದ್ದರು.

‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಸಿನಿಮಾಗಳ ಮೂಲಕ ಅಭಿಮಾನಿಗಳ ಮನಗೆದ್ದಿದ್ದ ಈ ಜೋಡಿ, ಬಳಿಕ ರಿಯಲ್ ಲೈಫ್‌ನಲ್ಲೂ ಆಪ್ತರಾಗಿದ್ದರು. ಡೇಟಿಂಗ್ ವದಂತಿಗಳನ್ನು ಹಲವು ಬಾರಿ ಎದುರಿಸಿದ್ದರೂ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಅಧಿಕೃತವಾಗಿ ಪ್ರತಿಕ್ರಿಯಿಸಿರಲಿಲ್ಲ.

ಈಗ ವಿವಾಹದ ಬಳಿಕ ವಿಜಯ್ ದೇವರಕೊಂಡ ಮೊದಲ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ ಎನ್ನುವ ಚರ್ಚೆ ಜೋರಾಗಿದ್ದು, ಸಿನಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರ ಹರಿಸುತ್ತಿದ್ದಾರೆ.

ಬಿಟ್ ಕಾಯಿನ್ ಹಗರಣದಲ್ಲಿ ಮಹತ್ವದ ಬೆಳವಣಿಗೆ; ಪ್ರಮುಖ ಆರೋಪಿ ಶ್ರೀಕಿ ಸೇರಿ ಇಬ್ಬರ ಬಂಧನ

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಬಹುಕೋಟಿ ಬಿಟ್ಕಾಯಿನ್ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ.

ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ‘ಶ್ರೀಕಿ’, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಅವರನ್ನು ಇಡಿ ಅಧಿಕಾರಿಗಳು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಇಂದು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಇಡಿ ಕಸ್ಟಡಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಇಡಿ ವಿಶೇಷ ನ್ಯಾಯಾಲಯ ಆದೇಶದ ಮೇರೆಗೆ ಮೂವರನ್ನೂ 10 ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಲಾಗಿದೆ.

ಕೋಟ್ಯಂತರ ರೂಪಾಯಿಗಳ ವ್ಯವಹಾರ ನಡೆದಿರುವ ಈ ಬಿಟ್ಕಾಯಿನ್ ಹಗರಣದಲ್ಲಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪ್ರಮುಖ ಆರೋಪಿಯಾಗಿದ್ದಾನೆ. ಹ್ಯಾಕಿಂಗ್, ಡಿಜಿಟಲ್ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಗಂಭೀರ ಆರೋಪಗಳು ಆತನ ವಿರುದ್ಧ ದಾಖಲಾಗಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುನೀಶ್ ಹೆಗ್ಡೆ ಹಾಗೂ ಪ್ರಸಿದ್ಧ ಶೆಟ್ಟಿ ಸೇರಿದಂತೆ ಇತರರು, ತಮ್ಮ ವಿರುದ್ಧ ದಾಖಲಾಗಿರುವ ಹ್ಯಾಕಿಂಗ್ ಮತ್ತು ವಂಚನೆ ಪ್ರಕರಣಗಳನ್ನು ರದ್ದುಪಡಿಸುವಂತೆ ಈ ಹಿಂದೆ ಹೈಕೋರ್ಟ್ ಮೊರೆ ಹೋಗಿದ್ದರು. ಏಪ್ರಿಲ್ ತಿಂಗಳಲ್ಲಿ ಸಲ್ಲಿಸಿದ್ದ ಆ ಅರ್ಜಿಗಳ ವಿಚಾರಣೆ ಇನ್ನೂ ನ್ಯಾಯಾಲಯದಲ್ಲಿ ಮುಂದುವರಿದಿದೆ.

ಲಿವ್ ಇನ್ ರಿಲೇಶನ್ʼಶಿಪ್ ನಲ್ಲಿದ್ದ ಯುವಕ ಆತ್ಮಹತ್ಯೆ! ಜೊತೆಯಲ್ಲಿದ್ದ ಮಹಿಳೆ ಪರಾರಿ

ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ.

ಮೃತ ತಿಪ್ಪೇಸ್ವಾಮಿ ಹಾಗೂ ದಾವಣಗೆರೆ ಮೂಲದ ಮಹಿಳೆ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ಬಳಿಕ ಪ್ರೀತಿಯಲ್ಲಿ ಬಿದ್ದಿದ್ದರು ಎಂದು ತಿಳಿದುಬಂದಿದೆ.

ಆ ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೂ ಪತಿ ಹಾಗೂ ಮಕ್ಕಳನ್ನು ಬಿಟ್ಟು ಬಂದಿದ್ದ ಮಹಿಳೆ ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ತಿಪ್ಪೇಸ್ವಾಮಿ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಇಬ್ಬರೂ ಗಂಡ-ಹೆಂಡತಿ ಎಂದು ಹೇಳಿಕೊಂಡು ತಿಂಗಳಿಗೆ ಮೂರು ಸಾವಿರ ರೂಪಾಯಿ ಬಾಡಿಗೆ ನೀಡಿ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಮಹಿಳೆ ನನ್ನನ್ನು ಮೆಂಟೇನ್ ಮಾಡಲಾಗುವುದಿಲ್ಲ, ಬಿಟ್ಟುಬಿಡು” ಎಂದು ಯುವಕನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದು ಆರೋಪಿಸಲಾಗಿದೆ. ಇದರಿಂದ ಮನನೊಂದ ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಯುವಕನ ಸಾವಿಗೆ ಮಹಿಳೆಯೇ ಕಾರಣ ಎಂದು ಆರೋಪಿಸಿ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಮಹಿಳೆ ನಾಪತ್ತೆಯಾಗಿದ್ದು, ಪೊಲೀಸರು ಆಕೆಯ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಕೆಲಸ ಮಾಡಿಸಿದರೂ ಕೂಲಿ ಇಲ್ಲ: ಉದ್ಯೋಗ ಖಾತ್ರಿ ಯೋಜನೆ ಅವ್ಯವಸ್ಥೆಗೆ ಕಾರ್ಮಿಕರ ಆಕ್ರೋಶ – ಪೇಸ್ ಲಾಕ್: NMR ಗೊಂದಲಕ್ಕೆ ಮುತ್ತಿಗೆ

ಲಕ್ಷ್ಮೇಶ್ವರ; ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು ಪೂರ್ವನಿಯೋಜಿತವಾಗಿ ಕೈಗೊಳ್ಳದೇ ಅವ್ಯವಸ್ಥೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ತಾಲೂಕಿನ ಸೂರಣಗಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನೂರಾರು ಕೂಲಿಕಾರ್ಮಿಕರು ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿಯಿಂದ ಪ್ರತಿ ವರ್ಷ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಬಡ ಕೂಲಿಕಾರ್ಮಿಕರಿಗೆ ನೀಡಬೇಕಾದ ಕಾಮಗಾರಿಗಳನ್ನು ಸಮರ್ಪಕವಾಗಿ ಪೂರ್ವನಿಯೋಜಿತ ಮಾಡದೇ ಇರುವುದರಿಂದ ಕೆಲಸ ನಿರ್ವಹಣೆ ಗೊಂದಲದ ನಡುವೆ ಸಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸಿದರು.

ಮುಖ್ಯವಾಗಿ ಪೇಸ್‌ಲಾಕ್ ತಾಂತ್ರಿಕ ಸಮಸ್ಯೆಯನ್ನು ನೆಪವೊಡ್ಡಿ ಹಲವಾರು ಕಾರ್ಮಿಕರಿಗೆ ಕೆಲಸ ನೀಡದೇ ವಂಚಿಸಲಾಗುತ್ತಿದೆ. ಆದ್ದರಿಂದ ಗ್ರಾಮ ಪಂಚಾಯಿತಿ ಆಡಳಿತ ಮುಂಚಿತವಾಗಿ ಕಾಮಗಾರಿಗಳನ್ನು ಯೋಜಿಸಿ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿದರು.

ಕಳೆದ ವರ್ಷವೂ ಮಳೆ ಆರಂಭವಾದ ಬಳಿಕ ಕಾಮಗಾರಿ ನಡೆಸಲು ಪ್ರಯತ್ನಿಸಿದ್ದು, 20 ದಿನ ಕೆಲಸ ಮಾಡಿದರೂ ಕೆಲವೇ ದಿನಗಳ ಅರ್ಧ ಕೂಲಿ ಮಾತ್ರ ಪಾವತಿಸಲಾಗಿದೆ. ಇದಕ್ಕೂ ತಾಂತ್ರಿಕ ದೋಷವನ್ನೇ ಕಾರಣವಾಗಿ ಹೇಳಲಾಗಿದೆ ಎಂದು ಕಾರ್ಮಿಕರು ದೂರಿದರು.

ಈ ವರ್ಷವೂ ಪೂರ್ವಯೋಜನೆ ಇಲ್ಲದೇ ಏಕಾಏಕಿ ಕಾಮಗಾರಿ ಆರಂಭಿಸಲಾಗಿದೆ. ಕಾರ್ಮಿಕರು ಸ್ಥಳಕ್ಕೆ ತೆರಳಿ ಕೆಲಸ ಆರಂಭಿಸಿದರೂ, ಪೇಸ್‌ಲಾಕ್ ತೆಗೆಯದ ಕಾರಣ ಎನ್‌ಎಂಆರ್ ದಾಖಲಾಗದೇ ಹಲವರು ಕೂಲಿಯಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರವೀಣ ಸೂರಣಗಿ ಮಾತನಾಡಿ, ಪ್ರತಿವರ್ಷ ಕಾರ್ಮಿಕರು ಜಾಬ್ ಕಾರ್ಡ್ ಸಲ್ಲಿಸಿದರೂ ಸಿಬ್ಬಂದಿ ಸರಿಯಾಗಿ ಎನ್‌ಎಂಆರ್ ಹಾಕುವುದಿಲ್ಲ. ಪೂರ್ವಯೋಜನೆ ಇಲ್ಲದೇ ಕಾಮಗಾರಿ ನಡೆಸುತ್ತಿರುವುದರಿಂದ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂಗಾರು ಕೃಷಿ ಚಟುವಟಿಕೆ ಆರಂಭವಾಗುವ ಮೊದಲು ಸಮಸ್ಯೆ ಪರಿಹರಿಸಿ ಕೂಲಿಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸಬೇಕು ಎಂದು ಕಾರ್ಮಿಕರು ಒತ್ತಾಯಿಸಿದರು.

“ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು ಪೂರ್ವನಿಯೋಜಿತವಾಗಿ ಕೈಗೊಳ್ಳಲಾಗುತ್ತಿದೆ. ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಮಾಹಿತಿ ನೀಡಲಾಗಿದೆ. ಪೇಸ್‌ಲಾಕ್ ಸೇರಿ ಕೆಲ ತಾಂತ್ರಿಕ ಸಮಸ್ಯೆಗಳ ಕಾರಣ ಕಾರ್ಮಿಕರ ನೋಂದಣಿ ವಿಳಂಬವಾಗುತ್ತಿದೆ. ಇದು ಜಿಲ್ಲೆಯ ಹಲವೆಡೆ ಕಂಡುಬಂದಿರುವ ಸಮಸ್ಯೆಯಾಗಿದ್ದು, ಶೀಘ್ರ ಪರಿಹರಿಸಿ ಕಾಮಗಾರಿ ಸುಗಮಗೊಳಿಸಲಾಗುವುದು.” ಎಂದು ರೋಣದ, ಪಿಡಿಓ ಜಿ.ಎಂ ಹೇಳಿದರು.

error: Content is protected !!