ಚಿತ್ರದುರ್ಗ: ಹಿರಿಯೂರು ಶಾಸಕ ಹಾಗೂ ಸಚಿವ ಡಿ.ಸುಧಾಕರ್ ಅವರಿಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ನೀಡಲಾಯಿತು. ಜೈನ ಸಂಪ್ರದಾಯದಂತೆ ನಡೆದ ಅಂತ್ಯಕ್ರಿಯೆಯಲ್ಲಿ ಸಾವಿರಾರು ಅಭಿಮಾನಿಗಳು ಮತ್ತು ರಾಜಕೀಯ ನಾಯಕರು ಭಾಗವಹಿಸಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು ಹಾಗೂ ಶಾಸಕರು ಸುಧಾಕರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಪಾರ್ಥಿವ ಶರೀರದ ಮುಂದೆ ಡಿಕೆ ಶಿವಕುಮಾರ್ ಭಾವುಕರಾಗಿ ಕಣ್ಣೀರು ಹಾಕಿದ ದೃಶ್ಯ ಗಮನ ಸೆಳೆಯಿತು.
ಸುಧಾಕರ್ ಸ್ಟೇಡಿಯಂನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದ ಪಾರ್ಥಿವ ಶರೀರಕ್ಕೆ ಅಪಾರ ಸಂಖ್ಯೆಯಲ್ಲಿ ಜನರು ಗೌರವ ಸಲ್ಲಿಸಿದರು. ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಜೈನ ಮುಕ್ತಿಧಾಮಕ್ಕೆ ಕರೆದೊಯ್ಯಲಾಯಿತು.
ಚಿತಾಗಾರದಲ್ಲಿ ಬಂದೂಕು ಪಡೆ ಮೂರು ಸುತ್ತು ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿತು. ರಾಷ್ಟ್ರಧ್ವಜವನ್ನು ಸಿಎಂ ಸಿದ್ದರಾಮಯ್ಯ ಅವರು ಕುಟುಂಬಕ್ಕೆ ಹಸ್ತಾಂತರಿಸಿದರು. ಪುತ್ರ ಸುಹಾಸ್ ಅಂತಿಮ ವಿಧಿ ನೆರವೇರಿಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.
ಮೊಣಕಾಲು ಶಸ್ತ್ರಚಿಕಿತ್ಸೆಯ ಬಳಿಕ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ 65 ವರ್ಷದ ಡಿ.ಸುಧಾಕರ್, ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೇ 10ರಂದು ನಿಧನರಾಗಿದ್ದರು.

