ಡೆಹ್ರಾಡೂನ್: ಬದ್ರಿನಾಥ ದೇವಸ್ಥಾನದಲ್ಲಿ ಭಕ್ತರ ದೇಣಿಗೆ ಹಾಗೂ ಕಾಣಿಕೆಗಳ ದುರ್ಬಳಕೆ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಉನ್ನತ ಮಟ್ಟದ ಮೂರು ಸದಸ್ಯರ ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸಿದೆ.
ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಮಧ್ಯಪ್ರವೇಶಿಸಿದ್ದು, ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ. ಪ್ರಕರಣದ ಸತ್ಯಾಸತ್ಯತೆ ಬಹಿರಂಗಪಡಿಸುವ ಉದ್ದೇಶದಿಂದ ಈ ತನಿಖೆ ನಡೆಸಲಾಗುತ್ತಿದೆ.
ದೇವಾಲಯದ ಹಣಕಾಸು ವಿಭಾಗದಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಬದ್ರಿನಾಥ-ಕೇದಾರನಾಥ ದೇವಸ್ಥಾನ ಸಮಿತಿಯು ಈಗಾಗಲೇ ಒಬ್ಬ ಹಿರಿಯ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.
ಆರಂಭದಲ್ಲಿ ದೇವಸ್ಥಾನ ಸಮಿತಿಯೇ ನಾಲ್ಕು ಸದಸ್ಯರ ಆಂತರಿಕ ತನಿಖಾ ಸಮಿತಿಯನ್ನು ರಚಿಸಿತ್ತು. ಆದರೆ, ಇದು ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ಎಂದು ಭಕ್ತರು ಹಾಗೂ ಸಾಮಾಜಿಕ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಪಾರದರ್ಶಕ ತನಿಖೆ ನಡೆಸಲು ಸರ್ಕಾರವೇ ನೇರವಾಗಿ ಸ್ವತಂತ್ರ ಸಮಿತಿಯನ್ನು ನೇಮಿಸಿದೆ.
ತನಿಖಾ ಸಮಿತಿಯು ಕಳೆದ ಕೆಲವು ವರ್ಷಗಳಿಂದ ಭಕ್ತರಿಂದ ನಗದು, ಚಿನ್ನ, ಬೆಳ್ಳಿ ಹಾಗೂ ಆನ್ಲೈನ್ ಮೂಲಕ ಬಂದಿರುವ ಎಲ್ಲಾ ದೇಣಿಗೆ ಮತ್ತು ಕಾಣಿಕೆಗಳ ಲೆಕ್ಕಪರಿಶೀಲನೆ ನಡೆಸಲಿದೆ. ದೇವಸ್ಥಾನದ ಬ್ಯಾಂಕ್ ಖಾತೆಗಳು, ರಸೀದಿ ಪುಸ್ತಕಗಳು ಹಾಗೂ ಹಣಕಾಸು ದಾಖಲೆಗಳಲ್ಲಿ ಯಾವುದೇ ತಿರುಚುವಿಕೆ ಅಥವಾ ಅಕ್ರಮ ನಡೆದಿದೆಯೇ ಎಂಬುದನ್ನು ಪರಿಶೀಲಿಸಲಿದೆ.
ಇದರ ಜೊತೆಗೆ, ಭಕ್ತರು ನೀಡಿದ ಹಣವನ್ನು ಧಾರ್ಮಿಕ ಕಾರ್ಯಗಳ ಹೊರತಾಗಿ ವೈಯಕ್ತಿಕ ಅಥವಾ ಅನಧಿಕೃತ ಉದ್ದೇಶಗಳಿಗೆ ಬಳಸಲಾಗಿದೆಯೇ ಎಂಬುದರ ಬಗ್ಗೆಯೂ ಸಮಗ್ರ ತನಿಖೆ ನಡೆಸಲಾಗುತ್ತದೆ.
ವಿಶ್ವವಿಖ್ಯಾತ ಬದ್ರಿನಾಥ ಧಾಮದ ಪಾವಿತ್ರ್ಯತೆ ಹಾಗೂ ಭಕ್ತರ ನಂಬಿಕೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ. ತನಿಖಾ ಸಮಿತಿಯು ನಿಗದಿತ ಅವಧಿಯೊಳಗೆ ವರದಿ ಸಲ್ಲಿಸಲಿದ್ದು, ದೇಣಿಗೆ ದುರ್ಬಳಕೆ ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಉತ್ತರಾಖಂಡ ಸರ್ಕಾರ ಸ್ಪಷ್ಟಪಡಿಸಿದೆ.

