Home Blog

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಕ್ಷಣಾರ್ಧದಲ್ಲೇ ಹೊತ್ತಿ ಉರಿದ ಹೋಟೆಲ್!

ಬೆಂಗಳೂರು: ನಗರದಲ್ಲಿ ಮತ್ತೊಂದು ದೊಡ್ಡ ಅಗ್ನಿ ಅವಘಡ ಸಂಭವಿಸಿದೆ.

ನೈಸ್ ರಸ್ತೆಯ ಸೋಂಪುರ ಸರ್ಕಲ್‌ನಲ್ಲಿರುವ ಶುದ್ಧ ತಿಂಡಿ ಹೋಟೆಲ್‌ಗೆ ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲೇ ಧಗಧಗನೆ ಹೊತ್ತಿ ಉರಿದ ಪರಿಣಾಮ ಸಂಪೂರ್ಣ ಹೋಟೆಲ್ ಸುಟ್ಟು ಕರಕಲಾಗಿದೆ.

ಇತ್ತೀಚಿಗಷ್ಟೇ, ಮಾರ್ಚ್ ತಿಂಗಳಲ್ಲಿ ಉದ್ಘಾಟನೆಯಾಗಿದ್ದ ಈ ಬೃಹತ್ ಹೋಟೆಲ್‌ನಲ್ಲಿ ಇಡ್ಲಿ ಸ್ಟೀಮರ್‌ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಬೆಂಕಿ ತಗುಲುತ್ತಿದ್ದಂತೆಯೇ ಒಳಗಿದ್ದ ಸಿಬ್ಬಂದಿಗಳು ತಕ್ಷಣ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ, ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆಯಿಂದಾಗಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

ನಿಮಗೂ ಮೈಗ್ರೇನ್ ಬಿಟ್ಟು ಬಿಡದೇ ಕಾಡ್ತಿದ್ಯಾ!? ಹಾಗಿದ್ರೆ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡ್ಬೇಡಿ!

0

ಮೈಗ್ರೇನ್ ಎಂದರೆ ಸಾಮಾನ್ಯ ತಲೆನೋವಿಗಿಂತ ಭಿನ್ನವಾದ, ಹೆಚ್ಚು ತೀವ್ರವಾದ ನರ ಸಂಬಂಧಿತ ಸಮಸ್ಯೆ.

ತಲೆಯ ಒಂದು ಭಾಗದಲ್ಲಿ ಸೂಜಿ ಚುಚ್ಚುವಂತೆ ನೋವು ಕಾಣಿಸಿಕೊಳ್ಳುವುದು ಇದರ ಪ್ರಮುಖ ಲಕ್ಷಣ. ಈ ನೋವು ಕೆಲವೊಮ್ಮೆ ಗಂಟೆಗಳವರೆಗೆ ಅಥವಾ ದಿನಗಳವರೆಗೆ ಮುಂದುವರಿಯಬಹುದು. ಜೊತೆಗೆ ವಾಂತಿ, ವಾಕರಿಕೆ, ಬೆಳಕು ಮತ್ತು ಶಬ್ದದ ಅತಿಸಂವೇದನೆ ಕಾಣಿಸಿಕೊಳ್ಳುತ್ತದೆ.

ಮೈಗ್ರೇನ್ ಏಕೆ ಉಂಟಾಗುತ್ತದೆ?

ತಜ್ಞರ ಪ್ರಕಾರ, ಮೆದುಳಿನಲ್ಲಿ ನಡೆಯುವ ರಾಸಾಯನಿಕ ಬದಲಾವಣೆಗಳು—ವಿಶೇಷವಾಗಿ ಸೆರೋಟೋನಿನ್ ಮಟ್ಟ ಕಡಿಮೆಯಾಗುವುದು—ನರ ವ್ಯವಸ್ಥೆಯನ್ನು ಹೆಚ್ಚು ಸಂವೇದನಾಶೀಲವಾಗಿಸುತ್ತದೆ. ಇದರ ಪರಿಣಾಮವಾಗಿ ತಲೆನೋವು ಉಂಟಾಗುತ್ತದೆ.

ಒತ್ತಡ, ನಿದ್ರೆಯ ಕೊರತೆ, ಹಾರ್ಮೋನಲ್ ಬದಲಾವಣೆಗಳು, ಹೆಚ್ಚು ಬೆಳಕು, ಜೋರಾದ ಶಬ್ದ ಮತ್ತು ಕೆಲವು ಆಹಾರ ಪದಾರ್ಥಗಳು (ಚಾಕೊಲೇಟ್, ಕ್ಯಾಫೀನ್) ಸಮಸ್ಯೆಯನ್ನು ಹೆಚ್ಚಿಸಬಹುದು.

ಈ ಅಭ್ಯಾಸಗಳು ನೋವನ್ನು ಹೆಚ್ಚಿಸಬಹುದು:

ನಿದ್ರೆಯ ಕೊರತೆ: ಸರಿಯಾಗಿ ನಿದ್ರೆ ಮಾಡದಿದ್ದರೆ ಮೆದುಳಿಗೆ ವಿಶ್ರಾಂತಿ ಸಿಗುವುದಿಲ್ಲ. ಪ್ರತಿದಿನ 7–8 ಗಂಟೆಗಳ ನಿದ್ರೆ ಅತ್ಯಗತ್ಯ.

ಜೋರಾದ ಶಬ್ದ ಮತ್ತು ತೀವ್ರ ಬೆಳಕು: ಇಂತಹ ಪರಿಸರದಲ್ಲಿ ಇರುವುದರಿಂದ ತಲೆನೋವು ಹೆಚ್ಚಾಗಬಹುದು. ಶಾಂತ ವಾತಾವರಣದಲ್ಲಿ ಸಮಯ ಕಳೆಯುವುದು ಉತ್ತಮ.

ಒತ್ತಡ: ಹೆಚ್ಚು ಮಾನಸಿಕ ಒತ್ತಡ ಸಮಸ್ಯೆಯನ್ನು ತೀವ್ರಗೊಳಿಸುತ್ತದೆ. ಯೋಗ, ಧ್ಯಾನ ಉಪಯುಕ್ತ.

ಅಸಮಯದ ಆಹಾರ ಪದ್ಧತಿ: ಹೊತ್ತಿಗೆ ಊಟ ಮಾಡದಿರುವುದು ಅಥವಾ ಹೆಚ್ಚು ಕ್ಯಾಫೀನ್ ಸೇವನೆ ನೋವನ್ನು ಹೆಚ್ಚಿಸಬಹುದು.

ಸರಿಯಾದ ಜೀವನಶೈಲಿ ಪಾಲಿಸಿಕೊಂಡರೆ ಈ ಸಮಸ್ಯೆಯನ್ನು ನಿಯಂತ್ರಿಸಬಹುದು. ತೀವ್ರವಾಗಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ.

ಕಾರವಾರ| ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಏಕಾಏಕಿ ಬೆಂಕಿ, ಅರಣ್ಯಕ್ಕೂ ವ್ಯಾಪಿಸಿದ ಜ್ವಾಲೆ!

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿದೆ.

ಮಂಗಳೂರಿನಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಪೆಟ್ರೋಲ್ ತುಂಬಿದ್ದರಿಂದ ಬೆಂಕಿ ಕಾಣಿಸಿಕೊಂಡ ತಕ್ಷಣವೇ ವಾಹನ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಕ್ಷಣಾರ್ಧದಲ್ಲೇ ಜ್ವಾಲೆಗಳು ಭಾರಿಯಾಗಿ ವ್ಯಾಪಿಸಿದ್ದು, ಪರಿಸ್ಥಿತಿ ಆತಂಕಕಾರಿ ರೂಪ ಪಡೆದಿದೆ.

ಇದೇ ವೇಳೆ ಬೆಂಕಿಯ ತೀವ್ರತೆ ರಸ್ತೆ ಪಕ್ಕದ ಅರಣ್ಯ ಪ್ರದೇಶಕ್ಕೂ ಹರಡಿದ್ದು, ಪರಿಸರ ಹಾನಿಯ ಭೀತಿ ಉಂಟಾಗಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.

ಘಟನೆಯಿಂದಾಗಿ ಕೆಲಕಾಲ ಸಂಚಾರಕ್ಕೂ ವ್ಯತ್ಯಯ ಉಂಟಾಗಿದ್ದು, ಹೆಚ್ಚಿನ ಅನಾಹುತ ತಪ್ಪಿಸಲು ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಹನುಮನ ಭಕ್ತರಿಗೆ ಸೂಚನೆ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿಗೆ ಬರುವ ಭಕ್ತರಿಗೆ ಸಮಯ ನಿಗದಿ!

ಕೊಪ್ಪಳ: ತೀವ್ರ ಬಿಸಿಲಿನ ಹಿನ್ನೆಲೆ ಅಂಜನಾದ್ರಿ ಬೆಟ್ಟ ಏರುವ ಭಕ್ತರ ಸುರಕ್ಷತೆಗಾಗಿ ಕೊಪ್ಪಳ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಮಧ್ಯಾಹ್ನ ವೇಳೆಯಲ್ಲಿ ಬೆಟ್ಟ ಏರಲು ನಿರ್ಬಂಧ ಹೇರಲಾಗಿದ್ದು, ನಿಗದಿತ ಸಮಯದಲ್ಲಷ್ಟೇ ಭಕ್ತರಿಗೆ ಪ್ರವೇಶ ಕಲ್ಪಿಸಲಾಗಿದೆ.

ಪ್ರತಿದಿನ ಬೆಳಗ್ಗೆ 11 ಗಂಟೆಯೊಳಗೆ ಹಾಗೂ ಸಂಜೆ 4 ಗಂಟೆಯ ನಂತರ ಮಾತ್ರ ಅಂಜನಾದ್ರಿ ಬೆಟ್ಟ ಏರಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಬೆಟ್ಟ ಏರಲು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಹನುಮಂತನ ಜನ್ಮಸ್ಥಳವೆಂದು ಪ್ರಸಿದ್ಧಿಯಾದ ಗಂಗಾವತಿ ತಾಲೂಕಿನ ಹನುಮನಹಳ್ಳಿಯ ಅಂಜನಾದ್ರಿ ಪರ್ವತಕ್ಕೆ ರಾಜ್ಯದ ವಿವಿಧ ಭಾಗಗಳಲ್ಲದೆ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದರೆ 575 ಮೆಟ್ಟಿಲುಗಳನ್ನು ಹತ್ತಿ ದರ್ಶನ ಪಡೆಯುವ ವೇಳೆ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಅನೇಕರು ಅಸ್ವಸ್ಥಗೊಳ್ಳುತ್ತಿರುವುದು ಗಮನಕ್ಕೆ ಬಂದಿದೆ.

ನಿರ್ಜಲೀಕರಣ, ಸುಸ್ತು ಹಾಗೂ ಉಸಿರಾಟದ ತೊಂದರೆಯಿಂದ ಭಕ್ತರು ಮೆಟ್ಟಿಲುಗಳ ಮೇಲೆಯೇ ಕುಸಿದು ಬೀಳುತ್ತಿರುವ ಘಟನೆಗಳು ವರದಿಯಾಗಿವೆ. ಕೆಲವರು ಹೃದಯಾಘಾತಕ್ಕೀಡಾದ ಪ್ರಕರಣಗಳೂ ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಸಮಯ ಮಿತಿಯ ಆದೇಶ ಜಾರಿ ಮಾಡಿದ್ದಾರೆ.

ಜಿಲ್ಲಾಡಳಿತದ ಈ ಕ್ರಮವನ್ನು ಭಕ್ತರು ಸ್ವಾಗತಿಸಿದ್ದು, ಬೆಟ್ಟದ ಮೇಲೆ ತುರ್ತು ಚಿಕಿತ್ಸೆಗಾಗಿ ಆರೋಗ್ಯ ಸಿಬ್ಬಂದಿ ನಿಯೋಜಿಸುವಂತೆ ಮನವಿ ಮಾಡಿದ್ದಾರೆ. ಬೇಸಿಗೆಯ ತೀವ್ರತೆ ಕಡಿಮೆಯಾಗುವವರೆಗೆ ಭಕ್ತರು ನಿಗದಿತ ಸಮಯವನ್ನು ಪಾಲಿಸುವುದು ಅನಿವಾರ್ಯವಾಗಿದೆ.

ಮಧುಗಿರಿಯಲ್ಲಿ ನ್ಯಾಯಾಧೀಶೆ ಹೃದಯಾಘಾತದಿಂದ ನಿಧನ

ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಹೃದಯಾಘಾತದಿಂದ ನ್ಯಾಯಾಧೀಶೆ ಸಾವನ್ನಪ್ಪಿದ ದುಃಖದ ಘಟನೆ ನಡೆದಿದೆ.

ಕಾಂತಮ್ಮ (43) ಮೃತ ನ್ಯಾಯಾಧೀಶೆ. ಅವರು ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿದ್ದು, ಅಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದವರಾದ ಕಾಂತಮ್ಮ, ಕಳೆದ ಒಂದು ವರ್ಷದಿಂದ ಮಧುಗಿರಿಯ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕುಡಿಯುವ ನೀರಿಗಾಗಿ 419.50 ಕೋಟಿ ರೂ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಲಭ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಇಂದು  ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ  ಜರುಗಿತು.

ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ.

ಕುಡಿಯುವ ನೀರಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ

ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.

ಈ ಬಾರಿ ಎಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡು ಬರುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಯಾವ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಬೇಕು ಎಂದರು.

ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ

ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

114 ತಾಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲೂಕುಗಳನ್ನು ಹಾಗೂ 2410 ಗ್ರಾಮ ಪಂಚಾಯತ್ಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಟ್ಯಾಂಕರ್ಗಳ ಮೂಲಕ 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದರು.

ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಗ್ರಾಮಗಳ ಗುರುತಿಸುವಿಕೆ

ಕಲಬುರಗಿ ಜಿಲ್ಲೆಯ 147 ಗ್ರಾಮ ಪಂಚಾಯತ್, ಬಾಗಲಕೋಟೆ 114, ಬೆಳಗಾವಿಯ 127, ಚಿಕ್ಕಮಗಳೂರಿನ 115, ಹಾವೇರಿಯ 138, ಮಂಡ್ಯ 130, ತುಮಕೂರಿನ 141 ಹಾಗೂ ಉತ್ತರಕನ್ನಡ ಜಿಲ್ಲೆಯ 125 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಗುರುತಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

22 ಕೊಳವೆ ಬಾವಿಗಳು  ಬಾಡಿಗೆಗೆ

ಪ್ರಸ್ತುತ 27 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, 95 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರುತಿಸಲಾಗಿದೆ. ಒಟ್ಟು 145 ವಾರ್ಡ್ಗಳಿಗೆ 57 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆಗೆ 22 ಕೊಳವೆ ಬಾವಿಗಳನ್ನು ಪಡೆಯಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಬಹುದು

ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಗುರುತಿಸಿದರು.

ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿ.ಎಂ.ಸಿ ನೀರು ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿ.ಎಂ.ಸಿ ನೀರು ಲಭ್ಯವಿತ್ತು. ಪ್ರಸುತ ಕುಡಿಯುವ ನೀರಿಗೆ ಸಾಕಷ್ಟು ನೀರು ಜಲಾಶಯಗಳಲ್ಲಿ ಲಭ್ಯವಿದೆ.

ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಿ

ಮಳೆಗಾಲ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿರುವುದರಿಂದ ಜುಲೈ ಮಧ್ಯದವರೆಗೂ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು.  ನೀರಾವರಿಗಿಂತ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರಿನ ಸೋರಿಕೆಯನ್ನು ಗುರುತಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು

ಕುಡಿಯುವ ನೀರಿನ ಕುರಿತಾಗಿ ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು. ಇದಕ್ಕಾಗಿ ತಾಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದ ಕಾರ್ಯಪಡೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು .

ಎಲ್ಲಾ ಆರ್. ಒ ಘಟಕಗಳು 24/7 ನಿರಂತರ ವಿದ್ಯುತ್ ಸರಬರಾಜಿನೊಂದಿಗೆ ಕಾರ್ಯ ನಿರ್ವಹಿಸುವುದನ್ನು ಖಾತ್ರಿಪಡಿಸಬೇಕು. ಆರ್ ಒ ಘಟಕಗಳ ತಕ್ಷಣದ ದುರಸ್ತಿ ಮತ್ತು ಕುಡಿಯುವ ನೀರಿನ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕು ಮಟ್ಟದಲ್ಲಿ ತಂಡಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ರೈತರಿಗೆ ಸೂಕ್ತ ಸಮಯದಲ್ಲಿ ರಸಗೊಬ್ಬರ ಲಭ್ಯತೆಯನ್ನು ಖಾತ್ರಿಪಡಿಸಿ

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ವ್ಯಾಪಾರಿಗಳು ರಸಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿ ದಾಸ್ತಾನು ಇರಿಸುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸೂಕ್ತ ಸಮಯದಲ್ಲಿ ರಸಗೊಬ್ಬರ ಲಭ್ಯತೆಯನ್ನು ಖಾತ್ರಿಪಡಿಸಲು ಕ್ರಮ ಕೈಗೊಳ್ಳಬೇಕು.

ಯೂರಿಯಾ, ಡಿಎಪಿ ಸರಿಯಾಗಿ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ರಸಗೊಬ್ಬರ ಸಾಗಾಟ ಮಾಡುವುದನ್ನು ನಿಯಂತ್ರಿಸಬೇಕು. ಇದಕ್ಕಾಗಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಮೇವಿನ ಕೊರತೆ ಸಧ್ಯಕ್ಕೆ ಇಲ್ಲ

ಕಳೆದ ಎರಡು ವರ್ಷಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಮೇವಿನ ಕೊರತೆ ಸಧ್ಯಕ್ಕೆ ಇರುವುದಿಲ್ಲ. ಆದರೆ ಈ ಕುರಿತು ನಿರ್ಲಕ್ಷ್ಯ ವಹಿಸದೆ ಮೇವಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು ಎಂದರು ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಕುರಿತಾದ ಟಾಸ್ಕ್‌ ಪೋರ್ಸ್‌ ಸಭೆ ನಡೆಸಿ ವರದಿ ಸಲ್ಲಿಸಬೇಕು ಮುಖ್ಯಮಂತ್ರಿ ಅವರು ತಿಳಿಸಿದರು.

ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮ ವಹಿಸಿ

ಕಲುಷಿತ ನೀರು ಪೂರೈಕೆಯಾಗಿ ಆರೋಗ್ಯ ಸಮಸ್ಯೆಯಾಗದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಈಗಾಗಲೇ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು, ಯಾವುದೇ ಕಾರಣಕ್ಕೂ ಕಲುಷಿತ ನೀರಿನಿಂದ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು.

ರಸಗೊಬ್ಬರ ಮಾರಾಟದ ಮೇಲೆ ನಿರಂತರ ನಿಗಾ ವಹಿಸಿ: ಅರ್ಹ ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ 

ಹಾವೇರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ರಸಗೊಬ್ಬರ ಮಾರಾಟವಾಗಿದ್ದು, ಇದಕ್ಕೆ ಕಾರಣವೇನು? ರಸಗೊಬ್ಬರ ಮಾರಾಟದ ಮೇಲೆ ನಿರಂತರ ನಿಗಾ ವಹಿಸಿ, ಅರ್ಹ ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಕುಡಿಯುವ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಆದ್ಯತೆ ನೀಡಿ

ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಆದ್ಯತೆ ನೀಡಬೇಕು. ಪಂಚಾಯತ್ ರಾಜ್ ಮತ್ತು ಇಂಧನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಲು ಠೇವಣಿಗಾಗಿ ಕಾಯಬಾರದು ಎಂದರು.

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಬೆಂಬಲಿಸುವ ವಿಶ್ವಾಸ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆಗಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಯುತ್ತಿದ್ದು, ಮಹಿಳೆಯರಿಗೂ ಕಾನೂನು ರಚನೆಗೆ ಸಮಾನ ಅವಕಾಶ ಸಿಗಲಿದೆ. ಇದಕ್ಕೆ ವಿರೋಧಪಕ್ಷ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರು ದೇಶದಲ್ಲಿ ಸರ್ವರಿಗೂ ಸಮಾನ ಹಕ್ಕು ಇರಬೇಕು, ಸಮಾನ ಅವಕಾಶ ಸಿಗಬೇಕು ಎಂದು ಬಯಸಿದ್ದರು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂದೂ ಹೇಳಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಬಾಬಾ ಸಾಹೇಬರ ಚಿಂತನೆಗೆ ಶಕ್ತಿ ಕೊಟ್ಟಿದ್ದಾರೆ ಎಂದರು.

ಈ ಹಿಂದೆ ಮಹಿಳೆಯರಿಗೆ ಅವಕಾಶ, ಅಧಿಕಾರ ಮತ್ತು ಸಮಾನ ಹಕ್ಕು ಕೊಡುವಲ್ಲಿ ಬಾಯಿ ಮಾತಿನ ಭಾಷಣ ಇತ್ತೇ ಹೊರತು ಹೃದಯವಂತಿಕೆ ಇರಲಿಲ್ಲ. ಆದರೆ ಇಂದು ನಾರಿ ಶಕ್ತಿ ಹೆಸರಿನಲ್ಲಿ ಪ್ರಧಾನಿಯವರು ಸಂಸತ್ತಿನ ವಿಶೇಷ ಅಧಿವೇಶನ ಕರೆದು ಮಸೂದೆ ಮಂಡಿಸುತ್ತಿದ್ದಾರೆ.

ಇನ್ನು ಮುಂದೆ ಹೆಣ್ಣು ಮಕ್ಕಳಿಗೆ ಎಲ್ಲ ರೀತಿಯ ಅವಕಾಶಗಳ ದೊರೆಯಲಿವೆ. ಹಿಂದೂ ಕೋಡ್ ಬಿಲ್ ತರುವ ಮೊದಲು ಹೆಣ್ಣು ಮಕ್ಕಳಿಗೆ ಮತದಾನದ ಅವಕಾಶವೂ ಇರಲಿಲ್ಲ. ಬಾಬಾ ಸಾಹೇಬರು ಅವರ ಶಕ್ತಿ, ಯೋಚನೆ ಹಾಗೂ ಚಿಂತನೆಯಿಂದ ಹೆಣ್ಣು ಮಕ್ಕಳಿಗೆ ಮತದಾನದ ಅವಕಾಶ ಸಿಕ್ಕಿತು. ನಾರೀಶಕ್ತಿ ಮಸೂದೆ ಮೂಲಕ ಕಾನೂನು ರಚನೆಯಲ್ಲೂ ಮಹಿಳೆಯರಿಗೆ ಸಮಾನ ಅವಕಾಶ ಸಿಗಲಿದೆ ಎಂದರು.

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್‍ನವರು ಯಾವುದೇ ಅಪಸ್ವರ ಎತ್ತದೆ ಅಂಗೀಕಾರಕ್ಕೆ ಸಹಕರಿಸಲಿದ್ದಾರೆ ಎಂಬ ವಿಶ್ವಾಸ ಇದೆ. ಒಂದು ವೇಳೆ ಅಪಸ್ವರ ತೆಗೆದರೆ ಅವರ ಭವಿಷ್ಯ ಗಂಭೀರವಾಗುತ್ತದೆ ಎಂದು ಎಚ್ಚರಿಸಿದರು. ಈ ಮಸೂದೆಯನ್ನು ಪಕ್ಷದ ಪರವಾಗಿ ಸ್ವಾಗತಿಸುತ್ತೇವೆ. ದೇಶದಲ್ಲಿನ ನಾರೀಶಕ್ತಿ ಅಂಬೇಡ್ಕರ್ ಅವರಿಗೆ ಹೇಗೆ ಕೃತಜ್ಞತೆ ಹೊಂದಿದ್ದಾರೋ ಹಾಗೇಯೇ ಮೋದಿಜಿಯವರಿಗೂ ಕೃತಜ್ಞತೆ ವ್ಯಕ್ತಪಡಿಸಲಿದ್ದಾರೆ ಎಂದು ನುಡಿದರು.

ಸಚಿವ ಸ್ಥಾನ ಕೇಳುವುದು ತಪ್ಪಲ್ಲ: ಸಂಪುಟ ಪುನರ್ ರಚನೆಗೆ ದಿನೇಶ್ ಗುಂಡೂರಾವ್ ಒತ್ತಾಯ

ಬೆಂಗಳೂರು: ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ. ಸಂಪುಟ ಪುನರ್‌ರಚನೆ ಆಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಾಸಕರು ಸಚಿವ ಸ್ಥಾನಕ್ಕಾಗಿ ಪ್ರಯತ್ನಿಸುವುದು ಸಹಜ. ಪ್ರತಿಯೊಬ್ಬರಿಗೂ ಮಂತ್ರಿಯಾಗುವ ಆಸೆ ಇರುತ್ತದೆ ಎಂದು ಹೇಳಿದರು. ಹಿಂದೆ ತಾವು ಸಚಿವರಾಗಿದ್ದಾಗಲೂ ಸಂಪುಟ ಪುನರ್‌ರಚನೆ ನಡೆದಿತ್ತು ಎಂದು ಉಲ್ಲೇಖಿಸಿದರು.

ಬೇರೆಯವರಿಗೂ ಸಚಿವ ಸ್ಥಾನ ಸಿಗಬೇಕು ಎಂಬುದು ಸಹಜ. ಆದರೆ ಯಾರು ಸಚಿವರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಒಟ್ಟು ಸಚಿವರ ಪಟ್ಟಿಯನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

ಶಾಸಕರು ದೆಹಲಿಗೆ ತೆರಳಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತು ಉಪಮುಖ್ಯಮಂತ್ರಿಗಳ ಹೇಳಿಕೆಗೆ ತಾವು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಶಾಸಕರು ತಮ್ಮ ಮಟ್ಟಿಗೆ ಪ್ರಯತ್ನಿಸುವುದು ತಪ್ಪಲ್ಲ ಎಂದು ಪುನರುಚ್ಚರಿಸಿದರು.

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ ಆರೋಪಿಗಳ ಶಿಕ್ಷೆ ಪ್ರಮಾಣ ನಾಳೆ ಪ್ರಕಟ

ಬೆಂಗಳೂರು: ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಾಗುವುದು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.

ಪ್ರಕರಣದ ಕುರಿತು ದೀರ್ಘಕಾಲ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಎಲ್ಲ ಆರೋಪಿಗಳ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ.

ವಿಚಾರಣೆ ವೇಳೆ ಸಿಬಿಐ ಪರ ಸಹಾಯಕ ಸಾಲಿಸೇಟರ್ ಜನರಲ್ ಎಸ್.ವಿ. ರಾಜು ವಾದ ಮಂಡಿಸಿ, ಈ ಅಪರಾಧ ಅತ್ಯಂತ ಗಂಭೀರವಾಗಿದ್ದು ನ್ಯಾಯಾಂಗ ವ್ಯವಸ್ಥೆಗೆ ಧಕ್ಕೆಯಾಗಿದೆ. ಆರೋಪಿಗಳು ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಿದ್ದು, ನ್ಯಾಯ ಪ್ರಕ್ರಿಯೆಗೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಎಲ್ಲ ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಯಾಗಿ ಆರೋಪಿಗಳ ಪರ ವಕೀಲರು, ಶಿಕ್ಷೆ ಪ್ರಮಾಣವನ್ನು ಕಡಿಮೆಗೊಳಿಸಬೇಕೆಂದು ಕೋರಿದರು. ಆರೋಪಿಗಳಿಗೆ ಕುಟುಂಬದ ಜವಾಬ್ದಾರಿಗಳಿದ್ದು, ಮಾನವೀಯ ದೃಷ್ಟಿಯಿಂದ ಶಿಕ್ಷೆಯಲ್ಲಿ ಸಡಿಲಿಕೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.

ಕೃಷ್ಣಾ ನದಿಯಲ್ಲಿ ಕುರಿಗಾಹಿಯ ಮೇಲೆ ಮೊಸಳೆ ದಾಳಿ! ಬಲಗೈ ಕಟ್

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಹಿರೇರಾಯಕುಂಪಿ ಬಳಿ ಕೃಷ್ಣಾ ನದಿಯಲ್ಲಿ ಮೊಸಳೆ ದಾಳಿ ನಡೆದಿದ್ದು, ಕುರಿಗಾಹಿಯೊಬ್ಬರ ಬಲಗೈ ತುಂಡಾಗಿದೆ. ಮೊಸಳೆ ದಾಳಿಗೆ ಒಳಗಾದ ಹೊನ್ನಗುಡೆಪ್ಪ ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕುರಿ ಮರಿಗಳಿಗೆ ನೀರು ತರಲು ಕೃಷ್ಣಾ ನದಿಗೆ ಹೋದ ವೇಳೆ ಏಕಾಏಕಿ ಮೊಸಳೆ ದಾಳಿ ನಡೆಸಿದೆ. ಕೈ ಕಚ್ಚಿಕೊಂಡು ನದಿಯೊಳಗೆ ಎಳೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸಿದೆ.

ಆದರೆ ಧೈರ್ಯವಾಗಿ ಹೋರಾಡಿದ ಹೊನ್ನಗುಡೆಪ್ಪ ಮೊಸಳೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ವೇಳೆ, ಬಲಗೈ ತುಂಡಾಗಿದೆ. ಗಾಯಾಳುವನ್ನು ರಾಯಚೂರಿನ ಓಪೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಭಾಗದಲ್ಲಿ ಮೊಸಳೆಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ, ನದಿ ತೀರದ ಜನರಲ್ಲಿ ಭೀತಿ ಹೆಚ್ಚಾಗಿದೆ. ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಮೊಸಳೆಗಳ ನಿಯಂತ್ರಣ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜೊತೆಗೆ ಗಾಯಾಳುವಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

error: Content is protected !!