Home Blog

ಯೋಗಾಚಾರ್ಯರಿಗೆ ರಾಜ್ಯ ಪ್ರಶಸ್ತಿ ಪ್ರದಾನ

0

ವಿಜಯಸಾಕ್ಷಿ ಸುದ್ದಿ, ಗದಗ: ಮೈಸೂರಿನ ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಯೋಗ ಸ್ಪೋರ್ಟ್ಸ್ ಫೌಂಡೇಶನ್ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ ತಿಂಗಳಾದ್ಯಂತ ಹಮ್ಮಿಕೊಂಡಿರುವ ‘ಗುರುವಂದನಾ ಸಂಭ್ರಮಾಚರಣೆ’ ಕಾರ್ಯಕ್ರಮದ ಅಂಗವಾಗಿ ಯೋಗ ಸೇವಾ ಶಿಕ್ಷಕರನ್ನು ಗುರುತಿಸಿ ರಾಜ್ಯ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸೆ.11ರಂದು ಮೈಸೂರಿನ ಪತ್ರಿಕಾ ಭವನದಲ್ಲಿ ಯೋಗ ಸಾಧನೆ, ಬೋಧನೆ, ತರಬೇತಿ, ಪ್ರಸಾರ ಹಾಗೂ ಸೇವೆಯಲ್ಲಿ ತೊಡಗಿರುವ 14 ಯೋಗಾಚಾರ್ಯರಿಗೆ ‘ರಾಜಯೋಗಿ ಟಿ. ಕೃಷ್ಣಮಾಚಾರ್ಯ ಪ್ರಶಸ್ತಿ-2026’ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ವಿಶ್ವ ಯೋಗಾಶ್ರಮದ ಶ್ರೀ ಶ್ರೀ ನಿತ್ಯಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮೈಸೂರು ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾದೇವಿ ಸಮ್ಮುಖ ವಹಿಸಿದ್ದರು. ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಸಂಚಾಲಕ ಡಾ. ಪಿ.ಎನ್. ಗಣೇಶಕುಮಾರ್, ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಮೋಹನ್, ಯೋಗ ಸ್ಪೋರ್ಟ್ಸ್ ಫೌಂಡೇಶನ್ ಖಜಾಂಚಿ ವಿವೇಕ್ ಹಾಗೂ ನಿರ್ದೇಶಕ ನಿಶಾಂತ್ ಉಪಸ್ಥಿತರಿದ್ದರು.

ಡಾ. ಪಿ.ಎನ್. ಗಣೇಶಕುಮಾರ್ ಮಾತನಾಡಿ, ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ಯೋಗದ ಅಭಿವೃದ್ಧಿ ಹಾಗೂ ಪ್ರಸಾರಕ್ಕೆ ಮಹತ್ತರ ಕೊಡುಗೆ ನೀಡಿದ ಯೋಗಾಚಾರ್ಯ ಟಿ. ಕೃಷ್ಣಮಾಚಾರ್ಯ ಅವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಸ್ಥಾಪಿಸಲಾಗಿದೆ. ಗುರು ಪರಂಪರೆಯನ್ನು ಸ್ಥಿರವಾಗಿ ಮುಂದುವರಿಸುವುದು ಪ್ರಶಸ್ತಿಯ ಉದ್ದೇಶವಾಗಿದೆ ಎಂದರು.

ಪ್ರಶಸ್ತಿ ಪುರಸ್ಕೃತರ ಪರವಾಗಿ ಕೃಷ್ಣಪ್ಪ, ರಮೇಶಕುಮಾರ್ ಹಾಗೂ ಕೆ.ಎಸ್. ಪಲ್ಲೇದ ಮಾತನಾಡಿ, ಯೋಗವನ್ನು ಜೆನ್ ಅಲ್ಪಾ ಹಾಗೂ ಜೆನ್ ಝೀ ಸಮುದಾಯದ ಯುವಜನರಿಗೆ ತಲುಪಿಸಬೇಕು. ಶಾಲಾ-ಕಾಲೇಜುಗಳ ಪರೀಕ್ಷೆ ಹಾಗೂ ಪ್ರಮಾಣಪತ್ರಗಳಲ್ಲಿ ಯೋಗಕ್ಕೆ ಅಂಕಗಳನ್ನು ಕಡ್ಡಾಯಗೊಳಿಸಬೇಕು. ಯೋಗಾಸನ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜಯೋಗಿ ಟಿ. ಕೃಷ್ಣಮಾಚಾರ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಸಂಘಟಕರಿಗೆ ಗದುಗಿನ ಎಸ್.ವೈ.ಬಿ.ಎಂ.ಎಸ್. ಯೋಗ ಪಾಠಶಾಲೆ, ಬಸವ ಯೋಗ ಮಹಾವಿದ್ಯಾಲಯ, ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರ, ಗದಗ ಜಿಲ್ಲಾ ಯೋಗ ಒಕ್ಕೂಟ, ಗದಗ ಜಿಲ್ಲಾ ಅಮೇಚೂರ್ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್, ಬಸವ ಯೋಗ ಚಿಂತನ ಕೂಟ, ಶ್ರೀ ಕುಮಾರೇಶ್ವರ ಯೋಗ ಜೀಮ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಪರವಾಗಿ ಗದಗ ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ಎಂ.ಎಸ್. ಶಿರಿಯಣ್ಣವರ ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.

ಭಕ್ತರ ಜಯಘೋಷದೊಂದಿಗೆ ಶ್ರೀ ವೀರಭದ್ರೇಶ್ವರ ರಥೋತ್ಸವ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಸಂಜೆ ನಡೆದ ಅದ್ಧೂರಿ ರಥೋತ್ಸವವು ಸಾವಿರಾರು ಭಕ್ತರ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮಕ್ಕೆ ಸಾಕ್ಷಿಯಾಯಿತು. ಅಲಂಕೃತ ತೇರಿನತ್ತ ನೆಟ್ಟ ನೂರಾರು ಕಣ್ಣುಗಳು, ಕೈಯಲ್ಲಿ ಆರತಿ ತಟ್ಟೆ ಹಿಡಿದು ಸಾಗಿದ ಮಹಿಳೆಯರು, ಮೊಳಗಿದ ಜಯಘೋಷಗಳು ಹಾಗೂ ವಾದ್ಯಗಳ ನಾದದಿಂದ ಪಟ್ಟಣವೇ ಭಕ್ತಿಸಾಗರವಾಗಿ ಕಂಗೊಳಿಸಿತು.

ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಹಾಲಕೆರೆ ಸಂಸ್ಥಾನಮಠದ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಕೇಸರಿ ಧ್ವಜ ಹಾರಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ತೇರು ಚಲನೆ ಆರಂಭವಾಗುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು.

ದೇವಸ್ಥಾನದ ಆವರಣದಿಂದ ಅಲಂಕೃತ ರಥ ಹೊರಟ ಕ್ಷಣದಿಂದಲೇ ರಸ್ತೆಯ ಇಕ್ಕೆಲಗಳಲ್ಲಿ ಭಕ್ತರ ದಂಡೇ ನೆರೆದಿತ್ತು. ರಥ ಸಾಗುವ ಮಾರ್ಗದುದ್ದಕ್ಕೂ ಭಕ್ತರು ಬಾಳೆಹಣ್ಣು, ಹೂವುಗಳನ್ನು ರಥದ ಮೇಲೆ ಅರ್ಪಿಸಿ ಭಕ್ತಿಭಾವ ಮೆರೆದರು. ‘ಹರ ಹರ ಮಹಾದೇವ’, ‘ವೀರಭದ್ರ ಮಹಾರಾಜ್ ಕೀ ಜೈ’ ಎಂಬ ಜಯಘೋಷಗಳು ಮೊಳಗಿದವು.

ಮಹಿಳೆಯರು ಕೈಯಲ್ಲಿ ಆರತಿ ತಟ್ಟೆ ಹಿಡಿದು ತೇರಿನೊಂದಿಗೆ ಸಾಗಿದ್ದು ರಥೋತ್ಸವದ ವೈಭವಕ್ಕೆ ಮತ್ತಷ್ಟು ಮೆರುಗು ನೀಡಿತು. ಮಕ್ಕಳು, ಯುವಕರು, ವೃದ್ಧರು ಸೇರಿದಂತೆ ಎಲ್ಲ ವಯೋಮಾನದ ಭಕ್ತರು ಉತ್ಸಾಹದಿಂದ ಪಾಲ್ಗೊಂಡರು. ಡೊಳ್ಳು, ಭಜನೆ ಹಾಗೂ ವಿವಿಧ ವಾದ್ಯಗಳ ನಾದಕ್ಕೆ ಹೆಜ್ಜೆ ಹಾಕಿದ ಭಕ್ತರು ಸಂಭ್ರಮಿಸಿದರು.

ರಥ ಸಾಗುವ ದಾರಿಯುದ್ದಕ್ಕೂ ಮನೆಗಳ ಮುಂದೆ ಹಾಗೂ ಪ್ರಮುಖ ಸ್ಥಳಗಳಲ್ಲಿ ಭಕ್ತರು ರಥಕ್ಕೆ ಪೂಜೆ ಸಲ್ಲಿಸಿ, ಹೂವುಗಳನ್ನು ಅರ್ಪಿಸಿ ನಮಿಸಿದರು. ಹಲವರು ತಮ್ಮ ಹರಕೆಗಳನ್ನು ತೀರಿಸಿಕೊಂಡು ಶ್ರೀ ವೀರಭದ್ರೇಶ್ವರನಿಗೆ ಕೃತಜ್ಞತೆ ಸಲ್ಲಿಸಿದರು. ಕೆಲವರ ಕಣ್ಣುಗಳಲ್ಲಿ ಭಕ್ತಿಯ ಕಣ್ಣೀರು, ಇನ್ನು ಕೆಲವರ ಮುಖದಲ್ಲಿ ಹರಕೆ ನೆರವೇರಿದ ಸಂತಸ ಕಂಡುಬಂತು. ತೇರಿನೋತ್ಸವವು ಭಕ್ತರ ನಂಬಿಕೆ ಮತ್ತು ಭಾವನೆಗಳಿಗೆ ಜೀವಂತ ಸಾಕ್ಷಿಯಾಯಿತು.

ರಥವು ನಿಧಾನವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಾಗರಕೆರೆ ಸಮೀಪದ ಈರಣ್ಣನ ಪಾದದವರೆಗೆ ತಲುಪಿದಾಗ ಭಕ್ತರ ಸಂಭ್ರಮ ಮತ್ತಷ್ಟು ಹೆಚ್ಚಾಯಿತು. ಚಪ್ಪಾಳೆ, ಜಯಘೋಷ ಹಾಗೂ ಭಕ್ತಿಗೀತೆಗಳ ನಡುವೆ ಭಕ್ತರು ರಥವನ್ನು ಬರಮಾಡಿಕೊಂಡರು.

ರಥೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳು ಜನರಿಂದ ತುಂಬಿ ತುಳುಕುತ್ತಿದ್ದವು. ಎಲ್ಲೆಡೆ ಜಾತ್ರೆಯ ಸಡಗರ, ಭಕ್ತಿಗೀತೆಗಳ ಮೊಳಗು, ಡೊಳ್ಳಿನ ನಾದ ಹಾಗೂ ಜಯಘೋಷಗಳು ಕೇಳಿಬರುತ್ತಿದ್ದವು. ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಧಾರ್ಮಿಕ ಪರಂಪರೆಯನ್ನು ಮುಂದುವರಿಸುವ ಈ ತೇರಿನೋತ್ಸವವು ನರೇಗಲ್ಲಿನ ಜನರ ಭಕ್ತಿ ಹಾಗೂ ಸಾಮೂಹಿಕ ಒಗ್ಗಟ್ಟಿನ ಪ್ರತೀಕವಾಗಿ ಕಂಗೊಳಿಸಿತು.

ಸುತ್ತಮುತ್ತಲಿನ ಗ್ರಾಮಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಬಂಧು-ಬಳಗ ಹಾಗೂ ಸ್ನೇಹಿತರೊಂದಿಗೆ ಆಗಮಿಸಿದ ಜನರು ರಥೋತ್ಸವದ ವೈಭವವನ್ನು ಕಣ್ತುಂಬಿಕೊಂಡರು. ಹಿರಿಯರು ಮಕ್ಕಳಿಗೆ ಜಾತ್ರೆಯ ಮಹತ್ವವನ್ನು ವಿವರಿಸುತ್ತಿದ್ದ ದೃಶ್ಯವೂ ಕಂಡುಬಂತು.

ಒಟ್ಟಾರೆ, ಶ್ರೀ ವೀರಭದ್ರೇಶ್ವರನ ತೇರಿನೋತ್ಸವವು ಕೇವಲ ರಥದ ಸಂಚಾರವಾಗದೆ, ಭಕ್ತಿ, ಪರಂಪರೆ, ನಂಬಿಕೆ, ಕುಟುಂಬ ಬಂಧ ಹಾಗೂ ಊರಿನ ಒಗ್ಗಟ್ಟನ್ನು ಒಂದೆಡೆ ಸೇರಿಸಿದ ಅಪೂರ್ವ ಧಾರ್ಮಿಕ ಸಂಭ್ರಮವಾಗಿ ಮೂಡಿಬಂತು. ರಥ ಸಾಗಿದ ದಾರಿಯುದ್ದಕ್ಕೂ ಮೊಳಗಿದ ಜಯಘೋಷಗಳು ಹಾಗೂ ಭಕ್ತರ ಮುಖದಲ್ಲಿದ್ದ ಸಂತಸ ಜಾತ್ರೆಯ ಸಾರ್ಥಕತೆಯನ್ನು ಸಾರಿದವು.

ಗಣೇಶೋತ್ಸವದಲ್ಲಿ ಡಿಜೆ ಕಡ್ಡಾಯ ನಿಷೇಧ: ಎಸ್‌ಪಿ ಜಾಹ್ನವಿ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಗಣೇಶ ಚತುರ್ಥಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುವುದರಿಂದ ಸಮಾಜದಲ್ಲಿ ಶಾಂತಿ ಭಂಗವಾಗುವ ಸಾಧ್ಯತೆಗಳಿದ್ದು, ಯಾವುದೇ ಅಹಿತಕರ ಘಟನೆ ನಡೆದರೆ ಆಯೋಜಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕಿ ಜಾಹ್ನವಿ ಎಚ್ಚರಿಕೆ ನೀಡಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಗಣೇಶೋತ್ಸವದ ಶಾಂತಿಸಭೆಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬದ ಸಂದರ್ಭದಲ್ಲಿ ಜಿಲ್ಲಾದ್ಯಂತ ಯಾವುದೇ ರೀತಿಯ ಡಿಜೆ ಬಳಕೆಗೆ ಅವಕಾಶವಿರುವುದಿಲ್ಲ. ಹೀಗಾಗಿ ಸಾರ್ವಜನಿಕರು ಹಾಗೂ ಗಣೇಶೋತ್ಸವ ಆಯೋಜಕರು ಅತ್ಯಂತ ಜವಾಬ್ದಾರಿಯಿಂದ ಹಬ್ಬವನ್ನು ಆಚರಿಸಬೇಕು ಎಂದು ಸೂಚಿಸಿದರು.

ಗಣೇಶೋತ್ಸವ ಆಯೋಜಕರು ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಇಲಾಖೆ ಸನ್ನದ್ಧವಾಗಿರುತ್ತದೆ. ಸಾರ್ವಜನಿಕರ ತುರ್ತು ಸೇವೆಗಾಗಿ 112 ಸಹ ಸದಾ ಸಿದ್ಧವಿರುತ್ತದೆ ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಮುಖಂಡ ಮುಟುಗನಹಳ್ಳಿ ಕೊಟ್ರೇಶ ಮಾತನಾಡಿ, ನಾಗರಿಕರು ಹಾಗೂ ಯುವಕರು ಸಡಗರ-ಸಂಭ್ರಮದಿಂದ ಗಣೇಶ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಿದರು.

ಪತ್ರಕರ್ತ ಹುಳ್ಳಿ ಪ್ರಕಾಶ್ ಮಾತನಾಡಿ, ಗಣೇಶೋತ್ಸವ ಸಂದರ್ಭದಲ್ಲಿ ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಸಮಯಾವಕಾಶ ನೀಡುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದರು. ‘ದಿ ಹಂಪಿ ವರ್ಲ್ಡ್’ ದಿನಪತ್ರಿಕೆ ಸಂಪಾದಕ ಎಂ. ಶಿವಮೂರ್ತಿ ಮಾತನಾಡಿ, ಭಾರತ ಹಲವು ಧರ್ಮ, ಜಾತಿ, ಆಚಾರ-ವಿಚಾರಗಳನ್ನು ಹೊಂದಿರುವ ರಾಷ್ಟ್ರವಾಗಿದ್ದು, ‘ವಿವಿಧತೆಯಲ್ಲಿ ಏಕತೆ’ಯನ್ನು ಬಿಂಬಿಸುವ ದೇಶವಾಗಿದೆ. ಸಿದ್ಧಿವಿನಾಯಕನ ಹಬ್ಬವನ್ನು ಭಕ್ತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು ಎಂದು ಹೇಳಿದರು.

ಟಿವಿ ವಾಹಿನಿಯ ಸತೀಶ್ ಪಾಟೀಲ ಮಾತನಾಡಿ, ಹಬ್ಬದ ಸಂದರ್ಭದಲ್ಲಿ ಅಬಕಾರಿ ಇಲಾಖೆ ಹಾಡುಹಗಲೇ ನಡೆಯುವ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಪುರಸಭೆ ಹಾಗೂ ಆರೋಗ್ಯ ಇಲಾಖೆ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಪುರಸಭೆ ಸದಸ್ಯ ಪವಾಡಿ ಹನುಮಂತಪ್ಪ, ಕಾಂಗ್ರೆಸ್ ಮುಖಂಡರಾದ ಸಿಖಂದರ್ ಖಾನ್, ಪುರಸಭೆ ಮಾಜಿ ಅಧ್ಯಕ್ಷ ಎಂ. ಮರಿರಾಮಪ್ಪ, ಸೆರೆಗಾರ ಹುಚ್ಚಪ್ಪ, ವಕೀಲರ ಸಂಘದ ಅಧ್ಯಕ್ಷ ಕೊಟ್ರೇಶ್ ಶೆಟ್ಟರ್, ಸಮಾಜ ಸೇವಕ ಗದ್ದಿಕೇರಿ ನಾಗಭೂಷಣ ಸ್ವಾಮಿ, ಸರ್ದಾರ್ ಯಮನೂರಪ್ಪ ಸೇರಿದಂತೆ ಹಲವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಮಲ್ಲೇಶನಾಯ್ಕ ದೊಡ್ಮನಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ, ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹೇಮರೆಡ್ಡಿ, ಅಬಕಾರಿ ಇಲಾಖೆಯ ಮಮತಾ, ಕೂಡ್ಲಿಗಿ ಹಾಗೂ ತಂಬ್ರಹಳ್ಳಿ ಭಾಗದ ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಮತ್ತು ಪುರಸಭೆ ಅಧಿಕಾರಿಗಳು, ಡೆಪ್ಯೂಟಿ ತಹಶೀಲ್ದಾರ್ ಶಿವಕುಮಾರಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸಿಪಿಐ ವಿಕಾಸ್ ಲಮಾಣಿ ಕಾರ್ಯಕ್ರಮ ನಿರ್ವಹಿಸಿದರು. ತಾಲೂಕಿನ ವಿವಿಧ ಭಾಗಗಳಿಂದ 500ಕ್ಕೂ ಅಧಿಕ ಜನರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಶಾಂತಿಸಭೆಯಲ್ಲಿ ಪಾಲ್ಗೊಂಡಿದ್ದರು.

ರಸ್ತೆಯಲ್ಲಿ ಭಿಕ್ಷೆ ಬೇಡಿದ ಮಹಾರಾಷ್ಟ್ರದ ಅತ್ಯಂತ ಶ್ರೀಮಂತ BJP ಶಾಸಕ ಪರಾಗ್ ಶಾ!

0

ಮುಂಬೈ: ಮಹಾರಾಷ್ಟ್ರದ ಘಾಟ್‌ಕೋಪರ್ ಪೂರ್ವ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ರಾಜ್ಯದ ಅತ್ಯಂತ ಶ್ರೀಮಂತ ಜನಪ್ರತಿನಿಧಿಗಳಲ್ಲಿ ಒಬ್ಬರಾಗಿರುವ ಪರಾಗ್ ಶಾ (Parag Shah) ಭಿಕ್ಷುಕನ ವೇಷ ಧರಿಸಿ ರಸ್ತೆಯಲ್ಲಿ ಓಡಾಡಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದೆ. ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿರುವ ಶಾಸಕರು ಘಾಟ್‌ಕೋಪರ್‌ನ ರಸ್ತೆಗಳಲ್ಲಿ ಕೆಲ ಗಂಟೆಗಳ ಕಾಲ ಭಿಕ್ಷುಕನಂತೆ ಕಾಲ ಕಳೆದಿದ್ದು, ಇದನ್ನು ನೋಡಿದ ಸಾರ್ವಜನಿಕರು ಹಾಗೂ ರಾಜಕೀಯ ವಲಯ ಆಶ್ಚರ್ಯಚಕಿತಗೊಂಡಿದೆ.

ಜೈನ ಧರ್ಮಗುರುಗಳ ಸಲಹೆಯಂತೆ ಭಿಕ್ಷುಕನ ವೇಷ: ಪ್ರಸ್ತುತ ಜೈನ ಸಮುದಾಯದ ಪವಿತ್ರ ಚಾತುರ್ಮಾಸ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಜೈನ ಧರ್ಮಗುರು ನಮ್ರಮುನಿ ಅವರ ಸಲಹೆಯಂತೆ ಪರಾಗ್ ಶಾ ಅವರು ಒಂದು ದಿನದ ಮಟ್ಟಿಗೆ ಭಿಕ್ಷುಕನ ಜೀವನವನ್ನು ಅನುಭವಿಸಲು ಮುಂದಾಗಿದ್ದರು. ಗುರುಗಳ ಸೂಚನೆ ಪಾಲಿಸಿದ ಶಾಸಕರು ತಮ್ಮ ಭದ್ರತಾ ಸಿಬ್ಬಂದಿ, ದುಬಾರಿ ಕಾರುಗಳು ಹಾಗೂ ಬೆಲೆಬಾಳುವ ವಸ್ತುಗಳನ್ನೆಲ್ಲ ಬದಿಗಿಟ್ಟು ಸಾಮಾನ್ಯ ಭಿಕ್ಷುಕನ ವೇಷದಲ್ಲೇ ರಸ್ತೆಗಿಳಿದಿದ್ದರು.

ರಸ್ತೆಬದಿಯಲ್ಲಿ ಕುಳಿತು ಭಿಕ್ಷೆಯ ಆಹಾರ ಸೇವನೆ: ಘಾಟ್‌ಕೋಪರ್‌ನ ವಿವಿಧ ರಸ್ತೆಗಳಲ್ಲಿ ಓಡಾಡಿದ ಶಾಸಕರು ಸಾರ್ವಜನಿಕರ ಬಳಿ ಭಿಕ್ಷೆ ಬೇಡಿದ್ದಾರೆ. ರಸ್ತೆ ಬದಿಯಲ್ಲಿ ಕುಳಿತು ಭಿಕ್ಷೆಯಾಗಿ ದೊರೆತ ಆಹಾರವನ್ನೇ ಸೇವಿಸಿದ್ದಾರೆ. ವಿಶೇಷವೆಂದರೆ, ಆ ಸಮಯದಲ್ಲಿ ಅವರೊಂದಿಗೆ ಇದ್ದ ಬಹುತೇಕ ಜನರಿಗೆ ಅವರು ಭಾರಿ ಶ್ರೀಮಂತ ಶಾಸಕ ಪರಾಗ್ ಶಾ ಎಂಬ ವಿಷಯವೇ ತಿಳಿದಿರಲಿಲ್ಲ. ಬಳಿಕ ತಮ್ಮ ನೈಜ ರೂಪದಲ್ಲಿ ಅದೇ ಸ್ಥಳಗಳಿಗೆ ಮತ್ತೆ ಭೇಟಿ ನೀಡಿದ ಶಾಸಕರು, ತಾವು ಭಿಕ್ಷುಕನಾಗಿದ್ದಾಗ ನಡೆದ ಸಂಭಾಷಣೆ ಹಾಗೂ ಅನುಭವಗಳನ್ನು ಜನರೊಂದಿಗೆ ಹಂಚಿಕೊಂಡಿದ್ದಾರೆ.

3,383 ಕೋಟಿಗೂ ಅಧಿಕ ಆಸ್ತಿಯೊಡೆಯ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಅಫಿಡವಿಟ್‌ನಲ್ಲಿ ಪರಾಗ್ ಶಾ ಅವರು 3,383 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದರು. ಐದು ವರ್ಷಗಳ ಹಿಂದೆ ಸುಮಾರು 500 ಕೋಟಿ ರೂ. ಆಸ್ತಿ ಹೊಂದಿದ್ದ ಇವರ ಸಂಪತ್ತು ರಿಯಲ್ ಎಸ್ಟೇಟ್ ಉದ್ಯಮದ ಮೂಲಕ ಕೆಲವೇ ವರ್ಷಗಳಲ್ಲಿ ಹಲವು ಪಟ್ಟು ಹೆಚ್ಚಾಗಿತ್ತು. ಈ ಹಿಂದೆ ಮುಂಬೈ ಮಹಾನಗರ ಪಾಲಿಕೆಯ (BMC) ನಗರಸಭಾ ಸದಸ್ಯರಾಗಿದ್ದ ಇವರು, ಪ್ರಸ್ತುತ ಘಾಟ್‌ಕೋಪರ್ ಪೂರ್ವ ಕ್ಷೇತ್ರದ ಶಾಸಕರಾಗಿದ್ದಾರೆ.

ಗುಣಮಟ್ಟ ಕಾಯ್ದುಕೊಂಡು ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಎಚ್.ಕೆ. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಎಪಿಎಂಸಿ ಯಾರ್ಡ್ ರಸ್ತೆಯಲ್ಲಿ ರೈತ ಸಂಪರ್ಕ ಕೇಂದ್ರ ಕಟ್ಟಡ ಹಾಗೂ ಗೋದಾಮು ನಿರ್ಮಾಣ ಕಾಮಗಾರಿಗೆ ಮಾಜಿ ಸಚಿವ ಎಚ್.ಕೆ. ಪಾಟೀಲ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಕೃಷಿ ಇಲಾಖೆಯ 2025-26ನೇ ಸಾಲಿನ RIDF ಬ್ರ್ಯಾಂಡ್-31ರ ಸಬ್ಸಿಡಿ ಯೋಜನೆಯಡಿ ಅಂದಾಜು ₹2 ಕೋಟಿ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣವಾಗಲಿದೆ. ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಯಾವುದೇ ರಾಜಿ ಮಾಡಿಕೊಳ್ಳದೆ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಎಚ್.ಕೆ. ಪಾಟೀಲ ಅವರು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದರು.

ರೈತ ಸಂಪರ್ಕ ಕೇಂದ್ರದ ಮೂಲಕ ರೈತರಿಗೆ ಅಗತ್ಯವಿರುವ ಕೃಷಿ ಮಾಹಿತಿಯ ಜತೆಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಲಭ್ಯವಾಗಲಿದೆ. ಅಲ್ಲದೆ, ರೈತರು ಬೆಳೆದ ಧಾನ್ಯಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲು ಗೋದಾಮಿನ ಸೌಲಭ್ಯವೂ ದೊರೆಯಲಿದೆ. ಈ ಯೋಜನೆಯಿಂದ ಗದಗ ಭಾಗದ ಕೃಷಿ ವಲಯದ ಪ್ರಗತಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಗ್ಯಾರಂಟಿ ಸಮಿತಿ ಅಧ್ಯಕ್ಷ ಅಸುಟಿ, ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೋರವಣ್ಣವರ, ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ, ಪರಮೇಶ್ವರಪ್ಪ ಜಂತ್ಲಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್.ಎಸ್. ಜಿನಗ, ಗದಗ-ಬೆಟಗೇರಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಬಸವರಾಜೇಶ್ವರಿ, ಸಜ್ಜನ, ಸಂಜೀವರೆಡ್ಡಿ, ಶಿವು ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

0

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು ಫ್ರಿಜ್‌ನಲ್ಲಿ ಬಚ್ಚಿಟ್ಟಿದ್ದಾನೆ ಎನ್ನಲಾದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಗುವಾಹಟಿಯ ಹತಿಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು 30 ವರ್ಷದ ರಾಮಾನುಜ್ ಗೋಸ್ವಾಮಿ ಎಂದು ಗುರುತಿಸಲಾಗಿದೆ.

ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡ ಬಳಿಕ ರಾಮಾನುಜ್ ಗೋಸ್ವಾಮಿಯನ್ನು ಪೊಲೀಸರು ಹತಿಗಾಂವ್ ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ನರಕಾಸುರ ಪಹಾರ್ ಪ್ರದೇಶದ ಬಳಿ ಪೊಲೀಸ್ ವಾಹನ ಚಲಿಸುತ್ತಿದ್ದಾಗ, ರಾಮಾನುಜ್ ಏಕಾಏಕಿ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಲು ಯತ್ನಿಸಿ ವಾಹನದಿಂದ ಜಿಗಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಲಿಸುತ್ತಿದ್ದ ಪೊಲೀಸ್ ವಾಹನದಿಂದ ಜಿಗಿದ ರಾಮಾನುಜ್ ಆಳವಾದ ಕಂದಕಕ್ಕೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ. ಪೊಲೀಸರು ತಕ್ಷಣ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರಾದರೂ, ವೈದ್ಯರು ರಾಮಾನುಜ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಪತ್ನಿಯ ಹತ್ಯೆ ಪ್ರಕರಣ

ಸೆಪ್ಟೆಂಬರ್ 3ರಂದು ಗುವಾಹಟಿಯಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ 25 ವರ್ಷದ ಪತ್ನಿ ರಿಯಾ ತಾಲುಕ್ದಾರ್ ಅವರನ್ನು ರಾಮಾನುಜ್ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದರು. ಪತ್ನಿಯ ನಡವಳಿಕೆಯ ಬಗ್ಗೆ ಅನುಮಾನ ಹೊಂದಿದ್ದ ರಾಮಾನುಜ್, ಆಕೆ ಬೇರೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ್ದ ಎನ್ನಲಾಗಿದೆ.

ಫ್ಲ್ಯಾಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಪೊಲೀಸರು ಮನೆಗೆ ತೆರಳಿ ಪರಿಶೀಲನೆ ನಡೆಸಿದಾಗ, ಫ್ರಿಜ್‌ನಲ್ಲಿದ್ದ ಕಪ್ಪು ಪಾಲಿಥಿನ್ ಬ್ಯಾಗ್‌ನಲ್ಲಿ ರಿಯಾಳ ಕತ್ತರಿಸಿದ ತಲೆ ಹಾಗೂ ಬೆರಳುಗಳು ಪತ್ತೆಯಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಾನುಜ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103(1) ಅಡಿಯಲ್ಲಿ ಕೊಲೆ ಹಾಗೂ ಸೆಕ್ಷನ್ 238 ಅಡಿಯಲ್ಲಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಆರೋಪ ದಾಖಲಿಸಲಾಗಿತ್ತು.

ಏಳು ದಿನಗಳ ಪೊಲೀಸ್ ಕಸ್ಟಡಿ

ಸೆಪ್ಟೆಂಬರ್ 6ರಂದು ಪೊಲೀಸರಿಗೆ ಶರಣಾಗಿದ್ದ ರಾಮಾನುಜ್‌ನನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಸೆಪ್ಟೆಂಬರ್ 8ರಂದು ಪೊಲೀಸರು ಆತನನ್ನು ಅಪರಾಧ ನಡೆದ ಸ್ಥಳಕ್ಕೆ ಕರೆದೊಯ್ದು ಪರಿಶೀಲನೆ ನಡೆಸಿದ್ದರು.

ಈ ವೇಳೆ ಹತ್ಯೆ ಬಗ್ಗೆ ಯಾವುದೇ ಪಶ್ಚಾತ್ತಾಪ ಅಥವಾ ಕ್ಷಮೆಯಾಚನೆ ಇಲ್ಲ ಎಂದು ರಾಮಾನುಜ್ ಹೇಳಿದ್ದ ಎನ್ನಲಾಗಿದೆ. ಅಲ್ಲದೆ, ತನ್ನ ಪತ್ನಿಯ ‘ಶುಗರ್ ಡ್ಯಾಡಿ’ ಎಂದು ಹೇಳಿಕೊಂಡಿದ್ದ ವ್ಯಕ್ತಿಯನ್ನು ಜೈಲಿನಿಂದ ಬಿಡುಗಡೆಯಾದ ಬಳಿಕ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೆ ಬಳಸಲಾಗಿದೆ ಎಂದು ಶಂಕಿಸಲಾಗಿರುವ ರಕ್ತದ ಕಲೆಗಳಿದ್ದ ಮಚ್ಚನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಪರಾಧ ನಡೆದ ಸಂದರ್ಭದಲ್ಲಿ ತಾನು ಮದ್ಯದ ಅಮಲಿನಲ್ಲಿದ್ದೆ ಎಂದು ರಾಮಾನುಜ್ ಪೊಲೀಸರಿಗೆ ತಿಳಿಸಿದ್ದ ಎನ್ನಲಾಗಿದೆ. ಫ್ಲ್ಯಾಟ್ ಪರಿಶೀಲನೆ ವೇಳೆ ಖಾಲಿ ಮದ್ಯದ ಬಾಟಲಿಗಳೂ ಪತ್ತೆಯಾಗಿದ್ದವು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು ರಾಮಾನುಜ್‌ಗೆ ಮಾದಕ ವಸ್ತುಗಳ ವ್ಯಸನದ ಇತಿಹಾಸವಿತ್ತು, ಕೆಲವು ವೈದ್ಯಕೀಯ ಸಮಸ್ಯೆಗಳನ್ನು ಆತ ಮರೆಮಾಚಿದ್ದ ಹಾಗೂ 2019ರಲ್ಲಿ ಹಣಕಾಸು ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಂದು ರಿಯಾ ಕುಟುಂಬಸ್ಥರು ಆರೋಪಿಸಿದ್ದರು. ಈ ಆರೋಪಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ, ಕೇಂದ್ರದ ನಿಯಮಾನುಸಾರ ಘೋಷಣೆ: ಸಿಎಂ ಡಿ ಕೆ ಶಿವಕುಮಾರ್

0

ಕನಕಪುರ: “ಈ ಬಾರಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಗೆ ಸಿಲುಕಿವೆ. ಕೇಂದ್ರದ ನಿಯಮಾನುಸಾರ ಬರ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕನಕಪುರದ ನಿವಾಸದಲ್ಲಿ ಶಿವಕುಮಾರ್ ಅವರು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಕರ್ನಾಟಕ ರಾಜ್ಯದ ಜನತೆಗೆ ಸರ್ಕಾರ ಹಾಗೂ ವೈಯಕ್ತಿಕವಾಗಿ ಗೌರಿ ಹಾಗೂ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ನಾನು ಅನೇಕ ಕಡೆ ಭೇಟಿ ನೀಡಿ ಬರ ಪರಿಶೀಲನೆ ಮಾಡಿದ್ದು, ಈಗಾಗಲೇ 102 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಉಳಿದ ಕಡೆ ಪರಿಶೀಲನೆ ನಡೆಯುತ್ತಿದೆ. ಯಾರೂ ಆತುರ ಪಡುವುದು ಬೇಡ” ಎಂದು ತಿಳಿಸಿದರು.

“ಎಷ್ಟೋ ಕಡೆ ಬೆಳೆ ನಾಶವಾಗಿದ್ದು, ಅಂತರ್ಜಲ ಕುಸಿದಿದೆ. ಅನೇಕ ಕಡೆ ಬೆಳೆ ಹಾಕಲು ಆಗಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಅಭಾವ ಹೆಚ್ಚಾಗುವ ಸಾಧ್ಯತೆಗಳಿವೆ. ಕಳೆದ ವಾರ 19,000ಕ್ಕೂ ಹೆಚ್ಚು ಮೆಗಾ ವ್ಯಾಟ್ ವಿದ್ಯುತ್ ಗೆ ಬೇಡಿಕೆ ಉಂಟಾಗಿತ್ತು. 11, 12ರೂ. ಗೆ ವಿದ್ಯುತ್ ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ರಾತ್ರಿ ವೇಳೆ ವಿದ್ಯುತ್ ಬಳಕೆ ಹೆಚ್ಚಾಗಿದೆ. ನೆರೆ ರಾಜ್ಯಗಳ ಜೊತೆ ಚರ್ಚೆ ಮಾಡಲು ಸಚಿವರಿಗೆ ಸೂಚಿಸಿರುವೆ. ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಅನೇಕ ಕಂಪನಿಗಳು ಬರುತ್ತಿದ್ದು, ವಿದ್ಯುತ್, ನೀರು, ಭೂಮಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ” ಎಂದು ವಿವರಿಸಿದರು.

“ವಿಘ್ನ ನಿವಾರಕ ವಿನಾಯಕನ ಹಬ್ಬದ ಸಂದರ್ಭದಲ್ಲಿ ನಾವು ಉತ್ತಮ ಮಳೆ ಆಗುವಂತೆ ಪ್ರಾರ್ಥನೆ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ಬರದ ನೋವು ಹೆಚ್ಚಲಿದೆ. ಬೆಲೆಗಳು ಗಗನಕ್ಕೆ ಏರುತ್ತಿದೆ. ಜಲ್ಲಿ ಬೆಲೆ 40% ಏರಿಕೆಯಾಗಿದ್ದು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಗುತ್ತಿಲ್ಲ” ಎಂದರು.

18ರಂದು ದಕ್ಷಿಣ ಕನ್ನಡದಲ್ಲಿ ಸಚಿವ ಸಂಪುಟ ಸಭೆ

“ಇದೇ ತಿಂಗಳು 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ಮಾಡುತ್ತಿದ್ದು, ಆ ಭಾಗದ ಶಾಸಕರು, ಮಂತ್ರಿಗಳು, ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಭಾಗದ ಜನ ಉದ್ಯೋಗಕ್ಕಾಗಿ ಹೊರಗೆ ಹೋಗುತ್ತಿರುವುದನ್ನು ತಪ್ಪಿಸಿ, ಅಲ್ಲಿನ ಪ್ರಾಕೃತಿಕ ಸಂಪತ್ತು ಬಳಸಿಕೊಂಡು ಅವರ ಬದುಕಿನಲ್ಲಿ ಬದಲಾವಣೆ ತರಲು ಅನೇಕ ಹೊಸ ಚಿಂತನೆಗಳನ್ನು ಘೋಷಣೆ ಮಾಡಲಾಗುವುದು” ಎಂದು ಹೇಳಿದರು.

ಕಲ್ಲಿದ್ದಲು ನಿಕ್ಷೇಪ ಬಳಿ ಥರ್ಮಲ್ ವಿದ್ಯುತ್ ಕೇಂದ್ರ ಸ್ಥಾಪನೆಗೆ ನಿರ್ಧಾರ

ಬರ ಪರಿಸ್ಥಿತಿ ನಿಭಾಯಿಸಲು ಸರ್ಕಾರದ ತಯಾರಿ ಬಗ್ಗೆ ಕೇಳಿದಾಗ, “ನಾನು ಇಂಧನ ಸಚಿವನಾಗಿದ್ದಾಗ ವಿದ್ಯುತ್ ಉತ್ಪಾದನೆ ಪ್ರಮಾಣ ಹೆಚ್ಚಿಸಿದ್ದೆವು. ಬಿಜೆಪಿ ಅವಧಿಯಲ್ಲಿ ಹೆಚ್ಚಳ ಮಾಡಿಲ್ಲ. ಜಾರ್ಜ್ ಅವರು ಸಚಿವರಾದ ಬಳಿಕ ಅನೇಕ ಯೋಜನೆ ರೂಪಿಸಿದ್ದು, ಕಲ್ಲಿದ್ದಲು ನಿಕ್ಷೇಪ ಇರುವ ಕಡೆಗಳಲ್ಲೇ ತುರ್ತಾಗಿ ಥರ್ಮಲ್ ಇಂಧನ ತಯಾರಿಕ ಘಟಕ ಸ್ಥಾಪಿಸಬೇಕು. ಒನ್ ನೇಷನ್ ಒನ್ ಗ್ರಿಡ್ ಮಾಡಲಾಗಿದ್ದು, ಎಲ್ಲೆ ವಿದ್ಯುತ್ ಉತ್ಪಾದನೆಯಾದರೂ ನಾವು ನಮ್ಮ ರಾಜ್ಯಕ್ಕೆ ತರಬಹುದು. ಇದಕ್ಕೆ ಸರಬರಾಜು ವೆಚ್ಚ ಬೀಳಲಿದೆ. ಈ ವಿಚಾರವಾಗಿ ಇಂಧನ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ.

ಬರ, ಕಸ್ತೂರಿ ರಂಗನ್ ವರದಿ ಚರ್ಚೆಗೆ ವಿಶೇಷ ಅಧಿವೇಶನ

ಬರದ ಘೋಷಣೆ ಎಲ್ಲಿಯವರೆಗೆ ಬಂದಿದೆ ಎಂದು ಕೇಳಿದಾಗ, “ಬಿಜೆಪಿಯವರಿಗೆ ರಾಜಕಾರಣವೇ ಹೆಚ್ಚಾಗಿದೆ. ರೈತರ ವಿಚಾರ ಚರ್ಚೆ ಹಾಗೂ ಕಸ್ತೂರಿ ರಂಗನ್ ವಿಚಾರವಾಗಿ ಚರ್ಚೆ ಮಾಡಲು 3 ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ. ನಮ್ಮ ಶಾಸಕರ ಜೊತೆಗೆ ಬಿಜೆಪಿ ಶಾಸಕರು ಕೂಡ ಬೇಸರ ವ್ಯಕ್ತಪಡಿಸಿ ತಮ್ಮ ನೋವು ಹಂಚಿಕೊಂಡಿದ್ದಾರೆ. ಹೀಗಾಗಿ ಈ ವಿಚಾರ ಚರ್ಚೆಗೆ 21ರಿಂದ 23ರ ವರೆಗೆ ಅಧಿವೇಶನ ಕರೆಯಲಾಗಿದೆ. ಶಾಸಕರು ಗಾಬರಿ ಆಗುವುದು ಬೇಡ. ರಾಜಕಾರಣ ಮಾಡುವವರಿಗೆ ನಾವು ಏನೂ ಮಾಡಲು ಆಗುವುದಿಲ್ಲ. ಬರ ಘೋಷಣೆ ಶೀಘ್ರವೇ ಪ್ರಕಟಿಸಲಾಗುವುದು” ಎಂದರು.

ಇಡೀ ದಿನ ಕ್ಷೇತ್ರಕ್ಕೆ ಮೀಸಲಿಟ್ಟಿದ್ದೀರಿ ಎಂದು ಕೇಳಿದಾಗ, “ಇದೇ ನಮ್ಮ ಮೂಲ, ಬೇರು. ಭಾನುವಾರ ಹಾಸ್ಟೆಲ್ ಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಚರ್ಚೆ ಮಾಡಿದೆ. ಇಲ್ಲಿ ಇಬ್ಬರು ಸ್ಥಳೀಯರು ಬಿಟ್ಟರೆ ಉಳಿದವರು ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಬೇರೆ ಹಾಸ್ಟೆಲ್ ಹುಡುಗರು ಹಬ್ಬಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಹೋಗಲು ಸಾಧ್ಯವಾಗಿಲ್ಲ. ನಮ್ಮ ಮನೆ ಮಕ್ಕಳ ಮೇಲೆ ನಿಗಾ ಇಟ್ಟು ಅವರು ತಪ್ಪು ದಾರಿಗೆ ಹೋಗದಂತೆ ಕಾಪಾಡಿಕೊಳ್ಳಬೇಕು” ಎಂದರು.

ಎಲ್ಲರಿಗೂ ಆಹ್ವಾನ ನೀಡಿದ್ದೇವೆ

ಸರ್ಕಾರದ 100 ದಿನಗಳ ಕಾರ್ಯಕ್ರಮಕ್ಕೆ ಹರಿಪ್ರಸಾದ್ ಅವರನ್ನು ಆಹ್ವಾನಿಸಿಲ್ಲ ಎಂಬ ಪ್ರಶ್ನೆಗೆ, “ನಾವು ಆಹ್ವಾನಿಸಿಲ್ಲ ಎಂದು ಹೇಳಿದವರು ಯಾರು? ವಿರೋಧ ಪಕ್ಷಗಳ ಶಾಸಕರು ಸೇರಿದಂತೆ ಎಲ್ಲರನ್ನು ಆಹ್ವಾನಿಸಿದ್ದೇವೆ. ವೇದಿಕೆ ಮೇಲೆ ನಮ್ಮದೇ ಆದ ಶಿಷ್ಟಾಚಾರ ಇರುತ್ತದೆ. ಅವರು ನಮ್ಮ ಪಕ್ಷದ ಅಧ್ಯಕ್ಷರು. ಪಕ್ಷದ ಜೊತೆ ಸೇರಿಕೊಂಡೆ ನಾವು ಕೆಲಸ ಮಾಡುತ್ತೇವೆ” ಎಂದರು.

ಪ್ರಜಾಸೇವೆ ಇಲಾಖೆ ಹಾಗೂ ಕಾರ್ಯಕ್ರಮಕ್ಕೆ ಶಾಸಕರು ಭಾಗಿಯಾಗಿಲ್ಲ ಎಂದು ಕೇಳಿದಾಗ, “ಎಲ್ಲರೂ ಆಗುತ್ತಾರೆ. ಕೆಲವರಿಗೆ ಇನ್ನು ಅರ್ಥ ಆಗಿಲ್ಲ. ನಾನು ಈ ಭಾಗದಲ್ಲಿ ಮುಂಚೆಯಿಂದ ಇದನ್ನು ಮಾಡಿಕೊಂಡು ಬಂದಿದ್ದೇನೆ. ಹೀಗಾಗಿ ಈ ಬಗ್ಗೆ ನಿಮಗೆ ಗೊತ್ತಿದೆ. ಈ ಕಾರ್ಯಕ್ರಮದ ಬಗ್ಗೆ ಕೆಲವರಿಗೆ ತರಬೇತಿ ನೀಡಬೇಕು. ಜನರು ಹಾಗೂ ಜನ ಪ್ರತಿನಿಧಿಗಳ ನಡುವಿನ ಅಂತರ ಕಡಿಮೆ ಮಾಡಲು ನಾವು ಈ ಕಾರ್ಯಕ್ರಮ ರೂಪಿಸಿದ್ದೇವೆ” ಎಂದು ತಿಳಿಸಿದರು. ಸಚಿವ ಸ್ಥಾನ ಖಾಲಿ ಇದ್ದು, ಇದನ್ನು ಭರ್ತಿ ಮಾಡುವುದು ಯಾವಾಗ ಎಂದು ಕೇಳಿದಾಗ, “ಪಕ್ಷ ಹೇಳಿದಾಗ ಮಾಡಲಾಗುವುದು” ಎಂದು ತಿಳಿಸಿದರು.

‘ಬೇಲ್’ ಚಿತ್ರದ ‘ಕುಮಾರಿ’ ಸ್ಪೆಷಲ್ ಸಾಂಗ್ ರಿಲೀಸ್: ಭರ್ಜರಿ ಸ್ಟೆಪ್ ಹಾಕಿ ಪಡ್ಡೆಹೈಕ್ಳ ನಿದ್ದೆಗೆಡಿಸಿದ ನಿವೇದಿತಾ ಗೌಡ!

0

ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ, ಬಹುತಾರಾಗಣದ ಬಹುನಿರೀಕ್ಷಿತ ಚಿತ್ರ ‘ಬೇಲ್’ ಸಿನಿಮಾದಿಂದ ಬಹುನಿರೀಕ್ಷಿತ ಸ್ಪೆಷಲ್ ಹಾಡು ‘ಕುಮಾರಿ’ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಈ ಸಾಂಗ್‌ನಲ್ಲಿ ಸೋಷಿಯಲ್ ಮೀಡಿಯಾ ಸೆನ್ಸೇಷನ್ ಹಾಗೂ ನಟಿ ನಿವೇದಿತಾ ಗೌಡ ತಮ್ಮ ಮೋಹಕ ಮೈಮಾಟ ಮತ್ತು ಸಖತ್ ಸ್ಟೆಪ್ಸ್‌ಗಳ ಮೂಲಕ ಪಡ್ಡೆಹೈಕ್ಳ ದಿಲ್ ಗೆದ್ದಿದ್ದಾರೆ.

ಸದ್ಯ ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸುತ್ತಿರುವ ಈ ಹಾಡು ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಎಲ್ಲರ ಬಾಯಲ್ಲೂ ‘ಕುಮಾರಿ ಕುಮಾರಿ’ ಎಂದು ಗುನುಗುವಂತೆ ಮಾಡಿ ಭರ್ಜರಿ ಕ್ರೇಜ್ ಸೃಷ್ಟಿಸಿದೆ. ಸಿನಿಮಾದ ಕಥಾಹಂದರದಲ್ಲಿ ಸಿನಿಮಾ ಶೂಟಿಂಗ್ ಹಿನ್ನೆಲೆಯಲ್ಲಿ ಬರುವಂತಹ ಈ ಕಲರ್‌ಫುಲ್ ಡ್ಯಾನ್ಸ್ ನಂಬರ್‌ನಲ್ಲಿ ನಿವೇದಿತಾ ಗೌಡ ಅವರೊಂದಿಗೆ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ ‘ಲೂಸ್ ಮಾದ’ ಯೋಗಿ ಕೂಡ ಸಖತ್ ಎನರ್ಜಿಟಿಕ್ ಆಗಿ ಹೆಜ್ಜೆ ಹಾಕಿದ್ದಾರೆ.

ಯೋಗಿ ಮತ್ತು ನಿವೇದಿತಾ ಅವರ ಡ್ಯಾನ್ಸ್ ಕೆಮಿಸ್ಟ್ರಿ ಹಾಗೂ ಆಕರ್ಷಕ ಮೂವ್ಸ್‌ಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಅವರ ಟ್ರೆಂಡಿ ಬೀಟ್ಸ್‌ಗೆ ನಿರ್ದೇಶಕ ಪವನ್ ಒಡೆಯರ್ ಕ್ಯಾಚಿ ಸಾಹಿತ್ಯ ಬರೆದಿದ್ದು, ಪ್ರಸಿದ್ಧ ಗಾಯಕರಾದ ನಕಾಶ್ ಅಜೀಜ್ ಹಾಗೂ ಮಂಗ್ಲಿ ಜಂಟಿಯಾಗಿ ತಮ್ಮ ಕಂಠದ ಮೂಲಕ ಹಾಡಿಗೆ ಇನ್ನಷ್ಟು ಹುರುಪು ತುಂಬಿದ್ದಾರೆ.

ಪ್ರತಿಷ್ಠಿತ ‘ಕೆವಿಎನ್ ಪ್ರೊಡಕ್ಷನ್ಸ್’ ಬ್ಯಾನರ್‌ನಡಿ ಖ್ಯಾತ ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅವರು ಅತ್ಯಂತ ಅದ್ಧೂರಿ ಬಜೆಟ್‌ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದ ಸಂಪೂರ್ಣ ಜವಾಬ್ದಾರಿಯನ್ನು ಪವನ್ ಒಡೆಯರ್ ಹೊತ್ತಿದ್ದಾರೆ. ಚಿತ್ರಕ್ಕೆ ವೈದಿ ಎಸ್. ಅವರ ಕಣ್ಮನ ಸೆಳೆಯುವ ಛಾಯಾಗ್ರಹಣವಿದ್ದು, ಶಶಾಂಕ್ ನಾರಾಯಣ್ ಅವರ ಸಂಕಲನವಿದೆ. ಕಮರ್ಷಿಯಲ್ ಅಂಶಗಳ ಜೊತೆಗೆ ಗಟ್ಟಿತನದ ಕಥೆಯನ್ನೊಳಗೊಂಡ ಈ ಸಿನಿಮಾ ಪ್ರೇಕ್ಷಕರಲ್ಲಿ ದಿನದಿಂದ ದಿನಕ್ಕೆ ನಿರೀಕ್ಷೆಗಳನ್ನು ದುಪ್ಪಟ್ಟು ಮಾಡುತ್ತಿದೆ.

ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್, ಸಾಯಿಕುಮಾರ್, ಮಲಯಾಳಂ ಖ್ಯಾತ ನಟ ಜಯರಾಮ್, ಲೂಸ್ ಮಾದ ಯೋಗಿ, ದೀಕ್ಷಿತ್ ಶೆಟ್ಟಿ ಹಾಗೂ ಸಂಜನಾ ಆನಂದ್ ಸೇರಿದಂತೆ ದಕ್ಷಿಣ ಭಾರತದ ಘಟಾನುಘಟಿ ಕಲಾವಿದರ ಬಹುದೊಡ್ಡ ತಾರಾಗಣವಿದೆ. ‘ಕುಮಾರಿ’ ಹಾಡಿನ ಮೂಲಕ ಸಿನಿರಸಿಕರ ನಾಡಿಮಿಡಿತ ಹೆಚ್ಚಿಸಿರುವ ಚಿತ್ರತಂಡ, ಗಾಂಧಿ ಜಯಂತಿಯ (ಅಕ್ಟೋಬರ್‌ 2) ವಿಶೇಷ ಸಂದರ್ಭವಾಗಿ ಇದೇ ಅಕ್ಟೋಬರ್ 2ರಂದು ‘ಬೇಲ್’ ಚಿತ್ರವನ್ನು ವಿಶ್ವಾದ್ಯಂತ ಬೆಳ್ಳಿತೆರೆಗೆ ತರಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

₹75 ಸಾವಿರ ವೇತನ ಪಡೆದು ಕರ್ತವ್ಯ ಲೋಪ ಆರೋಪ: ಗುತ್ತಿಗೆ ವೈದ್ಯಾಧಿಕಾರಿ ಅಂಕಿತಾ ಯರಗಲ್ ವಿರುದ್ಧ ಕ್ರಮ

0

ಬಾಗಲಕೋಟೆ: ವಾಂಬೆ ಕಾಲೋನಿಯ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿದ್ದ ಡಾ. ಅಂಕಿತಾ ಯರಗಲ್ ಅವರು ಕರ್ತವ್ಯ ನಿರ್ವಹಿಸದೆ ವೈದ್ಯಕೀಯ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದರು ಎಂಬ ಆರೋಪದ ಬೆನ್ನಲ್ಲೇ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಅವರನ್ನು ಗುತ್ತಿಗೆ ವೈದ್ಯಾಧಿಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆಗೊಳಿಸಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಯರಗಲ್ ಆದೇಶಿಸಿದ್ದಾರೆ.

ವೈದ್ಯಾಧಿಕಾರಿಯಾಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರೂ ಇಲಾಖೆಯ ಅಥವಾ ಮೇಲಧಿಕಾರಿಗಳ ಅನುಮತಿ ಹಾಗೂ ಗಮನಕ್ಕೆ ತರದೆ PG ವ್ಯಾಸಂಗಕ್ಕೆ ಪ್ರವೇಶ ಪಡೆದಿದ್ದರು ಎಂದು ಆರೋಪಿಸಲಾಗಿದೆ. ನಮ್ಮ ಕ್ಲಿನಿಕ್‌ನಲ್ಲಿ ಕರ್ತವ್ಯ ನಿರ್ವಹಿಸದೆ, ಬಿಡುವಿನ ವೇಳೆಯಲ್ಲಿ ಮಾತ್ರ ಕ್ಲಿನಿಕ್‌ಗೆ ಬಂದು ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕುತ್ತಿದ್ದರು ಎಂಬ ಆರೋಪದ ಕುರಿತು ಮಾಧ್ಯಮ ವರದಿ ಪ್ರಸಾರವಾಗಿತ್ತು.

ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಿ ತಿಂಗಳಿಗೆ ₹75 ಸಾವಿರ ಸರ್ಕಾರಿ ವೇತನ ಪಡೆಯುತ್ತಿದ್ದರು ಹಾಗೂ ಕರ್ತವ್ಯ ಲೋಪ ಎಸಗುತ್ತಿದ್ದರು ಎಂಬ ಆರೋಪವೂ ವರದಿಯಾಗಿತ್ತು. ಕಳೆದ ಆಗಸ್ಟ್ 28ರಿಂದ ಅವರು ಅನಧಿಕೃತವಾಗಿ ಕರ್ತವ್ಯಕ್ಕೆ ಗೈರುಹಾಜರಾಗಿದ್ದರೂ ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಅಥವಾ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಡಾ. ಅಂಕಿತಾ ಯರಗಲ್ ಅವರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಶಾಸಕ ಉಮೇಶ್ ಮೇಟಿ ಅವರ ಸೊಸೆಯಾಗಿದ್ದಾರೆ. ಮಾಧ್ಯಮಗಳಲ್ಲಿ ಗೈರುಹಾಜರಿ ಮತ್ತು ನಿಯಮ ಉಲ್ಲಂಘನೆಯ ಆರೋಪಗಳ ಕುರಿತು ವರದಿಗಳು ಪ್ರಸಾರವಾದ ಹಿನ್ನೆಲೆಯಲ್ಲಿ ಇದೀಗ ಇಲಾಖೆ ಗುತ್ತಿಗೆ ಸೇವೆಯಿಂದ ಅವರನ್ನು ಬಿಡುಗಡೆಗೊಳಿಸಿದೆ.

ಈ ಅವಧಿಯಲ್ಲಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿರುವುದು ಕಂಡುಬಂದರೆ, ನಿಯಮಾನುಸಾರ ಅವರಿಂದಲೇ ಮೊತ್ತವನ್ನು ವಸೂಲಿ ಮಾಡಿಕೊಳ್ಳಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ. ತಮ್ಮ ವಿರುದ್ಧದ ಆದೇಶಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಅಥವಾ ಅಹವಾಲು ಸಲ್ಲಿಸಲು ಅವರಿಗೆ ಸಕ್ಷಮ ಪ್ರಾಧಿಕಾರದ ಮುಂದೆ ಲಿಖಿತ ಅವಕಾಶ ನೀಡಲಾಗಿದೆ.

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ರಾಜಕೀಯ ಮೇಲಾಟ: ಜಾರಕಿಹೊಳಿ ಬಣದ ಲೆಕ್ಕಾಚಾರಕ್ಕೆ ಸವದಿ ಬ್ರೇಕ್

0

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್‌ನ ತೆರವಾದ ನಿರ್ದೇಶಕ ಸ್ಥಾನಕ್ಕೆ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಅಥಣಿ ಮೂಲದ ಮುತ್ತಣ್ಣ ಕಾತ್ರಾಳ ಅವರನ್ನು ನೇಮಕ ಮಾಡಲಾಗಿದೆ. ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಆಪ್ತರಾಗಿರುವ ಕಾತ್ರಾಳ ಅವರ ನೇಮಕ, ಡಿಸಿಸಿ ಬ್ಯಾಂಕ್‌ನಲ್ಲಿ ಜಾರಕಿಹೊಳಿ ಸಹೋದರರ ಬಣದ ರಾಜಕೀಯ ಲೆಕ್ಕಾಚಾರಕ್ಕೆ ತಿರುಗೇಟು ಎಂಬ ಚರ್ಚೆಗೆ ಕಾರಣವಾಗಿದೆ.

ಡಿಸಿಸಿ ಬ್ಯಾಂಕ್‌ನ ಖಾಲಿಯಾಗಿದ್ದ ನಿರ್ದೇಶಕ ಸ್ಥಾನಕ್ಕೆ ಕುರುಬ ಸಮುದಾಯದ ಮುಖಂಡರೊಬ್ಬರನ್ನು ನೇಮಕ ಮಾಡುವ ಉದ್ದೇಶವನ್ನು ಜಾರಕಿಹೊಳಿ ಸಹೋದರರು ಹೊಂದಿದ್ದರು ಎನ್ನಲಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈ ಕುರಿತು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದರಿಂದ ತೆರವಾದ ಸ್ಥಾನ ಯಾರ ಪಾಲಾಗಲಿದೆ ಎಂಬುದು ಸಹಕಾರ ಕ್ಷೇತ್ರದಲ್ಲಿ ಕುತೂಹಲ ಮೂಡಿಸಿತ್ತು.

ಈ ಬೆಳವಣಿಗೆಯ ನಡುವೆಯೇ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಇಲಾಖಾ ವ್ಯಾಪ್ತಿಯ ಮೂಲಕ ಅಪೆಕ್ಸ್ ಬ್ಯಾಂಕ್‌ನ ಪ್ರತಿನಿಧಿಯಾಗಿ ಮುತ್ತಣ್ಣ ಕಾತ್ರಾಳ ಅವರನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಸವದಿ ಅವರು ಸದ್ದಿಲ್ಲದೆ ನಡೆಸಿದ ಈ ರಾಜಕೀಯ ನಡೆ ಜಾರಕಿಹೊಳಿ ಬಣದ ಲೆಕ್ಕಾಚಾರವನ್ನು ಬದಲಿಸಿದೆ ಎನ್ನಲಾಗುತ್ತಿದೆ.

ಅಥಣಿ ಮೂಲದ ಮುತ್ತಣ್ಣ ಕಾತ್ರಾಳ ಅವರು ಕಳೆದ ಸುಮಾರು ಮೂರು ದಶಕಗಳಿಂದ ಲಕ್ಷ್ಮಣ ಸವದಿ ಅವರ ನಂಬಿಕಸ್ಥ ಹಾಗೂ ಕಟ್ಟಾ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದಾರೆ. ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಡಿಸಿಸಿ ಬ್ಯಾಂಕ್‌ಗೆ ಪ್ರವೇಶ ಪಡೆದಿರುವುದು ಬೆಳಗಾವಿ ಜಿಲ್ಲೆಯ ಸಹಕಾರ ರಾಜಕಾರಣದಲ್ಲಿ ಸವದಿ ಅವರ ಪ್ರಭಾವಕ್ಕೆ ಮತ್ತೊಂದು ಉದಾಹರಣೆ ಎಂಬ ಮಾತುಗಳು ಕೇಳಿಬರುತ್ತಿವೆ.

ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ನೇಮಕದ ಮೂಲಕ ಸಹಕಾರ ಕ್ಷೇತ್ರದಲ್ಲಿ ತಮ್ಮ ಬಣದ ಹಿಡಿತವನ್ನು ಬಲಪಡಿಸುವಲ್ಲಿ ಸವದಿ ಯಶಸ್ವಿಯಾಗಿದ್ದಾರೆ ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.