ಬೆಂಗಳೂರು: ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸಿ ಪ್ರಮಾಣ ಪತ್ರ (PRC) ವಿಚಾರವಾಗಿ ಬಿಜೆಪಿ ಮಾಡಿರುವ ಆರೋಪಗಳಿಗೆ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಹಿಂದಿನಿಂದಲೂ ಜಾತಿ ಪ್ರಮಾಣ ಪತ್ರವನ್ನು ತಹಶೀಲ್ದಾರ್ಗಳೇ ನೀಡುತ್ತಿದ್ದು, ಈಗ ಹೊಸದಾಗಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್ಐಆರ್ (SIR) ಪ್ರಕ್ರಿಯೆ ವೇಳೆ ಜಾತಿ ಪ್ರಮಾಣ ಪತ್ರ ಕೇಳಲಾಗಿದೆ. ಈ ವ್ಯವಸ್ಥೆಯನ್ನು ಏಕೆ ಮಾಡಲಾಗಿದೆ ಎಂಬುದನ್ನು ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು. ಸರ್ಕಾರದಿಂದ ಅಧಿಕೃತವಾಗಿ ಪ್ರಮಾಣ ಪತ್ರ ನೀಡಲಾಗುತ್ತಿದ್ದು, ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
ಕರ್ನಾಟಕದಲ್ಲಿ ಜನಿಸಿರುವ ಆಧಾರದ ಮೇಲೆ ಶಾಶ್ವತ ನಿವಾಸಿ ಪ್ರಮಾಣ ಪತ್ರ (PRC) ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ ಅವರು, ಬಹುತೇಕ ಜನರ ಬಳಿ 2002ರ ಮತದಾರರ ಪಟ್ಟಿಯ ದಾಖಲೆಗಳು ಇವೆ. ಆದರೆ ಕೆಲವರಿಗೆ ಶಾಶ್ವತ ನಿವಾಸಿ ಪ್ರಮಾಣ ಪತ್ರ ಇಲ್ಲದಿರುವುದರಿಂದ ಅಂತಹವರಿಗೆ ಈ ವ್ಯವಸ್ಥೆ ಅನುಕೂಲವಾಗಲಿದೆ ಎಂದರು.
ಬೇರೆ ರಾಜ್ಯದವರು ಹಾಗೂ ಬಾಂಗ್ಲಾದೇಶದವರು ರಾಜ್ಯದಲ್ಲಿ ಹೆಚ್ಚಾಗಿದ್ದಾರೆ, ಅವರಿಗೆ ಯೋಜನೆಗಳು ಮತ್ತು ಆಧಾರ್ ಕಾರ್ಡ್ಗಳನ್ನು ನೀಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಹಲವು ಬಾರಿ ಆರೋಪಿಸಿದ್ದಾರೆ. ಈ ಬಗ್ಗೆ ತಾವು ಗೃಹ ಸಚಿವರಾಗಿದ್ದಾಗಲೂ ಸದನದಲ್ಲಿ ಹಲವು ಬಾರಿ ಉತ್ತರ ನೀಡಿರುವುದಾಗಿ ಪರಮೇಶ್ವರ್ ಹೇಳಿದರು.
ರಾಜ್ಯದಲ್ಲಿ ಹತ್ತು ವರ್ಷ ವಾಸಿಸಿರುವುದಕ್ಕೆ ಸೂಕ್ತ ದಾಖಲೆಗಳು ಸಿಕ್ಕರೆ ಮಾತ್ರ ಪಿಆರ್ಸಿ ನೀಡಲಾಗುತ್ತದೆ. ಇದು ಕಾನೂನುಬದ್ಧ ಪ್ರಕ್ರಿಯೆಯಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧವಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಬಾಂಗ್ಲಾದೇಶದವರ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಬಾಂಗ್ಲಾದೇಶದವರಿಗೆ ನಾವು ಹೆಣ್ಣು ಕೊಡುವುದಕ್ಕಾಗುತ್ತಾ? ಇಲ್ಲ. ಎಲ್ಲವೂ ಕಾನೂನು ಪ್ರಕಾರವೇ ನಡೆಯಲಿದೆ” ಎಂದು ಹೇಳಿದರು.

