Home Blog

NEET ಸೋರಿಕೆ ಬೆನ್ನಲ್ಲೇ ಕೇಂದ್ರದ ಮಾಸ್ಟರ್ ಪ್ಲಾನ್; ಪರೀಕ್ಷಾ ಪಾರದರ್ಶಕತೆಗೆ ಹೊಸ ಟಾಸ್ಕ್ ಫೋರ್ಸ್

0

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ಕೈಗೊಳ್ಳಲು ಮುಂದಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ನೀಟ್ ವಿವಾದದ ಬಳಿಕ ಪ್ರಧಾನಿ ಮೋದಿ ಮೂರನೇ ವಿಡಿಯೋ ಸಂದೇಶವನ್ನು ಹಂಚಿಕೊಂಡಿದ್ದು, ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ವಿಶ್ವಾಸಾರ್ಹ, ಪಾರದರ್ಶಕ ಹಾಗೂ ತಂತ್ರಜ್ಞಾನ ಆಧಾರಿತವಾಗಿಸಲು ಈ ಕಾರ್ಯಪಡೆ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.

“ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಭಾರತ ಸರ್ಕಾರ ನಿರಂತರವಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಈಗಾಗಲೇ ತ್ವರಿತ ನ್ಯಾಯಾಲಯಗಳ ಸ್ಥಾಪನೆ ಮಾಡಲಾಗಿದೆ. ಸಂಸತ್ತಿನಲ್ಲಿ ಕಠಿಣ ಕಾನೂನು ನಿಬಂಧನೆಗಳೊಂದಿಗೆ ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿಯೂ ಮುಂದುವರಿಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷೆಗಳು ವಿಶ್ವಾಸಾರ್ಹವಾಗಿರಬೇಕು, ಪಾರದರ್ಶಕವಾಗಿರಬೇಕು ಹಾಗೂ ತಂತ್ರಜ್ಞಾನವನ್ನು ಗರಿಷ್ಠವಾಗಿ ಬಳಸಿಕೊಳ್ಳಬೇಕು ಎಂದು ಮೋದಿ ಒತ್ತಿ ಹೇಳಿದ್ದಾರೆ.

ನಂದನ್ ನಿಲೇಕಣಿ ನೇತೃತ್ವದ ಕಾರ್ಯಪಡೆಯು ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿರುವ ಸವಾಲುಗಳನ್ನು ಪರಿಶೀಲಿಸಿ, ಸುಧಾರಣೆಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಆ ವರದಿಯ ಆಧಾರದ ಮೇಲೆ ಮುಂಬರುವ ಪರೀಕ್ಷೆಗಳ ವಿಶ್ವಾಸಾರ್ಹತೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನಡೆದ ಪ್ರತಿಭಟನೆಗಳು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧದ ರಾಜಕೀಯ ಒತ್ತಡದ ನಡುವೆಯೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಪ್ರಕಟಿಸಿದೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಪರೀಕ್ಷೆಗಳ ಮೇಲಿನ ನಂಬಿಕೆ ಉಳಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.

SIR ಕೆಲಸದ ಒತ್ತಡದಿಂದ ಶಿಕ್ಷಕ ಸಾವು? ಕುಟುಂಬಸ್ಥರ ಗಂಭೀರ ಆರೋಪ!

ಬೆಳಗಾವಿ: SIR ಕಾರ್ಯದ ಒತ್ತಡದ ನಡುವೆ ಬೆಳಗಾವಿ ಜಿಲ್ಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಅಥಣಿ ಪಟ್ಟಣದ ನಿವಾಸಿ ಹಾಗೂ ರಾಯಬಾಗ ತಾಲೂಕಿನ ನಿಲಜಿ ಗ್ರಾಮದ ಪಡದಾಳೆ ತೋಟ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕ ಪ್ರಕಾಶ್ ಕಾಂಬಳೆ ಮೃತಪಟ್ಟ ದುರ್ದೈವಿ.

ಕಳೆದ ಕೆಲವು ದಿನಗಳಿಂದ SIR ಕೆಲಸದ ಒತ್ತಡ ಹೆಚ್ಚಾಗಿತ್ತು. ಮನೆಗೆ ಬಂದ ಬಳಿಕವೂ “ಕೆಲಸ ಬಹಳ ಇದೆ, ಬೇಗ ಮುಗಿಸಬೇಕು” ಎಂದು ಪ್ರಕಾಶ್ ಹೇಳಿಕೊಳ್ಳುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪ್ರಕಾಶ್ ಅವರ ಪತ್ನಿ ಮಾಲಾ ಮಾತನಾಡಿ, “ನನ್ನ ಗಂಡನ ಸಾವಿಗೆ ಕೆಲಸದ ಒತ್ತಡವೇ ಕಾರಣ. ಪ್ರತಿದಿನ SIR ಕೆಲಸದ ಒತ್ತಡದ ಬಗ್ಗೆ ಅವರು ಆತಂಕದಲ್ಲಿದ್ದರು” ಎಂದು ಆರೋಪಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಕಾಶ್ ಅವರು ಲೋ ಬಿಪಿ ಕಾರಣದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಸಾವಿಗೆ SIR ಕಾರ್ಯದ ಒತ್ತಡ ಕಾರಣವಾಗಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಥಣಿ ಪಟ್ಟಣದ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ.

 

ಹಾವೇರಿಯಲ್ಲಿ ರೈತರಿಗೆ ಕಳ್ಳರ ಕಾಟ: 22ಕ್ಕೂ ಹೆಚ್ಚು ಬೋರ್‌ವೆಲ್ ಕೇಬಲ್ ಕಳ್ಳತನ!

ಹಾವೇರಿ: ಮಳೆ ಕೊರತೆ, ವಿದ್ಯುತ್ ವ್ಯತ್ಯಯದ ನಡುವೆಯೇ ಹಾವೇರಿ ಜಿಲ್ಲೆಯ ರೈತರಿಗೆ ಇದೀಗ ಕಳ್ಳರ ಕಾಟವೂ ಸೇರಿದೆ.

ಜಿಲ್ಲೆಯ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ 22ಕ್ಕೂ ಹೆಚ್ಚು ರೈತರ ಜಮೀನಿನಲ್ಲಿದ್ದ ಬೋರ್‌ವೆಲ್ ಕೇಬಲ್ ಹಾಗೂ ಇತರೆ ಕೃಷಿ ಉಪಕರಣಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ರಸ್ತೆ ಬದಿಯಲ್ಲಿರುವ ಜಮೀನುಗಳನ್ನು ಗುರಿಯಾಗಿಸಿಕೊಂಡ ಖದೀಮರು, ಬೋರ್‌ವೆಲ್ ಕೇಬಲ್‌ಗಳು ಮತ್ತು ಬಿಡಿಭಾಗಗಳನ್ನು ಕದ್ದು ಪರಾರಿಯಾಗಿದ್ದು, ಸುಮಾರು ₹5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಕಳುವಾಗಿವೆ ಎಂದು ಅಂದಾಜಿಸಲಾಗಿದೆ.

ಈ ವರ್ಷ ಮಳೆ ಕೊರತೆಯಿಂದ ಬೆಳೆ ಉಳಿಸಿಕೊಳ್ಳಲು ರೈತರು ಹಗಲು-ರಾತ್ರಿ ನೀರು ಹರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇಂತಹ ಸಂದರ್ಭದಲ್ಲಿ ಕಳ್ಳತನ ನಡೆದಿರುವುದು ರೈತರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಕರಿಯಪ್ಪ ಅಣ್ಣಿ, ನಾಗರಾಜ ಮೊಟೇಬೆನ್ನೂರು, ರೇವಣಸಿದ್ದಪ್ಪ ವಾಳದ, ಸಿದ್ದಮ್ಮ, ಶಂಕ್ರಪ್ಪ, ಭರಮಪ್ಪ, ಮರಲಿಂಗಪ್ಪ, ತಿರಕಪ್ಪ, ಬಸವರಾಜ, ಹೊಳಲಪ್ಪ, ದುಂಡಪ್ಪ ಸೇರಿದಂತೆ 22ಕ್ಕೂ ಹೆಚ್ಚು ರೈತರು ಕಳ್ಳತನಕ್ಕೆ ಒಳಗಾಗಿದ್ದಾರೆ.

“ನಾವು ಹೇಗೆ ಜೀವನ ಮಾಡಬೇಕು?” ಎಂದು ರೈತ ಶಂಕ್ರಪ್ಪ ಅಳಲು ತೋಡಿಕೊಂಡಿದ್ದಾರೆ.

ಇನ್ನೋರ್ವ ರೈತ ನಶೀರ್ ಖಾನ್ ಮಾತನಾಡಿ, “ಮತ್ತೆ ₹20ರಿಂದ ₹30 ಸಾವಿರ ಖರ್ಚು ಮಾಡಿ ಕೇಬಲ್ ಹಾಕಿಸಿಕೊಳ್ಳಬೇಕಾಗಿದೆ. ಮಳೆ ಇಲ್ಲ, ಬೆಳೆ ಒಣಗುತ್ತಿದೆ, ವಿದ್ಯುತ್ ಸರಿಯಾಗಿ ಸಿಗುತ್ತಿಲ್ಲ. ಇದರ ನಡುವೆ ಕಳ್ಳತನದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೊಲೀಸರು ಶೀಘ್ರ ಆರೋಪಿಗಳನ್ನು ಬಂಧಿಸಿ ರೈತರಿಗೆ ನ್ಯಾಯ ಒದಗಿಸಬೇಕು,” ಎಂದು ಆಗ್ರಹಿಸಿದರು.

ಕರ್ಜಗಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಕೃಷಿ ಉಪಕರಣಗಳ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದು, ಶೀಘ್ರದಲ್ಲೇ ಕಳ್ಳರನ್ನು ಬಂಧಿಸಿ ರೈತರಿಗೆ ನ್ಯಾಯ ಒದಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

0

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಂಪಿಗೆಹಳ್ಳಿ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೊ ಆಧರಿಸಿ ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಜುಲೈ 24ರಂದು ಮಧ್ಯಾಹ್ನ ಸುಮಾರು 12:42ರ ವೇಳೆಗೆ ಹೆಬ್ಬಾಳದಿಂದ ಮಾನ್ಯತಾ ಟೆಕ್ ಪಾರ್ಕ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ನಾಗವಾರ ರಿಂಗ್ ರಸ್ತೆಯ ಮಾನ್ಯತಾ ಟೆಕ್ ಪಾರ್ಕ್ ಬಸ್ ನಿಲ್ದಾಣದ ಸಮೀಪ ಯುವತಿಗೆ ಅಪರಿಚಿತ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆತನ ವರ್ತನೆಯಿಂದ ಅಸಹ್ಯಗೊಂಡ ಯುವತಿ ಕೂಡಲೇ ಬಸ್ ಚಾಲಕನ ಗಮನಕ್ಕೆ ತಂದಿದ್ದು, ಬಳಿಕ ಆರೋಪಿಯ ಕೊರಳಪಟ್ಟಿ ಹಿಡಿದು ಕಪಾಳಕ್ಕೆ ಬಾರಿಸಿದ್ದಾಳೆ. ಚಾಲಕ ಕೂಡ ಆರೋಪಿಗೆ ಥಳಿಸಿದ್ದಾರೆ. ಈ ಗಲಾಟೆಯ ಮಧ್ಯೆ ಆರೋಪಿ ಬಸ್‌ನಿಂದ ಪರಾರಿಯಾಗಿದ್ದಾನೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ಬಳಿಕ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ ಆರೋಪಿಯನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಗಳು ಸೇರಿದಂತೆ ವಿವಿಧ ಮೂಲಗಳಿಂದ ಮಾಹಿತಿ ಕಲೆಹಾಕಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇದೇ ವ್ಯಕ್ತಿ ಈ ಹಿಂದೆ ಕೂಡ ಮಹಿಳೆಯರಿಗೆ ಇದೇ ರೀತಿಯ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ. ಮಹಿಳೆಯರ ಮೀಸಲು ಆಸನದಲ್ಲಿ ಕುಳಿತುಕೊಳ್ಳುವುದು, ಮುಂಭಾಗದ ಬಾಗಿಲಿನಿಂದ ಬಸ್ ಹತ್ತಿ ಜನಸಂದಣಿಯ ವೇಳೆ ಮಹಿಳೆಯರಿಗೆ ಅಸಭ್ಯವಾಗಿ ವರ್ತಿಸುವುದು ಆತನ ಚಾಳಿಯಾಗಿತ್ತು ಎನ್ನಲಾಗಿದೆ. ಸದ್ಯ ಆರೋಪಿಯ ಪತ್ತೆಗೆ ಸಂಪಿಗೆಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಜಕೀಯದಿಂದಲ್ಲ, ಚುನಾವಣೆಯಿಂದ ನಿವೃತ್ತಿ: ಸ್ಪರ್ಧಿಸದಿರಲು ಮೂರು ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

0

ಮಂಡ್ಯ: 2028ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ನಿರ್ಧಾರದ ಹಿಂದಿನ ಮೂರು ಪ್ರಮುಖ ಕಾರಣಗಳನ್ನು ಸ್ವತಃ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ. ರಾಜಕೀಯ ಕಲುಷಿತಗೊಂಡಿರುವುದು, ವಯಸ್ಸಿನ ಕಾರಣದಿಂದ ಹಿಂದಿನಂತೆ ಕೆಲಸ ಮಾಡಲು ಸಾಧ್ಯವಾಗದಿರುವುದು ಹಾಗೂ ಹಣದ ಪ್ರಭಾವ ಹೆಚ್ಚಾಗಿರುವ ಚುನಾವಣೆಗಳೇ ಈ ತೀರ್ಮಾನದ ಪ್ರಮುಖ ಕಾರಣಗಳೆಂದು ಅವರು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಸಿದ್ದರಾಮಯ್ಯ, ಬಳಿಕ ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿರ್ಧಾರದ ಕುರಿತು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

“2028ರ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಜನರ ಕಷ್ಟ–ಸುಖಗಳಿಗೆ ಧ್ವನಿಯಾಗಿರುತ್ತೇನೆ. ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೂ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ತೀರ್ಮಾನಿಸಿದ್ದೇನೆ. ಈ ಹಿಂದೆ ಜನರೇ ನಮ್ಮನ್ನು ದುಡ್ಡು ಖರ್ಚು ಮಾಡಿ ಗೆಲ್ಲಿಸುತ್ತಿದ್ದರು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ವಯಸ್ಸು ಕೂಡ ತಮ್ಮ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಹೇಳಿರುವ ಸಿದ್ದರಾಮಯ್ಯ, “ಈಗ ನನಗೆ 79 ವರ್ಷ. ಸರ್ಕಾರದ ಅವಧಿ ಮುಗಿಯುವ ವೇಳೆಗೆ 81–82 ವರ್ಷವಾಗಿರುತ್ತದೆ. ಆಗ ಹಿಂದಿನಂತೆ ಆರೋಗ್ಯ ಹಾಗೂ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. 2028ಕ್ಕೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳಲಿವೆ. 1978ರಲ್ಲಿ ತಾಲೂಕು ಮಂಡಳಿ ಸದಸ್ಯನಾಗಿ ಆರಂಭವಾದ ನನ್ನ ರಾಜಕೀಯ ಪಯಣದಲ್ಲಿ ಸೋಲು-ಗೆಲುವು ಎರಡನ್ನೂ ಕಂಡಿದ್ದೇನೆ. ಆದರೆ ನನ್ನ ಸಿದ್ಧಾಂತಗಳಿಗೆ ವಿರುದ್ಧವಾಗಿ ಎಂದಿಗೂ ನಡೆದುಕೊಂಡಿಲ್ಲ” ಎಂದು ಹೇಳಿದ್ದಾರೆ.

ಇಂದಿನ ರಾಜಕೀಯದಲ್ಲಿ ಹಣದ ಪ್ರಭಾವ ಹೆಚ್ಚಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ. “ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಭ್ಯರ್ಥಿಗಳೇ ಮತದಾರರಿಗೆ ಹಣ ನೀಡಬೇಕಾದ ಪರಿಸ್ಥಿತಿ ಬಂದಿದೆ. ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲಿಲ್ಲದಂತಾಗಿದೆ. ಇದೇ ಕಾರಣದಿಂದ ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಐದು ದಶಕಗಳ ಕಾಲ ರಾಜ್ಯದ ಜನರು ನನ್ನನ್ನು ತಮ್ಮ ಮನೆಯವನಂತೆ ಪ್ರೀತಿಸಿದ್ದಾರೆ. ಆ ಋಣ ತೀರಿಸಲು ಮುಂದಿನ ಜೀವನವನ್ನೂ ಜನಸೇವೆಗೆ ಮೀಸಲಿಡುತ್ತೇನೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ವಿವಾದಾತ್ಮಕ ಪೋಸ್ಟರ್‌: ಉಮರ್ ಖಾಲಿದ್ ಪರ ಘೋಷಣೆ ಪ್ರದರ್ಶಿಸಿದ ಯುವತಿ ವಿರುದ್ಧ ಕೇಸ್‌

ಬೆಂಗಳೂರು: 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಪರ ಪೋಸ್ಟರ್‌ ಪ್ರದರ್ಶಿಸಿದ್ದ ಯುವತಿ ವಿರುದ್ಧ ಬೆಂಗಳೂರು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ‘ಗಲಭೆ ಉದ್ದೇಶದಿಂದ ಪ್ರಚೋದನೆ’ ಆರೋಪದಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶುಕ್ರವಾರ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಯುವತಿ, ಉಮರ್ ಖಾಲಿದ್ ಹಾಗೂ ಶಾರ್ಜೀಲ್ ಇಮಾಮ್ ಪರ ಘೋಷಣೆಗಳಿದ್ದ ಪೋಸ್ಟರ್‌ಗಳನ್ನು ಪ್ರದರ್ಶಿಸಿದ್ದಳು. ಅಲ್ಲದೆ, ‘Ukhad Le BLR Police’ ಎಂಬ ಬರಹವಿದ್ದ ಪೋಸ್ಟರ್‌ ಹಿಡಿದು ಬೆಂಗಳೂರು ಪೊಲೀಸರ ವಿರುದ್ಧವೂ ಆಕ್ಷೇಪಾರ್ಹ ಸಂದೇಶ ಪ್ರದರ್ಶಿಸಿದ್ದಳು.

ಪೋಸ್ಟರ್‌ಗಳು ಪೊಲೀಸರ ಗಮನಕ್ಕೆ ಬಂದ ತಕ್ಷಣ ಪರಿಸ್ಥಿತಿ ಉದ್ವಿಗ್ನವಾಗದಂತೆ ಅಧಿಕಾರಿಗಳು ಅವುಗಳನ್ನು ವಶಪಡಿಸಿಕೊಂಡರು. ಸ್ಥಳದಲ್ಲಿದ್ದ ಇತರ ಪ್ರತಿಭಟನಾಕಾರರು ಹಾಗೂ ವಿದ್ಯಾರ್ಥಿಗಳು ಕೂಡ ಯುವತಿಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿ, ಆಕೆಯನ್ನು ಪ್ರತಿಭಟನಾ ಸ್ಥಳದಿಂದ ಹೊರ ಕಳುಹಿಸಿದರು.

ಘಟನೆಗೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೋಸ್ಟರ್‌ಗಳ ಉದ್ದೇಶ, ಹಿನ್ನೆಲೆ ಹಾಗೂ ಇತರೆ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

ಆನೇಕಲ್‌ನಲ್ಲಿ ಭಾರೀ ಅಗ್ನಿ ಅವಘಡ: ಪಾರ್ಕಿಂಗ್ ಲಾಟ್‌ನಲ್ಲಿ ನಿಂತಿದ್ದ ನಾಲ್ಕು ಖಾಸಗಿ ಬಸ್‌ಗಳು ಭಸ್ಮ

ಬೆಂಗಳೂರು: ಆನೇಕಲ್ ತಾಲೂಕಿನ ಹಳೆ ಚಂದಾಪುರ ಸಮೀಪದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್‌ಗಳು ಏಕಾಏಕಿ ಬೆಂಕಿಗಾಹುತಿಯಾಗಿರುವ ಘಟನೆ ಶನಿವಾರ ನಡೆದಿದೆ. ಒಂದೇ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಉಳಿದ ಮೂರು ಬಸ್‌ಗಳಿಗೂ ವ್ಯಾಪಿಸಿ ನಾಲ್ಕೂ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಅಗ್ನಿ ಅವಘಡದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೊದಲಿಗೆ ಒಂದು ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿದ್ದ ಇತರ ಬಸ್‌ಗಳಿಗೂ ಹರಡಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸತತ ಪ್ರಯತ್ನದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ನಾಲ್ಕೂ ಬಸ್‌ಗಳು ಸಂಪೂರ್ಣ ಸುಟ್ಟು ಭಾರೀ ಪ್ರಮಾಣದ ಆಸ್ತಿ ನಷ್ಟ ಉಂಟಾಗಿದೆ.

ಬಸ್‌ಗಳ ಮಾಲೀಕರ ವಿವರ ಇನ್ನೂ ಬಹಿರಂಗವಾಗಿಲ್ಲ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ತಾಂತ್ರಿಕ ದೋಷವೋ ಅಥವಾ ಬೇರೆ ಕಾರಣವೋ ಎಂಬ ಕುರಿತು ಪೊಲೀಸರು ಹಾಗೂ ಅಗ್ನಿಶಾಮಕ ಇಲಾಖೆ ತನಿಖೆ ಮುಂದುವರಿಸಿದ್ದಾರೆ.

ಬಾಂಗ್ಲಾದೇಶಿ ದಂಪತಿ ಮೇಲೆ ಹಲ್ಲೆ ಆರೋಪ! ಬೆಳ್ಳಂದೂರಿನ ವೈದ್ಯ ಬಂಧನ

ಬೆಂಗಳೂರು: ಬಾಂಗ್ಲಾದೇಶಿ ಮೂಲದ ದಂಪತಿ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಬೆಂಗಳೂರಿನ ಬೆಳ್ಳಂದೂರಿನ ಸ್ಥಳೀಯ ವೈದ್ಯ ಡಾ. ನಾಗೇಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿಯ ಪೌರತ್ವ ಪ್ರಶ್ನಿಸಿ ಜಗಳ ಆರಂಭಿಸಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಅವರಿಗೆ ಜಾಮೀನು ಮಂಜೂರಾಗಿದೆ.

ಬೆಳ್ಳಂದೂರು ವ್ಯಾಪ್ತಿಯ ಸಾಯಿ ಕ್ಲಿನಿಕ್‌ನ ವೈದ್ಯರಾಗಿರುವ ಡಾ. ನಾಗೇಂದ್ರ ವಿರುದ್ಧ ನಸ್ರೀನಾ ಬಿಲಾಲ್ (23) ದೂರು ದಾಖಲಿಸಿದ್ದಾರೆ. ವೈಟ್‌ಫೀಲ್ಡ್ ಸಮೀಪದ ಬೆಟ್ಟದಾಸಪುರದಲ್ಲಿ ವಾಸಿಸುತ್ತಿರುವ ನಸ್ರೀನಾ ಬಿಲಾಲ್ ಹಾಗೂ ಅವರ ಪತಿ ಮಹಮ್ಮದ್ ಬಿಲಾಲ್ ಬಾಂಗ್ಲಾದೇಶ ಮೂಲದವರಾಗಿದ್ದಾರೆ.

ದೂರಿನ ಪ್ರಕಾರ, ದಂಪತಿಯ ಪೌರತ್ವವನ್ನು ಪ್ರಶ್ನಿಸಿ ವೈದ್ಯ ನಾಗೇಂದ್ರ ವಾಗ್ವಾದ ಆರಂಭಿಸಿದ್ದು, ಮಾತಿನ ಚಕಮಕಿಯ ವೇಳೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಡಾ. ನಾಗೇಂದ್ರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ಬಳಿಕ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ತನಿಖಾಧಿಕಾರಿಗಳು, ಪ್ರದೇಶದಲ್ಲಿ ಅಕ್ರಮ ವಲಸಿಗರ ಬಗ್ಗೆ ಉಂಟಾದ ಭಾವೋದ್ವೇಗದಿಂದ ವೈದ್ಯರು ಈ ರೀತಿ ವರ್ತಿಸಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಆದರೆ ಯಾರ ಮೇಲಾದರೂ ಹಲ್ಲೆ ನಡೆಸುವುದು ಕಾನೂನುಬಾಹಿರವಾಗಿದ್ದು, ಅನುಮಾನ ಇದ್ದರೆ ಪೊಲೀಸರಿಗೆ ಮಾಹಿತಿ ನೀಡಬೇಕಿತ್ತು, ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಸದ್ಯ ದೂರು ನೀಡಿರುವ ದಂಪತಿಯ ದಾಖಲೆಗಳು ಹಾಗೂ ಅವರ ಹಿನ್ನೆಲೆಯ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಸಮಾಜ ಸೇವೆಯ ಮುಖವಾಡದ ಹಿಂದೆ ಡ್ರಗ್ಸ್ ಜಾಲ? ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾಗೆ ಸಿಸಿಬಿ ಹುಡುಕಾಟ

0

ಮಂಗಳೂರು: ಸಮಾಜ ಸೇವೆಯ ಹೆಸರಿನಲ್ಲಿ ಬೆಳ್ತಂಗಡಿಯಲ್ಲಿ ‘ಹೀರೋ’ ಎಂಬ ಇಮೇಜ್ ಕಟ್ಟಿಕೊಂಡಿದ್ದ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ (Jaleel Baba) ವಿರುದ್ಧ ಭಾರೀ ಡ್ರಗ್ಸ್ ಜಾಲದ ಆರೋಪ ಕೇಳಿಬಂದಿದೆ. ₹5 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ ಪ್ರಕರಣದಲ್ಲಿ ಹೆಸರು ಕೇಳಿಬಂದ ಬೆನ್ನಲ್ಲೇ ಆರೋಪಿ ಆಂಬುಲೆನ್ಸ್ ಸಮೇತ ಪರಾರಿಯಾಗಿದ್ದು, ಸಿಸಿಬಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

ಬೆಳ್ತಂಗಡಿ ಭಾಗದಲ್ಲಿ ಆಂಬುಲೆನ್ಸ್ ಸೇವೆಯ ಮೂಲಕ ಸಮಾಜ ಸೇವಕನಂತೆ ಗುರುತಿಸಿಕೊಂಡಿದ್ದ ಜಲೀಲ್ ಬಾಬಾ, ಅದೇ ಆಂಬುಲೆನ್ಸ್‌ನ್ನು ಮಾದಕ ವಸ್ತು ಸಾಗಾಣಿಕೆಗೆ ಬಳಸುತ್ತಿದ್ದ ಎನ್ನುವ ಗಂಭೀರ ಆರೋಪ ತನಿಖೆಯಲ್ಲಿ ಹೊರಬಿದ್ದಿದೆ.

ಇತ್ತೀಚೆಗೆ ಮಂಗಳೂರು ಪೊಲೀಸರು ಬಾಗಲಕೋಟೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು ₹5 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ತನಿಖೆ ವೇಳೆ ಈ ಡ್ರಗ್ಸ್ ಜಾಲದಲ್ಲಿ ಜಲೀಲ್ ಬಾಬಾ ಹೆಸರು ಬಹಿರಂಗವಾಗಿದೆ.

ಪ್ರಕರಣದಲ್ಲಿ ಮೂವರು ಬಂಧನವಾಗುತ್ತಿದ್ದಂತೆಯೇ ಜಲೀಲ್ ಬಾಬಾ ಆಂಬುಲೆನ್ಸ್ ಸಮೇತ ನಾಪತ್ತೆಯಾಗಿದ್ದು, ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾನೆ. ಆತನ ಸುಳಿವು ಪತ್ತೆಹಚ್ಚಲು ಪೊಲೀಸರು ಹಲವು ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪ್ರಸ್ತುತ ಸಿಸಿಬಿ ಪೊಲೀಸರು ಜಲೀಲ್ ಬಾಬಾ ಪತ್ತೆಗೆ ಬಲೆ ಬೀಸಿದ್ದು, ಡ್ರಗ್ಸ್ ಜಾಲದ ಸಂಪರ್ಕಗಳ ಬಗ್ಗೆಯೂ ತೀವ್ರ ತನಿಖೆ ಮುಂದುವರಿಸಿದ್ದಾರೆ.

ಜಮಖಂಡಿ ಕಾರು ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್! ‘ಇದು ಬಾಂಬ್ ಬ್ಲಾಸ್ಟ್ ಅಲ್ಲ’ ಎಂದ ಎಸ್‌ಪಿ

0

ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಸಂಭವಿಸಿದ್ದ ಕಾರು ಸ್ಫೋಟ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಇದು ಬಾಂಬ್ ಸ್ಫೋಟವಲ್ಲ, ಕಾರಿನ ತಾಂತ್ರಿಕ ದೋಷ ಅಥವಾ ಬ್ಯಾಟರಿ ಸಮಸ್ಯೆಯಿಂದ ಸಂಭವಿಸಿರಬಹುದಾದ ಘಟನೆ ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಸ್ಪಷ್ಟಪಡಿಸಿದ್ದಾರೆ.

ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಸಂಭವಿಸಿದ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಸ್ಫೋಟ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್‌ಪಿ ಸಿದ್ಧಾರ್ಥ ಗೋಯಲ್, ಸದ್ಯದ ತನಿಖೆಯಲ್ಲಿ ಯಾವುದೇ ಸ್ಫೋಟಕ ಬಳಸಿರುವ ಸುಳಿವು ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಎಲ್ಲಾ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸಿದ್ದು, ಕಾರಿನೊಳಗೆ ಬಾಂಬ್ ಇರಿಸಲಾಗಿತ್ತು ಎಂಬುದಕ್ಕೆ ಯಾವುದೇ ಪುರಾವೆ ದೊರೆತಿಲ್ಲ. ಕಾರಿನ ಬ್ಯಾಟರಿ ಅಥವಾ ಇತರ ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿರಬಹುದೇ ಎಂಬ ನಿಟ್ಟಿನಲ್ಲಿ ತಜ್ಞರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಸ್ಫೋಟದ ತೀವ್ರತೆ ಸುಮಾರು 50ರಿಂದ 60 ಮೀಟರ್ ವ್ಯಾಪ್ತಿಯಷ್ಟೇ ಕಂಡುಬಂದಿದೆ. ಬಾಂಬ್ ಸ್ಫೋಟವಾಗಿದ್ದರೆ ಹಾನಿಯ ಪ್ರಮಾಣ ಮತ್ತಷ್ಟು ಭೀಕರವಾಗಿರುತ್ತಿತ್ತು ಎಂದು ಎಸ್‌ಪಿ ತಿಳಿಸಿದ್ದಾರೆ.

ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಒಬ್ಬ ವ್ಯಕ್ತಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ತಾಂತ್ರಿಕ ಪರಿಶೀಲನೆ ಮತ್ತು ತಜ್ಞರ ಅಂತಿಮ ವರದಿ ಬಂದ ಬಳಿಕವೇ ಸ್ಫೋಟಕ್ಕೆ ನಿಖರ ಕಾರಣ ಬಹಿರಂಗವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ (ಜು. 25) ರಾತ್ರಿ ಸುಮಾರು 10.45ಕ್ಕೆ ಹಿಪ್ಪರಗಿ ಗ್ರಾಮದ ಯುವರಾಜ ವೈನ್ ಶಾಪ್ ಎದುರು ನಿಲ್ಲಿಸಿದ್ದ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಏಕಾಏಕಿ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದ್ದು, ಅದರ ಬಿಡಿಭಾಗಗಳು ಸುತ್ತಮುತ್ತ ಚದುರಿಬಿದ್ದಿದ್ದವು.

ಈ ಕಾರು ಎಂ.ಜಿ. ತೋರಗಲ್ ಅವರ ಹೆಸರಿನಲ್ಲಿದ್ದು, ವೈನ್ ಶಾಪ್ ಮ್ಯಾನೇಜರ್ ಹನುಮಂತ ಸಂಗೊಂಡ ಬಳಸುತ್ತಿದ್ದರು. ಹೊಸ ಕಾರಾಗಿದ್ದ ಕಾರಣ ಯಾರೋ ಬಾಂಬ್ ಇರಿಸಿರಬಹುದೆಂಬ ಅನುಮಾನವನ್ನು ಅವರು ವ್ಯಕ್ತಪಡಿಸಿದ್ದರು. ಆದರೆ ಪ್ರಾಥಮಿಕ ತನಿಖೆಯಲ್ಲಿ ಆ ಅನುಮಾನಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ.