ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಗುರುವಾರ ವರುಣನ ಅಬ್ಬರ ಕಂಡುಬಂದಿದೆ.
ಮೆಜೆಸ್ಟಿಕ್, ರಾಜಾಜಿನಗರ, ವಸಂತನಗರ, ಕಲಾಸಿಪಾಳ್ಯ, ಟೌನ್ಹಾಲ್, ವಿಜಯನಗರ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಕೆಲ ಹೊತ್ತಿನಲ್ಲೇ ರಸ್ತೆಗಳು ಜಲಾವೃತವಾಗಿವೆ.
ಏಕಾಏಕಿ ಸುರಿದ ಮಳೆಯಿಂದ ಪ್ರಮುಖ ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರ ನಿಧಾನಗೊಂಡಿದೆ. ಸಂಜೆ ವೇಳೆಗೆ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಹಲವೆಡೆ ವಾಹನ ಸವಾರರು ಪರದಾಟ ಅನುಭವಿಸಿದರು.
ಇದೇ ವೇಳೆ ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹೆಚ್ಚಾಗುವ ಸಾಧ್ಯತೆ ಇದ್ದು, ಏಪ್ರಿಲ್ 10ರಿಂದ 12ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಕೊಡಗು ಮತ್ತು ಚಾಮರಾಜನಗರದ ಕೆಲ ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ತಾಪಮಾನ ಏರಿಕೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು ನಗರದಲ್ಲಿ ಹಗಲಿನ ವೇಳೆ ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆ ಇದ್ದು, ಸಂಜೆ ವೇಳೆಗೆ ಮೋಡಕವಿದ ಆಕಾಶ ಹಾಗೂ ಮಳೆಯ ಸಾಧ್ಯತೆ ಇದೆ. ನಗರದ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಾಳಿಯ ವೇಗ ಗಂಟೆಗೆ 6 ರಿಂದ 13 ಕಿಲೋ ಮೀಟರ್ ಇರುವ ಸಾಧ್ಯತೆಯೂ ಇದೆ.

