ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ತೃತೀಯ ಭಾಷೆ (ಹಿಂದಿ ಸೇರಿದಂತೆ) ವಿಷಯಕ್ಕೆ ಈ ವರ್ಷ ಗ್ರೇಡ್ ನೀಡದೇ, ಅಂಕಗಳನ್ನು ನೀಡಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.
ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ವರ್ಷ ಹಳೆಯ ಪದ್ಧತಿಯನ್ನು ಮುಂದುವರಿಸುವಂತೆ ಸೂಚಿಸಿದೆ.
ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. 2025ರ ಅಕ್ಟೋಬರ್ 28ರಂದು ಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, 2026ರ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಪರೀಕ್ಷೆಗಳು ನಡೆದಿವೆ ಎಂದು ಅವರು ತಿಳಿಸಿದರು.
ಈ ವೇಳೆ ನ್ಯಾಯಮೂರ್ತಿಗಳಾದ ಇಂದಿರೇಶ್ ಅವರು, “ನಿಮ್ಮ ಅಧಿಸೂಚನೆಯ ಉದ್ದೇಶವೇನು? ಕಳೆದ ವರ್ಷ 1.75 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾದರು. ಎಲ್ಲರನ್ನೂ ಪಾಸ್ ಮಾಡುವುದು ನಿಮ್ಮ ಉದ್ದೇಶವೇ?” ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಎಜಿ, ಗ್ರಾಮೀಣ ಭಾಗದ ಸುಮಾರು 80% ವಿದ್ಯಾರ್ಥಿಗಳು ತೃತೀಯ ಭಾಷೆ ಹಿಂದಿ ವಿಷಯದಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಅದರಿಂದ ಅವರ ಮೇಲಿನ ಒತ್ತಡ ಕಡಿಮೆ ಮಾಡಲು ಗ್ರೇಡಿಂಗ್ ವ್ಯವಸ್ಥೆ ಪರಿಚಯಿಸಲಾಗಿದೆ ಎಂದು ವಿವರಿಸಿದರು.
ಆದರೆ ನ್ಯಾಯಾಲಯ, “ಈ ವರ್ಷ ಹಳೆಯ ಪದ್ಧತಿಯನ್ನೇ ಅನುಸರಿಸಿ. ಮುಂದಿನ ವರ್ಷ ಅಗತ್ಯ ಕ್ರಮಗಳನ್ನು ಕೈಗೊಳ್ಳಬಹುದು” ಎಂದು ಸ್ಪಷ್ಟಪಡಿಸಿ, ಅಂಕಗಳನ್ನು ನೀಡಲು ನಿರ್ದೇಶಿಸಿತು.
ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಪರೀಕ್ಷೆಗಳು ನಡೆದಿದ್ದು, ಏಪ್ರಿಲ್ 10ರಂದು ಕರಡು ನಿಯಮಗಳು ರೂಪಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ, ತನ್ನ ಆದೇಶವನ್ನು ಮರುಪರಿಶೀಲಿಸಲು ಹೈಕೋರ್ಟ್ ನಿರಾಕರಿಸಿದೆ.

