Home Blog

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

0

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸಂಚು ರೂಪಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

‘ಶುದ್ಧೀಕರಣ’ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಸ್‌ಸಿ-ಎಸ್‌ಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ ಸ್ಥಳವನ್ನು ಉತ್ತರಾಖಂಡದವರು ಶುದ್ಧೀಕರಣ ಮಾಡಿದ್ದಾರೆಂದೂ, ಸಂವಿಧಾನ ಅಸ್ಪೃಶ್ಯತೆಯನ್ನು ರದ್ದುಗೊಳಿಸಿದ್ದರೂ ಸ್ವಾತಂತ್ರ್ಯ ಬಂದು 80 ವರ್ಷಗಳಾಗುತ್ತಿರುವ ಈ ಸಂದರ್ಭದಲ್ಲಿ ಇಂತಹ ಘಟನೆ ನಡೆದಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾದುದೆಂದೂ ಸಿದ್ದರಾಮಯ್ಯ ಪ್ರತಿಪಾದಿಸಿದರು. ಇದು ಖರ್ಗೆ ಅವರಿಗೆ ಮಾತ್ರವಲ್ಲದೆ, ಇಡೀ ದಲಿತ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಆರೋಪಿಸಿದ ಅವರು, ರಾಹುಲ್ ಗಾಂಧಿ ಯಾವ ತಪ್ಪನ್ನೂ ಮಾಡಿಲ್ಲ ಎಂದು ಪ್ರತಿಪಾದಿಸಿ, ಇದರ ವಿರುದ್ಧ ಎಲ್ಲರೂ ಪ್ರತಿಭಟಿಸಬೇಕು ಎಂದು ಕರೆ ನೀಡಿದರು.

ಉತ್ತರಾಖಂಡದವರು ಮಾಡಿದ ತಪ್ಪನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆಂದೂ, ಶುದ್ಧೀಕರಣ ಮಾಡಿದವರ ವಿರುದ್ಧ ಎಸ್‌ಸಿ-ಎಸ್‌ಟಿ ಕಾಯ್ದೆಯಡಿ ಕ್ರಮ ಕೈಗೊಳ್ಳುವ ಬದಲು ಯಾವುದೇ ತಪ್ಪು ಮಾಡದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಿದ್ದರಾಮಯ್ಯ ಆಕ್ಷೇಪಿಸಿದರು. ರಾಹುಲ್ ಗಾಂಧಿ ಸಂವಿಧಾನ ಪರ ಹಾಗೂ ಅಸ್ಪೃಶ್ಯತೆ ವಿರೋಧಿ ನಿಲುವು ಹೊಂದಿರುವವರು ಎಂದು ಅವರು ಬಣ್ಣಿಸಿದರು.

ರಾಹುಲ್ ಗಾಂಧಿ ಅವರ ಬಾಯಿ ಮುಚ್ಚಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ಹೂಡಿದೆ ಎಂದು ಆರೋಪಿಸಿದರು. ಈ ಹಿಂದೆ ಲೋಕಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನೇ ರದ್ದುಗೊಳಿಸಲಾಗಿತ್ತೆಂದೂ, ಸುಪ್ರೀಂ ಕೋರ್ಟ್ ಮೊರೆ ಹೋಗಿ ಸದಸ್ಯತ್ವ ಮರಳಿ ಪಡೆಯಬೇಕಾಯಿತೆಂದೂ ಅವರು ಸ್ಮರಿಸಿದರು.

ಬಿಜೆಪಿ ಅಧಿಕಾರದಲ್ಲಿರಲು ಅನರ್ಹ ಎಂದು ಟೀಕಿಸಿದ ಸಿದ್ದರಾಮಯ್ಯ, ಕೇಂದ್ರದಲ್ಲಿ ಸಂವಿಧಾನ ವಿರೋಧಿ ಸರ್ಕಾರ ಅಧಿಕಾರದಲ್ಲಿದೆ ಎಂದು ಆರೋಪಿಸಿದರು. ದಲಿತರ ಹಕ್ಕುಗಳು ಸಂವಿಧಾನದತ್ತ ಹಕ್ಕುಗಳೆಂದೂ, ಶುದ್ಧೀಕರಣ ಕೃತ್ಯ ಎಸಗಿದವರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಬೇಕೆಂದೂ ಅವರು ಕರೆ ನೀಡಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ನಡೆಯಬೇಕಿದ್ದ ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದೂಡಿಕೆಯಾಗಿದೆ. 59ನೇ ಸಿಸಿಹೆಚ್ ಕೋರ್ಟ್, ಹೈಕೋರ್ಟ್‌ನ ಆದೇಶ ಇನ್ನೂ ಹೊರಬಾರದ ಹಿನ್ನೆಲೆಯಲ್ಲಿ ಪ್ರದೋಷ್ ಹೇಳಿಕೆ ದಾಖಲಿಸುವ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಎ14 ಆರೋಪಿ ಪ್ರದೋಷ್ ಅವರನ್ನು ಇಂದು ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಹೈಕೋರ್ಟ್‌ನಲ್ಲಿ ಬಾಕಿ ಇರುವ ಆದೇಶದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನಕುಮಾರ್ ಮನವಿ ಮಾಡಿದರು.

ಹೈಕೋರ್ಟ್‌ನ ಆದೇಶಕ್ಕಾಗಿ ಹೆಚ್ಚಿನ ಸಮಯಾವಕಾಶ ನೀಡುವಂತೆ ಎಸ್‌ಪಿಪಿ ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಹೀಗಾಗಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ನ್ಯಾಯಾಲಯಕ್ಕೆ ಹಾಜರಾದ ಪ್ರದೋಷ್ ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಸಹಿ ಮಾಡಿದ್ದಾರೆ. ವಿಚಾರಣೆ ಮುಂದೂಡಿಕೆಯಾದ ಬಳಿಕ ಪೊಲೀಸರು ಅವರನ್ನು ಮತ್ತೆ ಜೈಲಿಗೆ ಕರೆದೊಯ್ದಿದ್ದಾರೆ.

ಹೈಕೋರ್ಟ್ ಆದೇಶದ ಬಳಿಕ ಸೋಮವಾರ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದುವರಿಯುವ ಸಾಧ್ಯತೆಯಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮುಂದಿನ ಬೆಳವಣಿಗೆಗಳ ಮೇಲೆ ಇದೀಗ ಗಮನ ನೆಟ್ಟಿದೆ.

ಗುಪ್ತಾಂಗ ತೋರಿಸಿದ ಆರೋಪ: ಯುವಕನ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

0

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನ ವಿರುದ್ಧ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಚಿಕ್ಕಮಗಳೂರಿನ 26 ವರ್ಷದ ಯುವಕ ತನ್ನ ವಿರುದ್ಧ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಅರ್ಜಿದಾರ ಯುವಕ ಬಸ್‌ನಿಂದ ಇಳಿದ ಬಳಿಕ ಶೌಚಾಲಯ ಹುಡುಕಾಡಿ, ಬಳಿಕ ಬಯಲಿನಲ್ಲಿ ಮೂತ್ರ ವಿಸರ್ಜನೆಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ದೂರುದಾರೆ ಅಲ್ಲಿಗೆ ಬಂದಿದ್ದರು ಎಂಬುದನ್ನು ಪರಿಗಣಿಸಿದ ಪೀಠ, ಈ ಘಟನೆಯಲ್ಲಿ ಮಹಿಳೆಯ ಘನತೆಗೆ ಚ್ಯುತಿಯಾಗುವಂತಹ ಅಂಶ ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಪ್ರಕರಣದ ವಿಚಾರಣೆ ಮುಂದುವರಿಯಲು ಅನುಮತಿಸುವುದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗುತ್ತದೆ ಎಂದು ಹೇಳಿರುವ ಪೀಠ, ಪ್ರಕರಣವನ್ನು ರದ್ದುಪಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರ ಧರ್ಮಶಾಸ್ತ್ರದ ವಿದ್ಯಾರ್ಥಿಯಾಗಿದ್ದು ದೆಹಲಿಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದಾನೆಂದೂ, ಆತ ಮೂತ್ರ ವಿಸರ್ಜನೆಗೆ ಹೋಗಿದ್ದನೇ ಹೊರತು ದೂರಿನಲ್ಲಿ ಬೇರೇನೂ ಇಲ್ಲ ಎಂದೂ ಪೀಠಕ್ಕೆ ವಿವರಿಸಿದರು. ಇದಕ್ಕೆ ಪ್ರತಿಯಾಗಿ ದೂರುದಾರರ ಪರ ವಕೀಲರು, ಅರ್ಜಿದಾರ ಆರೋಪಿ ಅಸಭ್ಯವಾಗಿ ವರ್ತಿಸಿ ಅಸಭ್ಯ ಸನ್ನೆ ಮಾಡಿದ್ದಾನೆ ಎಂದು ಪ್ರತಿಪಾದಿಸಿದರು.

ಪ್ರಕರಣದ ಹಿನ್ನೆಲೆ: ದೂರುದಾರ ಯುವತಿ 2026ರ ಜನವರಿ 24ರಂದು ಮಧ್ಯಾಹ್ನ 3.40ರ ಸುಮಾರಿಗೆ ಬೆಂಗಳೂರಿನ ಹೆಬ್ಬಾಳ ರಿಂಗ್ ರಸ್ತೆ ಬಳಿ ಬಸ್‌ನಿಂದ ಇಳಿದು ಮನೆಗೆ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಅಪರಿಚಿತ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ, ಆತ ತಪ್ಪಿಸಿಕೊಂಡು ಹೋಗುತ್ತಿದ್ದಾಗ ಸುತ್ತಮುತ್ತಲಿನ ಜನರ ನೆರವಿನಿಂದ ಹಿಡಿದಿಟ್ಟಿದ್ದಾಗಿ ಯುವತಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 75(2)ರ ಅಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಹುಸಿಯಾದ ನಂಬಿಕೆ; ಮೊದಲ ಬಾರಿಗೆ ಸಾರ್ವಜನಿಕವಾಗಿ ಮನದ ನೋವು ತೋಡಿಕೊಂಡ RCB ಹೀರೋ!

0

ಅಫ್ಘಾನಿಸ್ತಾನ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಅನುಭವಿ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಕೃನಾಲ್‌ಗೆ ಆಯ್ಕೆ ಸಮಿತಿ ಅವಕಾಶ ನೀಡದ ಬೆನ್ನಲ್ಲೇ, ಅವರು ಮೊದಲ ಬಾರಿಗೆ ಈ ಕುರಿತು ಸಾರ್ವಜನಿಕವಾಗಿ ಭಾವುಕವಾಗಿ ಪ್ರತಿಕ್ರಿಯಿಸಿದ್ದಾರೆ.

ತಂಡ ಪ್ರಕಟವಾದ ಕೆಲವೇ ಕ್ಷಣಗಳಲ್ಲಿ ಕೃನಾಲ್ ಪಾಂಡ್ಯ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಭಾರತದ ತ್ರಿವರ್ಣ ಧ್ವಜದ ಎಮೋಜಿಯೊಂದಿಗೆ “Hope is Still Alive” ಎಂದು ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಟೀಂ ಇಂಡಿಯಾಗೆ ಮರಳುವ ಅವರ ನಿರೀಕ್ಷೆ ಹಾಗೂ ಛಲವನ್ನು ವ್ಯಕ್ತಪಡಿಸಿದೆ.

ಕಳೆದ ಎರಡು ಐಪಿಎಲ್ ಆವೃತ್ತಿಗಳಲ್ಲಿ ಕೃನಾಲ್ ಪಾಂಡ್ಯ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಆರ್‌ಸಿಬಿ ಚಾಂಪಿಯನ್ ಆಗುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

2025ರ ಐಪಿಎಲ್‌ನಲ್ಲಿ ಕೃನಾಲ್ 15 ಪಂದ್ಯಗಳಲ್ಲಿ 17 ವಿಕೆಟ್ ಕಬಳಿಸಿದ್ದರು. ಬ್ಯಾಟಿಂಗ್‌ನಲ್ಲೂ 7 ಇನಿಂಗ್ಸ್‌ಗಳಲ್ಲಿ 109 ರನ್ ಗಳಿಸಿದ್ದರು. ಈ ಆವೃತ್ತಿಯಲ್ಲಿ ದೆಹಲಿ ವಿರುದ್ಧ 73 ರನ್‌ಗಳ ಭರ್ಜರಿ ಇನ್ನಿಂಗ್ಸ್ ಆಡಿದ್ದರು.

ಇನ್ನು 2026ರ ಐಪಿಎಲ್‌ನಲ್ಲಿ 16 ಪಂದ್ಯಗಳನ್ನು ಆಡಿದ್ದ ಕೃನಾಲ್ 14 ವಿಕೆಟ್‌ಗಳ ಜೊತೆಗೆ 226 ರನ್ ಗಳಿಸಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧ 73 ರನ್‌ಗಳ ಮಹತ್ವದ ಇನ್ನಿಂಗ್ಸ್ ಕೂಡ ಅವರ ಬ್ಯಾಟ್‌ನಿಂದ ಮೂಡಿಬಂದಿತ್ತು.

ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಟೀಂ ಇಂಡಿಯಾಗೆ ಆಯ್ಕೆಯಾಗದಿರುವುದು ಅವರ ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿಸಿದೆ. ಕೃನಾಲ್ ಪಾಂಡ್ಯ ಭಾರತ ಪರ ಇದುವರೆಗೆ 5 ಏಕದಿನ ಹಾಗೂ 19 ಟಿ20 ಪಂದ್ಯಗಳನ್ನು ಆಡಿದ್ದಾರೆ. 2021ರಲ್ಲಿ ಅವರು ಕೊನೆಯ ಬಾರಿಗೆ ಭಾರತ ತಂಡವನ್ನು ಪ್ರತಿನಿಧಿಸಿದ್ದರು.

ಅಂದಿನಿಂದ ರಾಷ್ಟ್ರೀಯ ತಂಡಕ್ಕೆ ಮರಳಲು ಕಠಿಣ ಪರಿಶ್ರಮ ನಡೆಸುತ್ತಿರುವ ಕೃನಾಲ್, ಇದೀಗ ಮತ್ತೊಮ್ಮೆ ಅವಕಾಶದಿಂದ ವಂಚಿತರಾಗಿದ್ದಾರೆ. ಹೀಗಾಗಿ ಅವರ “ಭರವಸೆ ಇನ್ನೂ ಜೀವಂತವಾಗಿದೆ” ಎಂಬ ಭಾವುಕ ಸಂದೇಶ ಅಭಿಮಾನಿಗಳ ಗಮನ ಸೆಳೆದಿದೆ.

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಲಿದ್ದು, ವೇಗಿ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಅವರಿಗೂ ತಂಡದಲ್ಲಿ ಸ್ಥಾನ ದೊರೆತಿದೆ.

ನಿರಂತರ ಪರಿಶ್ರಮದ ನಡುವೆಯೂ ಟೀಂ ಇಂಡಿಯಾ ಜರ್ಸಿ ತೊಡುವ ಅವಕಾಶಕ್ಕಾಗಿ ಕಾಯುತ್ತಿರುವ ಕೃನಾಲ್ ಪಾಂಡ್ಯಗೆ ಮುಂದಿನ ದಿನಗಳಲ್ಲಾದರೂ ಆಯ್ಕೆ ಸಮಿತಿ ಮಣೆ ಹಾಕುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.

ಮೋದಿ ‘ಸ್ವದೇಶಿ’ ಕರೆ ಬೆನ್ನಲ್ಲೇ ಚಿನ್ನದ ದರ ಇಳಿಕೆ: ಸೆಪ್ಟೆಂಬರ್ 2ರಂದು ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಬದಲಾವಣೆ

0

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಗರಿಷ್ಠ ಮಟ್ಟ ತಲುಪಿದ್ದ ಚಿನ್ನದ ದರ 16,397 ರೂಪಾಯಿಯಿಂದ ಮತ್ತೆ 15,202 ರೂಪಾಯಿಗೆ ಕುಸಿದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಅನಗತ್ಯವಾಗಿ ಚಿನ್ನ ಖರೀದಿ ಮಾಡದಂತೆ ಮನವಿ ಮಾಡಿರುವುದರಿಂದ ಚಿನ್ನದ ಮೇಲಿನ ಹೂಡಿಕೆ ದಿಢೀರ್ ಕುಸಿತ ಕಂಡಿದೆ. ಇದರಿಂದಾಗಿ ಗ್ರಾಹಕರು ಚಿನ್ನ ಖರೀದಿಗೆ ಹಿಂದೇಟು ಹಾಕುವ ಸಾಧ್ಯತೆ ಇದ್ದು, ಈ ಮೂಲಕ ವಿದೇಶಿ ವಿನಿಮಯದಿಂದಾಗುವ ನಷ್ಟ ತಪ್ಪಿಸಲು ದೇಶ ಮುಂದಾಗಿದೆ.

ಗುಡ್ ರಿಟರ್ನ್ಸ್ ವರದಿ ಮಾಡಿರುವ ಬೆಲೆ ಪಟ್ಟಿಯ ಪ್ರಕಾರ, ಸೆಪ್ಟೆಂಬರ್ 2, 2026ರ ಬುಧವಾರದಂದು 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 207 ರೂಪಾಯಿ ಇಳಿಕೆಯಾಗಿದ್ದು, ಗ್ರಾಂ ಬೆಲೆ ಈಗ 15,202 ರೂಪಾಯಿಗೆ ತಲುಪಿದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ 2,070 ರೂಪಾಯಿ ಇಳಿಕೆಯಾಗಿ, ಬೆಲೆ 1,52,020 ರೂಪಾಯಿಗೆ ತಗ್ಗಿದೆ.

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 190 ರೂಪಾಯಿ ಇಳಿಕೆಯಾಗಿದ್ದು, 1 ಗ್ರಾಂ ಬೆಲೆ ಈಗ 13,935 ರೂಪಾಯಿ ಆಗಿದೆ. 10 ಗ್ರಾಂ ಬೆಲೆಯಲ್ಲಿ 1,900 ರೂಪಾಯಿ ಇಳಿಕೆಯಾಗಿ, ಪ್ರಸ್ತುತ ಬೆಲೆ 1,39,350 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಶುದ್ಧ ಚಿನ್ನದ ಗ್ರಾಂ ಬೆಲೆ 15,202 ರೂಪಾಯಿ ಇದ್ದು, ಬೆಳ್ಳಿ ಬೆಲೆ ಗ್ರಾಂಗೆ 245 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೆಜಿಗೆ 2,45,000 ರೂಪಾಯಿ ಆಗಿದೆ.

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಸ್ವದೇಶಿ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕಾಗಿ ಹಾಗೂ ಭಾರತವನ್ನು ವಿಶ್ವದ ಮುಂಚೂಣಿ ದೇಶವಾಗಿ ರೂಪಿಸಲು ಜನತೆ ‘ವೋಕಲ್ ಫಾರ್ ಲೋಕಲ್’ ಎಂಬ ಸ್ವದೇಶಿ ತತ್ವ ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಜಾಗತಿಕ ಅನಿಶ್ಚಿತತೆಗಳ ನಡುವೆಯೂ ನಿರೀಕ್ಷೆಗೂ ಮೀರಿ ಶೇ.7.8ರಷ್ಟು ಜಿಡಿಪಿ ಪ್ರಗತಿ ದಾಖಲಿಸಿರುವ ಭಾರತದ ಸಾಧನೆ ಕುರಿತು ಬಿಷ್ಕೆಕ್‌ನಿಂದ ಮಂಗಳವಾರ ಬೆಳಗ್ಗೆ ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, “ಸ್ವದೇಶಿ ಉತ್ಪನ್ನಗಳನ್ನು ಆಯ್ಕೆ ಮಾಡುವ ಮೂಲಕ ದೇಶದ ಆರ್ಥಿಕತೆಗೆ ಮತ್ತಷ್ಟು ಬಲ ತುಂಬಬೇಕು” ಎಂದು ಕರೆ ನೀಡಿದ್ದಾರೆ. “ಅನಗತ್ಯವಾಗಿ ಚಿನ್ನ ಖರೀದಿ ಮಾಡಬೇಡಿ, ಅತ್ಯಗತ್ಯವಿದ್ದಾಗ ಮಾತ್ರ ಬಂಗಾರ ಖರೀದಿಸಬೇಕು” ಎಂದು ಮೋದಿ ಕರೆ ನೀಡಿದ್ದು, ಇದರ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬಂದಿದೆ.

KPSC ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪ್ರಶ್ನೆಪತ್ರಿಕೆಗಳನ್ನು ಮನೆಗೆ ತೆಗೆದುಕೊಂಡು ಪರಿಶೀಲಿಸುತ್ತಿದ್ದೆ ಎಂದ ಐಎಎಸ್ ಅಧಿಕಾರಿ

0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿದ್ದು, ಸಿಐಡಿ ಮುಂದೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ನೀಡಿರುವ ಹೇಳಿಕೆಗಳು ಇದೀಗ ಮಹತ್ವ ಪಡೆದುಕೊಂಡಿವೆ. ಪ್ರಶ್ನೆಪತ್ರಿಕೆ ಸಿದ್ಧತೆ ಹಾಗೂ ಪರಿಶೀಲನೆಗೆ ಸಂಬಂಧಿಸಿದಂತೆ ಗ್ಯಾನೇಂದ್ರ ಹಲವು ಮಹತ್ವದ ಮಾಹಿತಿಗಳನ್ನು ತನಿಖಾಧಿಕಾರಿಗಳ ಮುಂದೆ ಬಿಚ್ಚಿಟ್ಟಿದ್ದಾರೆ.

ಸಿಐಡಿ ವಿಚಾರಣೆ ವೇಳೆ, 6 ಮಾದರಿ ಪ್ರಶ್ನೆಪತ್ರಿಕೆಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಪರಿಶೀಲನೆ ನಡೆಸುತ್ತಿದ್ದುದಾಗಿ ಗ್ಯಾನೇಂದ್ರ ಹೇಳಿಕೆ ನೀಡಿದ್ದಾರೆ. ಪ್ರಶ್ನೆಪತ್ರಿಕೆಗಳು ಮುದ್ರಣಗೊಳ್ಳುವ ಮುನ್ನವೇ ಅವುಗಳನ್ನು ಮನೆಯಲ್ಲಿ ಪರಿಶೀಲಿಸುತ್ತಿದ್ದುದು ಕರ್ತವ್ಯ ಲೋಪಕ್ಕೆ ಕಾರಣವಾಗಿದೆ ಎಂದು ಅವರು ಒಪ್ಪಿಕೊಂಡಿರುವುದಾಗಿ ಸಿಐಡಿ ಮೂಲಗಳು ತಿಳಿಸಿವೆ.

ಆದರೆ ಇದೇ ವಿಚಾರದಲ್ಲಿ ಗ್ಯಾನೇಂದ್ರ ನೀಡಿರುವ ಮತ್ತೊಂದು ಹೇಳಿಕೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರಶ್ನೆಪತ್ರಿಕೆ ಪರಿಶೀಲನೆಗಾಗಿ ಮನೆಗೆ ತೆಗೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಬಸವರಾಜ್ ಪದೇಪದೇ ಮನೆಗೆ ಬರುತ್ತಿದ್ದನೆಂದೂ, ತಮಗೆ ಅರಿವಿಲ್ಲದಂತೆಯೇ ಬಸವರಾಜ್ ಪ್ರಶ್ನೆಪತ್ರಿಕೆಯಲ್ಲಿದ್ದ ಮಾಹಿತಿ ಬರೆದುಕೊಂಡು ಹೋಗಿದ್ದಾನೆಂದೂ ಗ್ಯಾನೇಂದ್ರ ಹೇಳಿದ್ದಾರೆ. ಈ ಬಗ್ಗೆ ತಾವು ಸರಿಯಾಗಿ ಗಮನ ಹರಿಸಿರಲಿಲ್ಲ ಎಂದ ಅವರು, ಯಾವುದೇ ಲೋಪ ಆಗಿದ್ದರೂ ಅದಕ್ಕೆ ಬಸವರಾಜ್ ಕಾರಣ ಎಂದೂ, ಆತ ಪ್ರಶ್ನೆಪತ್ರಿಕೆ ಕದ್ದಿರುವುದು ಈಗ ಗೊತ್ತಾಗಿದೆ ಎಂದೂ ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಮನೆಯಲ್ಲೇ ಪರಿಶೀಲಿಸಿದ ವಿಚಾರವೂ ತನಿಖೆಯ ಪ್ರಮುಖ ಅಂಶವಾಗಿ ಪರಿಣಮಿಸಿದೆ. ಪ್ರಶ್ನೆಪತ್ರಿಕೆ ಸಂಬಂಧಿತ ವಿಚಾರಣೆ ಮುಂದುವರಿಸಿರುವ ಸಿಐಡಿ ಅಧಿಕಾರಿಗಳು, ಇಂದು ಗ್ಯಾನೇಂದ್ರ ಅವರನ್ನು ಅವರ ಮನೆಗೆ ಕರೆದೊಯ್ದು ಪರಿಶೀಲನೆ ನಡೆಸಿದ್ದಾರೆ.

ಇದೇ ವೇಳೆ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಮಹಮದ್ ಸುಹೇಲ್ ಬಳಿಕ ಇನ್ನೂ 7 ಅಭ್ಯರ್ಥಿಗಳು ಸಿಐಡಿ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಂಧನದ ಭಯದಿಂದ ಅಭ್ಯರ್ಥಿಗಳು ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಅಭ್ಯರ್ಥಿಗಳ ವಿಚಾರಣೆಯಲ್ಲಿ, ಅಕ್ರಮ ನೇಮಕಾತಿಗೆ ಒಬ್ಬೊಬ್ಬ ಅಭ್ಯರ್ಥಿಯಿಂದ ವಿಭಿನ್ನ ಮೊತ್ತದ ಹಣ ಪಡೆಯಲಾಗಿತ್ತು ಎಂಬ ಮಾಹಿತಿ ಹೊರಬಿದ್ದಿದೆ. ಕೆಲವು ಅಭ್ಯರ್ಥಿಗಳು 80 ಲಕ್ಷ ರೂಪಾಯಿವರೆಗೆ, ಇನ್ನೂ ಕೆಲವರು ಸುಮಾರು 40 ಲಕ್ಷ ರೂಪಾಯಿವರೆಗೆ ಹಣ ನೀಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಇವರಲ್ಲಿ ಕೆಲವರು ಮುಂಗಡ ಹಣ ನೀಡಿದ್ದರೆ, ಮತ್ತಷ್ಟು ಅಭ್ಯರ್ಥಿಗಳು ಸಂಪೂರ್ಣ ಹಣ ಪಾವತಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಮಹಮದ್ ಸುಹೇಲ್ ಬಳಿಕ 7 ಅಭ್ಯರ್ಥಿಗಳಿಂದ ಬಂದಿದೆ ಎನ್ನಲಾದ ಈ ಹೇಳಿಕೆಗಳು ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ಮತ್ತಷ್ಟು ಮಹತ್ವದ ಸುಳಿವು ನೀಡಿವೆ.

ಉತ್ತರಾಖಂಡದಲ್ಲಿ ಮಳೆ ಅವಾಂತರ: 24 ಗಂಟೆಯಲ್ಲಿ 8 ಸಾವು, ರುದ್ರಪ್ರಯಾಗದಲ್ಲಿ ಭೂಕುಸಿತಕ್ಕೆ ಇಬ್ಬರು ಬಲಿ

0

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. ಭಾರಿ ಮಳೆಯಿಂದ ಭೂಕುಸಿತ, ಮನೆ ಕುಸಿತ, ಹಠಾತ್ ಪ್ರವಾಹ ಸೇರಿದಂತೆ ಹಲವು ಅವಘಡಗಳು ಸಂಭವಿಸಿದ್ದು, ರುದ್ರಪ್ರಯಾಗ ಜಿಲ್ಲೆಯಲ್ಲಿ ಭೂಕುಸಿತ ಹಾಗೂ ಮಣ್ಣಿನ ಸವಕಳಿಯಿಂದ ಮನೆಗಳು, ರಸ್ತೆಗಳು ಮತ್ತು ಕೃಷಿ ಜಮೀನುಗಳಿಗೆ ವ್ಯಾಪಕ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧಾರ್ ಕಿ ಟುನಿ ಪ್ರದೇಶದಲ್ಲಿ ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದ ಮಣ್ಣು ಮತ್ತು ಅವಶೇಷಗಳು ಕುಸಿದು ಟಿನ್ ಶೆಡ್‌ವೊಂದರ ಗೋಡೆ ಕುಸಿದ ಪರಿಣಾಮ, ಅದರೊಳಗೆ ಮಲಗಿದ್ದ ಇಬ್ಬರು ನೇಪಾಳಿ ಕಾರ್ಮಿಕರು ಮೃತಪಟ್ಟಿದ್ದಾರೆ. ನಿರಂತರ ಮಳೆಯಿಂದ ಗುಡ್ಡದ ಮೇಲಿನ ಮಣ್ಣು ಮತ್ತು ಅವಶೇಷಗಳು ಸಡಿಲಗೊಂಡು ಶೆಡ್ ಮೇಲೆ ಬಿದ್ದಿದ್ದು, ಶೆಡ್ ಕುಸಿದ ಪರಿಣಾಮ ಒಳಗಿದ್ದ ಕಾರ್ಮಿಕರು ಸಿಲುಕಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ವಿನೀತ್ ಪಾಲ್ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸೋಮೇಶ್ವರ ಬ್ಲಾಕ್‌ನ ವದ್ಯೂರಾ ಗ್ರಾಮದಲ್ಲಿ ಮನೆಯೊಂದರ ಮೇಲೆ ಮಣ್ಣು ಮತ್ತು ಅವಶೇಷಗಳು ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದರು. ಜಿಲ್ಲಾಧಿಕಾರಿ ಅಂಶುಲ್ ಸಿಂಗ್ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು.

ಅಲ್ಮೋರಾದಲ್ಲಿ ಹಲವು ಗಂಟೆಗಳ ಕಾಲ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ಮಣ್ಣು ಮತ್ತು ಅವಶೇಷಗಳು ನುಗ್ಗಿದ್ದು, ಹಲವು ರಸ್ತೆಗಳು ಬಂದ್ ಆಗಿವೆ. ಇದರಿಂದ ಸಂಚಾರ ಹಾಗೂ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆ ಹಾಗೂ ಅಸ್ಥಿರವಾಗಿರುವ ಗುಡ್ಡ ಪ್ರದೇಶಗಳು ರಕ್ಷಣಾ ಮತ್ತು ರಸ್ತೆ ತೆರವು ಕಾರ್ಯಕ್ಕೆ ಸವಾಲಾಗಿ ಪರಿಣಮಿಸಿವೆ.

ವೈಭವ್ ಅಬ್ಬರ, ಶಮಿ-ಮುಕೇಶ್ ಬೌಲಿಂಗ್ ದಾಳಿ; ಕೇಂದ್ರ ವಲಯವನ್ನು ಮಣಿಸಿ ಫೈನಲ್ʼಗೆ ಲಗ್ಗೆ ಇಟ್ಟ ಪೂರ್ವ ವಲಯ

0

ಚೆನ್ನೈ: ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಪೂರ್ವ ವಲಯ ತಂಡ ಬರೋಬ್ಬರಿ 14 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದೆ. ಮಂಗಳವಾರ ಮುಕ್ತಾಯಗೊಂಡ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೇಂದ್ರ ವಲಯ ತಂಡವನ್ನು 4 ವಿಕೆಟ್‌ಗಳಿಂದ ಮಣಿಸುವ ಮೂಲಕ ಪೂರ್ವ ವಲಯ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ.

ಪೂರ್ವ ವಲಯ ತಂಡ ಕೊನೆಯ ಬಾರಿ 2012-13ರ ಆವೃತ್ತಿಯಲ್ಲಿ ದುಲೀಪ್ ಟ್ರೋಫಿ ಚಾಂಪಿಯನ್ ಆಗಿತ್ತು. ಆ ಬಳಿಕ ತಂಡಕ್ಕೆ ಫೈನಲ್ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. ಇದೀಗ ನಾಯಕ ಇಶಾನ್ ಕಿಶನ್ ಅವರ ನೇತೃತ್ವದಲ್ಲಿ ತಂಡ ಮತ್ತೆ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ್ದು, 14 ವರ್ಷಗಳ ಕಾಯುವಿಕೆಗೆ ತೆರೆ ಎಳೆದಿದೆ.

ತಂಡದ ಯಶಸ್ಸಿನಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಆಕ್ರಮಣಕಾರಿ ಆಟದ ಜೊತೆಗೆ ಅನುಭವಿ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಮುಕೇಶ್ ಕುಮಾರ್ ಅವರ ಬೌಲಿಂಗ್ ಪ್ರಮುಖ ಪಾತ್ರ ವಹಿಸಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ರಜತ್ ಪಾಟೀದಾರ್ ನಾಯಕತ್ವದ ಕೇಂದ್ರ ವಲಯ 266 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಪೂರ್ವ ವಲಯವೂ 266 ರನ್‌ಗಳಿಗೆ ಸರ್ವಪತನ ಕಂಡಿದ್ದರಿಂದ ಎರಡೂ ತಂಡಗಳ ಮೊದಲ ಇನ್ನಿಂಗ್ಸ್ ಸ್ಕೋರ್ ಸಮಬಲಗೊಂಡಿತ್ತು.

ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಪೂರ್ವ ವಲಯದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಕೇಂದ್ರ ವಲಯದ ಬ್ಯಾಟಿಂಗ್ ಪಡೆಯನ್ನು ಕೇವಲ 158 ರನ್‌ಗಳಿಗೆ ಕಟ್ಟಿಹಾಕಿದರು. ಅಮನ್ ಮೋಖಡೆ 41, ಅರ್ಶದ್ ಖಾನ್ 25 ಹಾಗೂ ರಿಂಕು ಸಿಂಗ್ 20 ರನ್ ಗಳಿಸಿದರು. ಪೂರ್ವ ವಲಯದ ಪರ ಮುಕೇಶ್ ಕುಮಾರ್ 4 ವಿಕೆಟ್ ಹಾಗೂ ಮೊಹಮ್ಮದ್ ಶಮಿ 3 ವಿಕೆಟ್ ಕಬಳಿಸಿದರು.

ಗೆಲುವಿಗೆ 159 ರನ್‌ಗಳ ಗುರಿ ಪಡೆದ ಪೂರ್ವ ವಲಯಕ್ಕೆ ಮತ್ತೊಮ್ಮೆ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಹಾಗೂ ನಾಯಕ ಇಶಾನ್ ಕಿಶನ್ ಆಸರೆಯಾದರು. ವೈಭವ್ 43 ಎಸೆತಗಳಲ್ಲಿ 40 ರನ್‌ಗಳ ಅಮೂಲ್ಯ ಇನ್ನಿಂಗ್ಸ್ ಆಡಿದರೆ, ಇಶಾನ್ ಕಿಶನ್ 41 ಎಸೆತಗಳಲ್ಲಿ ಅಜೇಯ 39 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಕೇಂದ್ರ ವಲಯದ ಪರ ಹರ್ಷ್ ದುಬೆ 4 ವಿಕೆಟ್ ಕಬಳಿಸಿದರೂ ತಂಡದ ಗೆಲುವಿಗೆ ಅದು ಸಾಕಾಗಲಿಲ್ಲ. ಅಂತಿಮವಾಗಿ ಪೂರ್ವ ವಲಯ 6 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿ 4 ವಿಕೆಟ್‌ಗಳ ಗೆಲುವು ಸಾಧಿಸಿತು.

ಪಂದ್ಯದ ಸ್ಕೋರ್:

ಕೇಂದ್ರ ವಲಯ: 266/10 & 158/10
ಪೂರ್ವ ವಲಯ: 266/10 & 162/6

ಕೇಂದ್ರ ವಲಯ ಪರ: ಅಮನ್ ಮೋಖಡೆ 41, ಅರ್ಶದ್ ಖಾನ್ 25, ಮುಕೇಶ್ ಕುಮಾರ್ 4/44, ಮೊಹಮ್ಮದ್ ಶಮಿ 3/56

ಪೂರ್ವ ವಲಯ ಪರ: ವೈಭವ್ ಸೂರ್ಯವಂಶಿ 40, ಇಶಾನ್ ಕಿಶನ್ ಅಜೇಯ 39

ಕೇಂದ್ರ ವಲಯ ಪರ: ಹರ್ಷ್ ದುಬೆ 4/53

ಸುದೀಪ್‌ಗೆ ಬರ್ತಡೇಗೆ ಮತ್ತೊಂದು ಬಿಗ್‌ ಸರ್ಪ್ರೈಸ್: ‘ದೇವರಾಯ’ ಚಿತ್ರದಲ್ಲಿ ಶ್ರೀ ಕೃಷ್ಣದೇವರಾಯನಾಗಿ ಕಿಚ್ಚ

ಬೆಂಗಳೂರು: ಕಿಚ್ಚ ಸುದೀಪ್ ಅವರ 53ನೇ ಹುಟ್ಟುಹಬ್ಬ ಕನ್ನಡ ಚಿತ್ರರಂಗಕ್ಕೆ ಒಂದರ ಹಿಂದೊಂದರಂತೆ ದೊಡ್ಡ ಸಿನಿಮಾ ಘೋಷಣೆಗಳನ್ನು ನೀಡುತ್ತಿದೆ. ‘ಬಿಲ್ಲಾ ರಂಗ ಭಾಷಾ’ ಬಳಿಕ ಇದೀಗ ಸುದೀಪ್ ಮತ್ತೊಂದು ಬೃಹತ್ ಪ್ರಾಜೆಕ್ಟ್ ಘೋಷಿಸಿದ್ದು, ಈ ಬಾರಿ ವಿಜಯನಗರ ಸಾಮ್ರಾಜ್ಯದ ಖ್ಯಾತ ಚಕ್ರವರ್ತಿ ಕೃಷ್ಣದೇವರಾಯನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ‘ದೇವರಾಯ’ ಎಂಬ ಶೀರ್ಷಿಕೆ ಅಂತಿಮಗೊಂಡಿದೆ.

ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಶೇಷ ಕಾನ್ಸೆಪ್ಟ್ ವೀಡಿಯೋ ಸಿನಿಮಾದ ಪ್ರಮಾಣದ ಬಗ್ಗೆ ಸುಳಿವು ನೀಡಿದೆ. ವಿಜಯನಗರ ಸಾಮ್ರಾಜ್ಯದ ಭವ್ಯತೆ, ಗಗನಚುಂಬಿ ದೇವಸ್ಥಾನಗಳ ಗೋಪುರಗಳು, ಆನೆ ಪಡೆಗಳು, ಯುದ್ಧದ ಸನ್ನಿವೇಶಗಳು ಹಾಗೂ ರಾಜನ ಗಾಂಭೀರ್ಯವನ್ನು ಬಿಂಬಿಸುವ ದೃಶ್ಯಗಳ ನಡುವೆ ಸುದೀಪ್ ಅವರ ಕೃಷ್ಣದೇವರಾಯನ ಲುಕ್ ಅನಾವರಣಗೊಂಡಿದೆ.

ಸುದೀಪ್ ಈ ಪಾತ್ರವನ್ನು ಮಾಡುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ಐತಿಹಾಸಿಕ ರಾಜನ ಪರಂಪರೆಯನ್ನು ಹಂಚಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ. ಬಿಡುಗಡೆಯಾಗಿರುವ ಕಾನ್ಸೆಪ್ಟ್ ವೀಡಿಯೋ ಸಂಪೂರ್ಣವಾಗಿ ಎಐ ತಂತ್ರಜ್ಞಾನದಲ್ಲಿ ಸಿದ್ಧಪಡಿಸಲಾಗಿದೆ.

ಕೃಷ್ಣದೇವರಾಯ ವಿಜಯನಗರ ಸಾಮ್ರಾಜ್ಯದ ಅತ್ಯಂತ ಪ್ರಭಾವಶಾಲಿ ದೊರೆಗಳಲ್ಲಿ ಒಬ್ಬರು. ಯುದ್ಧ ಕೌಶಲ, ಸಮರ್ಥ ಆಡಳಿತ ಮತ್ತು ಸಾಹಿತ್ಯದ ಮೇಲಿನ ಆಸಕ್ತಿಗೆ ಹೆಸರುವಾಸಿಯಾಗಿದ್ದ ಅವರ ಜೀವನವನ್ನು ಆಧರಿಸಿ ಸಿನಿಮಾ ರೂಪಿಸುವುದು ದೊಡ್ಡ ಸವಾಲಿನ ಕೆಲಸವಾಗಿದ್ದು, ‘ದೇವರಾಯ’ ಆ ನಿಟ್ಟಿನಲ್ಲಿ ಮಹತ್ವಾಕಾಂಕ್ಷೆಯ ಚಿತ್ರವಾಗಿ ಮೂಡಿಬರುವ ನಿರೀಕ್ಷೆ ಮೂಡಿಸಿದೆ.

ಈ ಹಿಂದೆ ಡಾ. ರಾಜ್‌ಕುಮಾರ್ ಅವರು ಕೃಷ್ಣದೇವರಾಯನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ದಶಕಗಳ ಬಳಿಕ ಅದೇ ಐತಿಹಾಸಿಕ ಪಾತ್ರವನ್ನು ಸುದೀಪ್ ನಿರ್ವಹಿಸಲಿದ್ದು, ಈ ಸಿನಿಮಾ ಅವರ ವೃತ್ತಿಬದುಕಿನಲ್ಲೇ ಪ್ರಮುಖ ಮೈಲಿಗಲ್ಲಾಗುವ ನಿರೀಕ್ಷೆ ಅಭಿಮಾನಿಗಳಲ್ಲಿದೆ.

ಪ್ರಿಯಾ ಸುದೀಪ್ ಅವರ ಅರ್ಪಣೆಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಕ್ಕೆ ಟಿ.ಜಿ. ವಿಶ್ವಪ್ರಸಾದ್ ಮತ್ತು ಕೃತಿ ಪ್ರಸಾದ್ ಹಣ ಹೂಡುತ್ತಿದ್ದಾರೆ. ಪ್ಯಾನ್-ಇಂಡಿಯಾ ಮಟ್ಟದಲ್ಲಿ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿರುವ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ‘ದೇವರಾಯ’ ಮೂಲಕ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹೆಜ್ಜೆ ಇಡುತ್ತಿದೆ.

ಚಿತ್ರದ ನಿರ್ದೇಶಕರ ಹೆಸರನ್ನು ಸದ್ಯಕ್ಕೆ ಸಸ್ಪೆನ್ಸ್ ಆಗಿ ಇಡಲಾಗಿದೆ. ಐತಿಹಾಸಿಕ ಕಥೆಗೆ ಅಗತ್ಯವಿರುವ ಭವ್ಯ ಸೆಟ್‌ಗಳು ಮತ್ತು ವಿಎಫ್‌ಎಕ್ಸ್ ಕೆಲಸಗಳಿಗೆ ಹೆಚ್ಚಿನ ಸಮಯ ಬೇಕಾಗಿರುವುದರಿಂದ 2027ರ ಡಿಸೆಂಬರ್‌ನಲ್ಲಿ ‘ದೇವರಾಯ’ ಚಿತ್ರವನ್ನು ವಿಶ್ವದಾದ್ಯಂತ ಬಿಡುಗಡೆ ಮಾಡುವ ಯೋಜನೆ ಹೊಂದಲಾಗಿದೆ.

ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬಸ್ ಸುರಕ್ಷತೆಗೆ ಕಠಿಣ ನಿಯಮ; ಪ್ಯಾನಿಕ್ ಬಟನ್, ಪರದೆ ನಿಷೇಧ ಕಡ್ಡಾಯ

0

ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣದ ಬೆನ್ನಲ್ಲೇ ದೆಹಲಿ ಸರ್ಕಾರ ಬಸ್‌ಗಳ ಸುರಕ್ಷತಾ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ.

ದೆಹಲಿಯಲ್ಲಿ ಸಂಚರಿಸುವ ಎಲ್ಲ ಬಸ್‌ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ವಾಹನ ಟ್ರ್ಯಾಕಿಂಗ್ ಸಾಧನಗಳು ಸದಾ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು ಎಂದು ಸಾರಿಗೆ ಇಲಾಖೆ ಹೊಸ ನಿರ್ದೇಶನ ಹೊರಡಿಸಿದೆ. ಬಸ್‌ಗಳ ಕಿಟಕಿಗಳಿಗೆ ಪರದೆ ಹಾಕುವುದನ್ನು ನಿಷೇಧಿಸಲಾಗಿದ್ದು, ಒಳಗೆ ಮತ್ತು ಹೊರಗಿನ ದೃಶ್ಯ ಸ್ಪಷ್ಟವಾಗಿ ಕಾಣುವಂತೆ ಕಿಟಕಿ ಹಾಗೂ ಗಾಜಿನ ಪಾರದರ್ಶಕತೆ ಕಾಪಾಡಬೇಕು ಎಂದು ಸೂಚಿಸಲಾಗಿದೆ.

ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಸ್ ಚಾಲಕ ಮತ್ತು ಕಂಡಕ್ಟರ್ ಕೃತ್ಯ ಎಸಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಬಾಲಕಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಕಿಟಕಿಗಳಿಗೆ ಪರದೆ ಹಾಕಲಾಗಿದ್ದು, ಇದರಿಂದ ಒಳಗಿನ ಚಟುವಟಿಕೆ ಹೊರಗಿನಿಂದ ಕಾಣದಂತಾಗಿತ್ತು ಎನ್ನಲಾಗಿದೆ. ಕಾನೂನಿನ ಪ್ರಕಾರ ಇರಬೇಕಾದ ಸಿಸಿಟಿವಿ ವ್ಯವಸ್ಥೆಯೂ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂದು ವರದಿಯಾಗಿದೆ.

ಆಗಸ್ಟ್ 4ರ ರಾತ್ರಿ ಈ ಘಟನೆ ನಡೆದಿದ್ದು, ಕೃತ್ಯದ ಬಳಿಕ ಚಾಲಕ ಮತ್ತು ಕಂಡಕ್ಟರ್ ಬಾಲಕಿಯನ್ನು ಕಾಶ್ಮೀರಿ ಗೇಟ್ ಬಳಿ ಬಿಟ್ಟು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಗ್ರೇಟರ್ ನೋಯ್ಡಾದಿಂದ ಬಸ್ ಹತ್ತಿದ್ದು, ಅಲ್ಲಿಂದ 40 ಕಿ.ಮೀ.ಗೂ ಹೆಚ್ಚು ದೂರದ ಕಾಶ್ಮೀರಿ ಗೇಟ್ ಬಳಿ ಆಕೆಯನ್ನು ಬಿಟ್ಟು ಹೋಗಲಾಗಿತ್ತು ಎನ್ನಲಾಗಿದೆ.

ದೆಹಲಿ ಸಾರಿಗೆ ಇಲಾಖೆ ಹೊರಡಿಸಿರುವ ಈ ಹೊಸ ನಿರ್ದೇಶನಗಳು ದೆಹಲಿಯಲ್ಲಿ ಸಂಚರಿಸುವ ಎಲ್ಲ ಬಸ್‌ಗಳಿಗೆ ಅನ್ವಯಿಸಲಿದ್ದು, ಇತರ ರಾಜ್ಯಗಳ ಬಸ್‌ಗಳಿಗೂ ಇವು ಅನ್ವಯವಾಗಲಿವೆ. ಪ್ರತಿ ಬಸ್‌ನಲ್ಲಿರುವ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಹಾಗೂ ಪ್ಯಾನಿಕ್ ಬಟನ್‌ಗಳು ಸದಾ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು ಮತ್ತು ಪ್ಯಾನಿಕ್ ಬಟನ್ ಪ್ರಯಾಣಿಕರಿಗೆ ಸುಲಭವಾಗಿ ಸಿಗುವಂತಿರಬೇಕು ಎಂದು ಸೂಚಿಸಲಾಗಿದೆ.

ಪ್ರತಿ ಬಸ್‌ನಲ್ಲಿ ಕಾರ್ಯನಿರ್ವಹಿಸುವ ಅಗ್ನಿಶಾಮಕ ಸಾಧನ ಮತ್ತು ಪ್ರಥಮ ಚಿಕಿತ್ಸಾ ಕಿಟ್ ಕಡ್ಡಾಯವಾಗಿ ಇರಬೇಕು. ರಾತ್ರಿ ವೇಳೆ ಅಥವಾ ಸಂಚಾರದಲ್ಲಿಲ್ಲದ ಸಮಯದಲ್ಲಿ ವಾಹನಗಳನ್ನು ಸುರಕ್ಷಿತ, ಅಧಿಕೃತ ಹಾಗೂ ಸೂಕ್ತ ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲೇ ನಿಲ್ಲಿಸಬೇಕು ಎಂದೂ ಸೂಚಿಸಲಾಗಿದೆ.

ಸಾರಿಗೆ ಸಚಿವ ಡಾ. ಪಂಕಜ್ ಕುಮಾರ್ ಸಿಂಗ್ ಮಾತನಾಡಿ, ಪ್ರಯಾಣಿಕರ ಸುರಕ್ಷತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು. ದೆಹಲಿಯಲ್ಲಿ ಸಂಚರಿಸುವ ಪ್ರತಿಯೊಂದು ಬಸ್ ಕೂಡ ನಿಗದಿತ ಸುರಕ್ಷತಾ ಮತ್ತು ಕಾರ್ಯಾಚರಣಾ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದರು.