Home Blog

ಭೋಜಶಾಲಾ ವಿವಾದಕ್ಕೆ ತೆರೆ: ದೇವಸ್ಥಾನವೆಂದು ಘೋಷಿಸಿದ ಮಧ್ಯಪ್ರದೇಶ ಹೈಕೋರ್ಟ್!

ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯ ದಶಕಗಳ ಭೋಜಶಾಲಾ-ಕಮಲ್ ಮೌಲಾ ಮಸೀದಿ ವಿವಾದಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಮಧ್ಯಪ್ರದೇಶ ಹೈಕೋರ್ಟ್ ಭೋಜಶಾಲಾ ಆವರಣವನ್ನು ದೇವಸ್ಥಾನ ಎಂದು ಘೋಷಿಸಿ ಐತಿಹಾಸಿಕ ತೀರ್ಪು ನೀಡಿದೆ.

ಇಂದೋರ್ ಪೀಠದ ಹೈಕೋರ್ಟ್, ಈ ಸಂಕೀರ್ಣದಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಸಂಪೂರ್ಣ ಹಕ್ಕು ಇದೆ ಎಂದು ಸ್ಪಷ್ಟಪಡಿಸಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ನಡೆಸಿದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಆಧರಿಸಿ ನ್ಯಾಯಾಲಯ ಈ ಮಹತ್ವದ ತೀರ್ಪು ಪ್ರಕಟಿಸಿದೆ.

ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಮೇ 12ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಲಾಗಿದೆ.

ತೀರ್ಪಿನಲ್ಲಿ, ವಿವಾದಿತ ಸಂಪೂರ್ಣ ಸಂಕೀರ್ಣವು ಮೂಲತಃ ವಾಗ್ದೇವಿ ಅಂದರೆ ಸರಸ್ವತಿ ದೇವಸ್ಥಾನ ಹಾಗೂ ರಾಜ ಭೋಜ ಸ್ಥಾಪಿಸಿದ್ದ ಸಂಸ್ಕೃತ ಅಧ್ಯಯನ ಕೇಂದ್ರವಾಗಿತ್ತು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪ್ರಸ್ತುತ ಇರುವ ಮಸೀದಿ ರಚನೆ ಹಳೆಯ ದೇವಸ್ಥಾನದ ಅವಶೇಷಗಳು ಮತ್ತು ಸ್ತಂಭಗಳನ್ನು ಬಳಸಿ ನಿರ್ಮಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಎಎಸ್‌ಐ ಸಮೀಕ್ಷೆಯಲ್ಲಿ ಪತ್ತೆಯಾದ ಪರಮಾರ ರಾಜರ ಕಾಲದ ಸಂಸ್ಕೃತ ಮತ್ತು ಪ್ರಾಕೃತ ಶಾಸನಗಳು, ಶಿಲ್ಪ ಕೆತ್ತನೆಗಳು ಹಾಗೂ ಬ್ರಹ್ಮ, ಗಣೇಶ ಸೇರಿದಂತೆ 94ಕ್ಕೂ ಹೆಚ್ಚು ಹಿಂದೂ ದೇವತೆಗಳ ಭಿನ್ನಗೊಂಡ ವಿಗ್ರಹಗಳು ಈ ಸ್ಥಳದ ಮೂಲ ಸ್ವರೂಪವನ್ನು ದೃಢಪಡಿಸುತ್ತವೆ ಎಂದು ನ್ಯಾಯಾಲಯ ಉಲ್ಲೇಖಿಸಿದೆ.

ಇದಲ್ಲದೆ, ಪ್ರಸ್ತುತ ಇರುವ ಕಮಲ್ ಮೌಲಾ ಮಸೀದಿಯನ್ನು ಮುಸ್ಲಿಂ ಆಡಳಿತಗಾರರ ಕಾಲದಲ್ಲಿ ಪೂರ್ವ ಅಸ್ತಿತ್ವದಲ್ಲಿದ್ದ ಹಿಂದೂ ದೇವಸ್ಥಾನದ ಸ್ತಂಭಗಳು, ಕಲ್ಲುಗಳು ಮತ್ತು ಇತರ ಅವಶೇಷಗಳನ್ನು ಬಳಸಿ ನಿರ್ಮಿಸಲಾಗಿದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಎಎಸ್‌ಐ ಸಮೀಕ್ಷೆ ಏಕಪಕ್ಷೀಯವಾಗಿದೆ ಹಾಗೂ ಮುಸ್ಲಿಂ ಅರ್ಜಿದಾರರ ಹಕ್ಕುಗಳನ್ನು ಕಡೆಗಣಿಸಲಾಗಿದೆ ಎಂಬ ಕಮಲ್ ಮೌಲಾ ಮಸೀದಿ ಸಮಿತಿಯ ವಾದಗಳನ್ನು ಹೈಕೋರ್ಟ್ ತಳ್ಳಿ ಹಾಕಿದೆ.

ಧಾರ್ಮಿಕ ಸ್ಥಳಗಳ ಸಂರಕ್ಷಣೆ ಹಾಗೂ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಈ ತೀರ್ಪು ದಶಕಗಳ ವಿವಾದಕ್ಕೆ ಅಂತ್ಯ ಹಾಡುವ ಸಾಧ್ಯತೆ ಮೂಡಿಸಿದ್ದು, ದೇಶದಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಬೆಲೆಏರಿಕೆಯು ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಲೆಏರಿಕೆ ನಿರ್ಣಯ ಹಿಂಪಡೆಯಲು ಕೇಂದ್ರಕ್ಕೆ ಒತ್ತಾಯ

ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು.‌ ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರಗಳನ್ನು ಹೆಚ್ಚಿಸಿದ್ದಾರೆ.

ಈ ಬೆಲೆಏರಿಕೆ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರದ ಈ ಬೆಲೆಏರಿಕೆಯ ಕ್ರಮವನ್ನು ರಾಜ್ಯ ಸರ್ಕಾರ ಖಂಡಿಸುವುದಲ್ಲದೇ, ಈ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸುತ್ತೇವೆ ಎಂದರು.

ಬೆಲೆಏರಿಕೆಯಿಂದ ದಿನನಿತ್ಯದ ವಸ್ತುಗಳೂ ತುಟ್ಟಿ

ಪ್ರಧಾನಿ ಮೋದಿಯವರ ಆಡಳಿತ ಪ್ರಾರಂಭವಾಗುವ ಮುಂಚೆ 413 ರೂ.ಗಳಿಂದ ಗೃಹಬಳಕೆಯ ಎಲ್ ಪಿ ಜಿ ದರ ಈಗ 1000 ರೂಗಳನ್ನು ದಾಟಿದೆ. ಈ ಬೆಲೆಏರಿಕೆ ದಿನನಿತ್ಯದ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಎಲ್ ಪಿ ಜಿ ಪೂರೈಕೆ ವ್ಯತ್ಯಯವಾಗಿರುವ ನಡುವೆಯೇ ಬೆಲೆ ಏರಿಕೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಲಿದೆ ಎಂದರು.

ನೀಟ್ ಪರೀಕ್ಷೆ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯ

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್ ಯುಜಿ ಮರು ಪರೀಕ್ಷೆಗೆ ದಿನಾಂಕ ನಿಗದಿಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರವು ನೀಟ್ ಯುಜಿ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ವಿಫಲರಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದರು.

ಎಸ್ ಐ ಆರ್ ಪ್ರಕ್ರಿಯೆ

ಕರ್ನಾಟಕದಲ್ಲಿ ಎಸ್ ಐ ಆರ್ ಪ್ರಕ್ರಿಯೆ ಪ್ರಾರಂಭವಾಗಲಿರುವ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಚುನಾವಣಾ ಆಯೋಗದಿಂದ ಎಸ್ ಐ ಆರ್ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಇದಕ್ಕೆ ಬೇಕಾದ ಸಿದ್ದತೆಯನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದರು.

ಮೇಲ್ಛಾವಣಿ ಕುಸಿತಕ್ಕೆ ಒಂದೇ ಕುಟುಂಬದ 4 ಮಂದಿ ಸಾವು: ತಲಾ 5 ಲಕ್ಷ ಪರಿಹಾರ ಘೋಷಿಸಿದ ಎಂ.ಬಿ ಪಾಟೀಲ್

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಗುರುವಾರ (ಮೇ 14) ತಡರಾತ್ರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯ ಪರಿಣಾಮ ಭೀಕರ ದುರಂತ ಸಂಭವಿಸಿದೆ. ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ.

ಮನೆಯ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಕುಟುಂಬವು ತಾತ್ಕಾಲಿಕವಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಘಟನೆ ನಡೆದ ರಾತ್ರಿ ಎಲ್ಲರೂ ಮನೆಯಲ್ಲಿ ಮಲಗಿದ್ದ ವೇಳೆ ಧಾರಾಕಾರ ಮಳೆಯಿಂದ ಮೇಲ್ಛಾವಣಿ ಕುಸಿದು ಈ ದುರಂತ ಸಂಭವಿಸಿದೆ.

ಈ ವೇಳೆ ಮನೆಯಿಂದ ಹೊರಗೆ ಮಲಗಿದ್ದ ಗುರುನಾಥನ ತಾಯಿ ಹಾಗೂ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ನಾಲ್ವರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಸ್ಥಳಕ್ಕೆ ಸಿಂದಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಧನ ದರ ಏರಿಕೆ ಬೆನ್ನಲ್ಲೇ ಖಾಸಗಿ ಬಸ್ ಟಿಕೆಟ್ ದುಬಾರಿ: ಇಂದಿನಿಂದಲೇ ಹೊಸ ದರ ಫಿಕ್ಸ್!

ಬೆಂಗಳೂರು: ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಖಾಸಗಿ ಬಸ್ ಮಾಲೀಕರು ಮತ್ತೊಂದು ಶಾಕ್ ನೀಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ಹಿನ್ನೆಲೆ ಇಂದಿನ ಮಧ್ಯರಾತ್ರಿಯಿಂದಲೇ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ.

ಹೊಸ ದರ ಅನ್ವಯ ಟಿಕೆಟ್ ದರದಲ್ಲಿ ಶೇ.20ರಿಂದ 30ರವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಇದರಿಂದ ಮತ್ತಷ್ಟು ಆರ್ಥಿಕ ಹೊರೆ ಬೀಳಲಿದೆ.

ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಮಾತನಾಡಿ, “ಒಂದು ಬಸ್‌ಗೆ ಪ್ರತಿದಿನ ಕನಿಷ್ಠ 150 ಲೀಟರ್ ಡೀಸೆಲ್ ಅಗತ್ಯವಿರುತ್ತದೆ. ಇಂಧನ ದರದಲ್ಲಿ ಲೀಟರ್‌ಗೆ 3 ರೂ. ಹೆಚ್ಚಳವಾಗಿರುವುದರಿಂದ ದಿನಕ್ಕೆ ಸುಮಾರು 450 ರೂ. ಹೆಚ್ಚುವರಿ ವೆಚ್ಚವಾಗುತ್ತಿದೆ. ಹೀಗಾಗಿ ಟಿಕೆಟ್ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ತೈಲ ಕಂಪನಿಗಳು ಶುಕ್ರವಾರ ಬೆಳಿಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯನ್ನು ಘೋಷಿಸಿದ್ದವು. ಎರಡೂ ಇಂಧನಗಳ ದರ ಲೀಟರ್‌ಗೆ 3 ರೂಪಾಯಿಗೂ ಹೆಚ್ಚು ಏರಿಕೆ ಕಂಡಿತ್ತು.

ಬೆಂಗಳೂರುನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 3.27 ರೂ. ಹಾಗೂ ಡೀಸೆಲ್ ದರ 3.12 ರೂ. ಏರಿಕೆಯಾಗಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ಸಿಎನ್‌ಜಿ ದರವನ್ನೂ ಪ್ರತಿ ಕೆಜಿಗೆ 2 ರೂ. ಹೆಚ್ಚಳ ಮಾಡಲಾಗಿದೆ.

ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ದಿಗ್ಬಂಧನದಿಂದ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ದರ ಏರಿಕೆಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಇದರ ಪರಿಣಾಮ ಸಾರಿಗೆ ಕ್ಷೇತ್ರದ ಮೇಲೂ ನೇರವಾಗಿ ಬಿದ್ದಿದ್ದು, ಪ್ರಯಾಣಿಕರಿಗೆ ಹೆಚ್ಚುವರಿ ವೆಚ್ಚದ ಭಾರ ಎದುರಾಗುವ ಸಾಧ್ಯತೆ ಇದೆ.

27 ಸಾವಿರ ಕೋಟಿ ರೂ. ವಂಚನೆ ಪ್ರಕರಣ: ಅನಿಲ್ ಅಂಬಾನಿ ಕಂಪನಿಗಳ ಮೇಲೆ CBI ದಾಳಿ

ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಎಸಗಿದ ಆರೋಪದ ಹಿನ್ನೆಲೆಯಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. 2015ರಿಂದ 2017ರ ಅವಧಿಯಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ನಲ್ಲಿ ಕಾರ್ಯನಿರ್ವಹಿಸಿದ್ದ ಸಿಇಒ, ಸಿಎಫ್‌ಒ ಮತ್ತು ನಿರ್ದೇಶಕರ ನಿವಾಸಗಳ ಮೇಲೆ ದಾಳಿ ನಡೆದಿದೆ.

ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ನೀಡಿದ ಸರ್ಚ್ ವಾರಂಟ್ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದ್ದು, ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ.

ಅನಿಲ್ ಅಂಬಾನಿ ನೇತೃತ್ವದ ಸಮೂಹ ಸಂಸ್ಥೆಗಳ ವಿರುದ್ಧ ಕಳೆದ ಕೆಲವು ತಿಂಗಳುಗಳಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ವಿವಿಧ ಬ್ಯಾಂಕ್‌ಗಳು ಹಾಗೂ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ನೀಡಿದ ದೂರುಗಳ ಆಧಾರದ ಮೇಲೆ ಈ ತನಿಖೆ ಮುಂದುವರಿದಿದೆ.

ಒಟ್ಟು ವಂಚನೆ ಮೊತ್ತ ಸುಮಾರು 27,337 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದ್ದು, ಈ ಬಹುಕೋಟಿ ಹಗರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ನೇರವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್ 20ರಂದು ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ನ ಜಂಟಿ ಅಧ್ಯಕ್ಷ ಡಿ. ವಿಶ್ವನಾಥ್ ಹಾಗೂ ಉಪಾಧ್ಯಕ್ಷ ಅನಿಲ್ ಕಲ್ಯಾ ಅವರನ್ನು ಸಿಬಿಐ ಬಂಧಿಸಿತ್ತು.

ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಅಕ್ರಮ ಹಾಗೂ ಹಣದ ದುರುಪಯೋಗದಲ್ಲಿ ಇಬ್ಬರ ಪಾತ್ರವಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 31ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದೆ.

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆ ಸಿಹಿ ಸುದ್ದಿ ನೀಡಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯ ಪರಿಣಾಮವಾಗಿ ಪ್ರೀಮಿಯಂ ಬಿಯರ್ ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.

ಮೇ 11ರಿಂದ ಜಾರಿಗೆ ಬಂದಿರುವ ಈ ಹೊಸ ನೀತಿಯಡಿ, ಹೆಚ್ಚಿನ ಪ್ರೀಮಿಯಂ ಮದ್ಯ ಬ್ರಾಂಡ್‌ಗಳ ದರ ಕಡಿಮೆಯಾಗಿದ್ದರೆ, ಸಾಮಾನ್ಯವಾಗಿ ಬಳಸುವ ಕಡಿಮೆ ದರದ ಮದ್ಯಗಳ ಬೆಲೆಯಲ್ಲಿ ಏರಿಕೆ ದಾಖಲಾಗಿದೆ.

ಹೊಸ ನಿಯಮದ ಪ್ರಕಾರ, ಶೇ.5ರಷ್ಟು ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಹಾಗೂ ಲಾಗರ್ ಬಿಯರ್‌ಗಳ ಬೆಲೆ ಶೇ.20ರಿಂದ 25ರವರೆಗೆ ಇಳಿಕೆಯಾಗಿದೆ. ಇದರ ಪರಿಣಾಮವಾಗಿ ಕಿಂಗ್‌ಫಿಶರ್ ಪ್ರೀಮಿಯಂ ಮತ್ತು ಅಲ್ಟ್ರಾ 650 ಎಂಎಲ್ ಬಾಟಲಿಗಳ ಬೆಲೆಯಲ್ಲಿ ಸುಮಾರು 75 ರೂ. ಇಳಿಕೆಯಾಗಿದ್ದು, ಹೈನೆಕೆನ್ ಬಿಯರ್ ಮೇಲೆ 70 ರೂ., ಯುಬಿ ಎಕ್ಸ್‌ಪೋರ್ಟ್ ಮೇಲೆ 25 ರೂ. ಹಾಗೂ ಬಡ್‌ವೈಸರ್ ಪ್ರೀಮಿಯಂ ಮೇಲೆ 20 ರೂ.ವರೆಗೆ ಕಡಿತವಾಗಿದೆ.

ಬಿಯರ್ ಮಾತ್ರವಲ್ಲದೆ, ವಿದೇಶಿ ಬ್ರಾಂಡ್‌ಗಳ ಸ್ಕಾಚ್ ವಿಸ್ಕಿಗಳ ದರದಲ್ಲಿಯೂ ಶೇ.20ರಷ್ಟು ಇಳಿಕೆ ಕಂಡುಬಂದಿದೆ. ಬ್ಲ್ಯಾಕ್ ಲೇಬಲ್ ಮತ್ತು ಶಿವಾಸ್ ರೀಗಲ್ 750 ಎಂಎಲ್ ಬಾಟಲಿಗಳ ಬೆಲೆ 5,190 ರೂ.ಗಳಿಂದ 4,100 ರೂ.ಗೆ ಇಳಿದಿರುವುದು ಪ್ರೀಮಿಯಂ ಮದ್ಯ ಬಳಕೆದಾರರಿಗೆ ಸಂತಸ ತಂದಿದೆ.

ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ ‘ಆಲ್ಕೋಹಾಲ್ ಇನ್ ಬೆವರೇಜ್’ ಆಧಾರಿತ ತೆರಿಗೆ ನೀತಿಯನ್ನು ಜಾರಿಗೊಳಿಸಿರುವ ರಾಜ್ಯವಾಗಿದೆ. ಈ ಹಿಂದೆ ಜಾರಿಯಲ್ಲಿದ್ದ 16 ತೆರಿಗೆ ಸ್ಲ್ಯಾಬ್‌ಗಳನ್ನು ಇದೀಗ 8ಕ್ಕೆ ಇಳಿಸಲಾಗಿದ್ದು, ಸುಮಾರು ಆರು ದಶಕಗಳ ಹಳೆಯ ತೆರಿಗೆ ವ್ಯವಸ್ಥೆಗೆ ತೆರೆ ಎಳೆಯಲಾಗಿದೆ.

ಅಪ್ರಾಪ್ತ ಮಗಳ ಮೇಲೆ ತಂದೆ, ಆತನ ಸ್ನೇಹಿತನಿಂದಲೇ ಎರಡು ವರ್ಷಗಳಿಂದ ನಿರಂತರ ಅತ್ಯಾಚಾರ

ರಾಯಚೂರು: ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಾನವೀಯತೆಯನ್ನು ನಡುಗಿಸುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಆಕೆಯ ತಂದೆ ಹಾಗೂ ಆತನ ಸ್ನೇಹಿತನಿಂದಲೇ ನಿರಂತರವಾಗಿ ಎರಡು ವರ್ಷಗಳ ಕಾಲ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಬಾಲಕಿಯ ತಂದೆ ಅಮರೇಶ್ ಹಾಗೂ ಆತನ ಸ್ನೇಹಿತ ಸೀನು ಬಂಧಿತ ಆರೋಪಿಗಳಾಗಿದ್ದಾರೆ. ಇಬ್ಬರೂ ಸೇರಿ ವ್ಯವಸ್ಥಿತವಾಗಿ ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದರೆಂಬ ಆರೋಪ ದಾಖಲಾಗಿದೆ.

ಘಟನೆ ಬಹಿರಂಗವಾದ ಬಳಿಕ ಬಾಲಕಿಯನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಆಕೆ ನೀಡಿದ ಹೇಳಿಕೆ ಆಧಾರದ ಮೇಲೆ ತನಿಖೆ ಮುಂದುವರಿಸಲಾಗಿದೆ.

ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

ಗದಗ ಪೊಲೀಸರ ಬಿಗ್ ಆಕ್ಷನ್: ಐವರು ಅಪರಾಧಿಗಳಿಗೆ ಗಡಿಪಾರು ಆದೇಶ

ಗದಗ: ಜಿಲ್ಲೆಯಲ್ಲಿನ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗದಗ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ವಿವಿಧ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿದ್ದಾರೆ.

ದವನಪ್ಪ, ದಾವಲಸಾಬ್, ಮುಸ್ತಾಕ್, ಅಭಿಷೇಕ್ ಹಾಗೂ ಸಾಹಿಲ್ ಎಂಬವರ ವಿರುದ್ಧ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರು ಕೊಲೆ ಯತ್ನ, ಹಲ್ಲೆ, ಗಲಭೆ, ಸಾರ್ವಜನಿಕ ಶಾಂತಿ ಭಂಗ, SC/ST ದೌರ್ಜನ್ಯ ಹಾಗೂ ಗಾಂಜಾ ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದರೆಂದು ಆರೋಪಿಸಲಾಗಿದೆ.

ನರಗುಂದದ ದವನಪ್ಪ ವಿರುದ್ಧ 2017ರಿಂದಲೇ ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಗಲಭೆ ಮತ್ತು ಬೆದರಿಕೆ ಪ್ರಕರಣಗಳಲ್ಲಿ ಅವನ ಹೆಸರು ಕೇಳಿಬಂದಿದೆ. ದಾವಲಸಾಬ್ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಗಾಂಜಾ ಸಾಗಾಟ ಹಾಗೂ ಮಾರಾಟ ಪ್ರಕರಣಗಳು ದಾಖಲಾಗಿವೆ.

ಮುಸ್ತಾಕ್ ವಿರುದ್ಧ ಗದಗ ನಗರ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಹಾಗೂ SC/ST ಕಾಯ್ದೆಯಡಿ ಪ್ರಕರಣಗಳು ದಾಖಲಾಗಿದ್ದು, ಅಭಿಷೇಕ್ ಮತ್ತು ಸಾಹಿಲ್ ವಿರುದ್ಧವೂ ಸಾರ್ವಜನಿಕ ಶಾಂತಿ ಭಂಗ ಹಾಗೂ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.

ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ಆರೋಪಿಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂದೆಯೂ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕಠಿಣ ಕ್ರಮ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದು ಮೋದಿ ಕೊಡುಗೆ: ಇಂಧನ ಬೆಲೆ ಏರಿಕೆ ಕುರಿತು ಕೇಂದ್ರದ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, ಇದನ್ನು ‘ಮಿಸ್ಟರ್ ನರೇಂದ್ರ ಮೋದಿ ಅವರ ಕೊಡುಗೆ’ ಎಂದು ವ್ಯಂಗ್ಯವಾಡಿದ್ದಾರೆ.

ಇಂಧನ ದರ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ವಿಫಲ ವಿದೇಶಾಂಗ ನೀತಿಯೇ ಪ್ರಮುಖ ಕಾರಣ ಎಂದು ಆರೋಪಿಸಿದ ಅವರು, ಇತರ ದೇಶಗಳೊಂದಿಗೆ ಸಮರ್ಪಕ ಸಂಬಂಧ ಕಾಪಾಡಿಕೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ಜನರು ತಮ್ಮ ದುಡಿಮೆಯ ಹಣದಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಬೆಲೆ ಏರಿಕೆಯನ್ನು ನಿಯಂತ್ರಿಸಿ ಜನರಿಗೆ ಪರಿಹಾರ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅವರು ದೂರಿದರು.

ಈ ವೇಳೆ ಪ್ರಧಾನಿ ನೀಡಿರುವ ಕೆಲ ಹೇಳಿಕೆಗಳನ್ನು ಉಲ್ಲೇಖಿಸಿದ ಡಿ.ಕೆ. ಶಿವಕುಮಾರ್, ಚಿನ್ನ ಖರೀದಿಸಬೇಡಿ, ಎಣ್ಣೆ ಬಳಸಬೇಡಿ ಎಂದು ಹೇಳುವುದು ವಾಸ್ತವಿಕತೆಯಿಂದ ದೂರವಾದ ಮಾತು. ಮಾಂಗಲ್ಯ ಸರವು ಪ್ರತಿಯೊಬ್ಬರ ಜೀವನದಲ್ಲೂ ಮಹತ್ವದ್ದು. ಅದನ್ನು ಖರೀದಿಸಬೇಡಿ ಎಂದು ಹೇಳುವುದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

ಇದೇ ವೇಳೆ ಬಿಡದಿ ಟೌನ್‌ಶಿಪ್ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಟೀಕೆಗಳಿಗೆ ತಿರುಗೇಟು ನೀಡಿದ ಅವರು, ತಾವು ಬಿಡದಿಗೆ ಭೇಟಿ ನೀಡುವುದಾಗಿ ಸ್ಪಷ್ಟಪಡಿಸಿದರು.

ನಾನು ಬಿಡದಿಗೆ ಹೋಗುತ್ತೇನೆ. ರೈತರು ನನ್ನ ವಿರುದ್ಧ ಘೋಷಣೆ ಕೂಗಬಹುದು, ಕಲ್ಲು ತೂರಾಟ ನಡೆಸಬಹುದು. ಅದಕ್ಕೆ ನಾನು ಹೆದರುವುದಿಲ್ಲ. ಕುಮಾರಸ್ವಾಮಿಯವರು ಈ ಹಿಂದೆ ಆರಂಭಿಸಿದ್ದ ಕೆಲಸವನ್ನೇ ನಾನು ಮುಂದುವರಿಸುತ್ತಿದ್ದೇನೆ ಎಂದು ಹೇಳಿದರು.

ಬಿಡದಿ ಯೋಜನೆ ಕುರಿತು ಚರ್ಚೆಗೆ ದಿನಾಂಕ ನಿಗದಿಪಡಿಸಿದರೆ ತಾವು ಸಿದ್ಧ ಎಂದು ಕುಮಾರಸ್ವಾಮಿಗೆ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು ಹಾಕಿದರು.

ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆ ಜಾರಿ: ಧರ್ಮೇಂದ್ರ ಪ್ರಧಾನ್ ಮಹತ್ವದ ಘೋಷಣೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ ವಿಧಾನದಲ್ಲಿ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಯ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಸ್ವೀಕರಿಸುತ್ತಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿನ ದೋಷಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದ್ದು, ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ಸುರಕ್ಷಿತಗೊಳಿಸುವ ಉದ್ದೇಶದಿಂದ ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಮೇ 7ರಂದು ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ದೂರು ಬಂದಿದ್ದು, ಪರೀಕ್ಷೆಗೆ ಮುನ್ನ ಕೆಲವೆಡೆ ಹಂಚಿಕೆಯಾಗಿದ್ದ ‘ಗೆಸ್ ಪೇಪರ್’ಗಳಲ್ಲಿ ಪರೀಕ್ಷೆಯಲ್ಲಿ ಬಂದ ಹಲವು ಪ್ರಶ್ನೆಗಳು ಇದ್ದವು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವಾಲಯ ತಕ್ಷಣವೇ ತನಿಖೆ ಆರಂಭಿಸಿ, ವಿವಿಧ ರಾಜ್ಯಗಳ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಸಂಗ್ರಹಿಸಿತ್ತು.

ಮೇ 12ರಂದು ‘ಗೆಸ್ ಪೇಪರ್’ ಹೆಸರಿನಲ್ಲಿ ಮೂಲ ಪ್ರಶ್ನೆಪತ್ರಿಕೆಯೇ ಸೋರಿಕೆಯಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೇ 13ರಂದು ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮಗಳ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ವಿದ್ಯಾರ್ಥಿಗಳ ಹಕ್ಕುಗಳಿಗೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಹಲವು ವರ್ಷಗಳಿಂದ ಸಕ್ರಿಯವಾಗಿರುವ ಪರೀಕ್ಷಾ ಮಾಫಿಯಾ ವಿರುದ್ಧ ಕಠಿಣ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

error: Content is protected !!