Home Blog

ತಾಕತ್ತಿದ್ದರೆ ಹಿಂದೂಗಳಿಗೆ ಎಚ್ಚರಿಕೆ ನೀಡಿದಂತೆಯೇ ಮುಸ್ಲಿಮರಿಗೂ ಎಚ್ಚರಿಕೆ ನೀಡಲಿ: ಆರ್.ಅಶೋಕ್

0

ಬೆಂಗಳೂರು: ಗಣೇಶೋತ್ಸವದ ಸಂದರ್ಭದಲ್ಲಿ ಹಿಂದೂಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಕಾಂಗ್ರೆಸ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಿಂದೂ ಮುಖಂಡರಿಗೆ ಎಚ್ಚರಿಕೆ ನೀಡಿದ ರೀತಿಯಲ್ಲೇ ಎಲ್ಲ ಸಮುದಾಯಗಳಿಗೂ ಕಾನೂನು ಒಂದೇ ರೀತಿಯಲ್ಲಿ ಅನ್ವಯವಾಗಬೇಕು ಎಂದು ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌. ಅಶೋಕ್, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ನಿರೀಕ್ಷೆಗಳಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ತಾವು ಭಾವಿಸಿದ್ದೆ. ಆದರೆ ಟಿ. ನರಸೀಪುರ ಠಾಣೆಯ ಇನ್ಸ್‌ಪೆಕ್ಟರ್‌ ಪರವಾಗಿ ಅವರು ಮಾತನಾಡಿರುವುದು ಸರಿಯಲ್ಲ ಎಂದು ಟೀಕಿಸಿದರು.

ಟಿ. ನರಸೀಪುರ ಠಾಣೆಯ ಇನ್ಸ್‌ಪೆಕ್ಟರ್‌ ವಿರುದ್ಧ ಈ ಹಿಂದೆ ದಲಿತರ ಮೇಲೆ ಹಲ್ಲೆ ಹಾಗೂ ಮಹಿಳೆಯೊಬ್ಬರ ಬದುಕಿಗೆ ಸಂಬಂಧಿಸಿದ ಆರೋಪಗಳಿವೆ ಎಂದು ಆರ್‌. ಅಶೋಕ್‌ ಹೇಳಿದರು. ಇಂತಹ ಹಿನ್ನೆಲೆ ಇರುವ ಪೊಲೀಸ್‌ ಅಧಿಕಾರಿಯನ್ನು ಸರ್ಕಾರ ಸಮರ್ಥಿಸಿದರೆ, ಅದು ಪೊಲೀಸರಿಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ಆರೋಪಿಸಿದರು.

ಬಿಜೆಪಿ ನಾಯಕರ ದೇಶಭಕ್ತಿ ಕುರಿತು ಕಾಂಗ್ರೆಸ್‌ ನಾಯಕರು ಪ್ರಶ್ನಿಸುವ ಅಗತ್ಯವಿಲ್ಲ ಎಂದು ಹೇಳಿದ ಆರ್‌. ಅಶೋಕ್‌, ಕಾಂಗ್ರೆಸ್‌ ಪಕ್ಷದ ವಿರುದ್ಧ ಹಲವು ರಾಜಕೀಯ ಆರೋಪಗಳನ್ನು ಮಾಡಿದರು. “ನಮಗೆ ದೇಶಭಕ್ತಿಯ ಪಾಠ ಮಾಡಬೇಕಿಲ್ಲ” ಎಂದು ಹೇಳಿದರು.

ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಸಂಬಂಧಿಸಿದಂತೆ ಕಾನೂನು ರೂಪಿಸಿರುವ ಸರ್ಕಾರ, ಮಸೀದಿಗಳ ಮುಂಭಾಗವೂ ಮೆರವಣಿಗೆ ನಡೆಸದಂತೆ ನಿಯಮ ರೂಪಿಸಲಿ ಎಂದು ಆಗ್ರಹಿಸಿದರು. ಇದೇ ವೇಳೆ ಯಾವುದೇ ಧಾರ್ಮಿಕ ಸ್ಥಳದ ಮುಂದೆ ಮೆರವಣಿಗೆ ಅಥವಾ ಕಾರ್ಯಕ್ರಮ ನಡೆಸುವ ವಿಚಾರದಲ್ಲಿ ಕಾನೂನು ಎಲ್ಲರಿಗೂ ಸಮಾನವಾಗಿ ಅನ್ವಯಿಸಬೇಕು ಎಂದು ಒತ್ತಾಯಿಸಿದರು.

ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟದ ಘಟನೆ ಕುರಿತು ಮಾತನಾಡಿದ ಅವರು, ಕಲ್ಲು ತೂರಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಹಿಂದೂ ಮುಖಂಡರಿಗೆ ನೋಟಿಸ್‌ ನೀಡಲಾಗಿದೆ ಎಂದು ಆರೋಪಿಸಿದರು. ಮದ್ದೂರಿಗೆ ತೆರಳಿ ಹಿಂದೂ ಮುಖಂಡರಿಗೆ ಬೆಂಬಲ ನೀಡುವುದಾಗಿ ಆರ್‌. ಅಶೋಕ್‌ ತಿಳಿಸಿದರು.

ಬಡವರ ನಿವೇಶನ ಯೋಜನೆ: ತಿಂಗಳಾಂತ್ಯದೊಳಗೆ ಭೂಮಿ ಗುರುತಿಸುವಂತೆ ಅಧಿಕಾರಿಗಳಿಗೆ ಪರಮೇಶ್ವರ್ ಸೂಚನೆ

0

ಬೆಂಗಳೂರು: ಬಡವರಿಗೆ ನಿವೇಶನ ನೀಡುವ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಿ, ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಿಂಗಳಾಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ವಿವಿಧ ವಿಷಯಗಳ ಕುರಿತು ಅಗತ್ಯ ಸೂಚನೆಗಳನ್ನು ನೀಡಿದರು.

ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ನಿವೇಶನ ಸಿದ್ಧಪಡಿಸಲು ಅಗತ್ಯವಿರುವ ಭೂಮಿಯನ್ನು ಇನ್ನೂ ಗುರುತಿಸಿಲ್ಲ. ಹೀಗಾಗಿ ತಿಂಗಳಾಂತ್ಯದೊಳಗೆ ಭೂಮಿ ಗುರುತಿಸುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಈ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಭೂಮಿ ಗುರುತಿಸುವ ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಗೆ ಅಗತ್ಯವಿರುವ ತಾಂತ್ರಿಕ ಸಹಕಾರವನ್ನು ಹಿರಿಯ ಅಧಿಕಾರಿಗಳು ನೀಡಲಿದ್ದಾರೆ ಎಂದು ಜಿ. ಪರಮೇಶ್ವರ ತಿಳಿಸಿದರು.

ಇದೇ ವೇಳೆ ಭಾರತ್ ಜೋಡೋ ಯುವ ಸಂಘ ಯೋಜನೆಯ ಅನುಷ್ಠಾನಕ್ಕೂ ಹೆಚ್ಚಿನ ವೇಗ ನೀಡುವಂತೆ ಸೂಚಿಸಿದರು. ಸಂಘಗಳ ನೋಂದಣಿ, ಮೆಂಟರ್‌ಗಳ ನೇಮಕ ಸೇರಿದಂತೆ ಸಂಘಗಳನ್ನು ಆರಂಭಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು. ತಾಂತ್ರಿಕ ಸಮಸ್ಯೆಯಿಂದಾಗಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇದೀಗ ಕೂಡಲೇ ಅರ್ಜಿ ನಮೂನೆಗಳನ್ನು ವಿತರಿಸಿ, ಅರ್ಜಿಗಳನ್ನು ಭರ್ತಿ ಮಾಡಿಸಬೇಕು ಎಂದು ನಿರ್ದೇಶನ ನೀಡಿದರು.

ಭಾರತ್ ಜೋಡೋ ಯುವಕ ಸಂಘವನ್ನು ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಿಂದ ಸರ್ಕಾರ ಮತ್ತು ಅಧಿಕಾರಿಗಳಿಗೆ ಉತ್ತಮ ಹೆಸರು ಬರಲಿದೆ ಎಂದು ಜಿ. ಪರಮೇಶ್ವರ ಹೇಳಿದರು.

ಜಾಸೇವಾ ಅಭಿಯಾನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಅವುಗಳ ವಿಲೇವಾರಿಗೆ ಅಧಿಕಾರಿಗಳು ವೇಗ ನೀಡಬೇಕು ಎಂದು ಸೂಚಿಸಿದರು. ಪಹಣಿ ತಿದ್ದುಪಡಿ, ಪೋಡಿ ಹಾಗೂ ಪಿಂಚಣಿ ಸಮಸ್ಯೆ ಸೇರಿದಂತೆ ವಿವಿಧ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ತಿಳಿಸಿದರು.

ಆರ್‌ಟಿಸಿ ಹಾಗೂ ಪೋಡಿ ಪ್ರಕರಣಗಳ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿದೆ. ಆದರೂ ಅಧಿಕಾರಿಗಳಿಗೆ ಯಾವುದೇ ಗೊಂದಲ ಉಂಟಾದರೆ ಹಿರಿಯ ಅಧಿಕಾರಿಗಳಿಂದ ಅಗತ್ಯ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕಂದಾಯ ಆಯುಕ್ತೆ ಮೀನಾ ನಾಗರಾಜ್, ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ವೆಂಕಟರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಅಕ್ಟೋಬರ್ 17ರ ರಾತ್ರಿ 7:50ಕ್ಕೆ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಸರ್ಕಾರದಿಂದ 2 ಕೋಟಿ ರೂ. ಅನುದಾನ!

0

ಕೊಡಗು/ಮಡಿಕೇರಿ: ದಕ್ಷಿಣ ಭಾರತದ ಜೀವನದಿ ತಾಯಿ ಕಾವೇರಿಯ ತೀರ್ಥೋದ್ಭವ (Cauvery Theerthodbhava) ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪುಣ್ಯ ಕಾಲದ ಮುಹೂರ್ತ ನಿಗದಿಯಾಗಿದೆ. ಮಡಿಕೇರಿ ತಾಲೂಕಿನ ಜನ್ಮಭೂಮಿ ತಲಕಾವೇರಿ ಕ್ಷೇತ್ರದಲ್ಲಿ ಅಕ್ಟೋಬರ್ 17ರ ರಾತ್ರಿ 7:50ಕ್ಕೆ ಕಾವೇರಿ ತೀರ್ಥೋದ್ಭವ ನಡೆಯಲಿದೆ ಎಂದು ಪ್ರಕಟಿಸಲಾಗಿದೆ.

ಮೇಷ ಲಗ್ನದಲ್ಲಿ ತೀರ್ಥೋದ್ಭವ: ಈ ಬಾರಿ ಅತ್ಯಂತ ಶುಭಪ್ರದವಾದ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ಜರುಗಲಿದೆ. ಪವಿತ್ರ ತೀರ್ಥ ರೂಪಿಣಿಯಾಗಿ ತಾಯಿ ಕಾವೇರಿ ಪ್ರತ್ಯಕ್ಷಳಾಗುವ ಈ ದಿವ್ಯ ಕ್ಷಣವನ್ನು ಕಣ್ಣುಂಬಿಕೊಳ್ಳಲು ಹಾಗೂ ಪವಿತ್ರ ತೀರ್ಥ ಪ್ರೋಕ್ಷಣೆ ಪಡೆದುಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ತಲಕಾವೇರಿಯಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ಹಾಗೂ ಭಕ್ತರ ಅನುಕೂಲಕ್ಕಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

ಸರ್ಕಾರದಿಂದ 2 ಕೋಟಿ ರೂಪಾಯಿ ಅನುದಾನ: ಕೊಡಗಿನ ಅಧಿದೇವತೆ ಕಾವೇರಿ ತೀರ್ಥೋದ್ಭವ ಸಂಭ್ರಮಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲು ರಾಜ್ಯ ಸರ್ಕಾರ ಸಾಥ್ ನೀಡಿದೆ. ಅಕ್ಟೋಬರ್ 17ರಂದು ನಡೆಯಲಿರುವ ಈ ಪವಿತ್ರ ಕಾವೇರಿ ತೀರ್ಥೋದ್ಭವ ಆಚರಣೆ ಹಾಗೂ ಸಿದ್ಧತೆಗಳಿಗಾಗಿ ಬರೋಬ್ಬರಿ 2 ಕೋಟಿ ರೂಪಾಯಿ ಅನುದಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ತೀರ್ಥೋದ್ಭವದ ಹಿನ್ನೆಲೆಯಲ್ಲಿ ಇಡೀ ಕೊಡಗು ಜಿಲ್ಲೆಯಾದ್ಯಂತ ಧಾರ್ಮಿಕ ಸಂಭ್ರಮಾಚರಣೆಯ ವಾತಾವರಣ ನೆಲೆಸಿದೆ.

ಪ್ರದೋಷ್ʼಗೆ ಮತ್ತೊಂದು ಸಂಕಷ್ಟ? ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ ಉಲ್ಲೇಖಿಸಿ ‘ಮಾಫಿ ಸಾಕ್ಷಿ ಮಾಡಬೇಡಿ’ ಎಂದ ದರ್ಶನ್!

0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆಗೆ ಸಂಬಂಧಿಸಿದ ಆದೇಶವನ್ನು ತಡೆಹಿಡಿಯುವಂತೆ ಕೋರಿ ನಟ ದರ್ಶನ್ ಪರ ವಕೀಲರು ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇಂದು ಅರ್ಜಿಯ ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ಪ್ರದೋಷ್ ಪರ ವಕೀಲರು ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರ ನಡುವೆ ತೀವ್ರ ವಾದ-ಪ್ರತಿವಾದ ನಡೆಯಿತು.

ದರ್ಶನ್ ಪರ ವಕೀಲರು, ಪ್ರದೋಷ್ ಜೈಲಿನಲ್ಲಿದ್ದ ವೇಳೆ ಅಕ್ರಮವಾಗಿ ಮೊಬೈಲ್ ಫೋನ್ ಬಳಕೆ ಮಾಡಿದ್ದಾನೆ ಎಂದು ಆರೋಪಿಸಿದರು. ಬೇರೊಬ್ಬರ ಹೆಸರಿನಲ್ಲಿ ನಂಬರ್ ನೋಂದಾಯಿಸಿ ತನ್ನ ಪತ್ನಿಗೆ ಕರೆ ಮಾಡಿದ್ದಾನೆ ಎನ್ನಲಾಗಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಕೋರ್ಟ್‌ಗೆ ತಿಳಿಸಿದರು.

ಜೈಲಾಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲೂ ಅಕ್ರಮ ಕರೆ ಮಾಡಿರುವುದು ದೃಢಪಟ್ಟಿದೆ ಎಂದು ದರ್ಶನ್ ಪರ ವಕೀಲರು ವಾದಿಸಿದರು. ಜೈಲಿನಿಂದ ಹೊರಬರಲು ಪ್ರದೋಷ್ ಹಲವರೊಂದಿಗೆ ಸಂಪರ್ಕ ಸಾಧಿಸಿದ್ದಾನೆ ಎನ್ನಲಾಗಿದ್ದು, ಆತನ ಮೇಲೆ ಯಾರಾದರೂ ಒತ್ತಡ ಹೇರಿರುವ ಸಾಧ್ಯತೆಯೂ ಇದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಈ ಪ್ರಕರಣದ ಸಂಪೂರ್ಣ ತನಿಖೆ ಮುಗಿಯುವವರೆಗೆ ಪ್ರದೋಷ್‌ನನ್ನು ಮಾಫಿ ಸಾಕ್ಷಿ ಎಂದು ಪರಿಗಣಿಸಬಾರದು. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡಬೇಕು ಹಾಗೂ ಜೈಲಿನಲ್ಲಿನ ಅಕ್ರಮದ ತನಿಖೆ ಪೂರ್ಣಗೊಂಡ ಬಳಿಕವೇ ಮಾಫಿ ಸಾಕ್ಷಿ ವಿಚಾರದಲ್ಲಿ ಆದೇಶ ಹೊರಡಿಸಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದರು.

ಇದಕ್ಕೆ ಪ್ರತಿಯಾಗಿ ವಿಶೇಷ ಸರ್ಕಾರಿ ಅಭಿಯೋಜಕರು, ಜೈಲಿನಲ್ಲಿ ನಡೆದಿದೆ ಎನ್ನಲಾದ ಘಟನೆ ಹಾಗೂ ಪ್ರದೋಷ್ ಮಾಫಿ ಸಾಕ್ಷಿಯಾಗುವ ವಿಚಾರ ಎರಡು ಪ್ರತ್ಯೇಕ ವಿಷಯಗಳು ಎಂದು ವಾದಿಸಿದರು. ಜೈಲು ಮ್ಯಾನುಯಲ್ ಪ್ರಕಾರ ಖೈದಿಗಳಿಗೆ ಮೂರು ಫೋನ್ ನಂಬರ್‌ಗಳಿಗೆ ಕರೆ ಮಾಡಲು ಅವಕಾಶವಿದೆ. ಆದರೆ ಪ್ರದೋಷ್ ತನ್ನ ಮಿತಿಯನ್ನು ಮೀರಿ ಮತ್ತೊಬ್ಬರ ಹೆಸರಿನಲ್ಲಿ ಪತ್ನಿಯ ನಂಬರ್ ನೋಂದಾಯಿಸಿಕೊಂಡು ಮಾತನಾಡಿದ್ದಾನೆ ಎನ್ನುವುದು ಆರೋಪವಾಗಿದೆ ಎಂದು ತಿಳಿಸಿದರು.

ಹೈಕೋರ್ಟ್ ಈಗಾಗಲೇ ಒಂದು ವಾರದೊಳಗೆ ಆದೇಶ ನೀಡುವಂತೆ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಕಾಲಾವಕಾಶ ನೀಡುವ ಅಗತ್ಯವಿಲ್ಲ. ದರ್ಶನ್ ಪರ ಸಲ್ಲಿಸಿರುವ ಮೆಮೋಗೆ ಕಾನೂನು ಮಾನ್ಯತೆ ಇಲ್ಲ ಹಾಗೂ ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದು ಸರ್ಕಾರಿ ಅಭಿಯೋಜಕರು ವಾದಿಸಿದರು.

ಪ್ರದೋಷ್ ವಿರುದ್ಧದ ಜೈಲು ಅಕ್ರಮದ ಆರೋಪಕ್ಕೂ ಆತ ಮಾಫಿ ಸಾಕ್ಷಿಯಾಗುವುದಕ್ಕೂ ನೇರ ಸಂಬಂಧವಿಲ್ಲ ಎಂದು ವಾದಿಸಿದ ಸರ್ಕಾರಿ ಅಭಿಯೋಜಕರು, ವಿನಯ್ ಕುಲಕರ್ಣಿ ಪ್ರಕರಣದಲ್ಲೂ ಹಳೆಯ ಪ್ರಕರಣಗಳಿದ್ದರೂ ಬಸವರಾಜ್ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿತ್ತು ಎಂದು ಉದಾಹರಣೆ ನೀಡಿದರು. ಹೈಕೋರ್ಟ್ ಆದೇಶದಂತೆ ನ್ಯಾಯಾಲಯ ಮುಂದುವರಿಯಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ ಆರೋಪಿ ಪ್ರದೋಷ್ ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟಿದ್ದಾನೆ. “ಜೈಲು ಅಧಿಕಾರಿಗಳೇ ನನಗೆ ಐಡಿ ಕ್ರಿಯೇಟ್ ಮಾಡಿಕೊಟ್ಟಿದ್ದರು. ನನಗೆ ಯಾವುದೇ ಸಿಸ್ಟಮ್ ಆಕ್ಸೆಸ್ ಇಲ್ಲ. ಮೊದಲು ಲೀಗಲ್ ಎಂದಿದ್ದ ಅಧಿಕಾರಿಗಳೇ ಈಗ ಇಲ್ಲೀಗಲ್ ಎನ್ನುತ್ತಿದ್ದಾರೆ” ಎಂದು ತನ್ನ ಅಳಲು ತೋಡಿಕೊಂಡಿದ್ದಾನೆ.

ಕಳೆದ ಎರಡು-ಮೂರು ದಿನಗಳಿಂದ ತನ್ನನ್ನು ಗುರಿಯಾಗಿಸಿ ಕ್ಯಾಂಟೀನ್ ವ್ಯವಸ್ಥೆ ತೆಗೆದುಹಾಕಲಾಗಿದೆ. ಒಂದು ತಿಂಗಳು ಸೆಲ್‌ನಲ್ಲಿ ಇರಬೇಕು ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಬೆದರಿಸಲಾಗುತ್ತಿದೆ ಎಂದು ಪ್ರದೋಷ್ ನ್ಯಾಯಾಧೀಶರ ಮುಂದೆ ಹೇಳಿಕೊಂಡಿದ್ದಾನೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆ ಹಾಗೂ ಜೈಲಿನಲ್ಲಿನ ಅಕ್ರಮ ಮೊಬೈಲ್ ಬಳಕೆ ಆರೋಪದ ವಿಚಾರಗಳು ಇದೀಗ ನ್ಯಾಯಾಲಯದ ಮುಂದಿನ ವಿಚಾರಣೆಯಲ್ಲಿ ಮಹತ್ವ ಪಡೆದುಕೊಂಡಿವೆ.

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

0

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.

ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಹತ್ಯೆಯಾದವರು. ಘಟನೆಯಲ್ಲಿ ರುದ್ರಪ್ಪ ಅವರ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರುದ್ರಪ್ಪ ಹಾಗೂ ಅವರ ಸಹೋದರರ ನಡುವೆ ಆಸ್ತಿ ಹಂಚಿಕೆ ವಿಚಾರವಾಗಿ ಹಲವು ದಿನಗಳಿಂದ ವಿವಾದವಿತ್ತು ಎನ್ನಲಾಗಿದೆ. 38 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಮೂವರು ಸಹೋದರರ ನಡುವೆ ವ್ಯಾಜ್ಯ ನಡೆದಿದ್ದು, ಆಸ್ತಿಯನ್ನು ಮೂವರಿಗೆ ಹಂಚಿಕೆ ಮಾಡುವಂತೆ ನ್ಯಾಯಾಲಯ ಆದೇಶಿಸಿತ್ತು ಎನ್ನಲಾಗಿದೆ.

ಈ ನಡುವೆ ರುದ್ರಪ್ಪ ಅವರಿಗೆ ಬಂದಿದ್ದ ಜಮೀನನ್ನು ಅವರು ಈಗಾಗಲೇ ಮಾರಾಟ ಮಾಡಿದ್ದರು ಎನ್ನಲಾಗಿದ್ದು, ಉಳಿದ ಜಮೀನಿನಲ್ಲೂ ತಮಗೆ ಪಾಲು ಬೇಕೆಂದು ಅವರು ಒತ್ತಾಯಿಸಿದ್ದರು ಎನ್ನಲಾಗಿದೆ. ರುದ್ರಪ್ಪ ಅವರ ಹೆಸರಿನಲ್ಲಿ ಆಸ್ತಿ ಇರುವುದು ಕೂಡ ಕುಟುಂಬದೊಳಗಿನ ಜಗಳಕ್ಕೆ ಕಾರಣವಾಗಿತ್ತು ಎಂದು ಹೇಳಲಾಗಿದೆ.

ಇಂದು ಜಮೀನಿನ ದಾಖಲೆ ಮಾಡಿಸಲು ರುದ್ರಪ್ಪ ಗ್ರಾಮ ಪಂಚಾಯಿತಿಗೆ ಬಂದಿದ್ದರು. ಅವರು ಧಾರವಾಡದಿಂದ ಬಾಡಿಗೆ ಕಾರಿನಲ್ಲಿ ಗ್ರಾಮಕ್ಕೆ ಬಂದಿರುವ ವಿಚಾರ ತಿಳಿದ ಬಳಿಕ, ಅವರ ಸಹೋದರರಾದ ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಸಂಗಪ್ಪ ಅವರ ಪುತ್ರ ಮಡಿವಾಳಪ್ಪ ಕುಂದರಗಿ ಸೇರಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಗ್ರಾಮ ಪಂಚಾಯಿತಿ ಆವರಣದಲ್ಲೇ ರುದ್ರಪ್ಪ ಅವರ ಮೇಲೆ ಕೊಡಲಿ, ಕುಡಗೋಲು ಸೇರಿದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಈ ವೇಳೆ ತಂದೆಯನ್ನು ರಕ್ಷಿಸಲು ಮುಂದಾದ ಪುತ್ರಿ ಶಶಿಕಲಾ ಅವರ ಮೇಲೂ ದಾಳಿ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ತಂದೆ-ಮಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬದ ಆಸ್ತಿ ವಿವಾದವೇ ಹತ್ಯೆಗೆ ಕಾರಣವೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸತೀಶ್ ಜಾರಕಿಹೊಳಿ ತವರು ಜಿಲ್ಲೆ ಬೆಳಗಾವಿಗೆ ಅಮಿತ್ ಶಾ ಎಂಟ್ರಿ! KLE ಆಸ್ಪತ್ರೆ ಉದ್ಘಾಟನೆ

0

ಬೆಳಗಾವಿ/ಧಾರವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 18 ಮತ್ತು 19ರಂದು ಕರ್ನಾಟಕಕ್ಕೆ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ದಾಳಿ ನಡೆದಿರುವ ಬೆನ್ನಲ್ಲೇ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಸೆಪ್ಟೆಂಬರ್ 18ರಂದು ರಾತ್ರಿ 10 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರುವ ಅಮಿತ್ ಶಾ, ನಗರದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೆಪ್ಟೆಂಬರ್ 19ರಂದು ಬೆಳಗ್ಗೆ ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್‌ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆಎಲ್‌ಇ ಸಂಸ್ಥೆಯ 1,500 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ಹಾಗೂ ನೂತನ ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಬಳಿಕ ಸೆಪ್ಟೆಂಬರ್ 19ರ ಸಂಜೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಇಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಒಡೆತನದ ‘ಬೀರೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ’ಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಇನ್ನು ಸತೀಶ್ ಜಾರಕಿಹೊಳಿ ಅವರ ತವರು ಜಿಲ್ಲೆಯಾದ ಬೆಳಗಾವಿಗೆ ಅಮಿತ್ ಶಾ ಭೇಟಿ ನೀಡುತ್ತಿರುವುದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರು ಹಾಗೂ ಜೊಲ್ಲೆ ಕುಟುಂಬ ಒಟ್ಟಾಗಿ ಚುನಾವಣೆ ಎದುರಿಸಿದ್ದವು. ಜಾರಕಿಹೊಳಿ ಸಹೋದರರ ಬೆಂಬಲದಿಂದಲೇ ಅಣ್ಣಾಸಾಹೇಬ್ ಜೊಲ್ಲೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದರು ಎಂಬುದು ಗಮನಾರ್ಹ.

ಇದೀಗ ಸತೀಶ್ ಜಾರಕಿಹೊಳಿ ವಿರುದ್ಧದ ಇ.ಡಿ. ತನಿಖೆಯ ವಿಚಾರ ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಅಮಿತ್ ಶಾ ಚಿಕ್ಕೋಡಿಗೆ ಭೇಟಿ ನೀಡುತ್ತಿರುವುದು ಹಲವು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಆದರೆ, ಅವರ ಪ್ರವಾಸದ ಅಧಿಕೃತ ಕಾರ್ಯಕ್ರಮಗಳಲ್ಲಿ ಆಸ್ಪತ್ರೆ ಹಾಗೂ ಸಹಕಾರಿ ಸಂಸ್ಥೆ ಕಟ್ಟಡ ಉದ್ಘಾಟನೆ ಪ್ರಮುಖವಾಗಿ ನಿಗದಿಯಾಗಿದೆ.

NEET ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ: ತನಿಖೆಗೆ 5 ಸದಸ್ಯರ ಸಮಿತಿಗೆ ಸುಪ್ರೀಂ ಕೋರ್ಟ್ ಸೂಚನೆ

0

ನವದೆಹಲಿ: ಜಂತರ್ ಮಂತರ್‌ನಲ್ಲಿ ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಘರ್ಷಣೆ ಹಾಗೂ ಪೊಲೀಸ್ ಕ್ರಮದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಪೆಲೆಟ್ ಗನ್ ಬಳಕೆ, ಮಹಿಳಾ ಪ್ರತಿಭಟನಾಕಾರರ ಮೇಲಿನ ಹಿಂಸಾಚಾರ ಅಥವಾ ಕಿರುಕುಳ, ಪೊಲೀಸ್ ಸಿಬ್ಬಂದಿಗೆ ಉಂಟಾದ ಗಾಯಗಳು ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿಯಾದ ಆರೋಪಗಳ ಕುರಿತು ತನಿಖೆ ನಡೆಸುವಂತೆ ಐವರು ಸದಸ್ಯರ ಉನ್ನತ ಮಟ್ಟದ ತನಿಖಾ ಸಮಿತಿಗೆ ನ್ಯಾಯಾಲಯ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೊಹನಾ ಅವರಿದ್ದ ತ್ರಿಸದಸ್ಯ ಪೀಠ ಈ ನಿರ್ದೇಶನ ನೀಡಿದೆ. ಪ್ರತಿಭಟನಾಕಾರರು ಹಾಗೂ ಪೊಲೀಸರ ಕಡೆಯಿಂದ ಪರಸ್ಪರ ವಿಭಿನ್ನ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ನ್ಯಾಯಾಲಯ ಈ ಹಿಂದೆ ಅಭಿಪ್ರಾಯಪಟ್ಟಿತ್ತು.

ತನಿಖೆಯ ಆರಂಭಿಕ ಹಂತದಲ್ಲಿ ನಾಲ್ಕು ಪ್ರಮುಖ ಅಂಶಗಳ ಮೇಲೆ ಗಮನಹರಿಸುವಂತೆ ಸಮಿತಿಗೆ ಸೂಚಿಸಲಾಗಿದೆ. ಪ್ರತಿಭಟನಾಕಾರರ ವಿರುದ್ಧ ಪೆಲೆಟ್ ಗನ್ ಬಳಸಲಾಗಿತ್ತೇ? ಮಹಿಳಾ ಪ್ರತಿಭಟನಾಕಾರರ ಮೇಲೆ ನಿರ್ದಿಷ್ಟವಾಗಿ ಹಿಂಸಾಚಾರ, ಕಿರುಕುಳ ಅಥವಾ ದೌರ್ಜನ್ಯ ನಡೆದಿತ್ತೇ? ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಗೆ ಉಂಟಾದ ಗಾಯಗಳ ವಾಸ್ತವಾಂಶವೇನು? ಪ್ರತಿಭಟನಾಕಾರರು ಅಥವಾ ಭದ್ರತಾ ಸಿಬ್ಬಂದಿಯಿಂದ ಅತಿಯಾದ ಹಿಂಸಾಚಾರ ನಡೆದಿತ್ತೇ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿಯಾಗಿತ್ತೇ ಎಂಬುದನ್ನು ಸಮಿತಿ ಪರಿಶೀಲಿಸಲಿದೆ.

ಈ ಐವರು ಸದಸ್ಯರ ಉನ್ನತ ಮಟ್ಟದ ತನಿಖಾ ಸಮಿತಿಗೆ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿ ಅಧ್ಯಕ್ಷರಾಗಿದ್ದಾರೆ. ಮಾಜಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರವಿಶಂಕರ್ ಝಾ, ಮಾಜಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಶಾಲಿಂದರ್ ಕೌರ್, ಮಾಜಿ ಸಿಬಿಐ ನಿರ್ದೇಶಕ ರಿಷಿ ಕುಮಾರ್ ಶುಕ್ಲಾ ಹಾಗೂ ನಿವೃತ್ತ ಮೇಘಾಲಯ ಡಿಜಿಪಿ ಎಲ್.ಆರ್. ಬಿಷ್ಣೋಯ್ ಸಮಿತಿಯ ಇತರ ಸದಸ್ಯರಾಗಿದ್ದಾರೆ.

ಜುಲೈ 20ರಂದು ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ನಡೆದ ಪ್ರತಿಭಟನೆ ವೇಳೆ ಪೊಲೀಸರು ಅತಿಯಾದ ಬಲಪ್ರಯೋಗ ಮಾಡಿದ್ದಾರೆ ಎಂದು ಪ್ರತಿಭಟನಾಕಾರರ ಪರ ವಾದಿಸಲಾಗಿತ್ತು. ಮತ್ತೊಂದೆಡೆ, ಪ್ರತಿಭಟನಾಕಾರರಲ್ಲಿದ್ದ ಕೆಲವು ವ್ಯಕ್ತಿಗಳು ಹಿಂಸಾಚಾರ ನಡೆಸಿದ್ದು, ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಪ್ರತಿವಾದ ಕೇಳಿಬಂದಿತ್ತು. ಈ ಎರಡೂ ಆರೋಪಗಳನ್ನು ಸಮಿತಿ ಪರಿಶೀಲಿಸಲಿದೆ.

ತನಿಖೆ ವೇಳೆ ಪ್ರಮುಖ ಸಾಕ್ಷಿಗಳ ಗೌಪ್ಯತೆ ಹಾಗೂ ಸುರಕ್ಷತೆಯನ್ನು ಕಾಪಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ವಿಶೇಷವಾಗಿ ದುರ್ಬಲ ಸ್ಥಿತಿಯಲ್ಲಿರುವ ಸಾಕ್ಷಿಗಳು ಹಾಗೂ ಮಹಿಳಾ ಪ್ರತಿಭಟನಾಕಾರರ ಮಾಹಿತಿಯನ್ನು ಸೂಕ್ಷ್ಮವಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಲಾಗಿದೆ.

ಅಗತ್ಯವಿದ್ದರೆ ಸಾಕ್ಷಿಗಳು ಹಾಗೂ ಇತರ ಸಂಬಂಧಪಟ್ಟವರು ತಮ್ಮ ಹೇಳಿಕೆಗಳು ಮತ್ತು ದಾಖಲೆಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಪ್ರತ್ಯೇಕ ಪೋರ್ಟಲ್ ವ್ಯವಸ್ಥೆ ರೂಪಿಸುವ ಸಾಧ್ಯತೆಯನ್ನೂ ನ್ಯಾಯಾಲಯ ಸೂಚಿಸಿದೆ.

ಈ ಮೂಲಕ ಜುಲೈ 20ರ ಪ್ರತಿಭಟನೆಗೆ ಸಂಬಂಧಿಸಿದ ಪೊಲೀಸ್ ಕ್ರಮ, ಪ್ರತಿಭಟನಾಕಾರರ ವರ್ತನೆ ಹಾಗೂ ಮಹಿಳಾ ಪ್ರತಿಭಟನಾಕಾರರ ಮೇಲಿನ ಆರೋಪಗಳ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಮಿತಿಗೆ ನಿರ್ದಿಷ್ಟ ಹೊಣೆಗಾರಿಕೆ ನೀಡಿದೆ.

ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಸಂಭ್ರಮ; ಮೊದಲ ದಿನವೇ 1.84 ಲಕ್ಷಕ್ಕೂ ಹೆಚ್ಚು ಗಣಪತಿ ಮೂರ್ತಿಗಳ ವಿಸರ್ಜನೆ

0

ಬೆಂಗಳೂರು: ನಗರದಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮುಗಿಲುಮುಟ್ಟಿದ್ದು, ಉತ್ಸವದ ಮೊದಲ ದಿನವೇ ಬೆಂಗಳೂರಿನಾದ್ಯಂತ ಬರೋಬ್ಬರಿ 1,84,628 ಗಣಪತಿ ಮೂರ್ತಿಗಳನ್ನು ಭಕ್ತಿಯಿಂದ ವಿಸರ್ಜನೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳಲ್ಲಿ ಪರಿಸರ ಸ್ನೇಹಿ ಹಾಗೂ ಸುರಕ್ಷಿತ ವಿಸರ್ಜನೆಗಾಗಿ ಕೈಗೊಂಡಿದ್ದ ಮುನ್ನೆಚ್ಚರಿಕಾ ಕ್ರಮಗಳು ಯಶಸ್ವಿಯಾಗಿವೆ ಎಂದು ಜಿಬಿಎ ತಿಳಿಸಿದೆ.

ಜಿಬಿಎ ಬಿಡುಗಡೆ ಮಾಡಿರುವ ಅಧಿಕೃತ ದತ್ತಾಂಶದ ಪ್ರಕಾರ, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು 1,20,079 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ಇನ್ನು ಸೆಂಟ್ರಲ್ ವಲಯದಲ್ಲಿ 28,860, ಉತ್ತರ ವಲಯದಲ್ಲಿ 16,857, ದಕ್ಷಿಣ ವಲಯದಲ್ಲಿ 10,372 ಹಾಗೂ ಪೂರ್ವ ವಲಯ ಪಾಲಿಕೆ ವ್ಯಾಪ್ತಿಯಲ್ಲಿ 8,460 ಗಣಪತಿ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.

ಗಣೇಶ ಮೂರ್ತಿಗಳ ವಿಸರ್ಜನೆ ಸುಗಮವಾಗಿ ನಡೆಯುವಂತೆ ಜಿಬಿಎ ವ್ಯಾಪ್ತಿಯ 42 ಪ್ರಮುಖ ಕೆರೆಗಳ ಆವರಣದಲ್ಲಿ ತಾತ್ಕಾಲಿಕ ಹಾಗೂ ಶಾಶ್ವತ ಕಲ್ಯಾಣಿಗಳನ್ನು ನಿರ್ಮಿಸಲಾಗಿತ್ತು. ಇದರ ಜೊತೆಗೆ ಪ್ರತಿಯೊಂದು ವಾರ್ಡ್ ಮಟ್ಟದಲ್ಲೂ 659 ಸಂಚಾರಿ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಲಾಗಿತ್ತು.

ಸಾರ್ವಜನಿಕರು ಹಾಗೂ ಸಾರ್ವಜನಿಕ ಗಣೇಶ ಮಂಡಳಿಗಳ ಅನುಕೂಲಕ್ಕಾಗಿ ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 122 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿತ್ತು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅಗತ್ಯ ಅನುಮತಿಗಳನ್ನು ತ್ವರಿತವಾಗಿ ನೀಡಲು ಈ ಕೇಂದ್ರಗಳ ಮೂಲಕ ಕ್ರಮ ಕೈಗೊಳ್ಳಲಾಗಿತ್ತು.

ಇನ್ನು ವಿಸರ್ಜನಾ ಸ್ಥಳಗಳು ಹಾಗೂ ಸಂಚಾರಿ ಟ್ಯಾಂಕರ್‌ಗಳ ವಿವರಗಳನ್ನು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ಜಿಬಿಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲೂ ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಿತ್ತು.

ಪರಿಸರ ಸಂರಕ್ಷಣೆಗೆ ಒತ್ತು ನೀಡಿರುವ ಜಿಬಿಎ, ಸಾರ್ವಜನಿಕರಲ್ಲಿ ಮಣ್ಣಿನ ಗಣಪತಿ ಮೂರ್ತಿಗಳ ಬಳಕೆಯ ಬಗ್ಗೆ ಜಾಗೃತಿ ಮೂಡಿಸಿ, ಪರಿಸರ ಸ್ನೇಹಿ ಮೂರ್ತಿಗಳ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ (ಪಿಒಪಿ) ಮೂರ್ತಿಗಳ ಮಾರಾಟ ನಿಯಂತ್ರಣಕ್ಕೂ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.

ಕೆರೆಗಳ ನೀರು ಕಲುಷಿತಗೊಳ್ಳದಂತೆ ತಡೆಯಲು ಮೊಬೈಲ್ ಟ್ಯಾಂಕರ್‌ಗಳ ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮುಂಬರುವ ದಿನಗಳಲ್ಲೂ ಗಣೇಶ ಮೂರ್ತಿಗಳ ವಿಸರ್ಜನೆ ಯಾವುದೇ ಅಡಚಣೆಯಿಲ್ಲದೆ ನಡೆಯುವಂತೆ ಜಿಬಿಎ ಹಾಗೂ ಪೊಲೀಸರು ಅಗತ್ಯ ಬಂದೋಬಸ್ತ್ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ನೂತನವಾಗಿ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.

ನಾಳೆಯಿಂದ 3 ದಿನಗಳ ಕಾಲ ವಿವಿಧ ಜಿಲ್ಲೆಗಳ ಪ್ರವಾಸದ ಬಗ್ಗೆ ಕೇಳಿದಾಗ, “ಇಂದಿನಿಂದ (ಬುಧವಾರ) ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಪ್ರವಾಸ ಮಾಡಲಿದ್ದೇನೆ. ವಿಧಾನ ಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತಂತೆ ಚರ್ಚೆ ನಡೆಯಲಿದೆ” ಎಂದರು.

ವಿಚ್ಛೇದನದ ಬಳಿಕವೂ ಮಕ್ಕಳ ಜವಾಬ್ದಾರಿ ಇಬ್ಬರದ್ದೇ.. ಅಪರೂಪದ ಡಿವೋರ್ಸ್ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ

0

ಬೆಂಗಳೂರು: ಅಪರೂಪದ ವಿಚ್ಛೇದನ ಪ್ರಕರಣವೊಂದರಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದಂಪತಿಯ ವಿವಾಹವನ್ನು ವಿಚ್ಛೇದನಗೊಳಿಸಿರುವ ನ್ಯಾಯಾಲಯ, ಪತ್ನಿಗೆ ₹50 ಲಕ್ಷ ಶಾಶ್ವತ ಜೀವನಾಂಶ ನೀಡುವಂತೆ ಪತಿಗೆ ಸೂಚಿಸಿದೆ. ಜೊತೆಗೆ, ಇಬ್ಬರು ಅಪ್ರಾಪ್ತ ಮಕ್ಕಳ ಪೋಷಕರಾಗಿ ಇಬ್ಬರೂ ತಮ್ಮ ಜವಾಬ್ದಾರಿಯನ್ನು ಮುಂದುವರಿಸಬೇಕು ಎಂದು ನಿರ್ದೇಶಿಸಿದೆ.

ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ಎಚ್. ಶಾಂತಿ ಭೂಷಣ್ ಅವರಿದ್ದ ವಿಭಾಗೀಯ ಪೀಠವು ಮಂಗಳೂರಿನ 40 ವರ್ಷದ ವ್ಯಕ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ಪತ್ನಿಗೆ ₹2 ಕೋಟಿ ಶಾಶ್ವತ ಜೀವನಾಂಶ ಪಾವತಿಸುವಂತೆ ಜೂನ್ 20, 2026ರಂದು ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಕಾಲೇಜು ಸಹಪಾಠಿಗಳಾಗಿದ್ದ ದಂಪತಿ 2011ರಲ್ಲಿ ಮಂಗಳೂರಿನಲ್ಲಿ ವಿವಾಹವಾಗಿದ್ದರು. ಬಳಿಕ ಬ್ರಿಟನ್‌ಗೆ ತೆರಳಿದ್ದ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾದ ಹಿನ್ನೆಲೆಯಲ್ಲಿ ಪತ್ನಿ 2021ರಲ್ಲಿ ಪತಿಯಿಂದ ದೂರವಾಗಿದ್ದರು. ಬಳಿಕ ಭಾರತದಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಲಾಗಿತ್ತು.

ಪತ್ನಿ ವೈದ್ಯೆಯಾಗಿರುವುದು ಹಾಗೂ ಅವರ ಆರ್ಥಿಕ ಸ್ಥಿತಿಗತಿಗಳನ್ನು ಪರಿಗಣಿಸಿದ ಹೈಕೋರ್ಟ್, ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿದ್ದ ₹2 ಕೋಟಿ ಶಾಶ್ವತ ಜೀವನಾಂಶವನ್ನು ₹50 ಲಕ್ಷಕ್ಕೆ ಇಳಿಸಿದೆ.

ಆದರೆ, ಮಕ್ಕಳ ನಿರ್ವಹಣೆ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಹಾಗೂ ಇತರ ಅಗತ್ಯ ವೆಚ್ಚಗಳಿಗಾಗಿ ಪತಿ ಪ್ರತಿ ಮಗುವಿಗೆ ತಿಂಗಳಿಗೆ ₹25 ಸಾವಿರ ಪಾವತಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಪ್ರತಿ ತಿಂಗಳ 10ನೇ ತಾರೀಖಿನೊಳಗೆ ಈ ಮೊತ್ತವನ್ನು ಪಾವತಿಸಬೇಕು ಎಂದು ನಿರ್ದೇಶಿಸಿದೆ.

ಅಲ್ಲದೆ, ಪ್ರತಿ ವರ್ಷ ಪೂರ್ಣಗೊಂಡ ಬಳಿಕ ಮಕ್ಕಳ ಮಾಸಿಕ ನಿರ್ವಹಣಾ ಮೊತ್ತವನ್ನು ಪ್ರತಿ ಮಗುವಿಗೆ ₹5 ಸಾವಿರದಂತೆ ಹೆಚ್ಚಿಸಬೇಕು. ಮಕ್ಕಳು ಪ್ರಾಪ್ತ ವಯಸ್ಸಿಗೆ ತಲುಪುವವರೆಗೆ ಈ ಹೆಚ್ಚಳ ಮುಂದುವರಿಯಬೇಕು ಎಂದು ನ್ಯಾಯಾಲಯ ತಿಳಿಸಿದೆ.

ವಿವಾಹ ಸಂಬಂಧ ಅಂತ್ಯಗೊಂಡರೂ ಮಕ್ಕಳ ಮೇಲಿನ ಪೋಷಕರ ಜವಾಬ್ದಾರಿಗಳು ಮುಂದುವರಿಯುತ್ತವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮಕ್ಕಳ ವಿವಾಹದ ಸಂದರ್ಭದಲ್ಲಿ ತನ್ನ ಆರ್ಥಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಾಹ ವೆಚ್ಚಕ್ಕೆ ಪ್ರೀತಿ ಮತ್ತು ವಾತ್ಸಲ್ಯದಿಂದ ಕೊಡುಗೆ ನೀಡಬೇಕು ಎಂದು ಪತಿಗೆ ಸೂಚಿಸಿದೆ.

ಇದೇ ವೇಳೆ ಮಕ್ಕಳ ಹಿತದೃಷ್ಟಿಯಿಂದ ಹಲವು ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಮಕ್ಕಳ ಎದುರು ಅಥವಾ ಮಕ್ಕಳು ಕೇಳುವಂತೆ ದಂಪತಿ ಪರಸ್ಪರರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡಬಾರದು. ಮಕ್ಕಳು ತಂದೆ-ತಾಯಿ ಇಬ್ಬರೊಂದಿಗೂ ಪ್ರೀತಿಯ, ಆರೋಗ್ಯಕರ ಹಾಗೂ ಯಾವುದೇ ಅಡೆತಡೆಯಿಲ್ಲದ ಸಂಬಂಧ ಹೊಂದುವಂತೆ ಇಬ್ಬರೂ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಪತ್ನಿಯು ಪತಿಯ ಮುಂಚಿತ ಮಾಹಿತಿ ನೀಡದೆ ಹಾಗೂ ನ್ಯಾಯಾಲಯದ ಅನುಮತಿ ಪಡೆಯದೆ ಮಕ್ಕಳನ್ನು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಭಾರತದ ಹೊರಗೆ ಸ್ಥಳಾಂತರಿಸಬಾರದು ಎಂದು ನ್ಯಾಯಾಲಯ ಸೂಚಿಸಿದೆ.

ಇನ್ನು ಮಕ್ಕಳನ್ನು ಭೇಟಿಯಾಗಲು ಪತಿಗೆ ಅವಕಾಶ ಕಲ್ಪಿಸಿರುವ ನ್ಯಾಯಾಲಯ, ಪ್ರತಿ ಶನಿವಾರ ಮತ್ತು ಭಾನುವಾರ ತಲಾ ಮೂರು ಗಂಟೆಗಳ ಕಾಲ ತಾಯಿಯ ಸಮ್ಮುಖದಲ್ಲಿ ಮಕ್ಕಳನ್ನು ಭೇಟಿ ಮಾಡಬಹುದು ಎಂದು ತಿಳಿಸಿದೆ. ಇದರ ಜೊತೆಗೆ ಆಡಿಯೋ ಅಥವಾ ವಿಡಿಯೋ ಕಾಲ್ ಮೂಲಕವೂ ಮಕ್ಕಳೊಂದಿಗೆ ಸಂಪರ್ಕದಲ್ಲಿರಲು ಪತಿಗೆ ಅವಕಾಶ ನೀಡಿದೆ.

ಹೀಗೆ, ದಂಪತಿಯ ವೈವಾಹಿಕ ಸಂಬಂಧವನ್ನು ಅಂತ್ಯಗೊಳಿಸಿದರೂ, ಮಕ್ಕಳ ಹಿತಾಸಕ್ತಿ ಮತ್ತು ಇಬ್ಬರೂ ಪೋಷಕರ ಜವಾಬ್ದಾರಿಯನ್ನು ಮುಂದುವರಿಸುವುದಕ್ಕೆ ಹೈಕೋರ್ಟ್ ತನ್ನ ಆದೇಶದಲ್ಲಿ ವಿಶೇಷ ಒತ್ತು ನೀಡಿದೆ.