Home Blog

ಕ್ಯಾಲಿಫೋರ್ನಿಯಾದಲ್ಲಿ ದುರಂತ ಅಂತ್ಯ: ಏಕಾಂಗಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

0

ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದ ಬಿಗ್ ಪೈನ್ ಲೇಕ್ಸ್ ಪ್ರದೇಶದಲ್ಲಿ ಏಕಾಂಗಿ ಪಾದಯಾತ್ರೆಗೆ ತೆರಳಿ ಕಾಣೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಮೃತರನ್ನು ವಿಕ್ರಮ್ ಮುಬಾಯಿ ಎಂದು ಗುರುತಿಸಲಾಗಿದ್ದು, ಅವರು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಾಂತಾ ಬಾರ್ಬರಾಯ ರಾಸಾಯನಿಕ ಎಂಜಿನಿಯರಿಂಗ್ ವಿಭಾಗದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದರು.

ವಾರಾಂತ್ಯದಲ್ಲಿ ಪಾದಯಾತ್ರೆಗೆ ತೆರಳಿದ್ದ ವಿಕ್ರಮ್ ಅವರು ಕೊನೆಯದಾಗಿ ಆಗಸ್ಟ್ 1ರಂದು ರಾತ್ರಿ ಸುಮಾರು 8.30ಕ್ಕೆ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದರು. ಬಳಿಕ ನಿಗದಿತ ಸಮಯಕ್ಕೆ ಮನೆಗೆ ವಾಪಸ್ ಆಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು.

ಮಾಹಿತಿ ಪಡೆದ ಕ್ಯಾಲಿಫೋರ್ನಿಯಾ ಹೆದ್ದಾರಿ ಪೆಟ್ರೋಲ್ ಹಾಗೂ ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಆಗಸ್ಟ್ 3ರಂದು ಸಂಜೆ ಇನ್ಯೊ ರಾಷ್ಟ್ರೀಯ ಅರಣ್ಯ ಪ್ರದೇಶದಲ್ಲಿ ವಿಕ್ರಮ್ ಅವರ ಮೃತದೇಹ ಪತ್ತೆಯಾಗಿದೆ.

ವಿಕ್ರಮ್ ಅವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ತನಿಖಾಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಕಡೆಯ ಆಷಾಢ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ದರ್ಶನ ನೀಡಿದ ತಾಯಿ ಚಾಮುಂಡಿ!

ಮೈಸೂರು: ಆಷಾಢ ಮಾಸದ ಕಡೆಯ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ನೆರವೇರಿಸಲಾಗಿದೆ.

ಇಂದು ತಾಯಿ ಚಾಮುಂಡೇಶ್ವರಿ ಲಕ್ಷ್ಮಿ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ನೀಡುತ್ತಿದ್ದಾಳೆ.

ಕಡೆಯ ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಬ್ರಾಹ್ಮಿ ಮುಹೂರ್ತದಿಂದಲೇ ಭಕ್ತರು ರಸ್ತೆ ಮಾರ್ಗ ಹಾಗೂ ಮೆಟ್ಟಿಲುಗಳ ಮೂಲಕ ಬೆಟ್ಟ ಏರಿ ತಾಯಿಯ ದರ್ಶನ ಪಡೆಯುತ್ತಿದ್ದಾರೆ.

ದೇವಾಲಯದ ಒಳಾಂಗಣವನ್ನು ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ದೇವಸ್ಥಾನದ ಆವರಣದಲ್ಲಿ ಕರ್ಪೂರ, ಗಂಧ ಹಾಗೂ ಧೂಪದ ಪರಿಮಳದ ನಡುವೆ ಬೆಳಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಿದ್ದಾರೆ.

ಆಷಾಢ ಮಾಸದ ಮೊದಲ ಶುಕ್ರವಾರದಂದು ತಾಯಿಗೆ ನಾಗಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ಎರಡನೇ ಹಾಗೂ ಮೂರನೇ ಶುಕ್ರವಾರದಂದು ಲಕ್ಷ್ಮಿ ಅಲಂಕಾರ ನೆರವೇರಿಸಲಾಗಿತ್ತು. ಇದೀಗ ಕಡೆಯ ಶುಕ್ರವಾರವೂ ಲಕ್ಷ್ಮಿ ದೇವಿಯ ಅಲಂಕಾರದಲ್ಲಿ ಚಾಮುಂಡೇಶ್ವರಿ ಕಂಗೊಳಿಸುತ್ತಿದ್ದಾಳೆ.

ಭಕ್ತರ ಅನುಕೂಲಕ್ಕಾಗಿ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿದ್ದು, ₹2 ಸಾವಿರ ಮೌಲ್ಯದ ಟಿಕೆಟ್ ಪಡೆದವರಿಗೆ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಭಿಷೇಕ, ಕುಂಕುಮಾರ್ಚನೆ ಹಾಗೂ ಮಹಾಮಂಗಳಾರತಿ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 5.30ರಿಂದ 10 ಗಂಟೆಯವರೆಗೆ ವಿವಿಐಪಿ ದರ್ಶನ ವ್ಯವಸ್ಥೆ ಮಾಡಲಾಗಿದೆ.

ಕೊಡಗಿನಲ್ಲಿ ಕಾಡುಪ್ರಾಣಿಗಳ ಹಾವಳಿ: ಹಾಡಹಗಲೇ ಕಾಫಿ ತೋಟದಲ್ಲಿ ರೈತ ಮಹಿಳೆ ಮೇಲೆ ಚಿರತೆ ದಾಳಿ

ಕೊಡಗು: ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದ ಬಳಿ ಹಾಡಹಗಲೇ ರೈತ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ.

ದಾಳಿಯಲ್ಲಿ 60 ವರ್ಷದ ಲೀಲಾ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾಫಿ ತೋಟದಲ್ಲಿ ಕಾರ್ಮಿಕರ ಕೆಲಸವನ್ನು ಪರಿಶೀಲಿಸುತ್ತಿದ್ದ ವೇಳೆ ಏಕಾಏಕಿ ಬಂದ ಚಿರತೆ ಮಹಿಳೆಯ ಮೇಲೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ಲೀಲಾ ಅವರ ಎಡ ಕಿವಿ ಹಾಗೂ ದವಡೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ.

ಮಹಿಳೆಯ ಕಿರುಚಾಟ ಕೇಳಿದ ತೋಟದ ಕಾರ್ಮಿಕರು ಕೂಡಲೇ ಧಾವಿಸಿ ಚಿರತೆಯನ್ನು ಓಡಿಸಿ, ಗಾಯಾಳುವನ್ನು ರಕ್ಷಿಸಿದ್ದಾರೆ. ಬಳಿಕ ಅವರನ್ನು ಗೋಣಿಕೊಪ್ಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಲೀಲಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಮಾಲ್ದಾರೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ತಿತಿಮತಿ ವಲಯ ಅರಣ್ಯಾಧಿಕಾರಿ ಗಂಗಾಧರ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಉಪವಲಯ ಅರಣ್ಯಾಧಿಕಾರಿ ಶಶಿ ಪಿ.ಟಿ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.

ಕಾಡಾನೆ, ಹುಲಿ ಹಾಗೂ ಚಿರತೆಗಳ ಹಾವಳಿಯಿಂದ ಗ್ರಾಮಸ್ಥರು ಹಾಗೂ ಕಾರ್ಮಿಕರಲ್ಲಿ ಭೀತಿ ಹೆಚ್ಚಾಗಿದ್ದು, ಕಾಡುಪ್ರಾಣಿಗಳ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದೀಗ ಅರಣ್ಯ ಇಲಾಖೆ ಚಿರತೆಯ ಸೆರೆಗೆ ಕಾರ್ಯಾಚರಣೆ ಆರಂಭಿಸಿದೆ. ಕಾಫಿ ತೋಟದಲ್ಲಿ ಚಿರತೆಯ ಚಲನವಲನ ಪತ್ತೆಹಚ್ಚಲು ಬೋನು ಹಾಗೂ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ದಾಳಿ ನಡೆಸಿದ ಚಿರತೆಗೆ ಗಾಯವಾಗಿರುವ ಶಂಕೆ ವ್ಯಕ್ತವಾಗಿದ್ದು, ಗ್ರಾಮಸ್ಥರು ಗಾಯಗೊಂಡ ಚಿರತೆಯನ್ನು ನೋಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಗ್ರಾಮಸ್ಥರ ಬೇಡಿಕೆಯ ಮೇರೆಗೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಸಾಕಾನೆಗಳ ನೆರವಿನೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ವನ್ಯಜೀವಿ ವೈದ್ಯಾಧಿಕಾರಿ ಡಾ. ರಮೇಶ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೂಡಲೂರಿನಲ್ಲಿ ಕಾಡಾನೆಗಳ ಹಾವಳಿ: ಎಳನೀರು ಕುಡಿದು ತೆಂಗಿನ ಮರ ಹೊತ್ತೊಯ್ದ ಆನೆಗಳು!

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗೂಡಲೂರಿನಲ್ಲಿ ಕಾಡಾನೆಗಳ ಹಿಂಡು ರೈತರ ಜಮೀನಿಗೆ ನುಗ್ಗಿ ಭಾರಿ ಹಾನಿ ಮಾಡಿವೆ.

ಆಹಾರ ಅರಸಿ ಬಂದ ಆನೆಗಳು ತೆಂಗಿನ ತೋಟಕ್ಕೆ ನುಗ್ಗಿ ತೆಂಗಿನ ಮರಗಳನ್ನು ಬುಡಸಮೇತ ಕಿತ್ತು ಹಾಕಿವೆ. ಎಳನೀರು ಇರುವ ತೆಂಗಿನ ಮರಗಳನ್ನು ಕಿತ್ತು, ಗೋನೆ ಸಮೇತ ಹೊತ್ತೊಯ್ದ ದೃಶ್ಯಗಳು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಕೆಲವು ಆನೆಗಳು ಎಳನೀರನ್ನು ಕಾಲಿನಿಂದ ತುಳಿದು ಕುಡಿದ ಬಳಿಕ ತೆಂಗಿನ ಮರವನ್ನು ಹೊತ್ತು ಸಾಗಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗೂಡಲೂರು ಸೇರಿದಂತೆ ಗಡಿ ಭಾಗಗಳಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿದ್ದು, ಬಾಳೆ ಹಾಗೂ ತೆಂಗು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದಿಂದ ಕಂಗೆಟ್ಟಿರುವ ರೈತರು ಆನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಇಂದು ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಗೂ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕರ್ನಾಟಕದಲ್ಲೂ ಮಳೆ ಸಾಧ್ಯತೆ:

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಧಾರವಾಡ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೊಡಗು, ಹಾಸನ, ತುಮಕೂರು, ಕೋಲಾರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲೂ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದೆ ಎಂದು IMD ಮಾಹಿತಿ ನೀಡಿದೆ. ಕರಾವಳಿ ಕರ್ನಾಟಕದ ಬಹುತೇಕ ಕಡೆ ಹಾಗೂ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 9 ಸೆಂ.ಮೀ ಮಳೆಯಾಗಿದ್ದು, ಆಗಸ್ಟ್ 8ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕೊಪ್ಪಳದ ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ: 46 ದಿನಗಳಲ್ಲಿ 86.71 ಲಕ್ಷ ರೂ. ನಗದು ಸಂಗ್ರಹ!

ಕೊಪ್ಪಳ: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹುಲಗಿಯ ಶ್ರೀ ಹುಲಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಶುಕ್ರವಾರ ನಡೆಯಿತು.

ಕಳೆದ 46 ದಿನಗಳಲ್ಲಿ ದೇವಸ್ಥಾನದ ಹುಂಡಿಯಲ್ಲಿ ಒಟ್ಟು ₹86,71,195 ನಗದು ಸಂಗ್ರಹವಾಗಿದೆ.

ಕಳೆದ ಜೂನ್ 20ರಂದು ಕೊನೆಯ ಬಾರಿ ಹುಂಡಿ ಎಣಿಕೆ ನಡೆಸಲಾಗಿತ್ತು. ಆ ಬಳಿಕ ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಕಾಣಿಕೆ ಸಲ್ಲಿಸಿದ್ದು, ಈ ಬಾರಿ ಭಕ್ತರು ನಗದಿನೊಂದಿಗೆ 146 ಗ್ರಾಂ ಬಂಗಾರ ಹಾಗೂ 3 ಕೆಜಿ 900 ಗ್ರಾಂ ಬೆಳ್ಳಿಯನ್ನೂ ಅರ್ಪಿಸಿದ್ದಾರೆ.

ದೇವಸ್ಥಾನದ ಅಧಿಕಾರಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಭಕ್ತರ ಅಪಾರ ಭಕ್ತಿಯಿಂದ ಈ ಬಾರಿ ಗಣನೀಯ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಮಳೆ ಆರ್ಭಟ: ಬಂಡೆ ಕುಸಿತದಿಂದ ಬದರಿನಾಥ್ ಹೆದ್ದಾರಿ ತಾತ್ಕಾಲಿಕ ಬಂದ್

0

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಟ್ಟ ಪ್ರದೇಶಗಳಲ್ಲಿ ಸಮಸ್ಯೆಗಳು ಹೆಚ್ಚಾಗಿವೆ.

ನಿರಂತರ ಮಳೆಯ ಪರಿಣಾಮ ಚಮೋಲಿ ಜಿಲ್ಲೆಯ ಹೆಲಾಂಗ್ ಬಳಿ ಹೆದ್ದಾರಿಯ ಮೇಲೆ ದೊಡ್ಡ ಬಂಡೆಗಳು ಉರುಳಿ ಬಿದ್ದಿದ್ದು, ಬದರಿನಾಥ್‌ ಯಾತ್ರಾ ಮಾರ್ಗವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಹೆಲಾಂಗ್ ಪ್ರದೇಶದಲ್ಲಿ ಹೆದ್ದಾರಿಯ ಮೇಲೆ ಶಿಲಾಖಂಡಗಳು ಮತ್ತು ಬಂಡೆಗಳು ಬಿದ್ದ ಕಾರಣ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳು ಈ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಿದ್ದಾರೆ.

ರಸ್ತೆಯ ಮೇಲಿರುವ ಬಂಡೆಗಳು ಹಾಗೂ ಮಣ್ಣು ತೆರವುಗೊಳಿಸಲು ಜೆಸಿಬಿ ಯಂತ್ರಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ರಸ್ತೆ ತೆರವುಗೊಳಿಸಿ ಸಂಚಾರವನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿಯನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ರಸ್ತೆ ಸಂಪೂರ್ಣ ಸುರಕ್ಷಿತ ಎಂದು ಘೋಷಿಸುವವರೆಗೆ ಯಾತ್ರಿಕರು, ಪ್ರವಾಸಿಗರು ಹಾಗೂ ಸ್ಥಳೀಯರು ಈ ಮಾರ್ಗದಲ್ಲಿ ಅನಗತ್ಯ ಪ್ರಯಾಣ ಮಾಡದಂತೆ ಸರ್ಕಾರ ಮನವಿ ಮಾಡಿದೆ.

ಪ್ರಯಾಣಿಕರು ಅಧಿಕೃತ ಸಂಚಾರ ಮಾಹಿತಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸಿ ಪ್ರಯಾಣ ಯೋಜನೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಇದೇ ವೇಳೆ ಉತ್ತರಾಖಂಡದ ಚಮೋಲಿ, ರುದ್ರಪ್ರಯಾಗ, ಉತ್ತರಕಾಶಿ, ಪಿಥೋರಗಢ ಮತ್ತು ಬಾಗೇಶ್ವರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ.

ಮಲೆನಾಡು ಪ್ರದೇಶಗಳಲ್ಲಿ ಮಳೆ ಮುಂದುವರಿದರೆ ಮತ್ತಷ್ಟು ಭೂಕುಸಿತ ಹಾಗೂ ರಸ್ತೆ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

Lizard Problem Solution: ಮನೆಯಿಂದ ಹಲ್ಲಿಗಳನ್ನು ದೂರವಿಡಲು ಕೆಮಿಕಲ್ ಬೇಡ, ಈ ಗಿಡಗಳೇ ಸಾಕು!

0

ಮಳೆಗಾಲ ಆರಂಭವಾಗುತ್ತಿದ್ದಂತೆ ಹಾವು, ಸೊಳ್ಳೆ, ಕೀಟಗಳ ಜೊತೆಗೆ ಮನೆಯೊಳಗೆ ಹಲ್ಲಿಗಳ ಹಾವಳಿಯೂ ಹೆಚ್ಚಾಗುತ್ತದೆ.

ಗೋಡೆಗಳ ಮೇಲೆ ಓಡಾಡುವ ಹಲ್ಲಿಗಳನ್ನು ಕಂಡು ಕೆಲವರು ಭಯಪಡುತ್ತಾರೆ. ಇನ್ನು ಕೆಲವರಿಗೆ ಹಲ್ಲಿ ಆಹಾರಕ್ಕೆ ಬಿದ್ದರೆ ಏನು ಮಾಡುವುದು ಎಂಬ ಆತಂಕ ಕಾಡುತ್ತದೆ.

ಹಲ್ಲಿಗಳನ್ನು ಓಡಿಸಲು ಹಲವರು ರಾಸಾಯನಿಕ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಇಂತಹ ಕೆಮಿಕಲ್‌ಗಳ ಬದಲು ಮನೆಯಲ್ಲೇ ಕೆಲವು ಗಿಡಗಳನ್ನು ಬೆಳೆಸುವ ಮೂಲಕ ಹಲ್ಲಿಗಳ ಕಾಟವನ್ನು ಕಡಿಮೆ ಮಾಡಬಹುದು.

ಹಲ್ಲಿಗಳನ್ನು ದೂರವಿಡಲು ಸಹಾಯ ಮಾಡುವ ಗಿಡಗಳು:

ಲ್ಯಾವೆಂಡರ್ ಗಿಡ:
ಲ್ಯಾವೆಂಡರ್ ಗಿಡವು ಮನೆಯ ಸೌಂದರ್ಯ ಹೆಚ್ಚಿಸುವುದರ ಜೊತೆಗೆ ಅದರ ಬಲವಾದ ವಾಸನೆಯಿಂದ ಹಲ್ಲಿಗಳು ಹಾಗೂ ಕೆಲವು ಕೀಟಗಳನ್ನು ದೂರವಿಡಲು ಸಹಕಾರಿಯಾಗುತ್ತದೆ. ಮನೆಯ ಕಿಟಕಿ ಅಥವಾ ಬಾಲ್ಕನಿಯಲ್ಲಿ ಈ ಗಿಡವನ್ನು ಬೆಳೆಸಬಹುದು.

ಚೆಂಡು ಹೂವಿನ ಗಿಡ:
ಚೆಂಡು ಹೂವಿನ ಗಿಡದ ಪರಿಮಳವು ಸೊಳ್ಳೆ, ಕೀಟಗಳ ಜೊತೆಗೆ ಹಲ್ಲಿಗಳ ಪ್ರವೇಶವನ್ನು ತಡೆಯಲು ಸಹಾಯ ಮಾಡುತ್ತದೆ. ಮನೆಯ ಮುಖ್ಯ ಬಾಗಿಲು ಅಥವಾ ಕಿಟಕಿಗಳ ಬಳಿ ಈ ಗಿಡಗಳನ್ನು ಇಡುವುದು ಉತ್ತಮ.

ರೋಸ್ಮರಿ ಗಿಡ:
ರೋಸ್ಮರಿ ಎಲೆಗಳ ಸುವಾಸನೆಯನ್ನು ಹಲ್ಲಿಗಳು ಮತ್ತು ಕೆಲವು ಕೀಟಗಳು ಇಷ್ಟಪಡುವುದಿಲ್ಲ. ಮನೆಯಲ್ಲಿ ರೋಸ್ಮರಿ ಗಿಡ ಬೆಳೆಸುವುದರಿಂದ ನೈಸರ್ಗಿಕವಾಗಿ ಹಲ್ಲಿಗಳನ್ನು ದೂರವಿಡಬಹುದು.

ಪುದೀನ ಮತ್ತು ತುಳಸಿ:
ಪುದೀನದ ಪರಿಮಳ ಹಾಗೂ ತುಳಸಿಯ ನೈಸರ್ಗಿಕ ಸುವಾಸನೆ ಮನೆಯೊಳಗೆ ಹಲ್ಲಿ ಹಾಗೂ ಇತರ ಕೀಟಗಳು ಪ್ರವೇಶಿಸುವುದನ್ನು ತಡೆಯಲು ಸಹಾಯ ಮಾಡುತ್ತದೆ. ಲೆಮನ್‌ಗ್ರಾಸ್‌ ಗಿಡವೂ ಇದೇ ರೀತಿಯ ಪ್ರಯೋಜನ ನೀಡುತ್ತದೆ.

ಮನೆಯ ಸ್ವಚ್ಛತೆಯೂ ಮುಖ್ಯ:

ಗಿಡಗಳನ್ನು ಬೆಳೆಸುವುದರ ಜೊತೆಗೆ ಮನೆಯ ಸ್ವಚ್ಛತೆಯ ಬಗ್ಗೆಯೂ ಗಮನ ಹರಿಸಬೇಕು. ಮನೆಯ ಸುತ್ತಮುತ್ತ ಕಸ ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಆಹಾರ ಪದಾರ್ಥಗಳನ್ನು ತೆರೆದಿಡಬಾರದು ಹಾಗೂ ಗೋಡೆಗಳಲ್ಲಿನ ಬಿರುಕುಗಳನ್ನು ಮುಚ್ಚಬೇಕು.

ನೈಸರ್ಗಿಕ ವಿಧಾನಗಳನ್ನು ಅನುಸರಿಸುವ ಮೂಲಕ ರಾಸಾಯನಿಕ ಬಳಕೆಯನ್ನು ಕಡಿಮೆ ಮಾಡಿ, ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಬಹುದು.

 

Mangalore University: ಖ್ಯಾತ ಪತ್ರಿಕೋದ್ಯಮ ಪ್ರಾಧ್ಯಾಪಕಿ ಡಾ. ವಹೀದಾ ಸುಲ್ತಾನಾ ಹೃದಯಾಘಾತಕ್ಕೆ ಬಲಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಡಾ. ವಹೀದಾ ಸುಲ್ತಾನಾ (70) ನಿಧನರಾಗಿದ್ದಾರೆ.

ಮೈಸೂರು ಕಲ್ಯಾಣಗಿರಿ ನಿವಾಸಿಯಾಗಿದ್ದ ಡಾ. ವಹೀದಾ ಸುಲ್ತಾನಾ ಅವರಿಗೆ ಇಂದು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಡಾ. ವಹೀದಾ ಸುಲ್ತಾನಾ ಅವರು ಸುಮಾರು ಮೂರು ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ವಿಭಾಗದ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದರು.

ಶಿಕ್ಷಣ ಕ್ಷೇತ್ರದ ಜೊತೆಗೆ ಸಾಮಾಜಿಕ ಸೇವೆಯಲ್ಲೂ ತೊಡಗಿಸಿಕೊಂಡಿದ್ದ ಅವರು, ಮಂಗಳೂರು ವಿವಿ ಮಹಿಳಾ ಹಾಸ್ಟೆಲ್ ವಾರ್ಡನ್ ಆಗಿ ಹಾಗೂ ಅಲ್ಪಸಂಖ್ಯಾತರು ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಐಎಎಸ್, ಕೆಎಎಸ್ ತರಬೇತಿ ಕಾರ್ಯಕ್ರಮಗಳ ಸಂಯೋಜಕರಾಗಿಯೂ ಕಾರ್ಯನಿರ್ವಹಿಸಿದ್ದರು.

ಮಾಧ್ಯಮ, ಆರೋಗ್ಯ, ತಂತ್ರಜ್ಞಾನ, ಮಹಿಳಾ ವಿಚಾರಗಳು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಲೇಖನಗಳನ್ನು ಬರೆದಿದ್ದ ಅವರು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದರು.

ಬಾಂಗ್ಲಾದೇಶ, ಮಲೇಷ್ಯಾ, ಶ್ರೀಲಂಕಾ, ಹಾಂಗ್‌ಕಾಂಗ್ ಸೇರಿದಂತೆ ವಿವಿಧ ದೇಶಗಳಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿ ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದರು.

ಕಾರ್ಪೊರೇಟ್ ಕಮ್ಯುನಿಕೇಶನ್ಸ್, ಮಹಿಳೆ ಮತ್ತು ಮಾಧ್ಯಮ, ಆರೋಗ್ಯ ಸಂವಹನ ಸೇರಿದಂತೆ ಹಲವು ವಿಷಯಗಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ಅವರು, ಏಷ್ಯನ್ ಕಾಂಗ್ರೆಸ್ ಫಾರ್ ಮೀಡಿಯಾ ಆ್ಯಂಡ್ ಕಮ್ಯುನಿಕೇಶನ್‌ನ ರಾಷ್ಟ್ರೀಯ ಸಮಿತಿಯ ಉಪ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

ಡಾ. ವಹೀದಾ ಸುಲ್ತಾನಾ ಅವರ ನಿಧನಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘ (MAM) ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಅವರ ಅಂತ್ಯಕ್ರಿಯೆ ಆಗಸ್ಟ್ 7ರಂದು ಅಪರಾಹ್ನ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

 

ಹೊಲದಲ್ಲೇ ರೈತರ ನೋವು ಆಲಿಸಿದ ಸಚಿವ ಲಾಡ್

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಮಳೆ ಬಂದರೂ ಸಮಯಕ್ಕೆ ಬರಲಿಲ್ಲ… ಹೊಲಗಳು ಹಸಿರಾಗಿ ಕಾಣುತ್ತಿದ್ದರೂ ರೈತರ ಕೈಗೆ ಬೆಳೆ ಬಂದಿಲ್ಲ… ಇಂತಹ ಸಂಕಷ್ಟದ ಪರಿಸ್ಥಿತಿಯನ್ನು ಸ್ವತಃ ಹೊಲಗಳಿಗೆ ತೆರಳಿ ವೀಕ್ಷಿಸಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು, ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಅಗತ್ಯ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.

ಮುಖ್ಯಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆ ಹಾನಿ ಪರಿಶೀಲನೆ ನಡೆಸಿದ ಸಚಿವರು, ರೈತರು, ರೈತ ಮುಖಂಡರು ಹಾಗೂ ಕೃಷಿ ತಜ್ಞರೊಂದಿಗೆ ಚರ್ಚಿಸಿ ಬೆಳೆಗಳ ವಾಸ್ತವ ಸ್ಥಿತಿಯ ಕುರಿತು ಮಾಹಿತಿ ಸಂಗ್ರಹಿಸಿದರು.

ಜಿಲ್ಲೆಯ ಸುಮಾರು 2.90 ಲಕ್ಷ ಹೆಕ್ಟೇರ್ ಕೃಷಿಯೋಗ್ಯ ಭೂಮಿಯಲ್ಲಿ ಶೇ.96ರಷ್ಟು, ಅಂದರೆ 2.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದ್ದು, ಸುಮಾರು 45 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಹಾಗೂ ಉದ್ದು, 40 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಇದರ ಜೊತೆಗೆ ಸೋಯಾಬೀನ್, ಹತ್ತಿ, ಕಡಲೆಕಾಯಿ, ಕಬ್ಬು, ಈರುಳ್ಳಿ ಸೇರಿದಂತೆ ಹಲವು ಬೆಳೆಗಳು ಮಳೆಯ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿವೆ.

ಸಾಮಾನ್ಯವಾಗಿ ಹೊಲಗಳು ಹಸಿರಾಗಿ ಕಾಣುತ್ತಿದ್ದರೂ ಬೆಳೆಗಳ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಅಗತ್ಯ ಸಮಯದಲ್ಲಿ ಮಳೆಯಾಗದ ಪರಿಣಾಮ ಬೆಳೆಗಳು ಕುಂಠಿತಗೊಂಡಿದ್ದು, ರೈತರು ಭಾರೀ ನಷ್ಟ ಅನುಭವಿಸುವಂತಾಗಿದೆ. ಕೆಲವೆಡೆ ಹೆಚ್ಚು ಮಳೆಯಾದರೂ ಅದು ಸರಿಯಾದ ಸಮಯದಲ್ಲಿ ಮತ್ತು ಸಮರ್ಪಕ ಪ್ರಮಾಣದಲ್ಲಿ ಸುರಿಯದ ಕಾರಣ ಬೆಳೆಗಳಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಚಿವರು ಹೇಳಿದರು.

ರೈತರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಉದ್ದೇಶದಿಂದ ಬೆಳೆ ವಿಮೆ ಸೇರಿದಂತೆ ಸರ್ಕಾರ ಹಾಗೂ ವಿಮಾ ಸಂಸ್ಥೆಗಳ ಮೂಲಕ ದೊರೆಯಬಹುದಾದ ಎಲ್ಲ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಳೀಯ ಶಾಸಕರು ಹಾಗೂ ರೈತ ಮುಖಂಡರ ಸಲಹೆಗಳನ್ನೂ ಕ್ರೋಡೀಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಬರ ಘೋಷಣೆಗೆ ಕೇಂದ್ರ ಸರ್ಕಾರದ ನಿಗದಿತ ತಾಂತ್ರಿಕ ಮಾನದಂಡಗಳಿದ್ದು, ಅವುಗಳ ಅನ್ವಯವೇ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಆದರೆ ಜಿಲ್ಲೆಯ ವಾಸ್ತವ ಸ್ಥಿತಿಯನ್ನು ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತಂದು ರೈತರಿಗೆ ಅಗತ್ಯ ನೆರವು ದೊರಕಿಸಲು ಪ್ರಯತ್ನಿಸಲಾಗುವುದು ಎಂದರು.

ನವಲಗುಂದ ಶಾಸಕ ಎನ್.ಎಚ್. ಕೋನರೆಡ್ಡಿ ಮಾತನಾಡಿ, ಅಲ್ಪ ಪ್ರಮಾಣದ ಮಳೆಯಾದ ಕಾರಣ ಹೆಸರು ಮತ್ತು ಹತ್ತಿ ಬೆಳೆಗಳು ಹೊರನೋಟಕ್ಕೆ ಹಸಿರಾಗಿದ್ದರೂ ಒಳಗೆ ಬೆಳೆ ಇಲ್ಲದಂತಾಗಿದೆ. ಹೆಸರು ಬೆಳೆ ಹೂ ಬಿಡದೆ ಒಣಗುವ ಸ್ಥಿತಿಗೆ ತಲುಪಿದ್ದು, ಹತ್ತಿ ಬೆಳೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಾಯಿ ಬರುತ್ತಿಲ್ಲ. ಆದ್ದರಿಂದ ಪರಿಹಾರ ವಿತರಣೆಯ ಸಂದರ್ಭದಲ್ಲಿ ಸರ್ಕಾರ ಮಾನದಂಡಗಳನ್ನು ಸಡಿಲಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಅಂಕಿ-ಅಂಶಗಳನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಕಳೆದ ಎರಡು ವರ್ಷಗಳಿಂದ ರೈತರಿಗೆ ಬೆಳೆ ವಿಮೆ ಸಮರ್ಪಕವಾಗಿ ದೊರೆಯದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಖಾಸಗಿ ವಿಮಾ ಕಂಪನಿಗಳಿಗಿಂತ ರೈತರ ಹಿತಾಸಕ್ತಿಗೆ ಆದ್ಯತೆ ನೀಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ವಿಷಯವನ್ನು ತಂದು ರೈತರಿಗೆ ಪರಿಹಾರ ದೊರಕಿಸಲು ಪ್ರಯತ್ನಿಸಲಾಗುವುದು ಎಂದರು.

ಸಚಿವ ಸಂತೋಷ್ ಲಾಡ್ ಅವರು ಧಾರವಾಡ ತಾಲೂಕಿನ ಹಾರೋಬೆಳವಡಿ ಹಾಗೂ ನವಲಗುಂದ ತಾಲೂಕಿನ ಶಿರೂರ, ಶಿರಕೋಳ, ಮೊರಬ ಮತ್ತು ತಿರ್ಲಾಪುರ ಗ್ರಾಮಗಳಿಗೆ ಭೇಟಿ ನೀಡಿ ರೈತರ ಹೊಲಗಳಲ್ಲಿ ಬೆಳೆಗಳ ಸ್ಥಿತಿಯನ್ನು ಪರಿಶೀಲಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ನವಲಗುಂದ ತಹಶೀಲ್ದಾರ್ ಸುಧೀರ ಸಾಹುಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಹೊಲಗಳಲ್ಲಿ ಹಸಿರು ಕಾಣುತ್ತಿದ್ದರೂ ಬೆಳೆಗಳ ಬೆಳವಣಿಗೆ ಸಮರ್ಪಕವಾಗಿಲ್ಲ. ರೈತರ ವಾಸ್ತವ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು, ಬೆಳೆ ವಿಮೆ ಸೇರಿದಂತೆ ಎಲ್ಲ ರೀತಿಯ ನೆರವು ದೊರಕಿಸುವ ಪ್ರಯತ್ನ ಮಾಡಲಾಗುವುದು.”

ಸಂತೋಷ್ ಲಾಡ್, ಜಿಲ್ಲಾ ಉಸ್ತುವಾರಿ ಸಚಿವ