ನವದೆಹಲಿ: ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಹಾಗೂ ಲೋಕಸಭಾ ಕ್ಷೇತ್ರಗಳ ಹೆಚ್ಚಳಕ್ಕೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ.
“2029ರ ಲೋಕಸಭಾ ಚುನಾವಣೆಯಷ್ಟೇ ಅಲ್ಲ, ಮುಂದಿನ ಎಲ್ಲಾ ಚುನಾವಣೆಯಲ್ಲಿಯೂ ವಿಪಕ್ಷಗಳು ಮಹಿಳೆಯರ ಕೋಪವನ್ನು ಎದುರಿಸಬೇಕಾಗುತ್ತದೆ. ಕ್ಷೇತ್ರಗಳಿಗೆ ಹೋದಾಗ ತಾಯಂದಿರು ಮತ್ತು ಸಹೋದರಿಯರ ಅಸಮಾಧಾನವನ್ನು ಕಾಣಬೇಕಾಗುತ್ತದೆ. ಮಹಿಳೆಯರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ,” ಎಂದು ಹೇಳಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಕಾಂಗ್ರೆಸ್ಗೆ ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯವಾದರೆ, ನಮಗೆ ದೇಶದ ಜನರ ಪ್ರತಿನಿಧಿತ್ವ ಮತ್ತು ಆಡಳಿತದಲ್ಲಿ ಅವರ ನಿಜವಾದ ಪಾಲ್ಗೊಳ್ಳುವಿಕೆ ಮುಖ್ಯ. ದಶಕಗಳ ಕಾಲ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಜಾತಿ ಆಧಾರಿತ ಜನಗಣತಿ ಹಾಗೂ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ನಿರಂತರವಾಗಿ ವಿರೋಧಿಸಿದೆ” ಎಂದು ಆರೋಪಿಸಿದರು.
ಲೋಕಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ 2026, ಸಂವಿಧಾನ (131ನೇ ತಿದ್ದುಪಡಿ) ಮಸೂದೆ 2026 ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆ 2026 ಕುರಿತು ನಡೆದ ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ, ಈ ಮಸೂದೆಗಳಿಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿ ಮತ ಚಲಾಯಿಸಿದ್ದವು.
“ಒಬ್ಬ ವ್ಯಕ್ತಿ – ಒಂದು ಮತ – ಒಂದು ಮೌಲ್ಯ” ಎಂಬ ಸಂವಿಧಾನ ತತ್ವವನ್ನು ಜಾರಿಗೆ ತರುವುದೇ ಈ ಮಸೂದೆಗಳ ಉದ್ದೇಶ. ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೀಟುಗಳ ಸಂಖ್ಯೆ ಹೆಚ್ಚಾಗುತ್ತದೆ. ಇದನ್ನು ವಿರೋಧಿಸುವವರು ವಾಸ್ತವವಾಗಿ ಎಸ್ಸಿ/ಎಸ್ಟಿ ಪ್ರತಿನಿಧಿತ್ವವನ್ನು ವಿರೋಧಿಸುತ್ತಿದ್ದಾರೆ ಎಂದು ಅಮಿತ್ ಶಾ ಟೀಕಿಸಿದರು.

