Home Blog

ಮಧುಮೇಹಿಗಳಿಗೆ ಹೊಸ ಆಶಾಕಿರಣ; ವಾರಕ್ಕೊಮ್ಮೆ ಮಾತ್ರ ತೆಗೆದುಕೊಳ್ಳುವ ಇನ್ಸುಲಿನ್ ಭಾರತದಲ್ಲಿ ಬಿಡುಗಡೆ

0

ಆಧುನಿಕ ಜೀವನಶೈಲಿಯಿಂದ ಮಧುಮೇಹ ಇಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ.

ಆದರೆ, ನಿರ್ಲಕ್ಷ್ಯ ಮಾಡಿದರೆ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಆಹಾರ ಪದ್ಧತಿ, ವ್ಯಾಯಾಮ, ಔಷಧ ಹಾಗೂ ಸೂಕ್ತ ಚಿಕಿತ್ಸೆಯ ಮೂಲಕ ಮಾತ್ರ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಾಧ್ಯ.

ಮಧುಮೇಹದ ಒಂದು ಹಂತದ ಬಳಿಕ ಅನೇಕರು ಪ್ರತಿದಿನ ಇನ್ಸುಲಿನ್ ಚುಚ್ಚುಮದ್ದು ತೆಗೆದುಕೊಳ್ಳಬೇಕಾಗುತ್ತದೆ. ಇದು ಕೆಲವರಿಗೆ ನೋವು, ತೊಂದರೆ ಹಾಗೂ ಆರ್ಥಿಕ ಹೊರೆಯಾಗುತ್ತದೆ. ಇದೀಗ ಇಂತಹ ರೋಗಿಗಳಿಗೆ ಅನುಕೂಲವಾಗುವಂತೆ ವಾರಕ್ಕೊಮ್ಮೆ ಮಾತ್ರ ತೆಗೆದುಕೊಳ್ಳಬೇಕಾದ ಹೊಸ ಇನ್ಸುಲಿನ್ ಮಾರುಕಟ್ಟೆಗೆ ಬಂದಿದೆ.

ವಿಶ್ವದಲ್ಲೇ ಮೊದಲ ಬಾರಿಗೆ ವಾರಕ್ಕೊಮ್ಮೆ ನೀಡುವ ಬೇಸಲ್ ಇನ್ಸುಲಿನ್ ಅವಿಕ್ಲಿ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ. ಡ್ಯಾನಿಶ್ ಔಷಧ ಕಂಪನಿ ನೊವೊ ನಾರ್ಡಿಸ್ಕ್ ಇಂಡಿಯಾ ಈ ಇನ್ಸುಲಿನ್‌ ಅನ್ನು ಪರಿಚಯಿಸಿದೆ.

365 ಇಂಜೆಕ್ಷನ್‌ ಬದಲು ವರ್ಷಕ್ಕೆ ಕೇವಲ 52 ಡೋಸ್:

ಅವಿಕ್ಲಿ ಇನ್ಸುಲಿನ್‌ನ ಪ್ರಮುಖ ವಿಶೇಷತೆ ಎಂದರೆ ಇದನ್ನು ಪ್ರತಿದಿನ ತೆಗೆದುಕೊಳ್ಳಬೇಕಾಗಿಲ್ಲ. ವಾರಕ್ಕೆ ಒಂದು ಬಾರಿ ಮಾತ್ರ ಚುಚ್ಚಿಸಿಕೊಂಡರೆ ಸಾಕು. ಇದರಿಂದ ವರ್ಷಕ್ಕೆ 365 ಬಾರಿ ತೆಗೆದುಕೊಳ್ಳಬೇಕಾಗಿದ್ದ ಇನ್ಸುಲಿನ್ ಡೋಸ್ ಸಂಖ್ಯೆ 52ಕ್ಕೆ ಇಳಿಯಲಿದೆ.

ಭಾರತದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದ್ದು, ಸುಮಾರು 11 ಕೋಟಿ ಜನರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ನಗರ ಪ್ರದೇಶಗಳಲ್ಲಿ ಮಧುಮೇಹ ಪ್ರಮಾಣ ಹೆಚ್ಚಾಗಿದ್ದು, ಬದಲಾಗುತ್ತಿರುವ ಜೀವನಶೈಲಿ, ಆಹಾರ ಪದ್ಧತಿ ಮತ್ತು ನಗರೀಕರಣ ಪ್ರಮುಖ ಕಾರಣಗಳಾಗಿವೆ.

ಅವಿಕ್ಲಿ ಹೇಗೆ ಕೆಲಸ ಮಾಡುತ್ತದೆ?

ಅವಿಕ್ಲಿ ಇನ್ಸುಲಿನ್ ದೇಹದಲ್ಲಿನ ಇನ್ಸುಲಿನ್ ಗ್ರಾಹಕಗಳಿಗೆ ಸೇರಿಕೊಂಡು ಜೀವಕೋಶಗಳು ಗ್ಲೂಕೋಸ್‌ ಅನ್ನು ಬಳಸಿಕೊಳ್ಳಲು ಸಹಾಯ ಮಾಡುತ್ತದೆ. ಯಕೃತ್ತಿನಲ್ಲಿ ಹೆಚ್ಚುವರಿ ಸಕ್ಕರೆ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ.

ಇದರ ವಿಶೇಷತೆ ಎಂದರೆ ಇದು ದೇಹದಲ್ಲಿ ದೀರ್ಘಕಾಲ ಸಕ್ರಿಯವಾಗಿರುತ್ತದೆ. ರಕ್ತದಲ್ಲಿನ ಆಲ್ಬುಮಿನ್ ಎಂಬ ಪ್ರೋಟೀನ್‌ಗೆ ಬಲವಾಗಿ ಬಂಧಿಸುವುದರಿಂದ ಇದರ ಪರಿಣಾಮ ಸುಮಾರು ಒಂದು ವಾರದವರೆಗೆ ಮುಂದುವರಿಯುತ್ತದೆ.

ಯಾರಿಗೆ ಹೆಚ್ಚು ಪ್ರಯೋಜನ?

  • ಪ್ರತಿದಿನ ಇನ್ಸುಲಿನ್ ತೆಗೆದುಕೊಳ್ಳುತ್ತಿರುವ ಟೈಪ್-2 ಮಧುಮೇಹಿಗಳಿಗೆ ಹೆಚ್ಚು ಅನುಕೂಲ.
  • ಟೈಪ್-1 ಮತ್ತು ಟೈಪ್-2 ಮಧುಮೇಹ ಹೊಂದಿರುವ ವಯಸ್ಕರ ಚಿಕಿತ್ಸೆಗೆ ಬಳಸಬಹುದು.
  • ದಿನನಿತ್ಯದ ಇಂಜೆಕ್ಷನ್ ತೊಂದರೆ ಕಡಿಮೆಯಾಗುತ್ತದೆ.

ಅಡ್ಡಪರಿಣಾಮಗಳಿವೆಯೇ?

ಹೊಸ ಔಷಧಿಗಳಂತೆ ಅವಿಕ್ಲಿಗೂ ಕೆಲವು ಅಡ್ಡಪರಿಣಾಮಗಳ ಸಾಧ್ಯತೆ ಇದೆ.

  • ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗುವುದು (ಹೈಪೊಗ್ಲಿಸಿಮಿಯಾ)
  • ಇಂಜೆಕ್ಷನ್ ನೀಡಿದ ಜಾಗದಲ್ಲಿ ಸ್ವಲ್ಪ ಊತ ಅಥವಾ ಅಸ್ವಸ್ಥತೆ

ವೈದ್ಯರ ಸಲಹೆ ಮತ್ತು ಮೇಲ್ವಿಚಾರಣೆಯಲ್ಲಿ ಇದನ್ನು ಬಳಸಬೇಕು.

ಮಕ್ಕಳು, ಗರ್ಭಿಣಿಯರು ಹಾಗೂ ಗರ್ಭಧಾರಣೆಗೆ ಯೋಜನೆ ಮಾಡುತ್ತಿರುವವರು ಈ ಇನ್ಸುಲಿನ್ ಬಳಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು ಎಂದು ತಜ್ಞರು ಸೂಚಿಸಿದ್ದಾರೆ.

ಆದರೆ ಹೊಸ ಇನ್ಸುಲಿನ್ ಬಂದಿದೆ ಎಂದು ಆಹಾರ ನಿಯಮ, ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿಯನ್ನು ನಿರ್ಲಕ್ಷಿಸಬಾರದು. ಮಧುಮೇಹ ನಿಯಂತ್ರಣಕ್ಕೆ ನಿಯಮಿತ ತಪಾಸಣೆ ಹಾಗೂ ವೈದ್ಯರ ಸಲಹೆ ಮುಖ್ಯವಾಗಿದೆ.

ಅನ್ನಪೂರ್ಣೆಯ ಅಂತಿಮ ಯಾತ್ರೆ: ಚೆನ್ನಮ್ಮ ದೇವೇಗೌಡರ ಅಂತ್ಯಕ್ರಿಯೆಗೆ ಸಜ್ಜಾದ ಬೆಟ್ಟದ ರಂಗನಾಥಸ್ವಾಮಿ ತಪ್ಪಲು!

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡರ ಪಾರ್ಥಿವ ಶರೀರ ಹೊಳೆನರಸೀಪುರದ ಎಚ್‌.ಡಿ. ರೇವಣ್ಣ ಅವರ ನಿವಾಸಕ್ಕೆ ಆಗಮಿಸಿದೆ.

ಇಂದು ಮಧ್ಯಾಹ್ನ 2 ಗಂಟೆ ಬಳಿಕ ಹರದನಹಳ್ಳಿ ಬಳಿಯ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ತಪ್ಪಲಿನಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಲಿದೆ.

ದೇವೇಗೌಡರ ಕುಟುಂಬದ ಯಜಮಾನಿಯಾಗಿದ್ದ ಚೆನ್ನಮ್ಮ ಅವರು ಸರಳತೆ, ಕರುಣೆ ಹಾಗೂ ಆತ್ಮೀಯತೆಗೆ ಹೆಸರಾಗಿದ್ದರು. ರಾಜಕೀಯ ಕುಟುಂಬದ ಸೊಸೆ ಆಗಿದ್ದರೂ ಹಳ್ಳಿಯ ಸೊಗಡನ್ನು ಉಳಿಸಿಕೊಂಡು ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದರು. ಮನೆ ಬಾಗಿಲಿಗೆ ಬಂದ ಯಾರನ್ನೂ ಬರಿಗೈಯಲ್ಲಿ ಕಳುಹಿಸದೆ, ಊಟ ಮಾಡಿಸದೆ ಕಳುಹಿಸದ ಅನ್ನಪೂರ್ಣೆಯಾಗಿ ಗುರುತಿಸಿಕೊಂಡಿದ್ದರು.

ಚೆನ್ನಮ್ಮ ಅವರ ಅಂತಿಮ ಸಂಸ್ಕಾರಕ್ಕಾಗಿ ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲಿ ಬೃಹತ್ ಜರ್ಮನ್ ಟೆಂಟ್ ನಿರ್ಮಿಸಲಾಗಿದ್ದು, ಸುಮಾರು 30 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆ ನಂತರ ಬೆಂಗಳೂರಿನ ಜೆ.ಪಿ ನಗರದ ಕನಕಗಿರಿ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಕಣ್ಣನ್ ಸ್ವಾಮಿ ನೇತೃತ್ವದಲ್ಲಿ ವಿಧಿವಿಧಾನಗಳು ನಡೆಯಲಿವೆ. ಸಂಜೆ 4.30ರೊಳಗೆ ಅಂತ್ಯಕ್ರಿಯೆ ಪೂರ್ಣಗೊಳಿಸಲು ಸಿದ್ಧತೆ ಮಾಡಲಾಗಿದೆ.

ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿ ಗ್ರಾಮದ ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನ ಜಾಗವನ್ನು ಕುಟುಂಬದ ಸದಸ್ಯರು ಆಯ್ಕೆ ಮಾಡಿದ್ದಾರೆ. ಈ ಪ್ರದೇಶದೊಂದಿಗೆ ಚೆನ್ನಮ್ಮ ಅವರಿಗೆ ದೀರ್ಘಕಾಲದ ನಂಟು ಇತ್ತು. ಹಳೆಕೋಟೆ, ಮುತ್ತಿಗೆ ಹಿರೀಹಳ್ಳಿ, ಹರದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಅವರು ಆತ್ಮೀಯ ಸಂಬಂಧ ಹೊಂದಿದ್ದರು.

ಚೆನ್ನಮ್ಮ ಅವರ ಅಳಿಯ ಹಾಗೂ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು, ಈ ಸ್ಥಳದಲ್ಲಿ ಸ್ಮಾರಕ ನಿರ್ಮಿಸುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.

ಮುತ್ತಿಗೆಹಿರಿಹಳ್ಳಿಯಲ್ಲಿ ಮುತ್ತೈದೆ ಶಾಸ್ತ್ರ:

ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಬೆಳಗಿನ ಜಾವ 4.45ರ ಸುಮಾರಿಗೆ ಹೊಳೆನರಸೀಪುರದ ರೇವಣ್ಣ ನಿವಾಸಕ್ಕೆ ತರಲಾಯಿತು. ಅದಕ್ಕೂ ಮೊದಲು ಅವರ ಹುಟ್ಟೂರು ಮುತ್ತಿಗೆಹಿರಿಹಳ್ಳಿಗೆ ಕೊಂಡೊಯ್ಯಲಾಗಿದ್ದು, ಗ್ರಾಮಸ್ಥರು ಮುತ್ತೈದೆ ಮಡಿಲು ತುಂಬಿಸುವ ಶಾಸ್ತ್ರ ನೆರವೇರಿಸಿದರು.

ನಂತರ ರೇವಣ್ಣ ಅವರ ನಿವಾಸಕ್ಕೆ ಪಾರ್ಥಿವ ಶರೀರ ಆಗಮಿಸಿದ ವೇಳೆ ಸೊಸೆ ಭವಾನಿ ರೇವಣ್ಣ ಆರತಿ ಬೆಳಗಿದರು. ಕುಟುಂಬಸ್ಥರು ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

 

ಶಿವಮೊಗ್ಗದಲ್ಲಿ ಹೃದಯ ವಿದ್ರಾವಕ ಘಟನೆ; ರಸ್ತೆ ಅಪಘಾತಕ್ಕೆ ಬಾಲಕ ಸಾವು!

ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆ ಗ್ರಾಮದಲ್ಲಿ ನಡೆದಿದೆ.

ಗುಂಡುಗದ್ದೆ ಗ್ರಾಮದ ನಿವಾಸಿ ಪ್ರಗತ್ ಕೆ.ಆರ್. ಮತ್ತು ರಂಜನಾ ದಂಪತಿಯ ಪುತ್ರ ಋಷ್ಯ.ಪಿ (7) ಮೃತಪಟ್ಟ ಬಾಲಕ. ಮಧ್ಯಾಹ್ನದ ವೇಳೆ ಮನೆಯ ಬಳಿ ಆಟವಾಡುತ್ತಿದ್ದ ಬಾಲಕ ಏಕಾಏಕಿ ರಸ್ತೆಗೆ ಬಂದಿದ್ದಾನೆ. ಇದೇ ವೇಳೆ ಬಂದ ಕಾರೊಂದು ಬಾಲಕನಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಮನೆಯ ಸಮೀಪ ರಸ್ತೆಯಲ್ಲಿ ಲಾರಿಯೊಂದು ನಿಂತಿದ್ದರಿಂದ ಬಾಲಕ ಚಾಲಕನಿಗೆ ಕಾಣಿಸದೇ ಏಕಾಏಕಿ ರಸ್ತೆ ಪ್ರವೇಶಿಸಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

ಮುಂಗಾರು ಮತ್ತೆ ಆಕ್ಟಿವ್; ರೈತರಿಗೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ.

ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು.

ಜುಲೈ 21ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಧ್ಯಮ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಕಡೆಗಳಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಮತ್ತು ಗುಡ್ಡ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಲಪಾತಗಳು ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ತೆರಳುವವರು ಎಚ್ಚರಿಕೆ ವಹಿಸಬೇಕು.

ಬಲವಾದ ಗಾಳಿ ಬೀಸುವ ಸಮಯದಲ್ಲಿ ಹಳೆಯ ಮರಗಳು, ತಾತ್ಕಾಲಿಕ ಶೆಡ್‌ಗಳು ಹಾಗೂ ಜಾಹೀರಾತು ಫಲಕಗಳ ಬಳಿ ವಾಹನ ನಿಲ್ಲಿಸದಂತೆ ಸೂಚಿಸಲಾಗಿದೆ.

ರೈತರು ಬೆಳೆಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ಚೆನ್ನಮ್ಮ ಅಂತ್ಯಕ್ರಿಯೆ; ಇಂದು ಹೊಳೆನರಸೀಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ!

ಹೊಳೆನರಸೀಪುರ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಇಂದು (ಜುಲೈ 20) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚೆನ್ನಮ್ಮ ಅವರ ಅಂತ್ಯಕ್ರಿಯೆ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದ ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದ್ದು, ಅಂತ್ಯಕ್ರಿಯೆಗೆ ಸಾವಿರಾರು ಜನರು ಹಾಗೂ ಗಣ್ಯರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗದಂತೆ ಜಿಲ್ಲಾಧಿಕಾರಿ ಲತಾಕುಮಾರಿ ಮುಂಜಾಗ್ರತಾ ಕ್ರಮವಾಗಿ ಇಂದು ರಜೆ ಘೋಷಿಸಿದ್ದಾರೆ.

ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸುವ ಸಲುವಾಗಿ ಇಂದು ಹೊಳೆನರಸೀಪುರ ಪಟ್ಟಣದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.

ಇಂದು ಬೆಳಗ್ಗೆ 7ರಿಂದ 9.30ರವರೆಗೆ ಹೊಳೆನರಸೀಪುರದಲ್ಲಿರುವ ರೇವಣ್ಣ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಕ್ಯಾತನಹಳ್ಳಿಗೆ ಕೊಂಡೊಯ್ಯಲಾಗುವುದು.

ಮಧ್ಯಾಹ್ನ 2ರಿಂದ ಸಂಜೆ 4.15ರವರೆಗೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ 5 ಎಸ್‌ಪಿಗಳ ನೇತೃತ್ವದಲ್ಲಿ 2 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಗಣ್ಯರ ಸಂಚಾರಕ್ಕಾಗಿ ಐದು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಧೂಳು, ತುಕ್ಕು ಹಿಡಿದು ಹಾಳಾಗುತ್ತಿರುವ ಕೋಟಿ ಮೌಲ್ಯದ ವಾಹನಗಳು; ಬೆಂಗಳೂರಿನಲ್ಲಿ ಹೊಸ ಸಮಸ್ಯೆ!

ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಆವರಣ ಹಾಗೂ ಪೊಲೀಸ್ ಯಾರ್ಡ್‌ಗಳು ಜಪ್ತಿ ಮಾಡಿರುವ ವಾಹನಗಳಿಂದ ತುಂಬಿ ತುಳುಕುತ್ತಿವೆ.

ಅಪರಾಧ ಪ್ರಕರಣಗಳು, ಅಪಘಾತಗಳು ಹಾಗೂ ಸಂಚಾರ ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದ ಸಾವಿರಾರು ಕಾರು, ಬೈಕ್ ಮತ್ತು ಆಟೋಗಳು ವರ್ಷಗಳಿಂದ ನಿಂತಲ್ಲೇ ಹಾಳಾಗುತ್ತಿವೆ.

ಪೊಲೀಸ್ ಠಾಣೆಗಳ ಮುಂಭಾಗ, ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲೇ ವಾಹನಗಳನ್ನು ಸಾಲಾಗಿ ನಿಲ್ಲಿಸಲಾಗಿದ್ದು, ಇದರಿಂದ ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿದೆ. ಕೆಲವು ಕಡೆಗಳಲ್ಲಿ ವಾಹನಗಳ ಸುತ್ತ ಗಿಡಗಂಟಿಗಳು ಬೆಳೆದು, ವಿಷಜಂತುಗಳ ಆಶ್ರಯ ತಾಣಗಳಾಗಿವೆ. ಇದರಿಂದ ಸ್ಥಳೀಯ ನಿವಾಸಿಗಳಲ್ಲೂ ಆತಂಕ ಹೆಚ್ಚಾಗಿದೆ.

ಮಳೆ, ಬಿಸಿಲಿಗೆ ಸಿಲುಕಿರುವ ಕೋಟ್ಯಂತರ ರೂಪಾಯಿ ಮೌಲ್ಯದ ವಾಹನಗಳು ಈಗ ತುಕ್ಕು ಹಿಡಿದು ಕಬ್ಬಿಣದ ಚೂರುಗಳಾಗುತ್ತಿವೆ. ಅಪಘಾತ ಹಾಗೂ ಕಳ್ಳತನ ಪ್ರಕರಣಗಳಲ್ಲಿ ಸಿಲುಕಿರುವ ವಾಹನಗಳು ನ್ಯಾಯಾಲಯದ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಿಡುಗಡೆ ಮಾಡಲು ಸಾಧ್ಯವಾಗುವುದಿಲ್ಲ. ಕೆಲವು ಪ್ರಕರಣಗಳು ಇತ್ಯರ್ಥವಾಗಲು ವರ್ಷಗಳೇ ಬೇಕಾಗುತ್ತಿವೆ.

ಇನ್ನು ಕೆಲ ವಾಹನ ಮಾಲೀಕರು ದಂಡದ ಮೊತ್ತ ಹೆಚ್ಚಾಗಿರುವುದು, ದಾಖಲೆಗಳ ಸಮಸ್ಯೆ ಹಾಗೂ ವಾಹನದ ಮೌಲ್ಯ ಕಡಿಮೆಯಾಗಿರುವ ಕಾರಣ ವಾಪಸ್ ಪಡೆಯಲು ಮುಂದಾಗುತ್ತಿಲ್ಲ. ನಿಯಮಗಳ ಪ್ರಕಾರ ಹಕ್ಕು ಸಲ್ಲಿಸದ ವಾಹನಗಳನ್ನು ಹರಾಜು ಹಾಕಬೇಕಿದ್ದರೂ, ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ.

ಇತ್ತೀಚೆಗೆ ಬೆಂಗಳೂರಿನ ಕೆಲವು ಪೊಲೀಸ್ ಠಾಣೆಗಳಲ್ಲಿ ಜಪ್ತಿ ವಾಹನಗಳಿಗೆ ಬೆಂಕಿ ತಗುಲಿ ನೂರಾರು ವಾಹನಗಳು ಸುಟ್ಟುಹೋದ ಘಟನೆಗಳು ನಡೆದಿವೆ. ವಾಹನಗಳಲ್ಲಿ ಉಳಿದಿರುವ ಪೆಟ್ರೋಲ್, ಡೀಸೆಲ್‌ನಿಂದಾಗಿ ಬೆಂಕಿ ಅವಘಡದ ಅಪಾಯವೂ ಹೆಚ್ಚಾಗಿದೆ.

ಈ ಹಿಂದೆ ಕರ್ನಾಟಕ ಹೈಕೋರ್ಟ್ ಕೂಡ ಫುಟ್‌ಪಾತ್‌ಗಳ ಮೇಲಿರುವ ಜಪ್ತಿ ವಾಹನಗಳನ್ನು ತೆರವುಗೊಳಿಸುವಂತೆ ಸೂಚಿಸಿತ್ತು. ಇದೀಗ ನಗರದ ಹೊರವಲಯದಲ್ಲಿ ಪರ್ಯಾಯ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆಯಾದರೂ, ಹರಾಜು ಪ್ರಕ್ರಿಯೆಯನ್ನು ತ್ವರಿತಗೊಳಿಸಿದಾಗ ಮಾತ್ರ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪೂಂಚ್-ರಾಜೌರಿಯಲ್ಲಿ ಪ್ರಕೃತಿ ವಿಕೋಪದ ಅಟ್ಟಹಾಸ; 11 ಸಾವು, 7 ಮಂದಿ ನಾಪತ್ತೆ

0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಾಜೌರಿಯಲ್ಲಿ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ.

ಭೂಕುಸಿತ ಹಾಗೂ ಹಠಾತ್ ಪ್ರವಾಹದಿಂದ ಇದುವರೆಗೆ 11 ಮಂದಿ ಮೃತಪಟ್ಟಿದ್ದು, 7 ಮಂದಿ ನಾಪತ್ತೆಯಾಗಿದ್ದಾರೆ.

ಧಾರಾಕಾರ ಮಳೆಯಿಂದ ನದಿಗಳು ಉಕ್ಕಿ ಹರಿದ ಪರಿಣಾಮ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ರಕ್ಷಣಾ ಸಿಬ್ಬಂದಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಪೂಂಚ್ ಜಿಲ್ಲೆಯ ಸುರಂಕೋಟ್ ಪ್ರದೇಶದಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ. ಲೋವರ್ ಮುರ್ರಾ ಗ್ರಾಮದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಮೃತರಲ್ಲಿ ಎರಡು ವರ್ಷದ ಮಗು ಕೂಡ ಸೇರಿದೆ. ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಸಾಂಗ್ಲಾ ಗ್ರಾಮದಲ್ಲಿ ಹಠಾತ್ ಪ್ರವಾಹಕ್ಕೆ ಮನೆ ಕೊಚ್ಚಿಹೋಗಿದ್ದು, ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ನೂನಬಂದಿ ಗ್ರಾಮದಲ್ಲಿ ಮನೆ ಕುಸಿದು 28 ವರ್ಷದ ಮಹಿಳೆ ಮೃತಪಟ್ಟಿದ್ದು, ಅವರ ಪತಿ ಹಾಗೂ ಮೂವರು ಮಕ್ಕಳನ್ನು ಗಾಯಗೊಂಡ ಸ್ಥಿತಿಯಲ್ಲಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತ ರಾಜೌರಿ ಜಿಲ್ಲೆಯಲ್ಲೂ ಪ್ರವಾಹದ ಭೀತಿ ಎದುರಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿದ ಪರಿಣಾಮ ಹಲವು ಮನೆಗಳು ಹಾಗೂ ರಸ್ತೆಗಳು ಜಲಾವೃತಗೊಂಡಿವೆ. ಪ್ರವಾಹದ ನೀರಿನಲ್ಲಿ ವಾಹನಗಳು ಕೊಚ್ಚಿಹೋಗಿದ್ದು, ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಹಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ದೆಹಲಿ ಪ್ರವಾಸವನ್ನು ಮೊಟಕುಗೊಳಿಸಿ ಜಮ್ಮುವಿಗೆ ವಾಪಸ್ ಆಗಿದ್ದಾರೆ. ರಕ್ಷಣಾ ಹಾಗೂ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸುತ್ತಿರುವ ಅವರು, ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಅಧಿಕಾರಿಗಳಿಂದ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದು, ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ಜುಲೈ 23ರವರೆಗೆ ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಅಧಿಕಾರಿಗಳು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಅಪಾಯದ ಪ್ರದೇಶಗಳಿಗೆ ತೆರಳದಂತೆ ಜನರಿಗೆ ಸೂಚನೆ ನೀಡಲಾಗಿದೆ.

ಬರ ನಿರ್ವಹಣೆಯಲ್ಲಿ ಗದಗ ಮಾದರಿ: ಎಲ್ಲ ಅಧಿಕಾರಿಗಳ ಭಾಗವಹಿಸುವಿಕೆಗೆ ಸಿಎಂ ಡಿಕೆ ಶಿವಕುಮಾರ್ ಮೆಚ್ಚುಗೆ

0

ಗದಗ: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತಗಳು ಸಂಪೂರ್ಣ ಸನ್ನದ್ಧವಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚಿಸಿದ್ದು, ಇದೇ ವೇಳೆ ಬರ ನಿರ್ವಹಣೆ ಕುರಿತ ರಾಜ್ಯಮಟ್ಟದ ವಿಡಿಯೊ ಸಂವಾದದಲ್ಲಿ ಗದಗ ಜಿಲ್ಲೆಯಿಂದ ಎಲ್ಲ ಇಲಾಖೆಗಳ ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ಭಾಗವಹಿಸಿದ್ದನ್ನು ವಿಶೇಷವಾಗಿ ಪ್ರಶಂಸಿಸಿದರು.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮೂರು ಗಂಟೆಗಳಿಗೂ ಅಧಿಕ ಕಾಲ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಗದಗ ಜಿಲ್ಲೆಯಿಂದ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ಬರ ನಿರ್ವಹಣೆ ಕುರಿತು ಪ್ರತಿಯೊಬ್ಬ ಅಧಿಕಾರಿಗೂ ಸಮಗ್ರ ಅರಿವು ಇರಬೇಕು. ಅದಕ್ಕಾಗಿ ಇಂತಹ ಸಮನ್ವಯ ಸಭೆಗಳು ಅತ್ಯಂತ ಮಹತ್ವದ್ದಾಗಿವೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬರದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಚಿತವಾಗಿ ಯೋಜನೆ ರೂಪಿಸಬೇಕು. ಅಗತ್ಯವಿರುವ ಕಡೆ ಮೇವು ಬ್ಯಾಂಕ್‌ಗಳನ್ನು ಆರಂಭಿಸಬೇಕು. ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ ಆದ್ಯತೆ ನೀಡಬೇಕು. ಜಲಾಶಯಗಳ ನೀರಿನ ಮಟ್ಟ, ಬೆಳೆ ಪರಿಸ್ಥಿತಿ ಹಾಗೂ ಅಂತರ್ಜಲ ಮಟ್ಟದ ಮಾಹಿತಿಯನ್ನು ನಿಯಮಿತವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬರದ ಕಾರಣ ಜನರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ ಗ್ರಾಮೀಣ ಪ್ರದೇಶದಲ್ಲಿ ವಿಬಿ-ಜಿ ರಾಮ್‌ಜಿ ಯೋಜನೆ ಅಡಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೂಚಿಸಿದರು.

ಸಭೆಯಲ್ಲಿ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಡಿಸಿಎಫ್ ಸಂತೋಷ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲೆಯ ತಹಸೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪದೇ ಪದೆ ಜುಗಾರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗೆ ಗಡಿಪಾರು ಶಿಕ್ಷೆ!

ಉಡುಪಿ: ಮಟ್ಕಾ ಜುಗಾರಿ ಪ್ರಕರಣಗಳಲ್ಲಿ ಪದೇ ಪದೆ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಉಡುಪಿ ನಗರದ ಶಿವಳ್ಳಿ ನಿವಾಸಿ ರಾಮರಾಜ್ ಅಲಿಯಾಸ್ ರಮೇಶ್ ಅರಸ್ (48) ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ.

ಆರೋಪಿ ರಾಮರಾಜ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಟ್ಕಾ ಜುಗಾರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, ಮತ್ತೊಂದು ಪ್ರಕರಣದ ವಿಚಾರಣೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.

ಗಡಿಪಾರು ಅವಧಿಯಲ್ಲಿ ರಾಮರಾಜ್ ಅವರು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸ್ತವ್ಯ ಹೂಡುವಂತಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಕಣ್ಣೀರ ವಿದಾಯದ ನಡುವೆ ಚೆನ್ನಮ್ಮ ಅಂತಿಮ ಯಾತ್ರೆ ಆರಂಭ; ದೇವೇಗೌಡರಿಂದ ಪತ್ನಿಗೆ ಕೊನೆಯ ಪೂಜೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತಿಮ ಯಾತ್ರೆ ಭಾನುವಾರ ಬೆಂಗಳೂರಿನಿಂದ ಆರಂಭವಾಗಿದೆ.

ಚೆನ್ನಮ್ಮ ಅವರ ಪಾರ್ಥಿವ ಶರೀರ ಹೊತ್ತ ವಾಹನ ಹಾಸನದತ್ತ ಪ್ರಯಾಣ ಬೆಳೆಸಿದ್ದು, ಕುಟುಂಬಸ್ಥರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಕಣ್ಣೀರಿನ ವಿದಾಯ ನೀಡಿದ್ದಾರೆ.

ಅಂತಿಮ ಯಾತ್ರೆ ಆರಂಭಕ್ಕೂ ಮುನ್ನ ಬೆಂಗಳೂರಿನಲ್ಲಿ ಚೆನ್ನಮ್ಮ ಅವರ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿದರು. ಪತಿ ಎಚ್.ಡಿ. ದೇವೇಗೌಡ ಅವರು ಪತ್ನಿಗೆ ಮೊದಲ ಪೂಜೆ ನೆರವೇರಿಸಿ ಅಂತಿಮ ನಮನ ಸಲ್ಲಿಸಿದರು.

ಈ ವೇಳೆ ದೇವೇಗೌಡರು ಚೆನ್ನಮ್ಮ ಅವರ ಹಣೆಗೆ ಕುಂಕುಮ ಇಟ್ಟು, ತಲೆಗೆ ಹೂವು ಮುಡಿಸಿ ಭಾವುಕರಾದರು. ಬಳಿಕ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿಮಕ್ಕಳು ಪೂಜೆ ಸಲ್ಲಿಸಿ ಅಗಲಿದ ಹಿರಿಯ ಜೀವಕ್ಕೆ ಗೌರವ ಅರ್ಪಿಸಿದರು.

ಚೆನ್ನಮ್ಮ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಸಲಾಯಿತು. ಬಳಿಕ ಅಂತಿಮ ಯಾತ್ರೆಯ ವಾಹನ ಬೆಂಗಳೂರಿನಿಂದ ಹಾಸನದತ್ತ ಹೊರಟಿತು.

ಅಂತಿಮ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ದೇವೇಗೌಡರ ಕುಟುಂಬದ ಸದಸ್ಯರು ಭಾಗಿಯಾಗಿದ್ದಾರೆ. ಮಾರ್ಗದುದ್ದಕ್ಕೂ ಸಾರ್ವಜನಿಕರು, ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಈ ಮಾರ್ಗದಲ್ಲಿ ಸಾಗಲಿದೆ ಅಂತಿಮ ಯಾತ್ರೆ:

ಚೆನ್ನಮ್ಮ ಅವರ ಪಾರ್ಥಿವ ಶರೀರ ಸಾಗುವ ಮಾರ್ಗದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಂತಿಮ ಯಾತ್ರೆ ಸಾಗುವ ಪ್ರಮುಖ ಸ್ಥಳಗಳು:

  • ನೆಲಮಂಗಲ ಕ್ರಾಸ್
  • ಸೋಲೂರು ಕ್ರಾಸ್
  • ಮರೂರು ಹ್ಯಾಂಡ್ ಪೋಸ್ಟ್
  • ಕುಣಿಗಲ್ ಕ್ರಾಸ್
  • ಬೆಳ್ಳೂರು ಕ್ರಾಸ್
  • ಕದಬಳ್ಳಿ ಕ್ರಾಸ್
  • ಹಿರಿಸಾವೆ ಕ್ರಾಸ್
  • ಚನ್ನರಾಯಪಟ್ಟಣ
  • ಎಲೆಯೂರು (ಉದಯಪುರ)
  • ಶಾಂತಿಗ್ರಾಮ
  • ಬೂವನಹಳ್ಳಿ ಕ್ರಾಸ್
  • ಹಾಸನ ಡೈರಿ ಸರ್ಕಲ್
  • ಎನ್.ಆರ್. ಸರ್ಕಲ್
  • ಮೊಸಳೆ ಹೊಸಹಳ್ಳಿ

ಹೊಳೆನರಸೀಪುರದಲ್ಲಿ ಸಾರ್ವಜನಿಕ ಅಂತಿಮ ದರ್ಶನ:

ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಭಾನುವಾರ ರಾತ್ರಿ ಹೊಳೆನರಸೀಪುರದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುತ್ತದೆ.

ಜುಲೈ 20ರಂದು ಬೆಳಗ್ಗೆ 7 ಗಂಟೆಯಿಂದ 9.30ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಬೆಳಗ್ಗೆ 10 ಗಂಟೆಗೆ ಹೊಳೆನರಸೀಪುರದಿಂದ ಪಾರ್ಥಿವ ಶರೀರವನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಕೊಂಡೊಯ್ಯಲಾಗುತ್ತದೆ.

ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹುಟ್ಟೂರು ಹರದನಹಳ್ಳಿ ಗ್ರಾಮದ ಸಮೀಪದ ಕ್ಯಾತನಹಳ್ಳಿಯ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ.

ಬೆಳಗ್ಗೆ 11.30ರ ವೇಳೆಗೆ ಪಾರ್ಥಿವ ಶರೀರ ಅಂತ್ಯಕ್ರಿಯೆ ಸ್ಥಳ ತಲುಪಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.15ರವರೆಗೆ ಅಂತಿಮ ವಿಧಿವಿಧಾನಗಳು ನಡೆಯಲಿವೆ.

ರಾಜ್ಯ ಸರ್ಕಾರದ ವತಿಯಿಂದ ಚೆನ್ನಮ್ಮ ಅವರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗುತ್ತಿದ್ದು, ಗಣ್ಯರು, ಜನಪ್ರತಿನಿಧಿಗಳು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಅಂತಿಮ ಸಂಸ್ಕಾರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

72 ವರ್ಷಗಳ ದಾಂಪತ್ಯ ಜೀವನ ನಡೆಸಿದ ದೇವೇಗೌಡ ಮತ್ತು ಚೆನ್ನಮ್ಮ ಅವರ ಬಾಂಧವ್ಯಕ್ಕೆ ಸಾಕ್ಷಿಯಾಗಿದ್ದ ಚೆನ್ನಮ್ಮ ಅವರ ಅಗಲಿಕೆ ಕುಟುಂಬದವರು ಹಾಗೂ ಅಭಿಮಾನಿಗಳಲ್ಲಿ ಅಪಾರ ದುಃಖ ಮೂಡಿಸಿದೆ.