Home Blog

ಮೂಕ ಜೀವಿಗಳಿಗೂ ನ್ಯಾಯ ಬೇಕು: 9 ನಾಯಿಗಳನ್ನು ಪೇಟಾ ವಶದಲ್ಲೇ ಇರಿಸಲು ಆದೇಶಿಸಿದ ಹೈಕೋರ್ಟ್

ಬೆಂಗಳೂರು: ಪ್ರಾಣಿಗಳಿಗೆ ಮಾತು ಬಾರದಿದ್ದರೂ ಅವು ನೋವು, ಯಾತನೆ ಮತ್ತು ಭಾವನೆಗಳನ್ನು ಅನುಭವಿಸುತ್ತವೆ. ಆದ್ದರಿಂದ ಅವುಗಳಿಗೂ ಘನತೆಯಿಂದ ಬದುಕುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನಾಯಿಗಳಿಗೆ ಹಿಂಸೆ ನೀಡಿದ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಅವುಗಳ ಕಸ್ಟಡಿ ನೀಡಲು ನಿರಾಕರಿಸಿರುವ ನ್ಯಾಯಾಲಯ, ಒಂಬತ್ತು ನಾಯಿಗಳನ್ನು ಪ್ರಾಣಿ ದಯಾ ಸಂಸ್ಥೆಯ ವಶದಲ್ಲೇ ಇರಿಸಲು ಆದೇಶಿಸಿದೆ.

ನಾಯಿಗಳನ್ನು ಮಾಲೀಕನಿಗೆ ಹಸ್ತಾಂತರಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪೀಪಲ್ ಫಾರ್ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ಸ್ (ಪೇಟಾ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಪರಿಶೀಲಿಸಿದ ನ್ಯಾಯಾಲಯ, ನಾಯಿಗಳಿಗೆ ಕ್ರೂರವಾಗಿ ಥಳಿಸುತ್ತಿರುವ ದೃಶ್ಯಗಳು ಕಂಡುಬಂದಿವೆ ಎಂದು ಉಲ್ಲೇಖಿಸಿದೆ. ಇಂತಹ ಸಂದರ್ಭದಲ್ಲೂ ನಾಯಿಗಳ ಕಸ್ಟಡಿಯನ್ನು ಹಿಂಸೆ ನೀಡಿದ ವ್ಯಕ್ತಿಗೆ ಹಸ್ತಾಂತರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ಪ್ರಾಣಿಗಳಿಗೂ ಹಿಂಸೆಯಿಂದ ಮುಕ್ತವಾಗಿ ಬದುಕುವ ಹಕ್ಕಿದೆ. ಅವು ಮನುಷ್ಯರಂತೆ ಮಾತನಾಡಲು ಸಾಧ್ಯವಾಗದಿದ್ದರೂ ನೋವು ಮತ್ತು ಸಂಕಟವನ್ನು ಅನುಭವಿಸುವ ಜೀವಿಗಳಾಗಿವೆ. ಕಾನೂನು ಸಹ ಪ್ರಾಣಿಗಳನ್ನು ಕೇವಲ ಮನುಷ್ಯರ ಉಪಯೋಗಕ್ಕಾಗಿ ಇರುವ ವಸ್ತುಗಳೆಂದು ಪರಿಗಣಿಸುವುದನ್ನು ಬಹಳ ಹಿಂದೆಯೇ ನಿಲ್ಲಿಸಿದೆ ಎಂದು ನ್ಯಾಯಪೀಠ ಹೇಳಿದೆ.

ಪ್ರಾಣಿಗಳು ಸಹ ಘನತೆ, ಕರುಣೆ ಹಾಗೂ ರಕ್ಷಣೆಗೆ ಅರ್ಹವಾದ ಜೀವಿಗಳು. ಒಂದು ನಾಗರಿಕ ಸಮಾಜದ ಮೌಲ್ಯವನ್ನು ಅದು ತನ್ನ ಸಹಮಾನವರೊಂದಿಗೆ ಹೇಗೆ ವರ್ತಿಸುತ್ತದೆ ಎಂಬುದರ ಜೊತೆಗೆ ಮೂಕ ಜೀವಿಗಳೊಂದಿಗೆ ಎಷ್ಟು ಕರುಣೆ ಮತ್ತು ನ್ಯಾಯದಿಂದ ನಡೆದುಕೊಳ್ಳುತ್ತದೆ ಎಂಬುದರ ಆಧಾರದ ಮೇಲೂ ಅಳೆಯಬೇಕು ಎಂದು ಪೀಠ ಅಭಿಪ್ರಾಯಪಟ್ಟಿದೆ.

ಪ್ರತಿ ಪ್ರಾಣಿಯ ಮೇಲಿನ ಕ್ರೌರ್ಯವು ಕೇವಲ ಆ ಜೀವಿಯ ಮೇಲಿನ ದೌರ್ಜನ್ಯವಲ್ಲ, ಅದು ಸಮಾಜದ ಮಾನವೀಯತೆ ಮತ್ತು ಆತ್ಮಸಾಕ್ಷಿಯ ಮೇಲಿನ ಕಳಂಕವಾಗಿದೆ. ಪ್ರಾಣಿಗಳ ಜೀವವನ್ನು ರಕ್ಷಿಸುವುದು ದಾನವಲ್ಲ, ಅದು ಸಾಂವಿಧಾನಿಕ ನೈತಿಕತೆಯನ್ನು ಕಾಪಾಡುವ ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ

ಬೆಂಗಳೂರು ನಗರದ ನಾಗಸಂದ್ರ ನಿವಾಸಿ ಕೆ.ಇ. ರಮೇಶ್ ಅವರ ಬಳಿ ವಿವಿಧ ತಳಿಯ ಒಂಬತ್ತು ನಾಯಿಗಳಿದ್ದವು. ಅವರು ನಾಯಿಗಳ ಮೇಲೆ ಪದೇ ಪದೇ ವೈರ್ ಹಾಗೂ ಪೈಪ್‌ಗಳಿಂದ ಹಲ್ಲೆ ನಡೆಸುತ್ತಿರುವುದನ್ನು ನೆರೆಹೊರೆಯವರು ಗಮನಿಸಿ, ಅದರ ವಿಡಿಯೊಗಳನ್ನು ಪೇಟಾ ಸಂಸ್ಥೆಗೆ ನೀಡಿದ್ದರು.

ದೂರಿನ ಮೇರೆಗೆ ಪೇಟಾ ಸಂಸ್ಥೆ ನಾಯಿಗಳನ್ನು ರಕ್ಷಿಸಿ ತನ್ನ ಸುಪರ್ದಿಗೆ ಪಡೆದುಕೊಂಡಿತ್ತು. ಬಳಿಕ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಸೆಕ್ಷನ್ 325 ಮತ್ತು 62 ಹಾಗೂ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 11(1) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ನಂತರ ನಾಯಿಗಳ ಮಾಲೀಕ ರಮೇಶ್ ನ್ಯಾಯಾಲಯದ ಮೊರೆ ಹೋಗಿದ್ದರು. ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಾಯಿಗಳನ್ನು ಹಿಂತಿರುಗಿಸಲು ಅನುಮತಿ ನೀಡಿದ್ದರೂ, ಅದನ್ನು ಪ್ರಶ್ನಿಸಿ ಪೇಟಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ನಾಯಿಗಳನ್ನು ಮಾಲೀಕನಿಗೆ ಒಪ್ಪಿಸಲು ನಿರಾಕರಿಸಿ, ಅವುಗಳನ್ನು ಪೇಟಾ ಸಂಸ್ಥೆಯ ವಶದಲ್ಲೇ ಇರಿಸಲು ಆದೇಶಿಸಿದೆ.

ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ ಹೊಸ ಸಾರಥ್ಯ! ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಮರಾಠೆ ಅವಿರೋಧ ಆಯ್ಕೆ; ಗೌರವ ಅಧ್ಯಕ್ಷರಾಗಿ ಕುಮಾರ ಕಟ್ಟಿಮನಿ

0

ಗದಗ: ಜಿಲ್ಲಾ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಮಂಜುನಾಥ ಮರಾಠೆ ಹಾಗೂ ಗೌರವ ಅಧ್ಯಕ್ಷರಾಗಿ ಕುಮಾರ ಕಟ್ಟಿಮನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳಿಂದ ಗುಪ್ತವಾಗಿ ಅಭಿಪ್ರಾಯ ಸಂಗ್ರಹಿಸಿದ ಬಳಿಕ ರಾಜ್ಯ ಘಟಕದ ಸದಸ್ಯ ಕಳಕೇಶ್ ಉಳಕ್ಕಿ ಅವರು ನೂತನ ಪದಾಧಿಕಾರಿಗಳ ಹೆಸರನ್ನು ಅಧಿಕೃತವಾಗಿ ಘೋಷಿಸಿದರು.

ಸಂಘದ ಉಪಾಧ್ಯಕ್ಷರಾಗಿ ಚಂದ್ರು ಪಾಟೀಲ್, ಜಿಲ್ಲಾ ಉಪಾಧ್ಯಕ್ಷೆಯಾಗಿ ಶಿಲ್ಪಾ ಬಂಡಿಹಾಳ್, ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಾಂತ್ (ಶ್ರೂಕಾಂತ್) ಅಂಗಡಿ, ಜಂಟಿ ಕಾರ್ಯದರ್ಶಿಯಾಗಿ ಬಸವರಾಜ್ ಈರಣ್ಣವರ, ಖಜಾಂಚಿಯಾಗಿ ಪ್ರದೀಪ್ ಹಿರೇಮಠ್ ಆಯ್ಕೆಯಾದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾಗಿ ಧರ್ಮೇಂದ್ರ ಇಟಗಿ, ಶೇಖಸಾಬ್ ಕಾತರಕಿ, ಪ್ರವೀಣ್‌ಕುಮಾರ್ ಕನ್ಯಾಳ್, ಜಗದೀಶ್ ಬಳಿಗೇರ್, ಗಾಳೆಪ್ಪ ಹರಿಜನ್, ಶಿವಯೋಗಿ ಭಾವಿ ಹಾಗೂ ಪ್ರದೀಪ್ ಕನ್ಯಾಳ್ ಆಯ್ಕೆಯಾಗಿದ್ದಾರೆ.

ಈ ವೇಳೆ ಮಾತನಾಡಿದ ರಾಜ್ಯ ಘಟಕದ ಸದಸ್ಯ ಕಳಕೇಶ್ ಉಳಕ್ಕಿ, ಪತ್ರಕರ್ತರು ಹಲವು ಸಂಕಷ್ಟಗಳ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ಸಮಸ್ಯೆಗಳಿಗೆ ಸಂಘದ ಪದಾಧಿಕಾರಿಗಳು ಧ್ವನಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳು ಪ್ರತಿಯೊಬ್ಬ ಪತ್ರಕರ್ತರಿಗೂ ತಲುಪುವಂತೆ ಸಂಘ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ನೂತನ ಪದಾಧಿಕಾರಿಗಳು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಪತ್ರಕರ್ತರ ಹಿತಾಸಕ್ತಿಗಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.

ಕೇವಲ 60 ಸೆಕೆಂಡ್ ಅಂತರದಲ್ಲಿ ಎರಡು ಭೀಕರ ಭೂಕಂಪಗಳು: ಕಟ್ಟಡಗಳು ಕುಸಿತ, ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ!

0

ಕ್ಯಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪ ದೇಶವನ್ನೇ ತಲ್ಲಣಗೊಳಿಸಿದ್ದು, ರಾಜಧಾನಿ ಕ್ಯಾರಕಾಸ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕಟ್ಟಡಗಳು ಕುಸಿದು ಭಾರೀ ಪ್ರಮಾಣದ ಹಾನಿ ಉಂಟಾಗಿದೆ. ಅವಶೇಷಗಳಡಿ ಸಾವಿರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಆತಂಕ ಎದುರಾಗಿದೆ.

ಬುಧವಾರ ಸಂಜೆ ಅಲ್ಪಾವಧಿಯ ಅಂತರದಲ್ಲಿ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿವೆ. 7.2 ಹಾಗೂ 7.5 ತೀವ್ರತೆಯ ಭೂಕಂಪಗಳು ಸಂಭವಿಸಿದ ಪರಿಣಾಮ ರಾಜಧಾನಿಯ ಅನೇಕ ಬಹುಮಹಡಿ ಕಟ್ಟಡಗಳು ನೆಲಸಮವಾಗಿವೆ. ಭೂಕಂಪದ ಹೊಡೆತಕ್ಕೆ ಭಯಗೊಂಡ ಜನರು ಮನೆಗಳಿಂದ ಹೊರಗೆ ಓಡಿ ಬೀದಿಗಳಲ್ಲಿ ಆಶ್ರಯ ಪಡೆದಿದ್ದಾರೆ.

ಅವಘಡದ ಬಳಿಕ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವ ವೇಳೆ ಹಲವು ಹೃದಯವಿದ್ರಾವಕ ದೃಶ್ಯಗಳು ಬೆಳಕಿಗೆ ಬಂದಿವೆ. ಕ್ಯಾರಕಾಸ್‌ನ 22 ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಸ್ಥಳದಲ್ಲಿ, ಅವಶೇಷಗಳಡಿ ಸಿಲುಕಿರುವ ಮಗನಿಗಾಗಿ ತಾಯಿ ನಡೆಸಿದ ಕೂಗು ಎಲ್ಲರ ಮನಕಲಕುವಂತಿತ್ತು.

“ಅಂತೋನಿಯೋ… ನಾನು ನಿನ್ನ ಅಮ್ಮ… ಇಲ್ಲಿ ಇದ್ದೇನೆ…” ಎಂದು ತಾಯಿ ಕೂಗುತ್ತಿರುವ ದೃಶ್ಯ ಸ್ಥಳದಲ್ಲಿದ್ದವರ ಕಣ್ಣೀರಿಗೂ ಕಾರಣವಾಗಿದೆ. ಆದರೆ ಅವಶೇಷಗಳಡಿಯಿಂದ ಯಾವುದೇ ಪ್ರತಿಕ್ರಿಯೆ ಕೇಳಿಬರದ ಕಾರಣ ಆತಂಕ ಮತ್ತಷ್ಟು ಹೆಚ್ಚಾಗಿದೆ.

ಇನ್ನೊಂದು ಪ್ರದೇಶವಾದ ಲಾಸ್ ಪಾಲೋಸ್ ಗ್ರಾಂಡಿಸ್‌ನ ಪೆಟುನಿಯಾ ವಸತಿ ಸಮುಚ್ಚಯದಲ್ಲೂ ಭಾರೀ ಹಾನಿ ಸಂಭವಿಸಿದೆ. ಸಾಮಾನ್ಯವಾಗಿ ಜನಜಂಗುಳಿಯಿಂದ ಕೂಡಿರುವ ಈ ಪ್ರದೇಶ ಭೂಕಂಪದ ಬಳಿಕ ಅವಶೇಷಗಳ ರಾಶಿಯಾಗಿ ಮಾರ್ಪಟ್ಟಿದೆ. ಅಲ್ಲಿಯೂ “ತಾನಿಯಾ… ತಾನಿಯಾ…” ಎಂದು ತಮ್ಮವರಿಗಾಗಿ ಹುಡುಕುತ್ತಿರುವವರ ನೋವಿನ ಕೂಗು ಕೇಳಿಬಂದಿದೆ.

ಸ್ಥಳೀಯರು ಹಾಗೂ ಸ್ವಯಂಸೇವಕರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಹಲವರು ಟಾರ್ಚ್‌ಗಳ ನೆರವಿನಿಂದ ಅವಶೇಷಗಳಡಿ ಸಿಲುಕಿರುವವರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಕೆಲವೆಡೆ ರಕ್ಷಣಾ ಸಿಬ್ಬಂದಿ ತಲುಪುವ ಮುನ್ನವೇ ಸ್ಥಳೀಯರು ಸ್ವಯಂಪ್ರೇರಿತವಾಗಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಭೂಕಂಪದ ಬಳಿಕ ದೇಶದ ಹಲವು ಭಾಗಗಳಲ್ಲಿ ವಿದ್ಯುತ್ ಮತ್ತು ಸಂಪರ್ಕ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ನಿಖರ ಹಾನಿಯ ಪ್ರಮಾಣ ಇನ್ನೂ ಲಭ್ಯವಾಗಿಲ್ಲ. ರಕ್ಷಣಾ ತಂಡಗಳು ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ಮುಂದುವರಿಸಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ಜೀವಂತವಾಗಿ ರಕ್ಷಿಸಲು ಹರಸಾಹಸ ಪಡುತ್ತಿವೆ.

ಹೀರೋ ಸ್ಪ್ಲೆಂಡರ್ ಬೈಕ್‌ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖದೀಮನ ಬಂಧನ: 20 ಲಕ್ಷ ಮೌಲ್ಯದ ವಾಹನಗಳು ಜಪ್ತಿ!

ಬೆಂಗಳೂರು ಗ್ರಾಮಾಂತರ: ಹೀರೋ ಸ್ಪ್ಲೆಂಡರ್ ಬೈಕ್‌ಗಳನ್ನೇ ಗುರಿಯಾಗಿಸಿಕೊಂಡು ಬೆಂಗಳೂರು ಗ್ರಾಮಾಂತರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮನನ್ನು ವಿಜಯಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆತನಿಂದ ಸುಮಾರು ₹20 ಲಕ್ಷ ಮೌಲ್ಯದ 42 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ನಿವಾಸಿ ಖಲೀಲ್ ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲವು ತಿಂಗಳುಗಳಿಂದ ದೇವನಹಳ್ಳಿ, ಹೊಸಕೋಟೆ, ಶಿಡ್ಲಘಟ್ಟ ಹಾಗೂ ಮಾಲೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಎನ್ನಲಾಗಿದೆ. ವಿಶೇಷವಾಗಿ ಹೀರೋ ಸ್ಪ್ಲೆಂಡರ್ ಬೈಕ್‌ಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ನಡೆಸುತ್ತಿದ್ದುದಾಗಿ ತನಿಖೆಯಿಂದ ಬಹಿರಂಗವಾಗಿದೆ.

ವಾಹನ ಕಳ್ಳತನದ ಬಗ್ಗೆ ಹಲವು ದೂರುಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಗಳು, ತಾಂತ್ರಿಕ ಮಾಹಿತಿ ಹಾಗೂ ಸ್ಥಳೀಯ ಸುಳಿವುಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹಲವು ಕಳವು ಪ್ರಕರಣಗಳ ಮಾಹಿತಿ ಬೆಳಕಿಗೆ ಬಂದಿದೆ.

ಆರೋಪಿ ಖಲೀಲ್ ಕಳವು ಮಾಡಿದ್ದ ಬೈಕ್‌ಗಳನ್ನು ಕೇವಲ ₹2,500ಕ್ಕೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ನಂತರ ಅವುಗಳನ್ನು ಖರೀದಿಸುತ್ತಿದ್ದ ಕೆಲವರು ದಾಖಲೆಗಳಿಲ್ಲದೆ ಹೆಚ್ಚಿನ ಬೆಲೆಗೆ ಮರುಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಳವು ವಾಹನಗಳನ್ನು ಖರೀದಿಸಿದ್ದ ವ್ಯಕ್ತಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಬಂಧಿತನಿಂದ ಒಟ್ಟು 42 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಅಂದಾಜು ಮೌಲ್ಯ ₹20 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಂಡ ವಾಹನಗಳಲ್ಲಿ ಬಹುತೇಕ ಬೈಕ್‌ಗಳು ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಿಂದ ಕಳುವಾಗಿದ್ದವು ಎಂದು ತಿಳಿದುಬಂದಿದೆ.

ಡಿವೈಎಸ್ಪಿ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ, ವಿಜಯಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಲಕ್ಷ್ಮೀನಾರಾಯಣ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪ್ರಶಂಸಿಸಿದ್ದಾರೆ.

ಇದೇ ವೇಳೆ, ವಶಪಡಿಸಿಕೊಂಡ ಬೈಕ್‌ಗಳನ್ನು ವಿಜಯಪುರ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್‌ಪಿ ಚಂದ್ರಕಾಂತ್ ಅವರು ನೈಜ ಮಾಲೀಕರಿಗೆ ಹಸ್ತಾಂತರಿಸಿದರು. ತಮ್ಮ ಕಳೆದುಹೋದ ವಾಹನಗಳು ಮರಳಿ ದೊರೆತ ಹಿನ್ನೆಲೆಯಲ್ಲಿ ಬೈಕ್ ಮಾಲೀಕರು ಪೊಲೀಸ್ ಇಲಾಖೆಯ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ವಾಹನ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಕಳವು ವಾಹನಗಳ ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ತುಂಗಭದ್ರಾ ಡ್ಯಾಂಗೆ ಹೊಸ ಜೀವಕಳೆ: ಇಂದು 33 ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ!

ಕೊಪ್ಪಳ: ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಕೋಟ್ಯಂತರ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಹೊಸ ಕಳೆ ಬಂದಿದ್ದು, ಜಲಾಶಯದ 33 ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆಯಲಿದೆ.

ಕಳೆದ ವರ್ಷ 19ನೇ ಕ್ರಸ್ಟ್ ಗೇಟ್ ಹರಿದು ಹೋಗಿದ್ದ ಹಿನ್ನೆಲೆಯಲ್ಲಿ ಉಂಟಾದ ಆತಂಕಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ರಾಜ್ಯ ಸರ್ಕಾರ ಎಲ್ಲಾ 33 ಗೇಟ್‌ಗಳನ್ನು ಬದಲಾಯಿಸುವ ನಿರ್ಧಾರ ಕೈಗೊಂಡಿತ್ತು. ಜಲಸಂಪನ್ಮೂಲ ಇಲಾಖೆ ಸಮರೋಪಾದಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿದ್ದು, ಸುಮಾರು ₹51 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಹೊಸ ಗೇಟ್‌ಗಳನ್ನು ಅಳವಡಿಸಲಾಗಿದೆ.

2024ರ ಆಗಸ್ಟ್‌ನಲ್ಲಿ ನಡೆದ ಗೇಟ್ ದುರಂತದಿಂದ ಲಕ್ಷಾಂತರ ಕ್ಯೂಸೆಕ್ ನೀರು ನದಿಗೆ ಹರಿದು ಹೋಗಿತ್ತು. ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರು ಆತಂಕಕ್ಕೊಳಗಾಗಿದ್ದರು. ಈ ಘಟನೆ ಬಳಿಕ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಂಡು ಇಡೀ ಡ್ಯಾಂನ ಗೇಟ್ ವ್ಯವಸ್ಥೆಯನ್ನೇ ನವೀಕರಿಸುವ ಮಾಸ್ಟರ್ ಪ್ಲಾನ್ ರೂಪಿಸಿತ್ತು.

ಇಂದು ನಡೆಯಲಿರುವ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳು ಒಂದೇ ವೇದಿಕೆಯಲ್ಲಿ ಭಾಗವಹಿಸಲಿದ್ದು, ಕೇಂದ್ರ ಜಲಶಕ್ತಿ ಸಚಿವರೂ ಉಪಸ್ಥಿತರಿರುವರು. ಜಲಾಶಯದ ಮೇಲೆಯೇ ಗೇಟ್‌ಗಳ ಉದ್ಘಾಟನೆ ನಡೆಯಲಿದ್ದು, ಬಳಿಕ 10 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆಯಿರುವ ಬೃಹತ್ ವೇದಿಕೆಯಲ್ಲಿ ಮುಖ್ಯ ಕಾರ್ಯಕ್ರಮ ಜರುಗಲಿದೆ.

ಸರ್ಕಾರದ ಪರವಾಗಿ ಶಾಸಕ ಬಸವರಾಜ್ ರಾಯರೆಡ್ಡಿ ನೇತೃತ್ವದ ನಿಯೋಗ ನೆರೆಯ ರಾಜ್ಯಗಳಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿತ್ತು.

ಒಂದು ಕಡೆ ಡ್ಯಾಂನ ಗೇಟ್‌ಗಳ ನವೀಕರಣ ನಾಲ್ಕು ಜಿಲ್ಲೆಗಳ ರೈತರಿಗೆ ನೆಮ್ಮದಿ ತಂದಿದ್ದರೂ, ಮತ್ತೊಂದೆಡೆ ಜಲಾಶಯದಲ್ಲಿನ ನೀರಿನ ಪ್ರಮಾಣ ಮಾತ್ರ ಚಿಂತೆ ಹುಟ್ಟಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 45 ಟಿಎಂಸಿ ನೀರು ಸಂಗ್ರಹವಾಗಿದ್ದರೆ, ಪ್ರಸ್ತುತ ಕೇವಲ 9 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ಜಲಾಶಯ ತುಂಬಿ ರೈತರಲ್ಲಿ ಮತ್ತೊಮ್ಮೆ ಆಶಾಭಾವನೆ ಮೂಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮಂತ್ರಾಲಯ ರಾಯರ ಮಠಕ್ಕೆ 21 ದಿನದಲ್ಲಿ ₹3.72 ಕೋಟಿ ಕಾಣಿಕೆ ಸಂಗ್ರಹ!

ರಾಯಚೂರು: ಕಲಿಯುಗ ಕಾಮಧೇನು ಎಂದೇ ಭಕ್ತರಿಂದ ಆರಾಧಿಸಲ್ಪಡುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ಕಾಣಿಕೆಗಳ ಮಹಾಪೂರ ಹರಿದು ಬಂದಿದೆ.

ಜೂನ್ ತಿಂಗಳ 21 ದಿನಗಳ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು ₹3.72 ಕೋಟಿ ಕಾಣಿಕೆ ಸಂಗ್ರಹವಾಗಿದೆ.

ಮಠದ ಮಾಹಿತಿಯ ಪ್ರಕಾರ, ಸಂಗ್ರಹವಾದ ಕಾಣಿಕೆಯಲ್ಲಿ ₹3,61,40,030 ಮೌಲ್ಯದ ಕರೆನ್ಸಿ ನೋಟುಗಳು ಹಾಗೂ ₹11,02,500 ಮೌಲ್ಯದ ನಾಣ್ಯಗಳು ಸೇರಿವೆ. ಇದಲ್ಲದೆ ಭಕ್ತರು ಕಾಣಿಕೆ ರೂಪದಲ್ಲಿ 67 ಗ್ರಾಂ ಚಿನ್ನ ಮತ್ತು 511 ಗ್ರಾಂ ಬೆಳ್ಳಿಯನ್ನು ಸಮರ್ಪಿಸಿದ್ದಾರೆ.

ಪ್ರತಿ ತಿಂಗಳಿನಂತೆ ಈ ಬಾರಿಯೂ ಸಾವಿರಾರು ಭಕ್ತರು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ತಮ್ಮ ಭಕ್ತಿಯನ್ನು ಕಾಣಿಕೆ ಮೂಲಕ ಅರ್ಪಿಸಿದ್ದಾರೆ.

ಹುಂಡಿ ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಕರಸೇವಕರು ಹಾಗೂ ಭಜನಾ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಮುಜರಾಯಿ ಇಲಾಖೆ ಹಾಗೂ ಮಠದ ಅಧಿಕಾರಿಗಳ ಸಮ್ಮುಖದಲ್ಲಿ ಎಣಿಕೆ ಕಾರ್ಯ ಯಶಸ್ವಿಯಾಗಿ ನಡೆಯಿತು.

 

ಕೈಕೊಟ್ಟ ಮುಂಗಾರು: ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ, ಕುಡಿಯುವ ನೀರಿಗೆ ಸಂಕಷ್ಟ!

ಮಂಡ್ಯ: ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್‌ ಮತ್ತು ಕಬಿನಿಯಲ್ಲಿ ನೀರಿನ ಮಟ್ಟ ಆತಂಕಕಾರಿ ಪ್ರಮಾಣಕ್ಕೆ ಇಳಿದಿದೆ.

ಕಬಿನಿ ಜಲಾಶಯ ಈಗಾಗಲೇ ಡೆಡ್ ಸ್ಟೋರೇಜ್ ಹಂತ ತಲುಪಿದ್ದು, ಕೆಆರ್‌ಎಸ್‌ ಜಲಾಶಯದ ಮೇಲೆ ಸಂಪೂರ್ಣ ಒತ್ತಡ ಬಿದ್ದಿದೆ.

ಸದ್ಯ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ 81 ಅಡಿಗೆ ತಲುಪಿದ್ದು, ಬಳಕೆಗೆ ಕೇವಲ 6 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಪ್ರತಿದಿನ ಸುಮಾರು 1,800 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.

ಕಬಿನಿಯಲ್ಲಿ ನೀರಿನ ಲಭ್ಯತೆ ಇಲ್ಲದ ಕಾರಣ ಬೆಂಗಳೂರಿಗೆ ಭಾಗಶಃ ಕೆಆರ್‌ಎಸ್‌ನಿಂದಲೇ ನೀರು ಪೂರೈಕೆಯಾಗುತ್ತಿದ್ದು, ಮುಂದಿನ ಮೂರು ತಿಂಗಳ ಕಾಲ ಇದೇ ನೀರಿನ ಸಂಗ್ರಹವನ್ನು ಸಮರ್ಪಕವಾಗಿ ನಿರ್ವಹಿಸುವ ಸವಾಲು ಎದುರಾಗಿದೆ.

ಇದೇ ವೇಳೆ, ರೈತರು ತಮ್ಮ ಬೆಳೆಗಳಿಗೆ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದು, ಜಲಾಶಯದಲ್ಲಿನ ಸೀಮಿತ ನೀರಿನ ಲಭ್ಯತೆ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮುಂದಿನ ದಿನಗಳಲ್ಲಿ ಸಮರ್ಪಕ ಮಳೆಯಾಗದಿದ್ದರೆ ಕುಡಿಯುವ ನೀರಿನ ಪೂರೈಕೆಯ ಮೇಲೆಯೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮಳೆರಾಯನ ಮೊರೆ ಹೋದ ತಾಯಂದಿರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮರ್ಪಕ ಮಳೆಯಿಲ್ಲದೆ ರೈತರು ಆತಂಕದಲ್ಲಿರುವ ಹಿನ್ನೆಲೆಯಲ್ಲಿ ತಾಲೂಕಿನ ಶಿಗ್ಲಿ ಗ್ರಾಮದ ಗಣೇಶಪೇಟೆಯ ತಾಯಂದಿರು ಸಂಪ್ರದಾಯಬದ್ಧವಾಗಿ ಗುರ್ಜಿ ಹೊತ್ತು ಮಳೆ ದೇವರನ್ನು ಪ್ರಾರ್ಥಿಸುವ ಮೂಲಕ ಉತ್ತಮ ಮಳೆಯಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಮುಂಗಾರು ವಿಳಂಬವಾಗಿರುವುದರಿಂದ ಕೃಷಿ ಚಟುವಟಿಕೆಗಳು ಹಿನ್ನಡೆ ಅನುಭವಿಸುತ್ತಿದ್ದು, ಬಿತ್ತನೆ ಮಾಡಿದ ಬೆಳೆಗಳು ಒಣಗುವ ಭೀತಿ ಎದುರಾಗಿದೆ. ಇದರಿಂದ ಕಂಗಾಲಾಗಿರುವ ರೈತ ಸಮುದಾಯದ ಸಂಕಷ್ಟ ನಿವಾರಣೆಯಾಗಲಿ ಎಂಬ ಆಶಯದೊಂದಿಗೆ ಗ್ರಾಮಸ್ಥರು ಈ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಂಡರು.

ಗಣೇಶಪೇಟೆಯ ಮಹಿಳೆಯರು ಗುರ್ಜಿ ಹೊತ್ತು ಗ್ರಾಮದಲ್ಲಿ ಸಂಚರಿಸಿ, ಸಕಾಲಕ್ಕೆ ಮಳೆಯಾಗಿ ರೈತರ ಬದುಕು ಹಸನಾಗಲಿ, ಹೊಲ-ಗದ್ದೆಗಳು ಹಸಿರಿನಿಂದ ಕಂಗೊಳಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಗ್ರಾಮದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ನಡೆದ ಈ ಆಚರಣೆಯಲ್ಲಿ ಭಕ್ತಿ, ನಂಬಿಕೆ ಹಾಗೂ ಜನಪದ ಸಂಸ್ಕೃತಿಯ ಸೊಬಗು ಅನಾವರಣಗೊಂಡಿತು.

ಕಾರ್ಯಕ್ರಮದಲ್ಲಿ ಹಿರಿಯರು, ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿ, ಉತ್ತಮ ಮಳೆಯಾಗಿ ಬೆಳೆಗಳು ಸಮೃದ್ಧಿಯಾಗಿ ಬೆಳೆಯಲಿ ಹಾಗೂ ರೈತರ ಸಂಕಷ್ಟ ದೂರವಾಗಲಿ ಎಂದು ಪ್ರಾರ್ಥಿಸಿದರು.

ಮಳೆಯ ಅಭಾವದಿಂದ ಸಂಕಷ್ಟದಲ್ಲಿರುವ ರೈತ ಕುಟುಂಬಗಳ ಮಹಿಳೆಯರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂತಹ ಸಾಂಪ್ರದಾಯಿಕ ಆಚರಣೆಗಳನ್ನು ನಡೆಸುತ್ತಿರುವುದು ಕಂಡುಬರುತ್ತಿದ್ದು, ರೈತ ಸಮುದಾಯದ ಈ ಮೊರೆಗೆ ಮಳೆರಾಯ ಕರುಣೆ ತೋರಬೇಕೆಂಬ ಆಶಯ ವ್ಯಕ್ತವಾಗಿದೆ.

ಸಾವು ಮನೆಯವರನ್ನೇ ಟಾರ್ಗೆಟ್ ಮಾಡಿದ ಸೈಬರ್ ಖದೀಮರು: ಚಿತಾಗಾರ ಸ್ಲಾಟ್ ಬುಕ್ಕಿಂಗ್ ಹೆಸರಲ್ಲಿ ವಂಚನೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೈಬರ್ ವಂಚಕರ ಹೊಸ ಜಾಲವೊಂದು ಬಯಲಾಗಿದ್ದು, ಶವಸಂಸ್ಕಾರಕ್ಕಾಗಿ ಆನ್‌ಲೈನ್ ಸ್ಲಾಟ್ ಬುಕ್ಕಿಂಗ್ ಮಾಡುವ ಹೆಸರಿನಲ್ಲಿ ಸಾರ್ವಜನಿಕರಿಂದ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

ಗ್ರೇಟರ್ ಬೆಂಗಳೂರು ಅಥಾರಿಟಿ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯ ಹೆಬ್ಬಾಳ ಕೆಂಪಾಪುರದ ‘ಚಿರಶಾಂತಿಧಾಮ’ ಮತ್ತು ಮೇಡಿ ಅಗ್ರಹಾರದ ‘ಮುಕ್ತಿಧಾಮ’ ವಿದ್ಯುತ್ ಚಿತಾಗಾರಗಳಲ್ಲಿ ಶವಸಂಸ್ಕಾರಕ್ಕೆ ಕೇವಲ ₹250 ಅಧಿಕೃತ ಶುಲ್ಕ ನಿಗದಿಪಡಿಸಲಾಗಿದೆ. ಆದರೆ ಸೈಬರ್ ಖದೀಮರು ನಕಲಿ ವೆಬ್‌ಸೈಟ್‌ಗಳು ಮತ್ತು ಲಿಂಕ್‌ಗಳನ್ನು ಸೃಷ್ಟಿಸಿ, ತಾವೇ ಅಧಿಕೃತ ಏಜೆಂಟ್‌ಗಳು ಎಂದು ಬಿಂಬಿಸಿಕೊಂಡು ಸಾರ್ವಜನಿಕರನ್ನು ವಂಚಿಸುತ್ತಿರುವುದು ಪತ್ತೆಯಾಗಿದೆ.

ಸಾವಿನ ದುಃಖದಲ್ಲಿರುವ ಕುಟುಂಬಸ್ಥರು ತುರ್ತಾಗಿ ಸ್ಲಾಟ್ ಬುಕ್ಕಿಂಗ್ ಮಾಡಲು ಮುಂದಾದಾಗ ಅವರ ಪರಿಸ್ಥಿತಿಯನ್ನೇ ದುರುಪಯೋಗಪಡಿಸಿಕೊಳ್ಳುವ ಈ ಜಾಲ, ಅಧಿಕೃತ ಶುಲ್ಕಕ್ಕಿಂತ ಹಲವು ಪಟ್ಟು ಹೆಚ್ಚು ಹಣ ಪಡೆದು ವಂಚನೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಬೆಂಗಳೂರು ಉತ್ತರ ನಗರ ಪಾಲಿಕೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಮೂರನೇ ವ್ಯಕ್ತಿ ಅಥವಾ ಖಾಸಗಿ ವೆಬ್‌ಸೈಟ್‌ಗಳ ಮೂಲಕ ಬುಕ್ಕಿಂಗ್ ಮಾಡಬಾರದು ಎಂದು ಮನವಿ ಮಾಡಿದೆ.

ಈ ಸಂಬಂಧ ಯಲಹಂಕದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದ್ದು, ನಕಲಿ ವೆಬ್‌ಸೈಟ್‌ಗಳ ಹಿಂದೆ ಇರುವ ಜಾಲವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಭಕ್ತಿಯ ಕಾಣಿಕೆಗೆ ಜಾತಿಯ ಬಣ್ಣ ಏಕೆ: ಕಲ್ಲಯ್ಯಜ್ಜನವರು

0

ವಿಜಯಸಾಕ್ಷಿ ಸುದ್ದಿ, ಗದಗ: ವೀರೇಶ್ವರ ಪುಣ್ಯಾಶ್ರಮದ ರಥೋತ್ಸವದ ಕುರಿತು ಇತ್ತೀಚೆಗೆ ಉಂಟಾಗಿರುವ ವಿವಾದಕ್ಕೆ ಸ್ಪಷ್ಟನೆ ನೀಡಿರುವ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು, ಭಕ್ತರು ನೀಡುವ ದೇಣಿಗೆಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಬುಧವಾರ ಆಶ್ರಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಥೋತ್ಸವದ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕಳೆದ ನಾಲ್ಕು ವರ್ಷಗಳಿಂದ ರಥೋತ್ಸವ ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತಿದ್ದು, ವಿವಿಧ ಸಮುದಾಯಗಳ ಭಕ್ತರು ಆಶ್ರಮಕ್ಕೆ ದೇಣಿಗೆ ನೀಡುವುದು ಸಂಪ್ರದಾಯವಾಗಿದೆ ಎಂದರು.

ಪೀರಸಾಬ ದಂಪತಿಗಳು ರಥಕ್ಕೆ ಗಾಲಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಕೆಲ ಭಕ್ತರು ತಮ್ಮ ಹೆಸರಿನೊಂದಿಗೆ ದೇಣಿಗೆ ನೀಡಿದರೆ, ಇನ್ನೂ ಕೆಲವರು ಹೆಸರು ಬಹಿರಂಗಪಡಿಸದೇ ಕಾಣಿಕೆ ಸಲ್ಲಿಸುತ್ತಾರೆ. ದೇಣಿಗೆ ನೀಡುವ ವಿಚಾರದಲ್ಲಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ವಿವಾದ ಸೃಷ್ಟಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ಇದೇ ವೇಳೆ ಆಶ್ರಮದ ಆಡಳಿತ ಹಾಗೂ ಹಣಕಾಸು ನಿರ್ವಹಣೆ ಕುರಿತು ಮಾತನಾಡಿದ ಕಲ್ಲಯ್ಯಜ್ಜನವರು, ತಾವು ಪೀಠಾಧಿಪತಿಯಾದ ಸಂದರ್ಭದಲ್ಲಿ ಆಶ್ರಮಕ್ಕೆ ಲಕ್ಷಾಂತರ ರೂಪಾಯಿ ಸಾಲವಿತ್ತು. ಅದನ್ನು ತೀರಿಸಿ ಆಶ್ರಮದ ಆರ್ಥಿಕ ಸ್ಥಿತಿಯನ್ನು ಸದೃಢಗೊಳಿಸಲಾಗಿದೆ. ಎಲ್ಲ ಆದಾಯ-ವೆಚ್ಚಗಳ ಲೆಕ್ಕಪತ್ರಗಳನ್ನು ಪಾರದರ್ಶಕವಾಗಿ ನಿರ್ವಹಿಸಲಾಗಿದೆ ಎಂದು ತಿಳಿಸಿದರು.

ಕೆಲ ಟ್ರಸ್ಟಿಗಳಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ ಅವರು, ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದರು. ಹಲವು ವರ್ಷಗಳಿಂದ ಮಾನಸಿಕ ಕಿರುಕುಳ ನೀಡಲಾಗುತ್ತಿದ್ದು, ಈ ವಿಷಯವನ್ನು ಟ್ರಸ್ಟ್ ಸಮಿತಿ, ಭಕ್ತರು ಹಾಗೂ ಸಾರ್ವಜನಿಕರ ಗಮನಕ್ಕೆ ತರಲು ಸುದ್ದಿಗೋಷ್ಠಿ ನಡೆಸಲಾಗಿದೆ ಎಂದು ತಿಳಿಸಿದರು.

ವೀರೇಶ್ವರ ಪುಣ್ಯಾಶ್ರಮವು ಜಾತ್ಯಾತೀತ ಸಂಸ್ಥೆಯಾಗಿದ್ದು, ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಪರಂಪರೆಯನ್ನು ಹೊಂದಿದೆ. ಪೀರಸಾಬ ಕೌತಾಳ ಅವರೊಂದಿಗೆ ಆಶ್ರಮಕ್ಕೆ ಗುರು-ಶಿಷ್ಯರ ಸಂಬಂಧವಿದ್ದು, ಅವರು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಗೆ ಆಶ್ರಮದಿಂದ ಯಾವುದೇ ಆರ್ಥಿಕ ನೆರವು ನೀಡಿಲ್ಲ. ಶಿಕ್ಷಣ ಸಂಸ್ಥೆಗಳು ಸುಗಮವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದಲೇ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಆಶ್ರಮದ ವ್ಯವಸ್ಥಾಪಕ ಹೇಮರಾಜಶಾಸ್ತ್ರೀ, ಎಂ. ಕಲ್ಲಿನಾಥಶಾಸ್ತ್ರೀ, ವೀರೇಶ ಕಿತ್ತೂರು, ಎಂ.ಜಿ. ಗುರುಸಿದ್ದೇಶ್ವರಶಾಸ್ತ್ರೀ, ಚನ್ನಬಸಯ್ಯ ಬಂಕಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

“ಭಕ್ತರ ದೇಣಿಗೆಗೆ ಜಾತಿ ಅಥವಾ ಧರ್ಮದ ಬಣ್ಣ ಹಚ್ಚುವುದು ಸರಿಯಲ್ಲ. ರಥೋತ್ಸವವನ್ನು ವಿವಾದದ ಕೇಂದ್ರವನ್ನಾಗಿಸದೇ ಭಕ್ತಿಭಾವದಿಂದ ನಡೆಸಬೇಕು.”

ಕಲ್ಲಯ್ಯಜ್ಜನವರು, ಪೀಠಾಧಿಪತಿ, ವೀರೇಶ್ವರ ಪುಣ್ಯಾಶ್ರಮ

error: Content is protected !!