Home Blog

ಜಮಖಂಡಿ ಕಾರು ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್! ‘ಇದು ಬಾಂಬ್ ಬ್ಲಾಸ್ಟ್ ಅಲ್ಲ’ ಎಂದ ಎಸ್‌ಪಿ

0

ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಸಂಭವಿಸಿದ್ದ ಕಾರು ಸ್ಫೋಟ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಇದು ಬಾಂಬ್ ಸ್ಫೋಟವಲ್ಲ, ಕಾರಿನ ತಾಂತ್ರಿಕ ದೋಷ ಅಥವಾ ಬ್ಯಾಟರಿ ಸಮಸ್ಯೆಯಿಂದ ಸಂಭವಿಸಿರಬಹುದಾದ ಘಟನೆ ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಸ್ಪಷ್ಟಪಡಿಸಿದ್ದಾರೆ.

ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಸಂಭವಿಸಿದ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಸ್ಫೋಟ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್‌ಪಿ ಸಿದ್ಧಾರ್ಥ ಗೋಯಲ್, ಸದ್ಯದ ತನಿಖೆಯಲ್ಲಿ ಯಾವುದೇ ಸ್ಫೋಟಕ ಬಳಸಿರುವ ಸುಳಿವು ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಎಲ್ಲಾ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸಿದ್ದು, ಕಾರಿನೊಳಗೆ ಬಾಂಬ್ ಇರಿಸಲಾಗಿತ್ತು ಎಂಬುದಕ್ಕೆ ಯಾವುದೇ ಪುರಾವೆ ದೊರೆತಿಲ್ಲ. ಕಾರಿನ ಬ್ಯಾಟರಿ ಅಥವಾ ಇತರ ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿರಬಹುದೇ ಎಂಬ ನಿಟ್ಟಿನಲ್ಲಿ ತಜ್ಞರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಸ್ಫೋಟದ ತೀವ್ರತೆ ಸುಮಾರು 50ರಿಂದ 60 ಮೀಟರ್ ವ್ಯಾಪ್ತಿಯಷ್ಟೇ ಕಂಡುಬಂದಿದೆ. ಬಾಂಬ್ ಸ್ಫೋಟವಾಗಿದ್ದರೆ ಹಾನಿಯ ಪ್ರಮಾಣ ಮತ್ತಷ್ಟು ಭೀಕರವಾಗಿರುತ್ತಿತ್ತು ಎಂದು ಎಸ್‌ಪಿ ತಿಳಿಸಿದ್ದಾರೆ.

ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಒಬ್ಬ ವ್ಯಕ್ತಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ತಾಂತ್ರಿಕ ಪರಿಶೀಲನೆ ಮತ್ತು ತಜ್ಞರ ಅಂತಿಮ ವರದಿ ಬಂದ ಬಳಿಕವೇ ಸ್ಫೋಟಕ್ಕೆ ನಿಖರ ಕಾರಣ ಬಹಿರಂಗವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ (ಜು. 25) ರಾತ್ರಿ ಸುಮಾರು 10.45ಕ್ಕೆ ಹಿಪ್ಪರಗಿ ಗ್ರಾಮದ ಯುವರಾಜ ವೈನ್ ಶಾಪ್ ಎದುರು ನಿಲ್ಲಿಸಿದ್ದ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಏಕಾಏಕಿ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದ್ದು, ಅದರ ಬಿಡಿಭಾಗಗಳು ಸುತ್ತಮುತ್ತ ಚದುರಿಬಿದ್ದಿದ್ದವು.

ಈ ಕಾರು ಎಂ.ಜಿ. ತೋರಗಲ್ ಅವರ ಹೆಸರಿನಲ್ಲಿದ್ದು, ವೈನ್ ಶಾಪ್ ಮ್ಯಾನೇಜರ್ ಹನುಮಂತ ಸಂಗೊಂಡ ಬಳಸುತ್ತಿದ್ದರು. ಹೊಸ ಕಾರಾಗಿದ್ದ ಕಾರಣ ಯಾರೋ ಬಾಂಬ್ ಇರಿಸಿರಬಹುದೆಂಬ ಅನುಮಾನವನ್ನು ಅವರು ವ್ಯಕ್ತಪಡಿಸಿದ್ದರು. ಆದರೆ ಪ್ರಾಥಮಿಕ ತನಿಖೆಯಲ್ಲಿ ಆ ಅನುಮಾನಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ.

ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಪ್ರಹ್ಲಾದ್‌ ಜೋಶಿ

0

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಿದ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಉಂಟಾದ ಬೆಳವಣಿಗೆಗಳ ಬಳಿಕ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ವಹಿಸಿದೆ.

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ ಬಳಿಕ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶಿಫಾರಸಿನ ಮೇರೆಗೆ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ರಾಷ್ಟ್ರಪತಿ ಭವನ ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿತ್ತು.

ಅದರಂತೆ ಭಾನುವಾರ (ಜು. 26) ಪ್ರಹ್ಲಾದ್ ಜೋಶಿ ಅವರು ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.

ಸದ್ಯ ಅವರು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದು, ಇನ್ನುಮುಂದೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನೂ ನಿಭಾಯಿಸಲಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿತ್ತು. ಈ ಬೆಳವಣಿಗೆಗಳ ನಡುವೆ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದರ ಬೆನ್ನಲ್ಲೇ ಕೇಂದ್ರ ಸರ್ಕಾರ ಶಿಕ್ಷಣ ಸಚಿವಾಲಯಕ್ಕೆ ಹೊಸ ಆಡಳಿತಾತ್ಮಕ ವ್ಯವಸ್ಥೆ ಕಲ್ಪಿಸಿದೆ.

2028ಕ್ಕೆ ಸ್ಪರ್ಧೆ ಇಲ್ಲ! ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

0

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡುವ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಪಯಣಕ್ಕೆ ಚುನಾವಣಾ ಮಟ್ಟದಲ್ಲಿ ತೆರೆ ಎಳೆಯುವ ಸಂದೇಶ ರವಾನಿಸಿದ್ದಾರೆ.

ಕೆ.ಆರ್.ಪೇಟೆಯಲ್ಲಿ ದಿ. ಕೆ. ಆರ್. ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಅಭಿಮಾನಿಗಳು ಇನ್ನೂ 10 ವರ್ಷಗಳ ಕಾಲ ಚುನಾವಣಾ ರಾಜಕೀಯದಲ್ಲಿ ಸಕ್ರಿಯರಾಗಿರಬೇಕು ಎಂದು ಮನವಿ ಮಾಡಿದರೂ, ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಬಹಿರಂಗವಾಗಿ ಘೋಷಿಸಿದ್ದಾರೆ.

ಇದಕ್ಕೂ ಮೊದಲು ಮೇ 28ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಸೂಚನೆ ಹಾಗೂ ರಾಹುಲ್ ಗಾಂಧಿ ಅವರ ಸಂದೇಶಕ್ಕೆ ಗೌರವ ನೀಡಿ ಅಧಿಕಾರ ತ್ಯಜಿಸಿದ್ದರು. ಅದರೊಂದಿಗೆ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯಗೊಂಡಿತ್ತು.

ಮೈಸೂರು ಭಾಗದ ರಾಜಕೀಯ ನೆಲೆಯಿಂದ ಹೊರಹೊಮ್ಮಿದ ಸಿದ್ದರಾಮಯ್ಯ, ಹೋರಾಟದ ರಾಜಕಾರಣದ ಮೂಲಕ ರಾಜ್ಯದ ಪ್ರಮುಖ ನಾಯಕರಾಗಿ ಬೆಳೆದವರು. ಹಿಂದುಳಿದ ವರ್ಗಗಳ ರಾಜಕೀಯ ಧ್ವನಿಯಾಗಿ, ಸಾಮಾಜಿಕ ನ್ಯಾಯದ ಪ್ರತೀಕವಾಗಿ ಅವರು ತಮ್ಮದೇ ಆದ ರಾಜಕೀಯ ಛಾಪು ಮೂಡಿಸಿದ್ದಾರೆ.

ದೇವರಾಜ ಅರಸು ರೂಪಿಸಿದ್ದ ಸಾಮಾಜಿಕ ಸಮೀಕರಣದ ರಾಜಕಾರಣವನ್ನು ಮತ್ತಷ್ಟು ಬಲಪಡಿಸಿ, ಅದನ್ನು ಸಾಮಾಜಿಕ ನ್ಯಾಯದ ಚಳವಳಿಯನ್ನಾಗಿ ರೂಪಿಸಿದ ನಾಯಕರಲ್ಲಿ ಸಿದ್ದರಾಮಯ್ಯ ಪ್ರಮುಖರು. ಅಧಿಕಾರಕ್ಕಿಂತ ವಿಚಾರಗಳಿಗೆ ಹೆಚ್ಚು ಮಹತ್ವ ನೀಡಿದ ನಾಯಕ ಎಂಬ ಹೆಗ್ಗಳಿಕೆಯನ್ನು ಅವರು ಸಂಪಾದಿಸಿದ್ದಾರೆ.

2028ರ ಚುನಾವಣೆಗೆ ಸ್ಪರ್ಧಿಸದಿರುವ ಅವರ ಘೋಷಣೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಭಾವುಕ ವಾತಾವರಣ ಸೃಷ್ಟಿಸಿದ್ದು, ಕರ್ನಾಟಕ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಗ್ರಾಹಕರ ಜೇಬಿಗೆ ಮತ್ತೊಂದು ಹೊರೆ? ಬೇಕರಿ ಉತ್ಪನ್ನಗಳ ಬೆಲೆ ಶೀಘ್ರದಲ್ಲೇ ಏರಿಕೆ!

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯ ಪರಿಣಾಮ ಇದೀಗ ಬೇಕರಿ ಉದ್ಯಮದ ಮೇಲೂ ಬಿದ್ದಿದೆ.

ತುಪ್ಪ, ಬೆಣ್ಣೆ, ಹಾಲಿನ ಉತ್ಪನ್ನಗಳು, ಅಡುಗೆ ಎಣ್ಣೆ, ಮೈದಾ, ಸಕ್ಕರೆ ಸೇರಿದಂತೆ ಬೇಕರಿ ಉತ್ಪನ್ನಗಳ ತಯಾರಿಕೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಬೆಲೆ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಹೆಚ್ಚಳವಾಗಿದೆ.

ಇದರ ಜೊತೆಗೆ ವಿದ್ಯುತ್ ದರ, ವಾಣಿಜ್ಯ ಗ್ಯಾಸ್ ಸಿಲಿಂಡರ್ ವೆಚ್ಚ, ಕಾರ್ಮಿಕರ ವೇತನ, ಸಾರಿಗೆ ಹಾಗೂ ಅಂಗಡಿ ನಿರ್ವಹಣಾ ವೆಚ್ಚ ಹೆಚ್ಚಾಗಿರುವುದರಿಂದ ಬೇಕರಿ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹಳೆಯ ದರದಲ್ಲೇ ಉತ್ಪನ್ನಗಳನ್ನು ಮಾರಾಟ ಮಾಡಿದರೆ ಲಾಭವಿರಲಿ, ಮೂಲ ವೆಚ್ಚ ಭರಿಸುವುದೂ ಕಷ್ಟವಾಗುತ್ತಿದೆ ಎಂದು ಬೇಕರಿ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಉತ್ಪನ್ನಗಳ ದರ ಹೆಚ್ಚಳದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ವಿಶೇಷವಾಗಿ ತುಪ್ಪ ಬಳಸಿ ತಯಾರಿಸುವ ಮೈಸೂರು ಪಾಕ್, ತುಪ್ಪದ ಲಡ್ಡು, ಬಾದೂಷಾ, ಕಾಜು ಸ್ವೀಟ್ಸ್, ಡ್ರೈಫ್ರೂಟ್ ಐಟಂಗಳು ಹಾಗೂ ಪ್ರೀಮಿಯಂ ಕೇಕ್‌ಗಳ ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಗುಣಮಟ್ಟದ ತುಪ್ಪ ಬಳಸುವ ಬೇಕರಿಗಳಿಗೆ ಇದರ ಹೊರೆ ಮತ್ತಷ್ಟು ಹೆಚ್ಚಾಗಿದೆ.

ಗುಣಮಟ್ಟವನ್ನು ಕಾಪಾಡಿಕೊಳ್ಳಲು ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಬೇಕರಿ ಮಾಲೀಕರು ತಿಳಿಸಿದ್ದಾರೆ. ಕೋವಿಡ್ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದ ಬೇಕರಿ ಉದ್ಯಮಕ್ಕೆ ಇದೀಗ ಕಚ್ಚಾ ವಸ್ತುಗಳ ದರ ಏರಿಕೆ ಮತ್ತೊಂದು ಹೊಡೆತ ನೀಡಿದೆ.

ಗ್ರಾಹಕರನ್ನು ಕಳೆದುಕೊಳ್ಳುವ ಭಯದಿಂದ ಹಲವು ಬೇಕರಿಗಳು ಇದುವರೆಗೆ ದರ ಹೆಚ್ಚಳ ಮಾಡದೆ ನಷ್ಟದಲ್ಲೇ ವ್ಯಾಪಾರ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಬೇಕರಿ ಅಸೋಸಿಯೇಷನ್ ಶೀಘ್ರದಲ್ಲೇ ಸಭೆ ನಡೆಸಿ ದರ ಪರಿಷ್ಕರಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಸಭೆಯಲ್ಲಿ ಜಿಲ್ಲಾ ಬೇಕರಿ ಸಂಘಗಳ ಪ್ರತಿನಿಧಿಗಳು ಹಾಗೂ ಉದ್ಯಮಿಗಳೊಂದಿಗೆ ಚರ್ಚಿಸಿ ಹೊಸ ದರ ನಿಗದಿ ಮಾಡುವ ನಿರೀಕ್ಷೆಯಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೇಕರಿ ಉತ್ಪನ್ನಗಳ ಬೆಲೆಯಲ್ಲಿ ಪ್ರತಿ ವಸ್ತುವಿಗೆ ₹3 ರಿಂದ ₹5ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ದರ ಏರಿಕೆ ಜಾರಿಯಾದರೆ ಪ್ರೀಮಿಯಂ ಸ್ವೀಟ್ಸ್ ಹಾಗೂ ತುಪ್ಪ ಆಧಾರಿತ ಉತ್ಪನ್ನಗಳ ಬೆಲೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಇದರ ಪರಿಣಾಮ ಸಾಮಾನ್ಯ ಗ್ರಾಹಕರ ಜೇಬಿನ ಮೇಲೂ ಬೀಳಲಿದೆ.

 

Gold Rate Today: ವಾರಾಂತ್ಯದಲ್ಲಿ ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆಯೂ ಹೆಚ್ಚಳ!

ನವದೆಹಲಿ: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಶುಕ್ರವಾರ ಒಂದೇ ದಿನ ₹270 ಕುಸಿದಿದ್ದ ಚಿನ್ನದ ದರ, ವಾರಾಂತ್ಯದಲ್ಲಿ ಮತ್ತೆ ಏರಿಕೆಯ ಹಾದಿಗೆ ಮರಳಿದೆ.

ಇಂದು ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಂಗೆ ₹55 ಏರಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡುಬಂದಿದ್ದು, ಪ್ರತಿ 100 ಗ್ರಾಂಗೆ ₹5 ಹೆಚ್ಚಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,493 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,285 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,870 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ 

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,493 ರೂ
    • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,285 ರೂ
    • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ.

ಮಳೆ ಕೊರತೆಯ ಎಫೆಕ್ಟ್: ಏಷ್ಯಾದ ಮೊದಲ ಜಲವಿದ್ಯುತ್ ಕೇಂದ್ರ ಶಿವನಸಮುದ್ರದಲ್ಲಿ ಉತ್ಪಾದನೆ ಬಂದ್!

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯ ಪರಿಣಾಮ ಇದೀಗ ಕೃಷಿಯ ಜೊತೆಗೆ ಜಲವಿದ್ಯುತ್ ಉತ್ಪಾದನೆಯ ಮೇಲೂ ಗಂಭೀರ ಪರಿಣಾಮ ಬೀರಿದೆ.

ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಎಂಬ ಹೆಗ್ಗಳಿಕೆ ಹೊಂದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನಸಮುದ್ರ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಂಡಿದೆ.

ಕಾವೇರಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕಳೆದ ಸುಮಾರು ಒಂದೂವರೆ ತಿಂಗಳಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ವಿದ್ಯುತ್ ಉತ್ಪಾದನೆ ಸಂಪೂರ್ಣ ನಿಲ್ಲಿಸಲಾಗಿದೆ.

ಕೆಆರ್‌ಎಸ್‌ ಅಥವಾ ಕಬಿನಿ ಜಲಾಶಯಗಳಿಂದ ನೀರು ಹರಿಸಿದಾಗ ಮಾತ್ರ ಶಿವನಸಮುದ್ರ ವಿದ್ಯುತ್ ಕೇಂದ್ರದಲ್ಲಿ ಉತ್ಪಾದನೆ ಸಾಧ್ಯವಾಗುತ್ತದೆ. ಇಲ್ಲಿ ಪ್ರತಿದಿನ ಸುಮಾರು 42 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿತ್ತು. ಇದಕ್ಕಾಗಿ ದಿನಕ್ಕೆ 1,450 ಕ್ಯೂಸೆಕ್ ನೀರಿನ ಅವಶ್ಯಕತೆ ಇತ್ತು.

ಆದರೆ ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ನದಿಯಲ್ಲಿ ನೀರಿನ ಹರಿವು ಕುಸಿದಿದೆ. ಇದರಿಂದಾಗಿ ಜಲವಿದ್ಯುತ್ ಘಟಕದ ಕಾರ್ಯಾಚರಣೆ ಸ್ಥಗಿತಗೊಂಡಿದೆ.

CJP ಪ್ರತಿಭಟನೆ ಅಂತ್ಯ; ಜಂತರ್ ಮಂತರ್ ಸ್ವಚ್ಛತೆಗೆ ಇಳಿದ NDMC, 500 ಕಾರ್ಮಿಕರ ನಿಯೋಜನೆ!

0

ನವದೆಹಲಿ: ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಕಾಕ್ರೋಚ್‌ ಜನತಾ ಪಾರ್ಟಿ ಪ್ರತಿಭಟನೆ ಅಂತ್ಯಗೊಂಡ ಬೆನ್ನಲ್ಲೇ ನವದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ಆರಂಭಿಸಿದೆ.

ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಮೂರು ಬೇಡಿಕೆಗಳಿಗೆ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ CJP ಹೋರಾಟವನ್ನು ಅಂತ್ಯಗೊಳಿಸಿತ್ತು. ಶನಿವಾರ ಸಂಜೆ ಪ್ರತಿಭಟನಾಕಾರರು ಸ್ಥಳ ಖಾಲಿ ಮಾಡುತ್ತಿದ್ದಂತೆ NDMC ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಉಳಿದಿದ್ದ ತ್ಯಾಜ್ಯ, ಮುರಿದ ಅವಶೇಷಗಳು, ತಾತ್ಕಾಲಿಕ ಡೇರೆಗಳು, ಆಹಾರ ಸಾಮಗ್ರಿಗಳಿಂದ ಸಂಗ್ರಹವಾಗಿದ್ದ ಕಸ ಸೇರಿದಂತೆ ವಿವಿಧ ವಸ್ತುಗಳನ್ನು ತೆರವುಗೊಳಿಸಲಾಗುತ್ತಿದೆ.

500ಕ್ಕೂ ಹೆಚ್ಚು ಕಾರ್ಮಿಕರ ನಿಯೋಜನೆ:

NDMC ಅಧಿಕಾರಿಗಳ ಪ್ರಕಾರ, ಜಂತರ್ ಮಂತರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಗಾಗಿ 500ಕ್ಕೂ ಹೆಚ್ಚು ಕಾರ್ಮಿಕರನ್ನು ವಿವಿಧ ಪಾಳಿಗಳಲ್ಲಿ ನಿಯೋಜಿಸಲಾಗಿದೆ. ಬ್ಯಾನರ್‌ಗಳು, ಡೇರೆಗಳು, ನಿರ್ಮಾಣ ಅವಶೇಷಗಳು ಹಾಗೂ ಇತರೆ ತ್ಯಾಜ್ಯಗಳನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದೆ.

ಸ್ಥಳವನ್ನು 24 ಗಂಟೆಗಳೊಳಗೆ ಸಂಪೂರ್ಣ ಸ್ವಚ್ಛಗೊಳಿಸಿ ಹಿಂದಿನ ಸ್ಥಿತಿಗೆ ತರಲು ಗುರಿ ಹೊಂದಲಾಗಿದೆ. ಇದಕ್ಕಾಗಿ ಟ್ರಕ್‌ಗಳು, ಆಟೋ ಟಿಪ್ಪರ್‌ಗಳು ಹಾಗೂ ಸ್ವಚ್ಛತಾ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ.

ಹಲವು ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತೆ:

ಜಂತರ್ ಮಂತರ್ ರಸ್ತೆ, ಟಾಲ್‌ಸ್ಟಾಯ್ ಮಾರ್ಗ, ಜೈ ಸಿಂಗ್ ರಸ್ತೆ, ಸಂಸದ್ ಮಾರ್ಗ ಹಾಗೂ ಕನ್ನಾಟ್ ಪ್ಲೇಸ್‌ನ ಕೆಲವು ಭಾಗಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ.

ಕಳೆದ ಎರಡು ದಿನಗಳಲ್ಲಿ ಪ್ರತಿಭಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಹತ್ತಾರು ಟನ್ ಮಿಶ್ರ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂದು NDMC ತಿಳಿಸಿದೆ.

NEET ವಿವಾದದ ನಡುವೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಅಮಿತ್ ಶಾ ಹೇಳಿದ್ದೇನು?

0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಹುದ್ದೆಗೆ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ.

ಹುದ್ದೆಗಿಂತ ರಾಷ್ಟ್ರದ ಹಿತಾಸಕ್ತಿ, ಯುವಕರು ಹಾಗೂ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂಬ ತತ್ವಕ್ಕೆ ಇದು ಉದಾಹರಣೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಅಮಿತ್ ಶಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅಧಿಕಾರಕ್ಕಿಂತ ದೇಶದ ಹಿತವೇ ಮೊದಲ ಆದ್ಯತೆ ಎಂದು ಉಲ್ಲೇಖಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿದ್ಯಾರ್ಥಿಗಳ ಭಾವನೆಗಳನ್ನು ಗೌರವಿಸುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವ ಪ್ರಧಾನಿ ಮೋದಿ ಅವರ ಕ್ರಮಗಳನ್ನು ಅವರು ಶ್ಲಾಘಿಸಿದ್ದು, ಇದರಿಂದ ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, ಪಿಎಂ ಶ್ರೀ ಶಾಲೆಗಳ ವಿಸ್ತರಣೆ, ಡಿಜಿಟಲ್ ಶಿಕ್ಷಣ ಉತ್ತೇಜನ, ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮ-ಶಿಕ್ಷಣ ಕ್ಷೇತ್ರದ ಸಮನ್ವಯದಲ್ಲಿ ಧರ್ಮೇಂದ್ರ ಪ್ರಧಾನ್ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಅಮಿತ್ ಶಾ ಸ್ಮರಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕ ಹಾಗೂ ವಿದ್ಯಾರ್ಥಿ ಕೇಂದ್ರಿತವಾಗಿಸಲು ಪ್ರಧಾನ್ ಕೈಗೊಂಡ ಕ್ರಮಗಳು ಗಮನಾರ್ಹವಾಗಿವೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ಗುರಿಗೆ ಅವರ ಸೇವೆ ಸಾಕ್ಷಿಯಾಗಿದೆ ಎಂದು ಅಮಿತ್ ಶಾ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Jamakhandi Car Blast: ವೈನ್ ಶಾಪ್ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ; ಬಾಗಲಕೋಟೆಯಲ್ಲಿ ಆತಂಕ

ಬಾಗಲಕೋಟೆ: ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ನಿಲ್ಲಿಸಿದ್ದ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಸ್ಫೋಟಗೊಂಡ ಘಟನೆ ನಡೆದಿದೆ.

ಗ್ರಾಮದ ಯುವರಾಜ ವೈನ್ ಶಾಪ್ ಎದುರು ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಕಾರು ಪಲ್ಟಿಯಾಗಿ ಬೆಂಕಿಗೆ ಆಹುತಿಯಾಗಿದೆ. ಕಾರಿನ ಬಿಡಿಭಾಗಗಳು ಛಿದ್ರಗೊಂಡು ಸುತ್ತಮುತ್ತಲ ಪ್ರದೇಶದಲ್ಲಿ ಬಿದ್ದಿವೆ.

ಸ್ಫೋಟದಿಂದ ಓರ್ವ ವ್ಯಕ್ತಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಸ್ಫೋಟಗೊಂಡ ಕಾರು ಎಂ.ಜಿ. ತೋರಗಲ್ ಅವರ ಹೆಸರಿನಲ್ಲಿದ್ದು, ವೈನ್ ಶಾಪ್ ಮ್ಯಾನೇಜರ್ ಹನುಮಂತ ಸಂಗೊಂಡ ಅವರು ಕಾರನ್ನು ತಂದಿದ್ದರು ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಜಮಖಂಡಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಳಿಕ ಸೊಕೊ ತಂಡ ಹಾಗೂ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಸ್ಫೋಟಕ್ಕೂ ಮುನ್ನ ಯಾವುದೇ ಹಾನಿಯಾಗಿರಲಿಲ್ಲ. ಹೀಗಾಗಿ ಯಾರೋ ಕಾರಿನಲ್ಲಿ ಸ್ಫೋಟಕ ಇಟ್ಟಿರಬಹುದು ಎಂದು ಹನುಮಂತ ಸಂಗೊಂಡ ಶಂಕೆ ವ್ಯಕ್ತಪಡಿಸಿದ್ದಾರೆ.

ಅದೃಷ್ಟವಶಾತ್ ಕಾರು ಚಾಲನೆಯಲ್ಲಿದ್ದ ವೇಳೆ ಈ ಘಟನೆ ಸಂಭವಿಸಿಲ್ಲ. ಒಂದು ವೇಳೆ ಚಲಿಸುತ್ತಿದ್ದಾಗ ಸ್ಫೋಟವಾಗಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಅವರು ತಿಳಿಸಿದ್ದಾರೆ.

ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.

ಶ್ರೀ ವೆಂಕಟೇಶ್ವರನಿಗೆ ವಿಶೇಷ ಪೂಜೆ; ಲಕ್ಷ್ಮೇಶ್ವರದಲ್ಲಿ ಭಕ್ತರ ಸಾಗರ

0

ಲಕ್ಷ್ಮೇಶ್ವರ: ಆಷಾಢ ಮಾಸದ ಅಂಗವಾಗಿ ಲಕ್ಷ್ಮೇಶ್ವರದ ಸವಣೂರು ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಮಹಾಭಿಷೇಕ ಹಾಗೂ ಪಲ್ಲಕ್ಕಿ ಉತ್ಸವವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ ಶ್ರೀ ವೆಂಕಟೇಶ್ವರನ ದರ್ಶನ ಪಡೆದು ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು.