ಬೆಂಗಳೂರು/ರಾಮನಗರ: ಮುಖ್ಯಮಂತ್ರಿ ಸ್ಥಾನಕ್ಕೇರಿದ ಬಳಿಕ ಮೊದಲ ಬಾರಿಗೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿ ಸ್ವಾಗತ ಕೋರಿದರು.
ಈ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, “ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ” ಎಂದು ಭಾವನಾತ್ಮಕವಾಗಿ ಹೇಳಿದರು.
ಹಾರೋಹಳ್ಳಿ ಸೇರಿದಂತೆ ಕನಕಪುರ ಕ್ಷೇತ್ರದ ವಿವಿಧ ಭಾಗಗಳಲ್ಲಿ ಮುಖ್ಯಮಂತ್ರಿ ಆಗಮನದ ಹಿನ್ನೆಲೆ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಡಿ.ಕೆ. ಶಿವಕುಮಾರ್ ಅವರ ಬೃಹತ್ ಕಟೌಟ್ಗಳು, ಬ್ಯಾನರ್ಗಳು ಹಾಗೂ ಕಾಂಗ್ರೆಸ್ ಧ್ವಜಗಳಿಂದ ಪಟ್ಟಣ ಸಿಂಗಾರಗೊಂಡಿತ್ತು. ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ರಸ್ತೆ ಬದಿಯಲ್ಲಿ ನಿಂತು ಸ್ವಾಗತ ಕೋರಿದರು.
ಕನಕಪುರಕ್ಕೆ ತೆರಳುವ ಮುನ್ನ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿ ಮಾದರಿಯಾಗಿದರು. ಬಳಿಕ ಹಾರೋಹಳ್ಳಿಗೆ ಆಗಮಿಸಿದ ಅವರು ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ತೆರೆದ ವಾಹನದಲ್ಲಿ ಭವ್ಯ ರೋಡ್ ಶೋ ನಡೆಸಿದ ಸಿಎಂಗೆ ಜನರು ಹೂಮಳೆ ಸುರಿಸಿ ಸಂಭ್ರಮಿಸಿದರು. ತಮಟೆ, ಡೊಳ್ಳು, ನಗಾರಿ, ಹುಲಿವೇಷ, ಪೂಜಾ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದವು. ಮಹಿಳೆಯರು ಪೂರ್ಣಕುಂಭದೊಂದಿಗೆ ಮುಖ್ಯಮಂತ್ರಿ ಅವರನ್ನು ಬರಮಾಡಿಕೊಂಡರು.
ಈ ವೇಳೆ ಹಸಿ ಮೆಣಸಿನಕಾಯಿ, ಒಣ ಮೆಣಸಿನಕಾಯಿ ಹಾಗೂ ಬೆಳ್ಳುಳ್ಳಿಯಿಂದ ತಯಾರಿಸಲಾದ ಬೃಹತ್ ಹಾರ ಎಲ್ಲರ ಗಮನ ಸೆಳೆಯಿತು. ಮುಖ್ಯಮಂತ್ರಿಗೆ ದೃಷ್ಟಿ ತಾಗದಿರಲಿ ಎಂಬ ಉದ್ದೇಶದಿಂದ ಸಿದ್ಧಪಡಿಸಿದ್ದ ಈ ವಿಶೇಷ ಹಾರವನ್ನು ಕ್ರೇನ್ ಮೂಲಕ ಅರ್ಪಿಸಲಾಯಿತು.
ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, “ನೀವು ನನ್ನನ್ನು ಗೆಲ್ಲಿಸಿದ್ದರಿಂದಲೇ ನಾನು ಮುಖ್ಯಮಂತ್ರಿ ಆಗಿದ್ದೇನೆ. ನಿಮ್ಮ ಆಶೀರ್ವಾದವೇ ನನ್ನ ಶಕ್ತಿ. ನಿಮ್ಮ ಯಾವುದೇ ಸಮಸ್ಯೆ ಇದ್ದರೂ ನಮ್ಮ ಮನೆಯ ಬಾಗಿಲು ಸದಾ ತೆರೆದಿರುತ್ತದೆ. ಜನರ ಸೇವೆಯೇ ನನ್ನ ಮೊದಲ ಆದ್ಯತೆ” ಎಂದು ಹೇಳಿದರು.
ಮುಖ್ಯಮಂತ್ರಿಯವರ ಪ್ರವಾಸದ ಹಿನ್ನೆಲೆಯಲ್ಲಿ ಹಾರೋಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಭದ್ರತಾ ಸಿಬ್ಬಂದಿ ಕಾರ್ಯಕ್ರಮದ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು.
ಇಂದು ದಿನಪೂರ್ತಿ ಕನಕಪುರ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿ, ರಾತ್ರಿ ಕನಕಪುರ ಪಟ್ಟಣದ ಚನ್ನಬಸಪ್ಪ ವೃತ್ತದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

