ಮೈಸೂರು: ಪ್ರಧಾನಿ ನರೇಂದ್ರ ಮೋದಿ ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಅಧಿಕಾರಿಗಳು ಬರಮಾಡಿಕೊಂಡರು.
ಮಂಡಕಳ್ಳಿ ವಿಮಾನ ನಿಲ್ದಾಣದಿಂದ ನಗರದ ಓವಲ್ ಮೈದಾನಕ್ಕೆ ತೆರಳಲಿರುವ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತ ಸ್ವಾಗತ ಕೋರಲಿದ್ದಾರೆ.
ಇಂದು ಪ್ರಧಾನಿ ಮೋದಿ, ಸ್ವಾಮಿ ವಿವೇಕಾನಂದರ ಐತಿಹಾಸಿಕ ಮೈಸೂರು ಭೇಟಿಯ ನೆನಪಿಗಾಗಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುಮಾರು ₹45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಅವರು ಉದ್ಘಾಟಿಸಲಿದ್ದಾರೆ.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಿಸಲಾಗಿದ್ದು, ಯುವಜನರಲ್ಲಿ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಯುವ ಕೇಂದ್ರಕ್ಕೂ ರೂಪ ನೀಡಲಾಗಿದೆ.
ಸ್ಮಾರಕ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ನಗರದಲ್ಲಿರುವ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬಳಿಕ ಆಶ್ರಮದ ಆಡಿಟೋರಿಯಂನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಸುಮಾರು 6,000 ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮಕ್ಕಾಗಿ ವಿಶೇಷ ಪಾಸ್ ವ್ಯವಸ್ಥೆ ಮಾಡಲಾಗಿದೆ.

