ವಿಜಯಸಾಕ್ಷಿ ಸುದ್ದಿ, ಗದಗ: ದೇಶದಲ್ಲಿ ಬಡತನ, ನಿರುದ್ಯೋಗ, ರಾಷ್ಟ್ರೀಯ ಭದ್ರತೆ ಸೇರಿದಂತೆ ಜನಜೀವನಕ್ಕೆ ಸಂಬಂಧಿಸಿದ ಗಂಭೀರ ವಿಷಯಗಳ ಕುರಿತು ಚರ್ಚೆಯಾಗಬೇಕಾದ ಸಂದರ್ಭದಲ್ಲಿ ಎಸ್ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ವಿಷಯವೇ ರಾಷ್ಟ್ರಮಟ್ಟದ ಚರ್ಚೆಯಾಗಿ ಪರಿಣಮಿಸಿರುವುದು ವಿಷಾದನೀಯ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಯೂಸುಫ್ ಕಣವಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಶ್ರೀಮಂತರು ಮತ್ತು ಪ್ರಭಾವಿ ವರ್ಗದವರಿಗೆ ಮಾತ್ರ ಮತದಾನದ ಹಕ್ಕು ಇತ್ತು. ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಸಾರ್ವತ್ರಿಕವಾಗಿದ್ದು, ಇಂದು ಕೋಟ್ಯಂತರ ಜನರು ಮತದಾರರಾಗಿದ್ದಾರೆ ಎಂದು ತಿಳಿಸಿದರು.
ದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿರುವ ನುಸುಳುಕೋರರನ್ನು ಗುರುತಿಸಿ ಕ್ರಮ ಕೈಗೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ, ಈ ವಿಷಯದಲ್ಲಿ ಸ್ಪಷ್ಟ ಮಾಹಿತಿ ನೀಡದೆ ಸಾಮಾನ್ಯ ಮತದಾರರ ಪಟ್ಟಿಯನ್ನೇ ಪ್ರಶ್ನಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದರು.
ಎಸ್ಐಆರ್ ಪ್ರಕ್ರಿಯೆ ಮೂಲಕ ದೇಶದ ವಿವಿಧ ರಾಜ್ಯಗಳಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ವರದಿಗಳು ಬರುತ್ತಿವೆ. ಈ ಪ್ರಕ್ರಿಯೆಯಲ್ಲಿ ಎಷ್ಟು ಮಂದಿ ಅಕ್ರಮ ನುಸುಳುಕೋರರು ಹಾಗೂ ಎಷ್ಟು ಮಂದಿ ಸಾಮಾನ್ಯ ನಾಗರಿಕರು ಎಂಬುದನ್ನು ಚುನಾವಣಾ ಆಯೋಗ ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಪ್ರಕ್ರಿಯೆಯಲ್ಲಿ ಬಡವರು, ದಲಿತರು ಮತ್ತು ವಂಚಿತ ಸಮುದಾಯದ ಜನರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದು, ಅದರ ರಕ್ಷಣೆಗೆ ಎಲ್ಲರೂ ಜಾಗೃತರಾಗಬೇಕು ಎಂದು ಹೇಳಿದರು.
ಯುವ ಮುಖಂಡ ಸರೋವರ ಬೆಂಕಿಕೇರಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸ್ವಾಗತಾರ್ಹವಾದರೂ, ಇತ್ತೀಚೆಗೆ ಜಾರಿಗೆ ತರಲಾಗುತ್ತಿರುವ ಎಸ್ಐಆರ್ ಪ್ರಕ್ರಿಯೆ ಸಾರ್ವಜನಿಕರಲ್ಲಿ ಗೊಂದಲ ಮತ್ತು ಆತಂಕ ಮೂಡಿಸುತ್ತಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಲಾಲ್ ಗೋಕಾವಿ, ಜುನೈದ್ ಉಮಚಗಿ, ಆರಾಧನಾ ಬಣಕಾರ, ಆರೀಫ್ ಉಲ್ಲಾ, ಮುತ್ತು ಬಿಳೆಯಲಿ, ಅನ್ವರ್ ಬಾಗೇವಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ದೇಶದಲ್ಲಿ ಬಡತನ, ಭದ್ರತೆ ಹಾಗೂ ಉದ್ಯೋಗದಂತಹ ಗಂಭೀರ ವಿಷಯಗಳು ಚರ್ಚೆಯಾಗಬೇಕಾದ ಸಂದರ್ಭದಲ್ಲಿ ಎಸ್ಐಆರ್ ವಿಚಾರವೇ ಪ್ರಮುಖ ಚರ್ಚೆಯಾಗಿರುವುದು ಆತಂಕಕಾರಿ ಬೆಳವಣಿಗೆ.”
– ಯೂಸುಫ್ ಕಣವಿ, ರಾಜ್ಯ ಕಾರ್ಯದರ್ಶಿ, ಜಮಾಅತೆ ಇಸ್ಲಾಮಿ ಹಿಂದ್
ಹಕ್ಕೊತ್ತಾಯಗಳು
- ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ ಸಾಫ್ಟ್ವೇರ್ ಅನ್ನು ಕರ್ನಾಟಕದಲ್ಲಿ ಬಳಸಬಾರದು.
- ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಸಾರ್ವಜನಿಕ ಪರಿಶೀಲನೆಗೆ ಲಭ್ಯಗೊಳಿಸಬೇಕು.
- ಗ್ರಾಮಸಭೆ ಹಾಗೂ ವಾರ್ಡ್ ಸಭೆಗಳ ಮೂಲಕ ಸಾರ್ವಜನಿಕ ಪರಿಶೀಲನೆ ಮತ್ತು ತಿದ್ದುಪಡಿಗೆ ಅವಕಾಶ ಕಲ್ಪಿಸಬೇಕು.
- ಅಪೀಲು ಸಲ್ಲಿಸಲು ಕನಿಷ್ಠ ಆರು ತಿಂಗಳ ಕಾಲಾವಕಾಶ ನೀಡಬೇಕು.

