ವಿಜಯಸಾಕ್ಷಿ ಸುದ್ದಿ, ಗದಗ : ಗ್ರಾಹಕರಿಗೆ ಅವರ ಹಕ್ಕು ಮತ್ತು ಜವಾಬ್ದಾರಿಗಳ ಕುರಿತು ಜನಜಾಗೃತಿ ಮೂಡಿಸುವುದು ವಿಶ್ವ ಗ್ರಾಹಕರ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ತಿಳಿಸಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಬುಧವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತç ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ `ಗ್ರಾಹಕರಿಗಾಗಿ ನ್ಯಾಯಯುತ ಮತ್ತು ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆ’ ಎಂಬ ಘೋಷವಾಕ್ಯದಡಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಯಿಂದ ಹಿಡಿದು ರಾಷ್ಟçಪತಿಯವರೆಗೆ ಪ್ರತಿಯೊಬ್ಬ ವ್ಯಕ್ತಿಯೂ ಒಂದಿಲ್ಲೊಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ಇಂದಿನ ದಿನಮಾನಗಳಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ( ಕೃತಕ ಬುದ್ಧಿಮತ್ತೆ) ಬಳಕೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ತಮಗೆ ಬೇಕಾಗುವಂತಹ ವಸ್ತುಗಳನ್ನು ಖರೀದಿ ಮಾಡಬೇಕಾಗುತ್ತದೆ. ಮೊಬೈಲ್ ಫೋನ್ ಕೂಡ ಕೃತಕ ಬುದ್ಧಿಮತ್ತೆಯ ಒಂದು ಭಾಗವಾಗಿದೆ. ಕೃತಕ ಬುದ್ಧಿಮತ್ತೆ ಸಹಾಯದಿಂದ ವೈದ್ಯಕೀಯ ಲೋಕದ ಸವಾಲುಗಳಿಗೆ ಪರಿಹಾರ, ಹವಾಗುಣ ಪರಿಸ್ಥಿತಿ, ರೂಟ್ ಮ್ಯಾಪ್ ಹೀಗೆ ಅನೇಕ ತರಹದ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬಹುದಾಗಿದೆ.
ಗ್ರಾಹಕರು ಸಾಮಾಜಿಕ ಜಾಲತಾಣದಲ್ಲಿ, ಆನ್ಲೈನ್ ಮುಖಾಂತರ ಯಾವುದಾದರೂ ವಸ್ತುಗಳನ್ನು ಖರೀದಿ ಮಾಡಿದ್ದರೆ ಅಂತಹ ಸರಕುಗಳಲ್ಲಿ ಲೋಪದೋಷಗಳು ಕಂಡುಬಂದರೆ ಅಥವಾ ಸರಬರಾಜುದಾರರು ತಪ್ಪು ಮಾಹಿತಿ ಕೊಟ್ಟಿದ್ದರೆ ಆಗ ಅವರು ಶಿಕ್ಷೆಗೆ ಒಳಗಾಗುತ್ತಾರೆ. ಕಾರಣ, ಗ್ರಾಹಕರು ಇಂದಿನ ತಂತ್ರಜ್ಞಾನದ ತಿಳುವಳಿಕೆ ಹೊಂದುವುದು ಹಾಗೂ ಬಳಕೆ ಮಾಡುವುದು ಸಹ ಅಗತ್ಯವಾಗಿದೆ. ಯಾವುದೇ ಲಿಂಗಬೇಧವಿಲ್ಲದೇ ಸಮಾನವಾಗಿ ಹಾಗೂ ಜವಾಬ್ದಾರಿಯುತವಾಗಿ ಗ್ರಾಹಕರಿಗೆ ನ್ಯಾಯ ಒದಗಿಸುವುದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾರ್ಯವಾಗಿದೆ. ಸಾಮಾಜಿಕ ಜವಾಬ್ದಾರಿ ಅರಿತು ಉತ್ಪಾದನೆ ಮತ್ತು ಮಾರಾಟ ಮಾಡುವುದು ಇಂದಿನ ಅಗತ್ಯವಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎಸ್.ಜಿ. ಪಲ್ಲೇದ ಮಾತನಾಡಿ, ಗ್ರಾಹಕರಿಗೆ ವಸ್ತುಗಳನ್ನು ಖರೀದಿಸಿದಾಗ ಮೋಸವಾದಲ್ಲಿ ಆಯೋಗದಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಆದರೆ ಗ್ರಾಹಕರು ಮಾರಾಟಗಾರರ ಮೇಲೆ ವೃಥಾ ಸುಳ್ಳು ಆರೋಪಗಳನ್ನು ಮಾಡಬಾರದು. ನ್ಯಾಯಯುತವಾಗಿ ವರ್ತಿಸಬೇಕಾಗುತ್ತದೆ ಎಂದು ವಿವರಿಸಿದರು.
ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಯಶೋಧಾ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ವಿಶ್ವ ಗ್ರಾಹಕರ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ವಸ್ತು ಪ್ರದರ್ಶನ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ರಾಜು ನಾಮದೇವ ಮೇತ್ರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿ ಪಾಟೀಲ, ಎಲ್.ಪಿ.ಜಿ ವ್ಯವಸ್ಥಾಪಕರು, ಕಾನೂನು ಮಾಪನ ಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕರಾದ ಎಸ್.ಬಿ. ಪೂಜಾರಿ, ವಿವಿಧ ಇಲಾಖೆ ಅಧಿಕಾರಿಗಳು, ನ್ಯಾಯಬೆಲೆ ಅಂಗಡಿಕಾರರು, ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳು ಹಾಜರಿದ್ದರು.
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಡಾ.ಹಂಪಣ್ಣ ಸಜ್ಜನ ಸ್ವಾಗತಿಸಿದರು. ಆಹಾರ ಸುರಕ್ಷತಾ ಅಧಿಕಾರಿ ಡಾ. ರಾಜೇಂದ್ರ ಗಡಾದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆಯೋಗದ ಅಧ್ಯಕ್ಷ ರಾಚಪ್ಪ ಕೆ.ತಾಳಿಕೋಟಿ ಮಾತನಾಡಿ, ಈಗ ನಾವೆಲ್ಲ ಆರ್ಟಿಫಿಶಿಯಲ್ ಇಂಟಲಿಜೆನ್ಸಿಯಲ್ಲಿ ವ್ಯವಹರಿಸುತ್ತಿದ್ದೇವೆ. ಇದರಿಂದ ಕೆಲವೊಂದು ಸಾಧಕ-ಬಾಧಕಗಳಿವೆ. ಬ್ಯಾಂಕ್, ಇನ್ಸುರೆನ್ಸ್ ಕಂಪನಿಯಲ್ಲಿನ ಸೇವೆಗಳ ಕುರಿತು ಗ್ರಾಹಕರಿಗೆ ನ್ಯೂನತೆಗಳು ಕಂಡುಬಂದಲ್ಲಿ ಅಂತರ್ಜಾಲದ ಮೂಲಕ ಸಂದೇಶಗಳನ್ನು ರವಾನಿಸಿ ಅವುಗಳ ಪ್ರಿಂಟ್ ಕಾಪಿಯನ್ನು ಹಾಗೂ ಸೇವೆಗಳ ರಸೀದಿಯನ್ನು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಹಾಜರುಪಡಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ ಮಾತನಾಡಿ, 1962ರ ಮಾರ್ಚ್ 15ರಂದು ಗ್ರಾಹಕರ ಹಕ್ಕುಗಳ ಬಗ್ಗೆ ಪ್ರಸಾಪವಾಯಿತು. 1986ರಲ್ಲಿ ಗ್ರಾಹಕರ ರಕ್ಷಣಾ ಕಾಯ್ದೆ ಜಾರಿಗೆ ಬಂದಿತು. 2019ರಲ್ಲಿ ಗ್ರಾಹಕರ ರಕ್ಷಣಾ ಕಾಯ್ದೆ ಹೊಸದಾಗಿ ಅಧಿನಿಯಮಗೊಳಿಸಲಾಯಿತು. ಗ್ರಾಹಕರಿಗೆ ವಸ್ತುಗಳನ್ನು ಖರೀದಿಸುವಾಗ ಆಯ್ಕೆ ಮಾಡುವ ಹಕ್ಕು, ಅವುಗಳ ಗುಣಮಟ್ಟಗಳ ಕುರಿತು ತಿಳಿಯುವ ಹಕ್ಕು ಹಾಗೂ ಮೋಸ ಹೋದರೆ ಪರಿಹಾರ ಪಡೆಯುವ ಹಕ್ಕು ಕೂಡ ಇರುತ್ತದೆ. ಈ ಹಕ್ಕುಗಳ ಕುರಿತು ಗ್ರಾಹಕರು ತಿಳುವಳಿಕೆ ಹೊಂದಬೇಕು ಎಂದು ವಿವರಿಸಿದರು.