ವಿಜಯಸಾಕ್ಷಿ ಸುದ್ದಿ, ಮುಂಡರಗಿ : ಯಾವ ದೇಶದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದುವರೆದಿರುತ್ತಾರೋ ಆ ದೇಶ ಅಭಿವೃದ್ಧಿ ಪಥದತ್ತ ಸಾಗುವುದು ನಿಶ್ಚಿತ. ಜೊತೆಗೆ ಆ ದೇಶದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆಯೊಂದಿಗೆ ಎಲ್ಲ ಸೌಭಾಗ್ಯಗಳನ್ನು ಕಾಣಲು ಸಾಧ್ಯ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.
ಅವರು ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನ ಮಠದಲ್ಲಿ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ಗುರವ್ವ ಶಿವಲಿಂಗಪ್ಪ ಹೊರಟ್ಟಿಯವರ ಸ್ಮರಣೆಗಾಗಿ ಸ್ಥಾಪಿಸಿದ ದತ್ತಿನಿಧಿ ಕಾರ್ಯಕ್ರಮದಲ್ಲಿ ಜಂಗಮ ಪುಂಗವ ಅಲ್ಲಮ ಪ್ರಭುಗಳ, ಅಕ್ಕಮಹಾದೇವಿ ಜಯಂತಿ ಮತ್ತು ಶ್ರೀಮಠದ 9ನೇ ಪೀಠಾಧಿಪತಿಗಳ 57ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಿ, ಕಳೆದ ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 101ನೇ ಸ್ಥಾನ ಗಳಿಸಿದ ಹಾಗೂ ರಾಜ್ಯಕ್ಕೆ 2ನೇ ಸ್ಥಾನ ಪಡೆದ ಮುಧೋಳ ಗ್ರಾಮದ ಸೌಭಾಗ್ಯ ಬೀಳಗಿಮಠ ಹಾಗೂ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಅವರನ್ನು ಸನ್ಮಾನಿಸಿ ಮಾತನಾಡಿದರು.
ಒಬ್ಬ ತಾಯಿ ಮನೆಯಲ್ಲಿದ್ದರೆ ನೂರು ಶಾಲೆಗಳನ್ನು ತೆರೆದಷ್ಟು ಮಕ್ಕಳು ಸಂಸ್ಕಾರವಂತರಾಗುತ್ತಾರೆ. ತಾಯಿ ದೇವರಾಗಬಹುದು. ಆದರೆ ದೇವರು ತಾಯಿಯಾಗಲು ಸಾಧ್ಯವಿಲ್ಲ. ಈ ಸ್ಥಾನಕ್ಕೆ ಯಾರೂ ಸಮನಲ್ಲ.
ನಮ್ಮನ್ನು ಹೊತ್ತು, ಹೆತ್ತು, ಸಾಕಿ, ಸಲುಹಿ ದೊಡ್ಡವರನ್ನಾಗಿ ಮಾಡಿದ ನಮ್ಮ ತಂದೆ-ತಾಯಿಯವರನ್ನು ನೋಯಿಸದೇ ಅವರ ಕೊನೆಗಾಲದಲ್ಲಿ ಪ್ರೀತಿ, ವಿಶ್ವಾಸ, ಗೌರವ ಆದರಾತಿಥ್ಯಗಳಿಂದ ನೋಡಿಕೊಳ್ಳಬೇಕು.
ಮಹಿಳೆಯರು ಸಬಲರಾದರೆ ಸದೃಢ ದೇಶವನ್ನು ಕಟ್ಟಲು ಸಾಧ್ಯವಾಗುತ್ತದೆ. ಅಂತಹ ಸಾಧನೆ ಮಾಡಿದ ಸೌಭಾಗ್ಯ ಬೀಳಗಿಮಠ ಹಾಗೂ ಲತಾ ಮಲ್ಲಿಕಾರ್ಜುನ ಪ್ರತಿಯೊಬ್ಬ ಹೆಣ್ಣುಮಕ್ಕಳಿಗೂ ಮಾದರಿಯಾಗಿದ್ದಾರೆ.
ಇವರ ಸಾಧನೆಯನ್ನು ಗೌರವಿಸಲು ಅವ್ವ ಸೇವಾ ಟ್ರಸ್ಟ್ ಬಳಗಕ್ಕೆ ಹೆಮ್ಮೆ ಎನಿಸುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ಶಶಿ ಸಾಲಿ, ನಿವೃತ್ತ ಪ್ರಾಚಾರ್ಯ ಕರಿಭರಮಗೌಡರ, ಡಾ.ಬಸವರಾಜ ಧಾರವಾಡ ಮುಂತಾದವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಅಳವಂಡಿ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮಹಾಲಿಂಗ ಸ್ವಾಮೀಜಿ, ಕರಬಸಪ್ಪ ಹಂಚಿನಾಳ, ಆರ್.ಬಿ. ಡಂಬಳಮಠ, ವೀರನಗೌಡ ಗುಡದಪ್ಪನವರ, ಆರ್.ಎಲ್. ಪೊಲೀಸ್ಪಾಟೀಲ, ಎಸ್.ಎಂ. ಅಗಡಿ, ಎಸ್.ಎಸ್. ಗಡ್ಡದ, ಎಸ್.ಪಿ. ನಿಂಬಿಮಠ, ಎಮ್.ಎಸ್. ಪೂಜಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಡಾ. ಬಿ.ಜಿ. ಜವಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎಸ್. ಇನಾಮತಿ ನಿರೂಪಿಸಿದರು.
ಸಾನ್ನಿಧ್ಯ ವಹಿಸಿದ್ದ ಜ.ನಾಡೋಜ ಡಾ.ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ಶ್ರೀಮಠ ಸದಾ ಸಮಾಜಮುಖಿಯಾಗಿ ಸೇವೆ ಮಾಡುವ ಮೂಲಕ ಸಮಾಜದ ಒಳಿತಿಗಾಗಿ ಹಗಲಿರುಳು ಶ್ರಮಿಸುತ್ತಿದೆ.
ವಿಶೇಷವಾಗಿ ಕಳೆದ 2 ವರ್ಷಗಳಿಂದ ಮಾತೋಶ್ರೀ ಗುರಮ್ಮ ಶಿವಲಿಂಗಪ್ಪ ಹೊರಟ್ಟಿಯವರ ಹೆಸರಿನಲ್ಲಿ ವಿಶೇಷ ಶಿವಾನುಭವ ಆಚರಿಸುತ್ತಿರುವುದು ನಮಗೂ, ನಮ್ಮ ಮಠಕ್ಕೂ ಹೆಮ್ಮೆಯ ಸಂಗತಿ ಎಂದು ಹೇಳಿದರು.