ವಿಜಯಸಾಕ್ಷಿ ಸುದ್ದಿ, ಹಾವೇರಿ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಬುಧವಾರ ಬೃಹತ್ ಮೆರವಣಿಗೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು ಪಾಲ್ಗೊಂಡಿದ್ದರು. ಬಿಸಿಲಿನ ಝಳವನ್ನೂ ಲೆಕ್ಕಿಸದೇ ಹಾವೇರಿ-ಗದಗ ಕ್ಷೇತ್ರ ವ್ಯಾಪ್ತಿಯ ಎಂಟೂ ಕ್ಷೇತ್ರಗಳಿಂದ ಪಕ್ಷದ ಕಾರ್ಯಕರ್ತರು, ಮಹಿಳೆಯರು, ಯುವಕರು, ಅಭಿಮಾನಿಗಳು ಪಾಲ್ಗೊಂಡಿದ್ದರಲ್ಲದೇ ಎಲ್ಲೆಡೆ ಪಕ್ಷದ ಧ್ವಜ, ನಾಯಕರ ಕಟೌಟ್ಗಳು, `ನಾನು ಶ್ರಮಿಕ-ನನ್ನ ಮತ ಕಾಂಗ್ರೆಸ್ಸಿಗೆ’ ಇತ್ಯಾದಿ ಘೋಷಣೆಗಳು ಮೊಳಗಿದವು.
ಟಿಕೆಟ್ ಘೋಷಣೆಯಾದಾಗಿನಿಂದ ಅವಿರತವಾಗಿ ಕ್ಷೇತ್ರದಾದ್ಯಂತ ಸಂಚರಿಸುತ್ತ ಈಗಾಗಲೇ ಒಂದು ಸುತ್ತಿನ ಪ್ರಚಾರ ಪೂರೈಸಿರುವ ಆನಂದಸ್ವಾಮಿ ಗಡ್ಡದೇವರಮಠ, ಬುಧವಾರ ಬೆಳಿಗ್ಗೆ ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿಗಳ ಆಶೀರ್ವಾದ ಪಡೆದರಲ್ಲದೆ, ನಗರದ ಶ್ರೀ ವೀರಭದ್ರೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಚಿವರಾದ ಡಾ. ಎಚ್.ಕೆ. ಪಾಟೀಲ, ಶಿವಾನಂದ ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಕೆಪಿಸಿಸಿ ಕಾರ್ಯದರ್ಶಿ ಸಲೀಂ ಅಹಮದ್, ಶಾಸಕರಾದ ಜೆ.ಎಸ್. ಪಟೇಲ್, ಪ್ರಕಾಶ್ ಕೋಳಿವಾಡ, ಯು.ಬಿ. ಬಣಕಾರ್, ಶ್ರೀನಿವಾಸ ಮಾನೆ, ಬಸವರಾಜ ಶಿವಣ್ಣ ಸೇರಿದಂತೆ ಮುಖಂಡರೊಂದಿಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆನಂದಸ್ವಾಮಿ ಗಡ್ಡದೇವರಮಠ, ಎಲ್ಲ ಸಚಿವರು, ಶಾಸಕರು, ಪಕ್ಷದ ಮುಖಂಡರು, ಉತ್ಸಾಹಿ ಕಾರ್ಯಕರ್ತರು, ಮುಖ್ಯವಾಗಿ ಕ್ಷೇತ್ರದ ಮಹಾಜನತೆ ನನ್ನ ಮೇಲೆ ವಿಶ್ವಾಸ, ಪ್ರೀತಿಯಿಟ್ಟು ಸುಡುಬಿಸಿಲಿನಲ್ಲೂ ನನ್ನೊಂದಿಗೆ ನಡೆದಿದ್ದನ್ನು ನಾನೆಂದೂ ಮರೆಯಲಾರೆ. ನಿಮ್ಮೆಲ್ಲರ ಅಭಿಮಾನಕ್ಕೆ ಧನ್ಯವಾದ ಎಂದು ಹೇಳಿದರು.
ದೇಶದ ಹಿತವನ್ನು ಗಮನದಲ್ಲಿಟ್ಟುಕೊಂಡು, ಎಲ್ಲರೂ ನಮ್ಮ ಪಕ್ಷದ ಮೇಲೆ ನಂಬಿಕೆ ಇಟ್ಟು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಬೆಂಬಲ ನೀಡಿದ್ದಾರೆ. ಸಚಿವರಾದ ಎಚ್.ಕೆ. ಪಾಟೀಲ, ಸಲೀಂ ಅಹ್ಮದ್ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಂಡು ನನಗೆ ಸ್ಪೂರ್ತಿ ತುಂಬಿದ್ದಾರೆ. ಕ್ಷೇತ್ರದ ಮೂಲೆ ಮೂಲೆಯಿಂದ ಕಾರ್ಯಕರ್ತರು ಬಂದಿದ್ದು, ಅವರ ಅಪರಿಮಿತ ಉತ್ಸಾಹದಿಂದ ಮನ ತುಂಬಿ ಬಂದಿದೆ. ಎಲ್ಲರ ಆಶೀರ್ವಾದದಿಂದ ಅತ್ಯಂತ ಹೆಚ್ಚಿನ ಮುನ್ನಡೆಯೊಂದಿಗೆ ಗೆಲುವು ಸಾಧಿಸುವ ವಿಶ್ವಾಸವಿದೆ.
– ಆನಂದಸ್ವಾಮಿ ಗಡ್ಡದೇವರಮಠ.
ಹಾವೇರಿ-ಗದಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ.