ವಿಜಯಸಾಕ್ಷಿ ಸುದ್ದಿ, ಕಾಳಗಿ (ಕಲಬುರಗಿ) : ಬದುಕು ಭಗವಂತ ಕೊಟ್ಟ ಅಮೂಲ್ಯ ಕೊಡುಗೆ. ಅರಿವು-ಆದರ್ಶಗಳ ಮೂಲಕ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ. ಜೀವನ ಉನ್ನತಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ ಚಿಂತನಗಳು ಸಕಲರ ಬಾಳಿಗೂ ದಾರಿದೀಪ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ಕಾಳಗಿ ಶ್ರೀ ನೀಲಕಂಠ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಬಾಳಿನ ಭಾಗ್ಯೋದಯಕ್ಕೆ ಧರ್ಮವೇ ದಿಕ್ಸೂಚಿ. ಧರ್ಮದ ದಾರಿ ಮೀರಿ ನಡೆದರೆ ಅಪಾಯ ತಪ್ಪಿದ್ದಲ್ಲ. ಶ್ರೀ ಜಗದ್ಗುರು ರೇಣುಕಾಚಾರ್ಯರು ಕರ್ಮವನ್ನು ಕಳೆದು ಧರ್ಮವನ್ನು ಬಿತ್ತಿ, ಬದುಕನ್ನು ಬಂಗಾರಗೊಳಿಸಿದ ಕೀರ್ತಿ ಅವರದು. ನೊಂದವರ, ಬೆಂದವರ ಧ್ವನಿಯಾಗಿ ಧಾರ್ಮಿಕ ಮತ್ತು ಸಾಮಾಜಿಕ ಸತ್ಕಾçಂತಿಗೈದು ಜನ ಕಲ್ಯಾಣವನ್ನು ಉಂಟು ಮಾಡಿದ್ದನ್ನು ಮರೆಯಲಾಗದು ಎಂದರು.
ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರಿಗೂ ಧರ್ಮ ಬೇಕಾಗಿದೆ. ಅಶಾಂತಿ-ಅಜ್ಞಾನದಿಂದ ತತ್ತರಿಸುತ್ತಿರುವ ಜನ ಸಮುದಾಯಕ್ಕೆ ಧರ್ಮವೊಂದೇ ಆಶಾಕಿರಣ. ವೀರಶೈವ ಧರ್ಮ ಆದರ್ಶ ಮೌಲ್ಯಗಳನ್ನು ಪ್ರತಿಪಾದಿಸಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆಗಳು ಸರ್ವ ಕಾಲಕ್ಕೂ ಅನ್ವಯವಾಗುತ್ತವೆ ಎಂದರು. ನೇತೃತ್ವ ವಹಿಸಿದ ಹೊನ್ನಕಿರಣಗಿ ಚಂದ್ರಗುಂಡ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಕಾಳಗಿ ಪಟ್ಟಣದ ಇತಿಹಾಸದಲ್ಲಿ ಇದು ಅವಿಸ್ಮರಣೀವಾದ ಸಮಾರಂಭ. ಪ್ರಪ್ರಥಮವಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ಆಗಮಿಸಿರುವುದು ಈ ಭಾಗದ ಭಕ್ತರ ಸೌಭಾಗ್ಯವೆಂದರು.
ಸಮಾರಂಭದಲ್ಲಿ ಭರತನೂರ ಚಿಕ್ಕಗುರುನಂಜೇಶ್ವರ ಸ್ವಾಮಿಗಳು, ಮಂಗಲಗಿ ತೆಂಗಳಿ ಶಾಂತಸೋಮನಾಥ ಶಿವಾಚಾರ್ಯರು, ಹೊಸಳ್ಳಿ ಸಿದ್ಧಲಿಂಗ ಶಿವಾಚಾರ್ಯರು, ರಟಕಲ್ ರೇವಣಸಿದ್ಧ ಶಿವಾಚಾರ್ಯರು, ಬಣಮಗಿ ರಾಚೋಟೇಶ್ವರ ಶಿವಾಚಾರ್ಯರು, ಡೊಣ್ಣೂರ ಪ್ರಶಾಂತ ದೇವರು, ಕಾಳಗಿ ನೀಲಕಂಠ ಮರಿದೇವರು ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಗೌರವಾಧ್ಯಕ್ಷ ಶಿವರಾಜ ಪಾಟೀಲ ಗೋಣಗಿ, ಸ್ವಾಗತ ಸಮಿತಿ ಅಧ್ಯಕ್ಷ ನಾಗರಾಜ ಚಿಕ್ಕಮಠ, ಪ್ರಚಾರ ಸಮಿತಿ ಅಧ್ಯಕ್ಷ ಮಲ್ಲಿನಾಥ ಪಾಟೀಲ, ಕಲಬುರ್ಗಿ ಶಿವಶರಣಪ್ಪ ಸೀರಿ ಮೊದಲಾದ ಗಣ್ಯರು ಪಾಲ್ಗೊಂಡು ಶ್ರೀ ರಂಭಾಪುರಿ ಜಗದ್ಗುರುಗಳಿಂದ ಗುರುರಕ್ಷೆ ಸ್ವೀಕರಿಸಿದರು. ಭಕ್ತ ಕುಂಬಾರ ಸಮಾರಂಭವನ್ನು ನಿರೂಪಿಸಿದರು.
ಸಮಾರಂಭಕ್ಕೂ ಮುನ್ನ ಕಾಳಗಿ ಪಟ್ಟಣದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಸಂಭ್ರಮದಿಂದ ಜರುಗಿತು. ಇತಿಹಾಸ ಪ್ರಸಿದ್ಧ ಪ್ರಾಚೀನ ಶ್ರೀ ನೀಲಕಂಠ ಕಾಳೇಶ್ವರ ದೇವಸ್ಥಾನಕ್ಕೆ ಶ್ರೀ ರಂಭಾಪುರಿ ಜಗದ್ಗುರುಗಳು ಭೇಟಿಯಿತ್ತು ಪುಷ್ಪಾರ್ಚನೆ, ಪೂಜೆ ಸಲ್ಲಿಸಿದರು.
ಅಸ್ಪೃಶ್ಯರ ಉದ್ಧಾರ, ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯ, ರೈತ ಸಮುದಾಯದ ಹಿತಕ್ಕಾಗಿ ಸದಾ ಶ್ರಮಿಸಿ ಜೀವ ಸಂಕುಲವನ್ನು ಸಂರಕ್ಷಿಸಿದ್ದಾರೆ. ದೇಶಕ್ಕೊಂದು ಸಂವಿಧಾನ ಇರುವಂತೆ ಧರ್ಮಕ್ಕೊಂದು ನೀತಿ ಸಂಹಿತೆಯಿದೆ. ಅಷ್ಟಾವರಣ, ಪಂಚಾಚಾರ ಮತ್ತು ಷಟ್ಸ್ಥಲಗಳು ಜೀವನದ ಉನ್ನತಿಗೆ ಅಡಿಪಾಯವಾಗಿವೆ.
ಅಂಥ ತತ್ವ ಸಿದ್ಧಾಂತಗಳನ್ನು ಅರಿತು ಬಾಳುವುದರಲ್ಲಿ ಮಾನವನ ಶ್ರೇಯಸ್ಸಿದೆ. ಕಾಳಗಿ ತಾಲೂಕಾ ಕೇಂದ್ರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಭಕ್ತಿ ಶ್ರದೆಯಿಂದ ಭವ್ಯ ಸಮಾರಂಭ ಹಮ್ಮಿಕೊಂಡಿರುವುದು ಸಂತೋಷ ತಂದಿದೆ ಎಂದು ರಂಭಾಪುರಿ ಶ್ರೀಗಳು ನುಡಿದರು.