ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದ 223 ತಾಲೂಕುಗಳು ಬರದಿಂದ ತತ್ತರಿಸಿವೆ. ಬರ ಪರಿಹಾರ ಕೊಡುವಂತೆ 2023ರ ಸಪ್ಟೆಂಬರ್ನಲ್ಲಿ ಸರಕಾರ ಮನವಿ ಮಾಡಿತ್ತು. ಅಕ್ಟೋಬರ್ 4ರಿಂದ 9ರವರೆಗೆ ಕೇಂದ್ರ ತಂಡ ಅಧ್ಯಯನ ನಡೆಸಿ, ವರದಿ ನೀಡಿದರೂ ಪ್ರಧಾನಿ ಮೋದಿ ಪರಿಹಾರ ಕೊಡಲಿಲ್ಲ. ಅಷ್ಟೇ ಅಲ್ಲದೆ, ೨೦೧೯ರಲ್ಲಿ ಭೀಕರ ಪ್ರವಾಹ ಬಂದಾಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರೂ ಆಗಲೂ ಕರ್ನಾಟಕದ ಮುಖ ನೋಡದ ಪ್ರಧಾನಿ ಮೋದಿ ಈಗ ಚುನಾವಣೆ ಪ್ರಚಾರಕ್ಕೆ ಪದೇ ಪದೇ ಕರ್ನಾಟಕ್ಕೆ ಬರುತ್ತಿದ್ದಾರೆ. ಅವರಿಗೆ ಕರ್ನಾಟಕದ ಜನರ ಮತ ಕೇಳುವ ನೈತಿಕತೆ ಇಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಜಿಲ್ಲೆಯ ಗಜೇಂದ್ರಗಡದ ಎಪಿಎಂಸಿ ಮೈದಾನದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬರ ಪರಿಹಾರ ಕೋರಿ ನಾವು ಸುಪ್ರೀಂಕೋರ್ಟ್ ಮೊರೆ ಹೋಗದಿದ್ದಲ್ಲಿ ಕೇಂದ್ರ ಸರಕಾರ ಕರ್ನಾಟಕದತ್ತ ತಿರುಗಿಯೂ ನೋಡುತ್ತಿರಲಿಲ್ಲ ಎಂದು ಹೇಳಿದರು.
ಸುಪ್ರಿಂಕೋರ್ಟ್ ಮೊರೆ ಹೋಗಿದ್ದರಿಂದಲೇ ಇವತ್ತು ಕೇಂದ್ರದಿಂದ ಬರ ಪರಿಹಾರ ಲಭ್ಯವಾಗುವ ಭರವಸೆ ಮೂಡಿದೆ. ಕೇಂದ್ರ ಸರಕಾರದ ಪರ ವಕೀಲರು ಕೇಳಿದ್ದ ಕಾಲಾವಕಾಶ ಮುಗಿಯುತ್ತಾ ಬಂದಿದ್ದು, ಅನುದಾನ ಬರುವ ನಿರೀಕ್ಷೆಯಿದೆ. ಆದರೆ ಈವರೆಗೂ ಹಣ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬರ ಪರಿಹಾರ ಮತ್ತು ಕೇಂದ್ರ ಸರಕಾರದ ಮಲತಾಯಿ ಧೋರಣೆ ವಿರುದ್ಧ ಕರ್ನಾಟಕದ 25 ಜನ ಬಿಜೆಪಿ ಸಂಸದರಿದ್ದರೂ ಸಂಸತ್ನಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಮಾತಾಡಲಿಲ್ಲ. ಕರ್ನಾಟಕವನ್ನು ಕಡೆಗಣಿಸಿದ ಬಿಜೆಪಿ ಮತ ಹಾಕಬೇಡಿ ಎಂದು ಸಿದ್ದರಾಮಯ್ಯ ವಿನಂತಿಸಿದರು.
ಮಹದಾಯಿ ಯೋಜನೆ ಜಾರಿಗಾಗಿ ರಕ್ತದಲ್ಲಿ ಪತ್ರ ಬರೆದ ಬಸವರಾಜ ಬೊಮ್ಮಾಯಿ, ಎರಡೂವರೆ ವರ್ಷ ಅಧಿಕಾರದಲ್ಲಿದ್ದರೂ ಮಹದಾಯಿ ಯೋಜನೆಯನ್ನು ಜಾರಿ ಮಾಡಲಿಲ್ಲ. ಸದ್ಯ ಕೇಂದ್ರ ಸರಕಾರ ಪರಿಸರ ಇಲಾಖೆ ಸದರಿ ಯೋಜನೆ ಜಾರಿಗೆ ತಡೆ ನೀಡಿದೆ. ರಾಜ್ಯ ಬಿಜೆಪಿ ನಾಯಕರು ಮತ್ತು ಕೇಂದ್ರದ ಬಿಜೆಪಿ ಸರಕಾರ ಪರಿಸರ ನಿರಪೇಕ್ಷಣಾ ದೊರಕಿಸಿಕೊಟ್ಟರೆ ನಾಳೆಯೇ ಕೆಲಸ ಆರಂಭಿಸಲಾಗುವುದು. ಅದಕ್ಕಾಗಿ ಈಗಾಗಲೇ ಟೆಂಡರ್ ಸಹ ಕರೆದಿದ್ದೇವೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಹಾವೇರಿ-ಗದಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಆರ್.ಎಸ್. ಪಾಟೀಲ, ಶಾಸಕರಾದ ಶ್ರೀನಿವಾಸ ಮಾನೆ, ಆರ್. ಶಂಕರ್, ಯು.ಬಿ. ಬಣಕಾರ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.
ನರೇಂದ್ರ ಮೋದಿ ಕಳೆದ 10 ವರ್ಷದಿಂದ ಅಧಿಕಾರದಲ್ಲಿದ್ದಾರೆ. ಆದರೂ ಈವರೆಗೆ ಜನಸಾಮಾನ್ಯರ ಖಾತೆಗೆ 15 ಲಕ್ಷ ರೂಪಾಯಿ ಹಾಕಿಲ್ಲ. ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ಈಡೇರಿಸಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುವ ಭರವಸೆ ನೀಡಿದರು, ಆದರೆ ರೈತರ ಖರ್ಚು ದುಪ್ಪಟ್ಟುಗೊಳಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಿಲ್ಲ. ಇಂಥ ಸುಳ್ಳು ಹೇಳುವ ಪಕ್ಷಕ್ಕೆ ಜನ ಮತ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ವಿನಂತಿಸಿದರು.