ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ನೀರುಮಾರ್ಗದ ಪೆದಮಲೆ ಗ್ರಾಮದಲ್ಲೊಂದು ಬೆಚ್ಚಿಬೀಳಿಸುವ ಘಟನೆ ಜರುಗಿದೆ. ದೈವದ ಮುನಿಸಿನಿಂದ ತೊಂದರೆಗೀಡಾದ ಗ್ರಾಮಸ್ಥರಿಗೆ ಪ್ರಶ್ನಾಚಿಂತನೆಯಲ್ಲಿ ದೈವಸ್ಥಾನದ ಸುಳಿವು ದೊರೆತಿದೆ.
300 ವರ್ಷಗಳಿಂದ ದೈವಸ್ಥಾನ ಗ್ರಾಮದ ಜನರ ಅರಿವಿಗೆ ಬಾರದೇ ಮಣ್ಣಿನಡಿ ಹುದುಗಿತ್ತು. ಪಾಳು ಬಿದ್ದು ಪೊದೆಗಳಿಂದ ಅವೃತ್ತವಾಗಿದ್ದ ದಟ್ಟ ನಿರ್ಜನ ಪ್ರದೇಶದಲ್ಲಿ ಗ್ರಾಮದ ಇಂದಿನ ಪೀಳಿಗೆಗೆ ದೈವಸ್ಥಾನ ಇದ್ದ ಬಗ್ಗೆ ಅರಿವೇ ಇರಲಿಲ್ಲ. ಆದರೆ, ಇದೀಗ ವಾಜಿಲ್ಲಾಯ-ಧೂಮವತಿ ದೈವದ ಕಾರ್ಣಿಕ ಕಂಡು ಗ್ರಾಮಸ್ಥರು ಅಚ್ಚರಿಪಟ್ಟಿದ್ದಾರೆ.
ಗ್ರಾಮದಲ್ಲಿ ಮನೆಗಳಿಗೆ ಆಗಾಗ ನಾಗರಹಾವು ಪ್ರವೇಶಿಸುವುದು, ಆತ್ಮಹತ್ಯೆ, ಸಾವು-ನೋವು ಹೆಚ್ಚಳವಾಗಿತ್ತು. ನಿರಂತರ ನೆಮ್ಮದಿ ಇಲ್ಲದೇ ಹಲವು ಮನೆಯವರು ಗ್ರಾಮವನ್ನೇ ತೊರೆದಿದ್ದರು. ಹೀಗಾಗಿ ಪಾಳು ಬಿದ್ದಿದ್ದ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಗ್ರಾಮಸ್ಥರು ಮುಂದಾಗಿದ್ದರು. ಈ ವೇಳೆ ದೇವಸ್ಥಾನದಲ್ಲಿ ಪ್ರಶ್ನಾಚಿಂತನೆ ನಡೆಸಲಾಗಿತ್ತು. ಅದರಲ್ಲಿ, ವಾಜಿಲ್ಲಾಯ ದೈವಸ್ಥಾನದ ಸುಳಿವು ಪತ್ತೆಯಾಗಿದೆ.