ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಪರಿಸರ ಸಂರಕ್ಷಣೆ ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ದೂರದೃಷ್ಟಿಯ ಯೋಜನೆಗಳು ಜಗತ್ತಿಗೆ ಮಾದರಿಯಾಗಿವೆ ಎಂದು ಬಿಜೆಪಿ ಮುಖಂಡ ಹಾಗೂ ಉದ್ಯಮಿ ವಿಜಯಕುಮಾರ ಗಡ್ಡಿ ಹೇಳಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲ್ವೆ ಎಂಜಿನ್ ಉದ್ಘಾಟನೆಯು ಪರಿಸರ ಸ್ನೇಹಿ ತಂತ್ರಜ್ಞಾನದತ್ತ ಭಾರತ ಇಟ್ಟಿರುವ ಮಹತ್ವದ ಹೆಜ್ಜೆಯಾಗಿದೆ. ಈ ರೈಲು ಹಾನಿಕಾರಕ ಅನಿಲ ಹೊರಸೂಸದೆ ಕೇವಲ ನೀರಿನ ಆವಿಯನ್ನು ಹೊರಸೂಸುತ್ತದೆ ಎಂದು ತಿಳಿಸಿದ್ದಾರೆ.
ಭಾರತೀಯ ರೈಲ್ವೆಯ ಬಹುತೇಕ ಬ್ರಾಡ್ಗೇಜ್ ಮಾರ್ಗಗಳನ್ನು ವಿದ್ಯುದೀಕರಣಗೊಳಿಸಲಾಗಿದ್ದು, ರೈಲು ನಿಲ್ದಾಣಗಳಲ್ಲಿ ಸೌರ ಫಲಕ ಅಳವಡಿಸುವ ಮೂಲಕ ಹಸಿರು ಇಂಧನ ಬಳಕೆಗೆ ಉತ್ತೇಜನ ನೀಡಲಾಗಿದೆ. 130ಕ್ಕೂ ಹೆಚ್ಚು ನಗರಗಳಲ್ಲಿ ವಾಯು ಮಾಲಿನ್ಯ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಕೈಗಾರಿಕೆಗಳ ಮೇಲಿನ ಪರಿಸರ ನಿಯಂತ್ರಣವನ್ನು ಕಟ್ಟುನಿಟ್ಟುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಒಂದು ಕೋಟಿ ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕ ಅಳವಡಿಕೆಗೆ ಆರ್ಥಿಕ ನೆರವು, ನಗರ ಪ್ರದೇಶಗಳಲ್ಲಿ 1,000 ನಗರ ಅರಣ್ಯಗಳ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳು ದೇಶವನ್ನು ಪರಿಸರ ಸ್ನೇಹಿ ಅಭಿವೃದ್ಧಿಯತ್ತ ಕೊಂಡೊಯ್ಯಲಿವೆ ಎಂದು ವಿಜಯಕುಮಾರ ಗಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



