ವಿಜಯಸಾಕ್ಷಿ ಸುದ್ದಿ, ಗದಗ : ಪಂಚ ಗ್ಯಾರಂಟಿ ಯೋಜನೆಗಳ ಮೂಲಕ 1 ಕೋಟಿ 10 ಲಕ್ಷ ಜನರನ್ನು ಬಡತನ ರೇಖೆಯಿಂದ ಮೆಲೇತ್ತುವ ಮೂಲಕ ಕ್ರಾಂತಿಕಾರಕ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಮುಂಡರಗಿ ತಾಲೂಕಾಡಳಿತದಿಂದ ಮಂಗಳವಾರ ಡಂಬಳ ತೋಂಟದಾರ್ಯ ಮಠದಲ್ಲಿ ಜರುಗಿದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಕಾರ್ಯಕ್ರಮಕ್ಕೆ ದೊಡ್ಡ ಮಟ್ಟದಲ್ಲಿ ಮಹಿಳೆಯರು ಸೇರಿದ್ದು ಸಂತಸ ತಂದಿದೆ. ಸರ್ಕಾರದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ಬಂದಿದ್ದು, ಮಹಿಳೆಯರಲ್ಲಿ ಮನೆ ನಡೆಸಿಕೊಂಡು ಹೋಗುವ ಆತ್ಮವಿಶ್ವಾಸ ಗ್ಯಾರಂಟಿ ಯೋಜನೆಯಿಂದ ಹೆಚ್ಚಿದೆ ಎಂದರು.
ಗ್ಯಾರಂಟಿ ಯೋಜನೆಯಿಂದ ಸರ್ಕಾರವು ದಿವಾಳಿ ಆಗುತ್ತದೆ ಎಂದು ಹಲವರು ಬೊಬ್ಬೆ ಹೊಡೆದರು. ಲೋಕಸಭಾ ಚುನಾವಣೆ ನಡೆದ ತಕ್ಷಣ ಗ್ಯಾರಂಟಿ ನಿಲ್ಲುತ್ತದೆ ಎಂದು ಸುಳ್ಳು ಸುದ್ದಿ ಬಿತ್ತುತ್ತಿದ್ದಾರೆ. ಯಾರೂ ಅದಕ್ಕೆ ಗಮನ ನೀಡಬಾರದು. ಗ್ಯಾರಂಟಿ ಯೋಜನೆಗೆ ಬೇಕಾದ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಮೀಸಲಿಟ್ಟಿದ್ದಾರೆ ಎಂದರು.
ಗ್ಯಾರಂಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರ ಮೂಲಕ ಜಿಲ್ಲೆ ಉತ್ತಮ ಸ್ಥಾನದಲ್ಲಿದೆ. ಮುಂಡರಗಿ ತಾಲ್ಲೂಕಿನಲ್ಲಿ ಅನ್ನಬಾಗ್ಯ ಯೋಜನೆ ಶೇ.98, ಗೃಹಲಕ್ಷ್ಮಿ ಶೇ. 97, ಗೃಹಜ್ಯೋತಿ ಶೇ.100 ಮತ್ತು ನೋದಾಯಿತರೆಲ್ಲರಿಗೂ ಯುವನಿಧಿ ಜಾರಿಯಾಗಿದೆ. ಶಕ್ತಿ ಯೋಜನೆ ಮೂಲಕ ಜೂನ್ನಿಂದ ಈವರೆಗೆ 49.60 ಲಕ್ಷ ಮಹಿಳೆಯರು ಪ್ರಯಾಣ ಮಾಡಿ ಗ್ಯಾರಂಟಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ ಎಂದರು.
ವಿಧಾನ ಸಭಾ ಚುನಾವಣೆ ವೇಳೆ ಗ್ಯಾರಂಟಿ ಕಾರ್ಡ್ಗಳನ್ನು ಪ್ರತಿ ಮನೆಗೆ ತಲುಪಿಸಿದ್ದೆವು. ಅಂತೆಯೇ ಸರ್ಕಾರ ರಚನೆಯಾದ ಮೇಲೆ ಯೋಜನೆಗಳ ಲಾಭವನ್ನು ಮನೆ ಮನೆಗೆ ತಲುಪಿಸಿದ್ದೇವೆ. ನುಡಿದಂತೆ ನಡೆಯುವ ಮೂಲಕ ಜನರ ವಿಶ್ವಾಸ ಉಳಿಸಿಕೊಂಡಿದ್ದೇವೆ ಎಂದು ಹೇಳಿದರು.
ಶಾಸಕ ಜಿ.ಎಸ್. ಪಾಟೀಲ ಕೂಡ ಗ್ಯಾರಂಟಿ ಅನುಷ್ಠಾನ ಮಾಡುವಲ್ಲಿ ಮುತುವರ್ಜಿಯಿಂದ ಕಾರ್ಯ ನಿರ್ವಹಿಸಿ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಯನ್ನು ತಂದಿದೆ. ಜಾಲವಾಡಿಗಿ ಏತ ನಿರಾವರಿಗೆ ಚಾಲನೆ ನೀಡಲಾಗಿದೆ ಎಂದು ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.
ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರ ಈಗಾಗಲೇ ಚುನಾವಣೆಯಲ್ಲಿ ತಮ್ಮೆಲ್ಲರಿಗೂ ನೀಡಿದ ನೀಡಿದ ಭರವಸೆಗಳನ್ನು ಈಡೇರಿಸಿ, ತಮ್ಮ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸರ್ಕಾರ ಉಳಿಸಿಕೊಂಡಿದೆ. ಇಂದು ಗ್ಯಾರಂಟಿ ಸಮಾವೇಶದ ಮೂಲಕ ಯೋಜನೆಗಳು ಜನರಿಗೆ ತಲುಪಿದ ಬಗ್ಗೆ ಖಚಿತ ಮಾಡಿಕೊಂಡು, ಅರ್ಹರಿಗೆ ಯೋಜನೆ ತಲುಪಿಸಲು ಸಮಾವೇಶ ಮಾಡಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಮಾತನಾಡಿ, ಸರ್ಕಾರದ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸಿದ್ದೇವೆ. ಪ್ರಮುಖವಾಗಿ ಮಹಿಳೆಯರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿಮಾಡಿದೆ. ಶಕ್ತಿ ಯೋಜನೆಯಲ್ಲಿ 3.78 ಕೋಟಿ ಮಹಿಳೆಯರು ಜಿಲ್ಲೆಯಲ್ಲಿ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಉತ್ತಮ ಆರ್ಥಿಕ ಅಭಿವೃದ್ಧಿ ಹೊಂದಲು ಸಹಕಾರಿಯಾಗಿವೆ. ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷೆ ಸುಜಾತಾ ದೊಡ್ಡಮನಿ, ತಹಸೀಲ್ದಾರ ಧನಂಜಯ ಮಾಲಗಿತ್ತಿ, ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು, ಸಿಬ್ಬಂದಿಗಳು, ಫಲಾನುಭವಿಗಳು ಹಾಜರಿದ್ದರು.
ಗದಗ ಜಿಲ್ಲೆಯಲ್ಲಿ ಅನ್ನ ಬಾಗ್ಯ ಯೋಜನೆಯನ್ನು ಶೇ. 93, ಗೃಹಲಕ್ಷ್ಮಿ ಶೇ.99, ಗೃಹಜ್ಯೋತಿ ಶೇ.100, ಹಾಗೂ ಶಕ್ತಿ ಯೋಜನೆ ಮೂಲಕ 3.78 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಈ ಪ್ರಮಾಣದಲ್ಲಿ ಯೋಜನೆಗಳ ಲಾಭ ನೇರವಾಗಿ ತಲುಪಿದೆ. ರಾಷ್ಟ್ರದಲ್ಲೇ ಗ್ಯಾರಂಟಿ ಯೊಜನೆಗಳು ಬಡವರ ಬಾಳಲ್ಲಿ ಆರ್ಥಿಕ ಅಭಿವೃದ್ಧಿ ಜೊತೆಗೆ ಕ್ರಾಂತಿಕಾರಿ ಬದಲಾವಣೆ ತಂದಿದೆ. ಯೊಜನೆಗಳ ಅನುಷ್ಠಾನದಲ್ಲಿ ಸಂಪೂರ್ಣವಾಗಿ ಸೋರಿಕೆ ತಡೆದು, ಭ್ರಷ್ಟಾಚಾರ ರಹಿತವಾಗಿ, ನೇರವಾಗಿ ಅರ್ಹರಿಗೆ ತಲುಪಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ.
– ಎಚ್.ಕೆ. ಪಾಟೀಲ.
ಜಿಲ್ಲಾ ಉಸ್ತುವಾರಿ ಸಚಿವರು.ಗ್ಯಾರಂಟಿ ಯೋಜನೆಗಳ ಲಾಭ ಶೇ.99ರಷ್ಟು ಜನರಿಗೂ ತಲುಪಲು ಕಾರಣೀಕರ್ತರಾದ ಸಚಿವರಾದ ಎಚ್.ಕೆ. ಪಾಟೀಲ ಹಾಗೂ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದರಲ್ಲದೆ, ಗ್ಯಾರಂಟಿ ಯೋಜನೆಗಳು ನಿರಂತರವಾಗಿ ನಡೆಯಲಿವೆ. ಇನ್ನು ಹೆಚ್ಚಿನ ಬಡವರ ಸೇವೆ ಮಾಡಲು ನಿರಂತರವಾಗಿ ನಿಮ್ಮ ಆಶೀರ್ವಾದವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನೀಡಬೇಕು.
– ಜಿ.ಎಸ್. ಪಾಟೀಲ.
ಶಾಸಕರು, ಖನಿಜ ನಿಗಮದ ಅಧ್ಯಕ್ಷರು.