ಹಗರಿಬೊಮ್ಮನಹಳ್ಳಿ: ಸಾಲದ ಬಾಧೆಯಿಂದ ಮನನೊಂದು ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೆಲ್ಕುದ್ರಿ 2ನೇ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಎಸ್. ಶರೀಫ್ ವಲಿ (48) ಎಂದು ಗುರುತಿಸಲಾಗಿದೆ.
ಮೃತ ಶರೀಫ್ ವಲಿ ಸುಮಾರು 3 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದು, ನೀರಾವರಿ ನಿರೀಕ್ಷೆಯೊಂದಿಗೆ ಹತ್ತಾರು ಬೆಳೆಗಳನ್ನು ಬೆಳೆದಿದ್ದರು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಪೂರೈಕೆಯಾಗದೇ, ಬೆಳೆದ ಬೆಳೆಗೆ ಸಮರ್ಪಕ ಬೆಲೆ ಸಿಗದ ಹಿನ್ನೆಲೆಯಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು.
ಮೆಕ್ಕೆಜೋಳ, ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದರೂ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಲಭಿಸದೆ ಅವರು ನಿರಂತರ ಚಿಂತೆಯಲ್ಲಿದ್ದರು. ಇದಲ್ಲದೆ, ಗ್ರಾಮೀಣ ಬ್ಯಾಂಕಿನಲ್ಲಿ ಸುಮಾರು 3 ಲಕ್ಷ ರೂ. ಸಾಲ ಹಾಗೂ ಕೈಗಡ ಸಾಲವೂ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಮನನೊಂದು ಬುಧವಾರ ಸಂಜೆ ತಮ್ಮದೇ ಹೊಲದಲ್ಲಿ ಶರೀಫ್ ವಲಿ ಕ್ರಿಮಿನಾಶಕ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಅವರನ್ನು ತಕ್ಷಣ ಹಗರಿಬೊಮ್ಮನಹಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ರು ಕೂಡ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಈ ಘಟನೆ ಇಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.



