ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳಿಗೆ ಸಂತಸದಾಯಕ ಹಾಗೂ ಅನುಭವಾತ್ಮಕ ಕಲಿಕೆಯನ್ನು ಒದಗಿಸುವ ‘ಸಂಭ್ರಮ ಶನಿವಾರ’ ಕಾರ್ಯಕ್ರಮವು ಮಕ್ಕಳಲ್ಲಿ ಸೃಜನಶೀಲತೆ, ನಾಯಕತ್ವ ಮತ್ತು ಸಂವಹನ ಕೌಶಲ್ಯಗಳನ್ನು ಬೆಳೆಸುವ ಅತ್ಯುತ್ತಮ ಶೈಕ್ಷಣಿಕ ಕಾರ್ಯಕ್ರಮವಾಗಿದೆ ಎಂದು ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ ಹೇಳಿದರು.
ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ.1ರಲ್ಲಿ ಶನಿವಾರ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಮೊದಲ ‘ಸಂಭ್ರಮ ಶನಿವಾರ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯ ರೂಪಿಸುವ ಕಾರ್ಯವನ್ನು ಶಿಕ್ಷಕರು ಸಮರ್ಪಕವಾಗಿ ನಿರ್ವಹಿಸುತ್ತಿದ್ದು, ಸಮುದಾಯದವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕ್ಷೇತ್ರ ಸಮನ್ವಯ ಅಧಿಕಾರಿ ಎಸ್.ಪಿ. ಪ್ರಭಯ್ಯನಮಠ ಮಾತನಾಡಿ, ವಿಶೇಷ ಚೇತನ ವಿದ್ಯಾರ್ಥಿಗಳ ಪಾಲಕರನ್ನು ಮಕ್ಕಳೊಂದಿಗೆ ಸನ್ಮಾನಿಸುವ ಮೂಲಕ ಅವರ ಜೀವನ ಸಾಧನೆಗಳನ್ನು ಪರಿಚಯಿಸಲಾಗುತ್ತಿದೆ. ಇದರಿಂದ ವಿಶೇಷ ಚೇತನರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿ, ಅವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನಕ್ಕೆ ಬಲ ಸಿಗಲಿದೆ ಎಂದು ಹೇಳಿದರು.
ಶಿಕ್ಷಣ ಸಂಯೋಜಕ ಮುರಳಿ ಸೊಲ್ಲಾಪೂರ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿ ಕವಿತಾ ಬೇಲೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್.ಬಿ. ಹೊಸಮನಿ ಕಾರ್ಯಕ್ರಮ ನಿರೂಪಿಸಿ, ಸರ್ವಮಂಗಳಾ ಗುಜಮಾಗಡಿ ವಂದಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಾ ಜಕರಡ್ಡಿ, ಪವಿತ್ರಾ ಹಿರೇಮಠ, ಸುನಂದಾ ಕುಂಟೋಜಿ, ಹೇಮಲತಾ ಆಸಂಗಿ ಸೇರಿದಂತೆ ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



