ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಇಂದು ಭರ್ಜರಿ ಹಸಿರು ಅಭಿಯಾನ ಆರಂಭಗೊಂಡಿದ್ದು, ಒಂದೇ ದಿನದಲ್ಲಿ 15 ಲಕ್ಷ ಸಸಿ ನೆಡುವ ಬೃಹತ್ ಗುರಿ ನಿಗದಿಪಡಿಸಲಾಗಿದೆ.
ಗಿಡ ನೆಡುವ ಮೂಲಕ ವಿಶ್ವದಾಖಲೆ ನಿರ್ಮಿಸುವ ಉದ್ದೇಶದೊಂದಿಗೆ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬೆಂಗಳೂರು ನಗರ ಪುನಶ್ಚೇತನ ಮಿಷನ್ 2026–30ರ ಅಂಗವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈ ಅಭಿಯಾನವನ್ನು ಕೈಗೊಂಡಿದೆ. ಡಾ. ಶಿವರಾಮ ಕಾರಂತ ಬಡಾವಣೆ, ನಾಡಪ್ರಭು ಕೆಂಪೇಗೌಡ ಬಡಾವಣೆ, ಬನಶಂಕರಿ 6ನೇ ಹಂತ, ಕೆರೆ ದಂಡೆಗಳು, ರಾಜಕಾಲುವೆಗಳ ಇಕ್ಕೆಲಗಳು ಹಾಗೂ ಉದ್ಯಾನವನಗಳನ್ನು ಒಳಗೊಂಡಂತೆ ವಿವಿಧ ಪರಿಸರ ವಲಯಗಳಲ್ಲಿ ಸಸಿ ನೆಡುವ ಕಾರ್ಯ ನಡೆಯುತ್ತಿದೆ.
ಒಟ್ಟು 243 ಎಕರೆ ಪ್ರದೇಶವನ್ನು 49 ವಲಯಗಳಾಗಿ ವಿಂಗಡಿಸಲಾಗಿದ್ದು, ಸುಮಾರು 50 ಸಾವಿರಕ್ಕೂ ಹೆಚ್ಚು ಸ್ವಯಂಸೇವಕರು ಈ ಹಸಿರು ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಕೇವಲ 12 ಗಂಟೆಗಳ ಅವಧಿಯಲ್ಲಿ 15 ಲಕ್ಷ ಸಸಿ ನೆಡುವ ಮೂಲಕ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸುವ ಗುರಿ ಹೊಂದಲಾಗಿದೆ.
ಈ ವೇಳೆ ಕೃಷ್ಣಪಥ ರಸ್ತೆಯ ಲೋಕಾರ್ಪಣೆ ಕೂಡ ನಡೆಯಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡರ 7 ಪುರಜ್ಯೋತಿಗಳನ್ನು ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಮಾತನಾಡಿ, ಕೆಂಪೇಗೌಡರ ಜಯಂತಿಯ ದಿನವೇ ಈ ಮಹತ್ವಾಕಾಂಕ್ಷಿ ಹಸಿರು ಅಭಿಯಾನ ಆರಂಭವಾಗಿದ್ದು, ಬೆಂಗಳೂರನ್ನು ಹಸಿರಾಗಿಸುವ ದೊಡ್ಡ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
ಇತ್ತ ಸದಾಶಿವನಗರದಲ್ಲಿಯೂ ಕೆಂಪೇಗೌಡ ಜಯಂತಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಅಶ್ವಥ್ ನಾರಾಯಣ್ ಭಾಗವಹಿಸಿ, ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.



