ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರ ಜಾತಿ ಸಮೀಕ್ಷೆಯ ವಿಷಯದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳದೆ, ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಿ ಗಣತಿ ಪ್ರಾರಂಭಿಸಬೇಕೆಂದು ಗದಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಳ್ಳಿಗಳಲ್ಲಿ ಅತಿವೃಷ್ಟಿಯಿಂದ ಹಾಳಾದ ಬೆಳೆಗಳ ಕೊಯ್ಲು, ಹಿಂಗಾರಿಗೆ ಭೂಮಿ ಹದಗೊಳಿಸುವ ಕಾರ್ಯದಲ್ಲಿ ರೈತರು ನಿರತರಾಗಿರುವಾಗ ಸರ್ಕಾರ ಕೆಲವೇ ದಿನಗಳಲ್ಲಿ ಸಮೀಕ್ಷೆ ಮುಗಿಸುತ್ತೇವೆ ಎನ್ನುವುದು ಸರಿಯಲ್ಲ. ರಾಜ್ಯದ ಸುಮಾರು 2 ಕೋಟಿ ಮನೆಗಳ ಸಮೀಕ್ಷೆ ಸುಲಭ ಸಾಧ್ಯವಲ್ಲ. ಹೀಗಾಗಿ, ಬೇಸಿಗೆ ಕಾಲದಲ್ಲಿ ಸಮೀಕ್ಷೆ ಮಾಡುವುದು ಉತ್ತಮ ಎಂದಿದ್ದಾರೆ.
ಸರ್ಕಾರ ಹೊಸ ಜಾತಿಗಳನ್ನು ಸೃಷ್ಟಿ ಮಾಡಿರುವುದು ದುರದೃಷ್ಟಕರ. ಸರ್ಕಾರದ ಯಾವುದೇ ಜಾತಿ ಪಟ್ಟಿಯಲ್ಲಿ ಇಲ್ಲದ, ಯಾವ ಆಯೋಗದ ಜಾತಿ ಪಟ್ಟಿಯಲ್ಲಿ ಇಲ್ಲದ ಹೊಸ ಜಾತಿಗಳನ್ನು ಸೃಷ್ಟಿಸಿದ್ದಾರೆ. ಕುರುಬ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಈ ರೀತಿ 107 ಕಡೆಗಳಲ್ಲಿ ಹೊಸ ಜಾತಿಗಳನ್ನು ಪ್ರಕಟಿಸಿದ್ದಾರೆ. ಅವುಗಳಿಗೆ ಕೋಡ್ ನಂಬರ್ ನೀಡಿದ್ದು, ಇದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು ಎಂದು ಆಕ್ಷೇಪಿಸಿದ್ದಾರೆ.
ಸಮೀಕ್ಷೆಗೆ ಸ್ವೀಕೃತಿ ಪತ್ರವನ್ನು ಕಡ್ಡಾಯವಾಗಿ ಕೊಡಬೇಕು. ಕನ್ನಡದ ವ್ಯಾಕರಣ ಮಾಲೆ ಪ್ರಕಾರ 1,400 ಜಾತಿ ಪಟ್ಟಿ ಮಾಡದೆ ಪ್ರವರ್ಗ ಪ್ರಕಾರ ಮಾಡಬೇಕು. 15 ದಿನದಲ್ಲೇ ಸಮೀಕ್ಷೆ ಮಾಡುವ ಹಠಮಾರಿತನ, ತರಾತುರಿಯಲ್ಲಿ ಮಾಡುವ ಸಮೀಕ್ಷಾ ವರದಿ ಮತ್ತೊಮ್ಮೆ ತಿರಸ್ಕಾರ ಆಗುವಂತಾಗಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.