ಗುಣಮಟ್ಟದ ಕಲಿಕೆಗೆ ನೆರವಿನ ಹಸ್ತ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಬ್ಯಾಂಕ್ ಕೇವಲ ಆರ್ಥಿಕ ವ್ಯವಹಾರಗಳನ್ನಷ್ಟೇ ಮಾಡದೇ ಸಮಾಜಮುಖಿ ಕಾರ್ಯ ಹಾಗೂ ವಿದ್ಯಾರ್ಥಿಗಳ ಹಿತ ಕಾಯುವಲ್ಲಿ ಒಂದು ಹೆಜ್ಜೆ ಮುಂದಿದೆ ಎಂದು ಗದಗ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ವೈಭವ ಅಗರವಾಲ ಹೇಳಿದರು.

Advertisement

ಅವರು ಸಿದ್ಧಲಿಂಗ ನಗರದ ಸರಕಾರಿ ಪ್ರೌಢಶಾಲೆಗೆ ನಾಲ್ಕು ಕಂಪ್ಯೂಟರ್‌ಗಳನ್ನು ಕೊಡುಗೆ ನೀಡಿ ಮಾತನಾಡಿ, ಈಗಾಗಲೇ ಈ ಶಾಲೆಗೆ ಕಳೆದ ಸಾಲಿನಲ್ಲಿ ಮೂರು ಜನ ವಿದ್ಯಾರ್ಥಿನಿಯರಿಗೆ ಶಿಷ್ಯವೇತನವನ್ನು ನೀಡಲಾಗಿದೆ. ಈ ಬಾರಿ ನಾಲ್ಕು ಕಂಪ್ಯೂಟರ್‌ಗಳನ್ನು ನೀಡುವ ಮೂಲಕ ಗುಣಮಟ್ಟದ ಕಲಿಕೆಗೆ ಉಪಯುಕ್ತವಾಗಲು ನೆರವಿನ ಹಸ್ತ ಚಾಚಿದೆ ಎಂದರು.

ಇನ್ನೋರ್ವ ಶಾಖಾ ವ್ಯವಸ್ಥಾಪಕ ಸುಬ್ಬರಥ ಮಾತನಾಡಿ, ಪ್ರತಿವರ್ಷ ಸರ್ಕಾರಿ ಶಾಲೆಗಳಿಗೆ ಗ್ರಾಮೀಣ ಬ್ಯಾಂಕ್ ಹಲವಾರು ರೀತಿಯ ನೆರವು ನೀಡುವ ಮೂಲಕ ಅಲ್ಲಿನ ವಿದ್ಯಾರ್ಥಿಗಳ ಕಲಿಕೆಗೆ ಸಹಾಯ ಮಾಡುತ್ತಾ ಬಂದಿದೆ. 500ಕ್ಕೂ ಹೆಚ್ಚು ಮಕ್ಕಳು ಓದುತ್ತಿರುವ ಈ ಶಾಲೆಗೆ ಇನ್ನೂ ಹಲವಾರು ಮೂಲಭೂತ ಸೌಕರ್ಯಗಳು ಬೇಕಾಗಿದ್ದು, ಮುಂಬರುವ ದಿನಗಳಲ್ಲಿ ಮಾಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಶಾಲಾ ದತ್ತು ಉಸ್ತುವಾರಿ ಡಾ. ಬಸವರಾಜ ಧಾರವಾಡ, ಡಾ. ವಿಜಯಕುಮಾರ ಬ್ಯಾಳಿ, ಶಂಕ್ರಮ್ಮ ಆರ್.ಹಣಮಗೌಡ್ರು, ಮಂಜುಳಾ ಪಿ.ಸಾಮ್ರಾಣಿ, ಸುಮಂಗಲ ಎಂ.ಪತ್ತಾರ್, ಶಾರದಾ ಬಾಣದ, ಎಂ.ಐ. ಶಿವನಗೌಡ್ರು, ಶೋಭಾ ಎಸ್.ಗಾಳಿ, ರಮೇಶ್ ಬಸರಿ, ಸಾವಿತ್ರಿ ಎ.ಗದ್ದನಕೇರಿ, ಎನ್.ಆರ್. ಶಿರೋಳ್, ಸಬಿಯಾ ಯು.ಕುಷ್ಟಗಿ, ಗಂಗಾ ಎಂ.ಅಳವಂಡಿ, ಮಂಜುಳಾ ಟಿ, ಶಶಿಕಲಾ ಬಿ.ಗುಳೇದವರ, ಪದ್ಮಾ ವಿ.ದಾಸರ್, ಲಕ್ಷ್ಮಮ್ಮ ಮಾಳೋತ್ತರ್, ಶಾರದಾ ಬಾಣದ ಮುಂತಾದವರು ಉಪಸ್ಥಿತರಿದ್ದರು. ಸಂಜೀವಿನಿ ಕೂಲಗುಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಪ್ರಭಾರಿ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮೀ ಅಣ್ಣಿಗೇರಿ ಮಾತನಾಡಿ, ಗ್ರಾಮೀಣ ಬ್ಯಾಂಕ್ ಕಳೆದ ಎರಡು ವರ್ಷದಿಂದ ನಮ್ಮ ಶಾಲೆಗೆ ನೆರವನ್ನು ನೀಡುತ್ತಾ ಬಂದಿದೆ. ಈ ಬಾರಿ ನಾಲ್ಕು ಕಂಪ್ಯೂಟರ್ ನೀಡುವ ಮೂಲಕ ನಮ್ಮ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಕಲ್ಪಸಿದೆ ಎಂದರು.


Spread the love

LEAVE A REPLY

Please enter your comment!
Please enter your name here