ರಾಯಚೂರು: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಅಶ್ಲೀಲವಾಗಿ ಮಾತನಾಡಿದ್ದ ಯುವಕನಿಗೆ ಮಹಿಳೆಯೇ ಬಸ್ ನಿಲ್ದಾಣದಲ್ಲೇ ಚಪ್ಪಲಿಯಿಂದ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ.
ಲಿಂಗಸುಗೂರು ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಬಸ್ಗಾಗಿ ಕಾಯುತ್ತ ನಿಂತಿದ್ದ ವೇಳೆ ಯುವಕ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ ಅಶ್ಲೀಲ ಪದಗಳನ್ನು ಬಳಸಿ ಕಿರುಕುಳ ನೀಡಿದ್ದಾನೆ ಎಂದು ತಿಳಿದುಬಂದಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ಮಹಿಳೆ ಸಾರ್ವಜನಿಕರ ಎದುರೇ ಆತನ ಕೆನ್ನೆಗೆ ಬಾರಿಸಿ, ಚಪ್ಪಲಿಯಿಂದ ಹೊಡೆದಿದ್ದಾರೆ. ಘಟನೆ ಗಮನಿಸಿದ ಸ್ಥಳದಲ್ಲಿದ್ದ ಪ್ರಯಾಣಿಕರು ಕೂಡ ಯುವಕನನ್ನು ತರಾಟೆಗೆ ತೆಗೆದುಕೊಂಡು ಧರ್ಮದೇಟು ನೀಡಿದ್ದಾರೆ.
ಪರಿಸ್ಥಿತಿ ಕೈಮೀರಿದುದನ್ನು ಅರಿತ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆ ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



