ವಿಜಯಸಾಕ್ಷಿ ಸುದ್ದಿ, ಗದಗ : ಲೊಕಸಭಾ ಚುನಾವಣೆಯ ಮತ ಎಣಿಕೆಯು ಜೂನ್ 4ರಂದು ಜರುಗಲಿದೆ. ಜಿಲ್ಲಾದ್ಯಂತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಶಾಂತಿ, ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ನಲ್ಲಿ ಶನಿವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಮೇ 7ರಂದು ಜಿಲ್ಲೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಯಶಸ್ವಿಯಾಗಿದ್ದು, ಜೂನ್ 4ರ ಮತ ಎಣಿಕೆ ಕಾರ್ಯವೂ ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 3ರ ಸಾಯಂಕಾಲ 6 ಗಂಟೆಯಿಂದ ಜೂನ್ 5ರ ಬೆಳಿಗ್ಗೆ 6 ಗಂಟೆಯವರೆಗೆ ಗದಗ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಅದನ್ನು ಎಲ್ಲಾ ರಾಜಕೀಯ ಪಕ್ಷಗಳು ಪಾಲಿಸಬೇಕು ಎಂದರು.
ಜೂನ್ 4ರಂದು ಮತ ಎಣಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂನ್ 4ರಂದು ಬೆಳಿಗ್ಗೆ 6 ಗಂಟೆಯಿಂದ ಜೂನ್ 5ರ ಬೆಳಿಗ್ಗೆ 6 ಗಂಟೆವರೆಗೆ ಶುಷ್ಕ ದಿನ ಘೋಷಿಸಿದ್ದು, ಈ ಅವಧಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಗೆದ್ದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರ ಕಾರ್ಯಕರ್ತರು, ಬೆಂಬಲಿಗರು ವಿಜಯೋತ್ಸವ, ಮೆರವಣಿಗೆ ಮಾಡುವುದರಿಂದ ಸೋತ ಅಭ್ಯರ್ಥಿಗಳಿಗೆ ಹಾಗೂ ಅವರ ಪಕ್ಷಗಳ ಮುಖಂಡರಿಗೆ, ಕಾರ್ಯಕರ್ತರಿಗೆ ವಿವಿಧ ರೀತಿಯ ಮನಸ್ತಾಪಗಳು ಉಂಟಾಗಿ ಈ ಸಮಯದಲ್ಲಿ ಪರಾಭವಗೊಂಡ ಅಭ್ಯರ್ಥಿಗಳು ಮತ್ತು ವಿಜೇತರಾದ ಅಭ್ಯರ್ಥಿ ಹಾಗೂ ಬೆಂಬಲಿಗರ ನಡುವೆ ಸಂಘರ್ಷ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗದಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಿರುವ ಸಂದರ್ಭದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ಓಡಾಡುವುದನ್ನು ನಿಷೇಧಿಸಿದೆ. ಈ ನಿಯಮವನ್ನು ಎಲ್ಲರೂ ಪಾಲಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಚುನಾವಣಾ ವಿಭಾಗದ ತಹಸೀಲ್ದಾರ ಪ್ರಕಾಶ ಎಂ.ನಾಶಿ, ಚುನಾವಣಾ ವಿಭಾಗದ ಶಿರಸ್ತೇದಾರ ವಿನಾಯಕ ಸಾಲಿಮಠ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಅಶೋಕ ಮಂದಾಲಿ, ರಮೇಶ ಎಸ್.ಸಜ್ಜಗಾರ, ಹಾಜಿಅಲಿ ಕೊಪ್ಪಳ ಹಾಜರಿದ್ದರು.
ದೇಹಕ್ಕೆ ಅಪಾಯವನ್ನು ಉಂಟುಮಾಡಬಹುದಾದ ಯಾವುದೇ ಮಾರಕಾಸ್ತçವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸಭೆ ಸಮಾರಂಭ ಅಥವಾ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿಗಳ ಬಗ್ಗೆ ಪ್ರಚೋದನಾತ್ಮಕವಾಗಿ ತೇಜೋವಧೆ ಮಾಡುವಂತಹ, ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಶವ ಸಂಸ್ಕಾರ, ಮದುವೆ ಹಾಗೂ ಧಾರ್ಮಿಕ ಸಭೆ-ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ತಿಳಿಸಿದರು.