ವಿಜಯಸಾಕ್ಷಿ ಸುದ್ದಿ, ಗದಗ : ಅರ್ಹರಿಗೆ ನ್ಯಾಯದಾನ ಮಾಡುವ ವ್ಯವಸ್ಥೆ ದೇವರ ಕೆಲಸಕ್ಕೆ ಸಮವಾದದ್ದು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ರವಿವಾರ `ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ’ ಕುರಿತು ನಡೆದ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದವನ್ನು ಬೇರೆ ಇಲಾಖೆಗಳಿಗೆ ಹೋಲಿಸಿದರೆ ತುಂಬಾ ವ್ಯತ್ಯಾಸವಿದ್ದು, ಸಾರ್ವಜನಿಕರು ಇದನ್ನು ಗೌರವ ಮತ್ತು ವಿಶ್ವಾಸದಿಂದ ಕಾಣುತ್ತಾರೆ.
ಅದನ್ನು ಉಳಿಸಿಕೊಳ್ಳುವ ಜವಬ್ದಾರಿ ನಮ್ಮ ಮೇಲಿದೆ. ಯಾರಿಗೂ ಅನ್ಯಾಯವಾಗದಂತೆ ಕೂಲಂಕಷವಾಗಿ ಪರಿಶೀಲಿಸಿ ಅರ್ಹರಿಗೆ ನ್ಯಾಯ ದಾನ ಮಾಡೋಣ ಎಂದು ಹೇಳಿದರು.
ಈಗಾಗಲೇ ಲೋಕ ಅದಾಲತ್ ಮೂಲಕ ಹಲವಾರು ಸಮಸ್ಯೆಗಳಿಗೆ ಪರಿಹಾರ ಸಿಕ್ಕು ಅನೇಕ ಅರ್ಹರಿಗೆ ನ್ಯಾಯ ಒದಗಿದೆ. ಕಾನೂನು ಸೇವಾ ಪ್ರಾಧಿಕಾರದಿಂದ ಜರಗುವ ಕಾನೂನು ಅರಿವು ಕಾರ್ಯಕ್ರಮದ ಮೂಲಕ ಜನರಿಗೆ ಕಾನೂನಿನ ಜಾಗೃತಿ ಮೂಡಿಸಿ ಅನೇಕ ಸಮಸ್ಯೆ ಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಿದೆ ಎಂದರು.
ಕಾನೂನು ಸೇವಾ ಪ್ರಾಧಿಕಾರದಿಂದ ಲೋಕಾಯುಕ್ತ ಕಾನೂನು ಕುರಿತು ಜಿಲ್ಲಾ, ತಾಲೂಕು ಮಟ್ಟದಲ್ಲಿ ಅರಿವು ಮೂಡಿಸಿ ಯಾವುದೇ ಅರ್ಜಿ ಬಂದಲ್ಲಿ ಪರಿಹಾರ ನೀಡಿ, ಸಾಧ್ಯವಾಗದಿದ್ದಲ್ಲಿ ಲೋಕಾಯುಕ್ತ ಕಚೇರಿಗೆ ಕಳುಹಿಸಿ. ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರವು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದರು.
ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಸವರಾಜ ಮಾತನಾಡಿ, ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ವ್ಯಾಪ್ತಿಯು ಅಪರಿಮಿತವಾಗಿದ್ದು, ಅದನ್ನು ಸದ್ಬಳಕೆ ಮಾಡಿ ಸಮನ್ವಯದಿಂದ ಕಾರ್ಯನಿರ್ವಹಿಸಿ, ದೂರುಗಳಿಗೆ ಶಿಘ್ರ ಪರಿಹಾರ ಕಂಡುಕೊಂಡು ದೇಶದ ಉನ್ನತಿಗೆ ಶ್ರಮಿಸೋಣ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಲೋಕಾಯುಕ್ತ ಸಂಪನ್ಮೂಲ ಅಧಿಕಾರಿ ಪ್ರಕಾಶ ಎಲ್.ನಾಡಗೇರ, ಕರ್ನಾಟಕ ಲೋಕಾಯುಕ್ತ ಉಪನಿಬಂಧಕರಾದ ಅಮರನಾರಾಯಣ ಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ, ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ. ಪಾಟೀಲ, ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ್ ಅಧೀಕ್ಷಕ ಸತೀಶ ಚಿಟಗುಬ್ಬಿ, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಜಿ.ಎಸ್. ಪಲ್ಲೇದ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತ ತಾಲೂಕುಗಳ ನ್ಯಾಯಾಧೀಶರು ಹಾಜರಿದ್ದರು. ಕಾರ್ಯಕ್ರಮವನ್ನು ಬಸವರಾಜ ಕುಕನೂರು ನಿರ್ವಹಿಸಿದರು.
ಯಾವುದೇ ಒಂದು ಪ್ರಕರಣದಲ್ಲಿ ಒಂದು ಕುಟುಂಬಕ್ಕೆ ಸಕಾಲದಲ್ಲಿ ಸರಿಯಾಗಿ ಪರಿಹಾರ ದೊರೆಯದಿದ್ದರೆ ಅಂತಹ ಕುಟುಂಬಗಳು ಬೀದಿಗೆ ಬರಬಹುದು ಅಥವಾ ಕುಟುಂಬದ ನಿರ್ವಹಣೆಗೆ ಅಡ್ಡದಾರಿ ಹಿಡಿಯಬಹುದು. ಹಾಗಾಗಿ ಲೋಕಾಯುಕ್ತ ಮತ್ತು ಕಾನೂನು ಸೇವಾ ಪ್ರಾಧಿಕಾರದ ದೂರಿನ ಅನ್ವಯ ತನಿಖೆ ನಡೆಸಿ ಸರಿಪಡಿಸಲು ಅವಕಾಶವಿದೆ, ತಪ್ಪು ಮಾಡಿದ ಅಧಿಕಾರಿಗಳಿಗೆ ದಂಡ ಮತ್ತು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಕೆ.ಎನ್. ಫಣೀಂದ್ರ ಹೇಳಿದರು.