ವಿಜಯಸಾಕ್ಷಿ ಸುದ್ದಿ, ನರಗುಂದ: ಸಂಜೀವಿನಿ ಯೋಜನೆಯ ಎಲ್ಲ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿಯೇ ಮೊದಲಾಗಿ ಹಾಗೂ ಮಾದರಿಯಾಗಿ ನರಗುಂದ ತಾಲೂಕಿನಲ್ಲಿ ಅನುಷ್ಠಾನಗೊಳಿಸಬೇಕು. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಸೂಚಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಂಜೀವಿನಿ ಯೋಜನೆಯ ಮುಖ್ಯ ಪುಸ್ತಕ ಬರಹಗಾರರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಜನರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಲ್ಲಿರುವ ಸಂಜೀವಿನಿ ಯೋಜನೆಯನ್ನು ಸಿಬ್ಬಂದಿ ಪ್ರಾಮಾಣಿಕತೆ, ಬದ್ಧತೆ ಹಾಗೂ ಪಾರದರ್ಶಕತೆಯಿಂದ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ತಾಲೂಕಿನಲ್ಲಿ ಶೀಘ್ರವೇ ‘ಅಕ್ಕಾ ಕಫೆ’ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಉಪಹಾರ, ಊಟ ಸೇರಿದಂತೆ ಸಿರಿಧಾನ್ಯ ಹಾಗೂ ನೈಸರ್ಗಿಕ ಆಹಾರ ಪದಾರ್ಥಗಳನ್ನು ಸಾರ್ವಜನಿಕರಿಗೆ ತಲುಪಿಸುವ ವ್ಯವಸ್ಥೆ ರೂಪಿಸಬೇಕು ಎಂದರು. ಸರ್ಕಾರಿ ವಿದ್ಯಾರ್ಥಿನಿಲಯಗಳು ಹಾಗೂ ವಿವಿಧ ಸರ್ಕಾರಿ ಕಾರ್ಯಕ್ರಮಗಳಿಗೆ ಅಕ್ಕಾ ಕಫೆಯ ಮೂಲಕ ಆಹಾರ ಪೂರೈಕೆ ಮಾಡಿದರೆ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಉತ್ತಮ ಆದಾಯದ ಮೂಲ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರದ ಸಂತೆಗಳನ್ನು ಪುನರಾರಂಭಿಸುವಂತೆ ಸೂಚಿಸಿದ ಅವರು, ರೈತರು ಬೆಳೆದ ತರಕಾರಿಗಳನ್ನು ಸ್ವಸಹಾಯ ಸಂಘಗಳ ಮಹಿಳೆಯರು ಖರೀದಿಸಿ ಮಾರಾಟ ಮಾಡುವ ವ್ಯವಸ್ಥೆ ಜಾರಿಯಾದರೆ ರೈತರು, ಮಹಿಳೆಯರು ಹಾಗೂ ಗ್ರಾಹಕರು ಎಲ್ಲರೂ ಇದರ ಪ್ರಯೋಜನ ಪಡೆಯಲಿದ್ದಾರೆ ಎಂದರು.
ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಪಾರದರ್ಶಕವಾಗಿ ಬಳಕೆ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಮಾತ್ರ ಸಾಲ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಸಾಲ ಮರುಪಾವತಿ, ಲೆಕ್ಕಪತ್ರ ನಿರ್ವಹಣೆ ಹಾಗೂ ದಾಖಲೆಗಳನ್ನು ನಿಯಮಿತವಾಗಿ ನವೀಕರಿಸುವಂತೆ ಸಿಬ್ಬಂದಿಗೆ ಸೂಚಿಸಿದರು.
ವಿಐಬಿಜಿ ರಾಮ್-ಜಿ ಯೋಜನೆಯ ಯಶಸ್ವಿ ಅನುಷ್ಠಾನದಲ್ಲಿಯೂ ಸಂಜೀವಿನಿ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದೆ. ನರೇಗಾ ಯೋಜನೆಗೆ ನೀಡಿದ ಸಹಕಾರದಂತೆಯೇ ಈ ಯೋಜನೆಗೂ ಸಂಪೂರ್ಣ ಸಹಕಾರ ನೀಡಬೇಕು. ಜೊತೆಗೆ ಪ್ರತಿ ವಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಪಂಚಾಯಿತಿ ಹಾಗೂ ಸಂಜೀವಿನಿ ಸಿಬ್ಬಂದಿ ನಡುವೆ ಸಮನ್ವಯ ಹೆಚ್ಚಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ವ್ಯವಸ್ಥಾಪಕ (ಕೃಷಿ ಜೀವನೋಪಾಯ) ಮಡ್ಡೇಶ ಮಲೀಮಾರ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮೋಹನಕೃಷ್ಣ, ಸಂಜೀವಿನಿ ಯೋಜನೆಯ ಸಿಬ್ಬಂದಿ ಹಾಗೂ ತಾಲೂಕಿನ 13 ಗ್ರಾಮ ಪಂಚಾಯಿತಿಗಳ ಮುಖ್ಯ ಪುಸ್ತಕ ಬರಹಗಾರರು ಉಪಸ್ಥಿತರಿದ್ದರು.
“ಸಂಜೀವಿನಿ ಯೋಜನೆಯನ್ನು ಜಿಲ್ಲೆಯಲ್ಲಿಯೇ ಮಾದರಿಯಾಗಿ ರೂಪಿಸುವ ಗುರಿ ನಮ್ಮದು. ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ‘ಅಕ್ಕಾ ಕಫೆ’ ಹಾಗೂ ವಾರದ ಸಂತೆಗಳಂತಹ ಕಾರ್ಯಕ್ರಮಗಳು ಹೆಚ್ಚು ನೆರವಾಗಲಿವೆ.”



