ವಿಜಯಸಾಕ್ಷಿ ಸುದ್ದಿ, ಗದಗ: ಯುವಕರನ್ನು ದೇಶದ ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಜಿಲ್ಲೆಯಲ್ಲಿ ೧೭೮ ‘ಭಾರತ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇಟ್ಟಿದೆ. ೧೬ರಿಂದ ೩೫ ವರ್ಷದೊಳಗಿನ ಯುವಕ-ಯುವತಿಯರನ್ನು ಸಂಘಟಿಸಿ, ನಾಯಕತ್ವ ಗುಣ ಹಾಗೂ ದೇಶಪ್ರೇಮ ಬೆಳೆಸುವ ಜೊತೆಗೆ ಸಾಮಾಜಿಕ ಮತ್ತು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸುವ ಗುರಿ ಹೊಂದಲಾಗಿದೆ.
ನಗರದ ಜಿಲ್ಲಾಡಳಿತ ಭವನದ ಕೇಸ್ವಾನ್ ವಿಡಿಯೋ ಸಂವಾದ ಸಭಾಂಗಣದಲ್ಲಿ ನಡೆದ ‘ಭಾರತ ಜೋಡೋ ಯುವ ಸಂಘ’ಗಳ ಸ್ಥಾಪನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿದರು.
ಯುವಶಕ್ತಿಯು ದೇಶದ ಅತಿದೊಡ್ಡ ಸಂಪತ್ತು. ಅದನ್ನು ಸೃಜನಶೀಲ ಹಾಗೂ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಸುವ ಮೂಲಕ ದೇಶದ ಅಭಿವೃದ್ಧಿಗೆ ವೇಗ ನೀಡಬೇಕು. ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಭಾರತ ಜೋಡೋ ಯುವ ಸಂಘಗಳನ್ನು ಪರಿಣಾಮಕಾರಿಯಾಗಿ ಸ್ಥಾಪಿಸಲು ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ಯೋಜನೆಯಡಿ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಸಂಘಗಳನ್ನು ರಚಿಸಲಾಗುವುದು. ಪ್ರತಿ ಸಂಘಕ್ಕೆ ವಾರ್ಷಿಕ ₹೧೦ ಲಕ್ಷ ಅನುದಾನ ಲಭ್ಯವಾಗಲಿದೆ. ಜಿಲ್ಲೆಯಲ್ಲಿ ಈಗಾಗಲೇ ೩,೫೦೦ಕ್ಕೂ ಅಧಿಕ ಸದಸ್ಯರು ನೋಂದಣಿಯಾಗಿದ್ದು, ಒಟ್ಟು ೧೮ ಸಾವಿರ ಯುವಕ-ಯುವತಿಯರನ್ನು ಸದಸ್ಯರನ್ನಾಗಿ ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಯುವಕರಲ್ಲಿ ನಾಯಕತ್ವದ ಗುಣ ಬೆಳೆಸುವುದು, ದೇಶಪ್ರೇಮದ ಭಾವನೆ ಮೂಡಿಸುವುದು ಹಾಗೂ ಅವರ ಶಕ್ತಿ ಮತ್ತು ಪ್ರತಿಭೆಯನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಲು ಸಂಘಗಳು ಉತ್ತಮ ವೇದಿಕೆಯಾಗಲಿವೆ. ಹೀಗಾಗಿ ಸಂಘಗಳ ಸ್ಥಾಪನೆ ಹಾಗೂ ಕಾರ್ಯನಿರ್ವಹಣೆಗೆ ಎಲ್ಲ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಸಂಘಗಳ ಉದ್ದೇಶ, ಕಾರ್ಯನಿರ್ವಹಣೆ, ಅನುದಾನದ ಬಳಕೆ ಹಾಗೂ ಮೇಲ್ವಿಚಾರಣೆ ಕುರಿತು ಚರ್ಚಿಸಲಾಯಿತು. ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಘಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೆಹಬೂಬ್ ಎಂ. ತುಂಬುರಮಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅಮಿತ್ ಬಿದರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.
೧೫ ಸದಸ್ಯರ ಕಾರ್ಯಕಾರಿ ಸಮಿತಿ
ಸಂಘಗಳ ಕಾರ್ಯನಿರ್ವಹಣೆ ಹಾಗೂ ಅನುದಾನದ ಸಮರ್ಪಕ ಬಳಕೆಗಾಗಿ ೧೫ ಮಂದಿ ಸದಸ್ಯರ ಕಾರ್ಯಕಾರಿ ಸಮಿತಿ ರಚಿಸಲಾಗುವುದು. ಜಿಲ್ಲಾಧಿಕಾರಿಗಳು ಪದಾಧಿಕಾರಿಗಳನ್ನು ನೇಮಿಸಲಿದ್ದು, ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ, ಕಾರ್ಯನಿರ್ವಾಹಕ ಅಧಿಕಾರಿ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಮೇಲ್ವಿಚಾರಣಾ ಸಮಿತಿ ಸಂಘಗಳ ಚಟುವಟಿಕೆಗಳನ್ನು ಗಮನಿಸಲಿದೆ.



