ಕಲಬುರಗಿ: ಏಪ್ರಿಲ್ 22ರಂದು ಉಗ್ರರು ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿತ್ತು, ಇದಕ್ಕೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿತ್ತು.
ಇದಾದ ಬಳಿಕ ನಿರಂತರವಾಗಿ ದಾಳಿ ಪ್ರತಿದಾಳಿಗಳು ನಡೆಯುತ್ತಿವೆ. ಭಾನುವಾರ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನ ವಿರಾಮ ಘೋಷಿಸಿವೆ. ಆದರೂ ಪಾಕಿಸ್ತಾನ ತನ್ನ ವರಸೆಯನ್ನು ಬಿಡದೆ ಭಾರತದ ಮೇಲೆ ಗುಂಡಿನ ದಾಳಿ ನಡೆಸುತ್ತಿದೆ.
ಇದೀಗ ಹೆಂಡತಿ ಡೆಲಿವರಿಗಾಗಿ ರಜೆ ಮೇಲೆ ಬಂದಿದ್ದ ಕಲಬುರಗಿ ಮೂಲದ CRPF ಯೋಧ ಹಣಮಂತರಾಯ್ ಔಸೆ ಅವರು ವಾಪಸ್ ಸೇವೆಗೆ ತೆರಳುತ್ತಿದ್ದಾರೆ. ವಾರದ ಹಿಂದಷ್ಟೇ ಹಣಮಂತರಾಯ್ ಅವರ ಪತ್ನಿಗೆ ಗಂಡು ಮಗು ಜನನವಾಗಿದೆ. ರಜೆ ಅವಧಿಯಲ್ಲಿ ಕೇವಲ 15 ದಿನ ಕಳೆದಿದೆ.
ಭಾರತೀಯ ಸೇನೆ ತುರ್ತು ಸೇವೆಗೆ ಆಗಮಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದೇಶ ಸೇವೆಗೆ ಯೋಧ ಮರಳಿದ್ದಾರೆ. ಈ ವೇಳೆ ಮಾತನಾಡಿದ ಯೋಧ ಣಮಂತರಾಯ್, ನನಗೆ ಮಗು, ಮನೆ, ಕುಟುಂಬಕ್ಕಿಂತ ದೇಶ ಮುಖ್ಯ. ನಾನು ಸೇನೆಗೆ ಸೇರುವ ಮುನ್ನ ನನಗೆ ಇದೇ ವೇದವಾಕ್ಯ. ಹಾಗಾಗಿ ದೇಶ ಸೇವೆಗಾಗಿ ತೆರಳುತ್ತಿದ್ದೇನೆ ಎಂದಿದ್ದಾರೆ.