ರಾಂಚಿ: ಜಾರ್ಖಂಡ್ನ ರಾಮಗಢ ಜಿಲ್ಲೆಯಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಟ್ರಕ್ ಮತ್ತು ಪ್ರಯಾಣಿಕರ ವಾಹನದ ನಡುವೆ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಪ್ರಯಾಣಿಕರಿದ್ದ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತಪಟ್ಟವರೆಲ್ಲರೂ ಮದುವೆ ಸೇರಿದಂತೆ ವಿವಿಧ ಶುಭ ಸಮಾರಂಭಗಳಲ್ಲಿ ಸಂಗೀತ ವಾದನ ಮಾಡುತ್ತಿದ್ದ ಬ್ಯಾಂಡ್ ತಂಡದ ಸದಸ್ಯರು ಎಂದು ಪೊಲೀಸರು ತಿಳಿಸಿದ್ದಾರೆ.
ಹಜಾರಿಬಾಗ್ ಜಿಲ್ಲೆಯ ಬಾಲ್ಸಾಗ್ರ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ತಡರಾತ್ರಿ ತಮ್ಮ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ರಾಜ್ರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-23ರಲ್ಲಿ ರಾತ್ರಿ ಸುಮಾರು 12 ಗಂಟೆ ವೇಳೆಗೆ ಓವರ್ಟೇಕ್ ಮಾಡಲು ಮುಂದಾದ ಕಲ್ಲಿದ್ದಲು ತುಂಬಿದ್ದ ಟ್ರಕ್, ಎದುರಿನಿಂದ ಬರುತ್ತಿದ್ದ ಪ್ರಯಾಣಿಕರ ವಾಹನಕ್ಕೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಅಪಘಾತದ ಭೀಕರ ಶಬ್ದ ಕೇಳಿ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಹಾಗೂ ಮೃತದೇಹಗಳನ್ನು ರಾಮಗಢ ಸದರ್ ಆಸ್ಪತ್ರೆಗೆ ಸಾಗಿಸಿದರು.
ರಾಮಗಢ ಸದರ್ ಆಸ್ಪತ್ರೆಯ ಸಿವಿಲ್ ಸರ್ಜನ್ ಅನಿಲ್ ಕುಮಾರ್ ಮಾತನಾಡಿ, ಆಸ್ಪತ್ರೆಗೆ ಕರೆತರಲಾದ ಎಂಟು ಮಂದಿಯಲ್ಲಿ ಏಳು ಮಂದಿ ಮೃತಪಟ್ಟ ಸ್ಥಿತಿಯಲ್ಲೇ ಇದ್ದರು ಎಂದು ತಿಳಿಸಿದ್ದಾರೆ.
ತಲೆಗೆ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ರಾಂಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.