ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ಸಂಸದ ಪಿ.ಸಿ. ಗದ್ದಿಗೌಡರ್ ಮಹತ್ವದ ಹೇಳಿಕೆ ನೀಡಿ, ಐತಿಹಾಸಿಕ ಊರಿನ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ತಮ್ಮ ಬದ್ಧತೆ ವ್ಯಕ್ತಪಡಿಸಿದ್ದಾರೆ. ಲಕ್ಕುಂಡಿ ಅನೇಕರ ರಾಜಧಾನಿಯಾಗಿದ್ದ ಕಾರಣ, ಭೂಮಿ ಅಗೆಯುವಾಗ ನಗ, ನಾಣ್ಯಗಳು ಹಾಗೂ ಪ್ರಾಚ್ಯಾವಶೇಷಗಳು ಸಿಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ಮಣ್ಣಿನ ಪದರಗಳಲ್ಲಿ ಸಿಗುವ ಆಧಾರಗಳ ಮೂಲಕ ಆಯಾ ಕಾಲಘಟ್ಟದ ಇತಿಹಾಸವನ್ನು ಗುರುತಿಸಬಹುದು. ಆದರೆ ಇಂದಿನ ಕಾಲದಲ್ಲಿ ಜನರು ನಿಧಿ ಹುಡುಕಿ ಕಳ್ಳತನ ಮಾಡುವ ಘಟನೆಗಳು ಹೆಚ್ಚಾಗಿವೆ ಎಂದು ಆತಂಕ ವ್ಯಕ್ತಪಡಿಸಿದರು. ಇಂತಹ ಸಂದರ್ಭದಲ್ಲಿ ರಿತ್ತಿ ಕುಟುಂಬ ಪ್ರಾಮಾಣಿಕತೆಯಿಂದ ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿರುವುದು ಶ್ಲಾಘನೀಯ ಎಂದು ಗದ್ದಿಗೌಡರ್ ಅಭಿನಂದನೆ ಸಲ್ಲಿಸಿದರು.
ಕೇಂದ್ರ ಸರ್ಕಾರದ ವತಿಯಿಂದ ಹಾಗೂ ವೈಯಕ್ತಿಕವಾಗಿ ರಿತ್ತಿ ಕುಟುಂಬಕ್ಕೆ ಸಹಾಯ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಲಕ್ಕುಂಡಿಯಂತಹ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ಹೆಚ್ಚಿನ ಹಣ ಲಭ್ಯವಾಗಲಿದೆ. ಸ್ಮಾರಕಗಳು ಹಾಳಾಗದಂತೆ ಕಾಯ್ದುಕೊಳ್ಳಲು ಹಾಗೂ ರಕ್ಷಣೆ ಮಾಡಲು ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಲಕ್ಕುಂಡಿ ನನ್ನ ಲೋಕಸಭಾ ಕ್ಷೇತ್ರದ ಅತ್ಯಂತ ಪ್ರಮುಖ ಹಳ್ಳಿ. ಈ ಊರಿನ ಬಗ್ಗೆ ನನಗೆ ವಿಶೇಷ ಗೌರವವಿದೆ. ಲಕ್ಕುಂಡಿಗೆ ವಿಶ್ವ ಪಾರಂಪರಿಕ ಸ್ಥಾನಮಾನ ತರುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮುಂದುವರಿಸುತ್ತೇನೆ ಎಂದು ಸಂಸದರು ಹೇಳಿದರು.
ಈ ಸಂದರ್ಭದಲ್ಲೇ ಸ್ಥಳೀಯರು ಕೋಟೆ ವೀರಭದ್ರೇಶ್ವರ ದೇವರ ಜಾತ್ರೆಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಮಾರ್ಚ್ 30 ಮತ್ತು 31ರಂದು ನಡೆಯುವ ಜಾತ್ರೆಗೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.



